ವರ್ಷದ 27ನೆಯ ಭಾನುವಾರ
ಮೊದಲನೆಯ ವಾಚನ : ಆದಿಕಾಂಡದಿಂದ ವಾಚನ 2: 18-24
“ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು.”
ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು
ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು. ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ
ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು
ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ
ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರಾಯಿತು. ಹೀಗೆ ಮನುಷ್ಯನು ಎಲ್ಲ
ಸಾಕುಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು; ಆದರೆ
ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ. ಹೀಗಿರುವಲ್ಲಿ
ದೇವರಾದ ಸರ್ವೇಶ್ವರ ಈ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು
ನಿದ್ರಿಸುತ್ತಿರುವಾಗ ಅವರ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ
ಮುಚ್ಚಿದರು. ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ
ಬರಮಾಡಿದರು. ಅವನು ಆಕೆಯನ್ನು ನೋಡಿ ಹೀಗೆಂದನು:
‘ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು, ನನ್ನೊಡಲಿನ ಒಡಲು
ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು’.
ಈ ಕಾರಣ, ಪುರುಷರು ತಂದೆತಾಯಿಗಳನ್ನು
ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ
ಬಾಳುವರು.
-ದೇವರ
ವಾಕ್ಯವಿದು
ಕೀರ್ತನೆ 128 : 1-2,3 4-5,6
ಶ್ಲೋಕ : ಪ್ರಭು ನಿನ್ನನ್ನು ಆಶೀರ್ವದಿಸಲಿ ಇಡೀ ಜೀವಮಾನವೆಲ್ಲ |
ಎರಡನೆಯ ವಾಚನ : ಹಿಬ್ರಿಯರಿಗೆ ಬರೆದ ಪತ್ರದಿಂದ ವಾಚನ 2 : 9-11
“ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ
ಒಬ್ಬನೇ ತಂದೆ.”
ಸಹೋದರರೇ, ದೇವದೂತರಿಗಿಂತ
ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ, ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾಮರಣವನ್ನು
ಅನುಭವಿಸಿದ್ದರಿಂದ ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ ಪಡೆದುದನ್ನು ನಆವು ಕಾಣುತ್ತೇವೆ.
ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.
ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡು ಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು
ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು
ಯುಕ್ತವೇ ಸರಿ. ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ.
ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ.
ದೇವರ
ವಾಕ್ಯವಿದು.
ಘೋಷಣೆ ಯೊವಾನ್ನ 17:17
ಅಲ್ಲೆಲೂಯ, ಅಲ್ಲೆಲೂಯ
!
ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ;
ನಿಮ್ಮ ಮಾತೇ ಸತ್ಯ.
ಅಲ್ಲೆಲೂಯ !
ಶುಭಸಂದೇಶ : ಸಂತ ಮಾರ್ಕನು ಬರೆದ ಶುಭಸಂದೇಶದಿಂದ ವಾಚನ 10 : 2-16
“ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದಿರಲಿ.”
ಫರಿಸಾಯರಲ್ಲಿ ಕೆಲವರು, ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಗಂಡನು ತನ್ನ ಹೆಂಡತಿಯನ್ನು
ಬಿಟ್ಟುಬಿಡುವುದು ಧರ್ಮಸಮ್ಮತವೇ?” ಎಂದು ಕೇಳಿದರು. ಯೇಸು, “ಈ ವಿಷಯವಾಗಿ ಮೋಶೆ
ನಿಮಗೆ ಏನೆಂದು ವಿಧಿಸಿದ್ದಾನೆ?” ಎಂದು ಅವರನ್ನೇ ಪುನಃ ಪ್ರಶ್ನಿಸಿದರು. ಅದಕ್ಕೆ ಅವರು, “ವಿವಾಹ ವಿಚ್ಛೇದನ
ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಲು ಮೋಶೆ ಅನುಮತಿ ಇತ್ತಿದ್ದಾನೆ,” ಎಂದರು. ಆಗ ಯೇಸು,
“ನಿಮ್ಮ ಹೃದಯ ಕಲ್ಲಾಗಿದ್ದುದರಿಂದಲೇ ಮೋಶೆ ಈ ನಿಯಮವನ್ನು ಬರೆದಿಟ್ಟನು. ಆದರೆ ಸೃಷ್ಟಿಯ ಆರಂಭದಿಂದಲೇ ‘ದೇವರು ಮನುಷ್ಯರನ್ನು
ಗಂಡುಹೆಣ್ಣಾಗಿ ನಿರ್ಮಿಸಿದ್ದಾರೆ. ಈ ಕಾರಣದಿಂದ ಗಂಡನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು’ ಎನುತ್ತದೆ ಪವಿತ್ರಗ್ರಂಥ.
ಹೀಗಿರುವಲ್ಲಿ ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರ. ಆದುದರಿಂದ
ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದಿರಲಿ,” ಎಂದರು. ಅಂದು,
ಮನೆಗೆ ಹೋದ ಬಳಿಕ ಶಿಷ್ಯರು, ಅದೇ ವಿಷಯವಾಗಿ ಯೇಸುವನ್ನು
ವಿಚಾರಿಸಿದರು. ಅದಕ್ಕೆ ಅವರು, “ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು
ಮದುವೆಯಾಗುವವನು ಆಕೆಗೆ ದ್ರೋಹ ಬಗೆದು ವ್ಯಭಿಚಾರಿಯಾಗುತ್ತಾನೆ. ಅಂತೆಯೇ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು
ವಿವಾಹವಾಗುವವಳು ವ್ಯಭಿಚಾರಿಣಿಯಾಗುತ್ತಾಳೆ,” ಎಂದರು. ಮತ್ತೆ ಕೆಲವರು,
ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಹರಸಲೆಂದು ಅವುಗಳನ್ನು ಯೇಸುಸ್ವಾಮಿಯ ಬಳಿಗೆ ಕರೆತಂದರು.
ಶಿಷ್ಯರು ಆ ಜನರನ್ನು ಗದರಿಸಿದರು. ಇದನ್ನು ಕಂಡ ಯೇಸು ಸಿಟ್ಟುಗೊಂಡು ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ. ಅವರನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ. ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು
ಅದನ್ನು ಎಂದಿಗೂ ಸೇರಲಾರನು, ಇದು ನಿಶ್ಚಯ,” ಎಂದರು.
ಅನಂತರ ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಗಳನ್ನಿರಿಸಿ ಹರಸಿದರು.
- ಪ್ರಭು
ಕ್ರಿಸ್ತ ಶುಭಸಂದೇಶವಿದು.
ಚಿಂತನೆ : ಮಹಿಳೆಯೊಬ್ಬಳು ರಬ್ಬಿಯೊಬ್ಬರ ಬಂದು ಕೇಳುತ್ತಾಳೆ “ 6 ದಿನಗಳಲ್ಲಿ ಎಲ್ಲವನ್ನು ಸೃಷ್ಟಿಸಿದ ನಿಮ್ಮ ದೇವರು ನಂತರ ಏನು ಮಾಡುತ್ತಿದ್ದಾರೆ? ಗುರು ಉತ್ತರಿಸುತ್ತಾರೆ, “ ಅಂದಿನಿಂದ ಭೂಲೋಕದಲ್ಲಿನ ವಿವಾಹ ಬಂಧನಗಳನ್ನು ಏರ್ಪಡಿಸುತ್ತಿದ್ದಾರೆ, ಆದ ವಿವಾಹಗಳ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ”
ಚಿಂತನೆ : ಮಹಿಳೆಯೊಬ್ಬಳು ರಬ್ಬಿಯೊಬ್ಬರ ಬಂದು ಕೇಳುತ್ತಾಳೆ “ 6 ದಿನಗಳಲ್ಲಿ ಎಲ್ಲವನ್ನು ಸೃಷ್ಟಿಸಿದ ನಿಮ್ಮ ದೇವರು ನಂತರ ಏನು ಮಾಡುತ್ತಿದ್ದಾರೆ? ಗುರು ಉತ್ತರಿಸುತ್ತಾರೆ, “ ಅಂದಿನಿಂದ ಭೂಲೋಕದಲ್ಲಿನ ವಿವಾಹ ಬಂಧನಗಳನ್ನು ಏರ್ಪಡಿಸುತ್ತಿದ್ದಾರೆ, ಆದ ವಿವಾಹಗಳ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ”
ಮಹಿಳೆ, “ಅಷ್ಟೆಯೇ? ಇಷ್ಟು ಸುಲಭ ಕೆಲಸವನ್ನು ನಾನೂ ಮಾಡಬುಹುದಲ್ಲವೇ?”
ಅದಕ್ಕೆ ಗುರು
ನುಡಿಯುತ್ತಾರೆ, “ ನಿನಗೆ ಇದು ಸುಲಭವಿರಬಹುದು , ಆದರೆ ದೇವರು ಆ ಕೆಂಪು ಸಮುದ್ರವನ್ನು
ಇಬ್ಭಾಗಿಸದಷ್ಟೇ ಪ್ರೀತಿ, ಕಾಳಜಿಯಿಂದ ಈ ಕಾರ್ಯವನ್ನೂ ಮಾಡುತ್ತಿದ್ದಾರೆ, ಅವರಿಗೆ ಸ್ತುತಿ
ಸಲ್ಲಲಿ”
ಜಪಮಾಲೆ ರಾಣಿಯ ಹಬ್ಬ
No comments:
Post a Comment