01.11.2018

ಸಾಧಾರಣ ಕಾಲದ 30ನೇ ಗುರುವಾರ

ಮೊದಲನೇ ವಾಚನ; ಪ್ರಕಟನಾ ಗ್ರಂಥ 7:2-4, 9-14

ಪೂರ್ವದಿಕ್ಕಿನಿಂದ ಒಬ್ಬ ದೇವದೂತನು ಏರಿಬಂದದ್ದನು ಕಂಡೆನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ: "ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ," ಎಂದು ಗಟ್ಟಿಯಾಗಿ ಕೂಗಿ ಹೇಳಿದನು. ಮುದ್ರೆಯೊತ್ತಿಸಿಕೊಂಡವರ ಸಂಖೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತುನಾಲ್ಕು ಸಾವಿರ ಮಂದಿ. ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲ ಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು. ಅವರು ಗಟ್ಟಿಯಾದ ದ್ವನಿಯಿಂದ: "ಸಿಂಹಾಸನಾರೂಢರಾದ ದೇವರಿಂದ, ಬಲಿಯರ್ಪಿತರಾದ ಯಜ್ಞದ ಕುರಿಮರಿಯಿಂದ ಲಭಿಸುತ್ತದೆಮಗೆ ಜೀವೋದ್ದಾರ," ಎಂದು ಹಾಡಿದರು. ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರಮಾಡಿ, "ಆಮೆನ್, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ, ಆಮೆನ್," ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು. ಸಭಾಪ್ರಮುಖರಲ್ಲಿ ಒಬ್ಬನು, "ಶ್ವೇತಾಂಬರರಾದ ಇವರೆಲ್ಲರೂ ಯಾರು? ಎಲ್ಲಿಂದ ಬಂದರು?" ಎಂದು ನನ್ನನ್ನು ಪ್ರಶ್ನಿಸಿದನು. ಅದಕ್ಕೆ ನಾನು, "ಸ್ವಾಮೀ ನೀವೇ ಬಲ್ಲಿರಿ", ಎಂದು ಉತ್ತರ ಕೊಟ್ಟೆ, ಆಗ ಆತನು ನನಗೆ ಹೀಗೆಂದನು; "ಇವರು ಆ ಭೀಕರ ಹಿಂಸೆ ಬಾಧೆಗಳನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.

ಕೀರ್ತನೆ: 24:1-2, 3-4, 5-6
ಶ್ಲೋಕ : ಇಂಥವರೇ ದೇವರ ದರ್ಶನಾಭ್ಯರ್ಥಿಗಳು

ಎರಡನೇ ವಾಚನ: 1 ಯೊವಾನ್ನ 3:1-3

ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ. ಪ್ರಿಯರೇ, ನಾವೀಗ ದೇವರ ಮಕ್ಕಳು ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನಾವು ಅವರಂತೆಯೇ ಇರುತ್ತೇವೆಂದು ಬಲ್ಲೆವು.  ಎಕೆಂದರೆ, ಅವರನ್ನು ನಾವು ಅವರ ಯಥಾರ್ಥ ರೂಪದಲ್ಲೇ ಕಾಣುತ್ತೇವೆ. ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ನಿರಿಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಸಿಟ್ಟುಕೊಳ್ಳುತ್ತಾನೆ.

ಶುಭಸಂದೇಶ ಮತ್ತಾಯ  5:1-12

ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ  ನೆರೆದರು ಆಗ ಯೇಸು ಇಂತೆಂದು ಪ್ರಭೋಧಿಸಿದರು: "ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು, ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು; ವಿನಯಶೀಲರು ಭಾಗ್ಯವಂತರು, ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು. ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು, ದೇವರು ಅವರಿಗೆ ತೃಪ್ತಿಯನ್ನಿಯುವರು. ದಯಾವಂತರು ಭಾಗ್ಯವಂತರು, ದೇವರ ದಯೆ ಅವರಿಗೆ ದೊರಕುವುದು. ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು.  ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು. ನ್ಯಾಯ ನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ನನ್ನ ಶಿಷ್ಯರು ನೀವಾದ್ಧರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು. ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು, ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು. ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.



No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...