ಸಾಧಾರಣ ಕಾಲದ ೩೨ನೇ - ಭಾನುವಾರ
ಮೊದಲನೇ ವಾಚನ: ೧ ಅರಸುಗಳು: ೧೭: ೧೦-೧೬
ಎಲೀಯನು ಅಲ್ಲಿಂದ ಹೊರಟು ಸರೆಪ್ತಾದ ಊರು ಬಾಗಿಲಿನ ಸಮೀಪಕ್ಕೆ ಬಂದನು, ಸೌದೆ ಕೂಡಿಸುತ್ತಿದ್ದ ಒಬ್ಬ ವಿಧವೆಯನ್ನು ಕ೦ಡು ಆಕೆಯನ್ನು ಕರೆದು, "ದಯವಿಟ್ಟು ಕುಡಿಯುವುದಕ್ಕೆ ಒಂದು ತ೦ಭಿಗೆಯಲ್ಲಿ ನೀರು ತೆಗೆದುಕೊಂಡು ಬಾ," ಎಂದು ಹೇಳಿದನು. ಆಕೆ ಹೋಗುತ್ತಿರುವಾಗ ಮತ್ತೆ ಆಕೆಯನ್ನು ಕರೆದು, "ನೀನು ಬರುವಾಗ ನನಗೆ ಒಂದು ತುಂಡು ರೊಟ್ಟಿಯನ್ನು ಸಹ ತೆಗೆದುಕೊಂಡು ಬಾ," ಎಂದನು. ಆಕೆ, "ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೆ ಹೊರತು ಬೇರೆ ಗತಿಯಿಲ್ಲ," ಎಂದು ಉತ್ತರ ಕೊಟ್ಟಳು. ಆಗ ಎಲೀಯನು, "ಹೆದರಬೇಡ, ನೀನು ಹೇಳಿದ೦ತೆ ಮಾಡು; ಆದರೆ ಮೊದಲು ಅದರಿಂದ ನನಗೆ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೊ. ಇಸ್ರಯೇಲ್ ದೇವರಾದ ಸರ್ವೇಶ್ವರ ನಿನಗೆ, "ನಾನು ನಾಡಿಗೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ, ಕುಡಿಕೆಯಲ್ಲಿರುವ ಎಣ್ಣೆ ಮುಗಿದು ಹೋಗುಚುದಿಲ್ಲ," ಎಂದು ಹೇಳುತ್ತಾರೆ ಎಂದನು. ಆಕೆ ಹೋಗಿ ಅವನು ಹೀಳಿದ೦ತೆಯೇ ಮಾಡಿದಳು . ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು. ಸರ್ವೇಶ್ವರ ಎಲೀಯನ ಮುಖಾ೦ತರ ಹೇಳಿದ೦ತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಕುಡಿಕೆಯಲ್ಲಿದ್ದ ಎಣ್ಣೆ ಮುಗಿದು ಹೋಗಲಿಲ್ಲ.
ಕೀರ್ತನೆ: ೧೪೬: ೭, ೮-೯, ೯-೧೦
ಶ್ಲೋಕ: ಮನವೇ, ವಂದಿಸು ಪ್ರಭುವನು.
ಎರಡನೆಯ ವಾಚನ: ಹಿಬ್ರಿಯರರಿಗೆ: ೯: ೨೪-೨೮
ಕ್ರಿಸ್ತ ಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವ ನಿರ್ಮಿತ ಗರ್ಭ ಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಕದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು. ಪ್ರಧಾನ ಯಾಜಕನು ಪ್ರತೀ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಗರ್ಭಗುಡಿಯನ್ನು ಪ್ರವೇಶಿಸುವಂತೆ ಯೇಸು ಪ್ರವೇಶಿಸಲಿಲ್ಲ. ಅವರು ಸ್ವರ್ಗವನ್ನು ಪ್ರವೇಶಿಸಿದ್ದು ಪದೇ ಪದೇ ತಮ್ಮನ್ನು ಸಮರ್ಪಿಸಿಕೊಳ್ಳುವುದಕ್ಕೂ ಅಲ್ಲ. ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣ ಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು. ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯ ತೀರ್ಪಿಗೆ ಗುರಿಯಾಗ ಬೇಕು. ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತ ಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋಧಾರಮಾಡಲೆಂದು.
ಶುಭಸಂದೇಶ: ಮಾರ್ಕ: ೧೨: ೩೮-೪೪
ಜನಸಮೂಹವು ಸಂತಸಚಿತ್ತದಿಂದ ಯೇಸುಸ್ವಾಮಿಯ ಮಾತುಗಳನ್ನು ಆಲಿಸುತ್ತಿತ್ತು. ಯೇಸು ತಮ್ಮ ಉಪದೇಶವನ್ನು ಮುಂದುವರಿಸುತ್ತಾ, "ಧರ್ಮಶಾಸ್ತ್ರಿಗಳ ಬಗ್ಗೆ ಎಚ್ಚರಿಕೆ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ; ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಪ್ರಾರ್ಥನಾ ಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಔತಣ ಸಮಾರಂಭಗಳಲ್ಲಿ ಶ್ರೇಷ್ಠ ಸ್ಥಾನಗಳನ್ನೂ ಅಪೇಕ್ಷಿಸುತ್ತಾರೆ. ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ದೀರ್ಘವಾಗಿ ಜಪತಪಗಳನ್ನು ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು," ಎಂದರು. ಯೇಸುಸ್ವಾಮಿ ದೇವಾಲಯದಲ್ಲಿ ಕಾಣಿಕೆ ಪೆಟ್ಟಿಗೆಗಳಿಗೆ ಎದುರಾಗಿ ಕುಳಿತ್ತಿದ್ದರು. ಜನರು ಅದರಲ್ಲಿ ಹಣ ಹಾಕುವ ರೀತಿ ಅವರ ಕಣ್ಣಿಗೆ ಬಿತ್ತು. ಧನವಂತರನೇಕರು ಹೆಚ್ಚು ಹೆಚ್ಚು ಹಣವನ್ನು ಹಾಕುತ್ತಿದ್ದರು. ಅಷ್ಟರಲ್ಲಿ ಬಡ ವಿಧವೆ ಒಬ್ಬಳು ಅಲ್ಲಿಗೆ ಬಂದಳು. ತಾಮ್ರ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದರು. ಆಗ ಯೇಸು ತಮ್ಮ ಶಿಷ್ಯರನ್ನು ಕರೆದು, "ಕಾಣಿಕೆ ಪೆಟ್ಟಿಗೆಯಲ್ಲಿ ಹಣ ಹಾಕಿದ ಎಲ್ಲರಿಗಿಂತಲೂ ಈ ವಿಧವೆ ಹೆಚ್ಚಾಗಿ ಅರ್ಪಿಸಿದಳು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ; ಇವರೆಲ್ಲರೂ ತಮ್ಮ ಅಪರಿಮಿತ ಐಶ್ಚರ್ಯದಿಂದ ಕಾಣಿಕೆಯಿತ್ತರು. ಈಕೆಯಾದರೋ ತನ್ನ ಕಡು ಬಡತನದಲ್ಲೂ ತನ್ನಲ್ಲಿ ಇದ್ದುದ್ದೆಲ್ಲವನ್ನು ಅರ್ಪಿಸಿದರು; ತನ್ನ ಜೀವನಾಧಾರವನ್ನೇ ಕೊಟ್ಟುಬಿಟ್ಟಳು," ಎಂದರು.
No comments:
Post a Comment