ಸಾಧಾರಣ ಕಾಲದ 32ನೇ ಶುಕ್ರವಾರ
ಮೊದಲನೇ ವಾಚನ: 2 ಯೊವಾನ್ನ 1:4-9
ನಿನ್ನ ಮಕ್ಕಳಲ್ಲಿ ಕೆಲವರು ಪಿತನು ವಿಧಿಸಿದಂತೆ ಸತ್ಯಸಂಧರಾಗಿ ನಡೆಯುವುದನ್ನು ಕಂಡು ನನಗಾದ ಆನಂದ ಅಷ್ಟಿಷ್ಟಲ್ಲ. ಶ್ರೀಮಾತೆಯೇ, ನಾನು ಮಾಡುವ ಬಿನ್ನಹವಿದು: ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು ಇದು ಮೊತ್ತಮೊದಲಿನಿಂದಲೂ ನಮಗೆ ಕೊಡಲಾದ ಆಜ್ಞೆಯೇ ಹೊರತು ಹೊಸದೇನೂ ಅಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಪ್ರೀತಿ. ಪ್ರೀತಿ ಮಾರ್ಗದಲ್ಲಿ ನಡೆಯಬೇಕೆಂಬುದೇ ನೀವು ಮೊತ್ತ ಮೊದಲಿನಿಂದಲೂ ಕೇಳಿರುವ ಆಜ್ಞೆ, ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯರಾಗಿ ಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು. ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು. ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.
ಕೀರ್ತನೆ: 119:1, 2, 10, 11, 17, 18
ಶ್ಲೋಕ: ಪ್ರಭುವಿನ ಶಾಸ್ತ್ರಾನುಸಾರ ನಡೆಯುವವರು ಧನ್ಯರು.
ನೊವನ ಕಾಲದಲ್ಲಿ ನಡೆದಂತೆಯೇ ನರಪುತ್ರನು ಬರುವ ಕಾಲದಲ್ಲೂ ನಡೆಯುವುದು. ನೊವನು ನಾವೆಯನ್ನು ಹತ್ತುವ ದಿನದ ತನಕಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು. ಅಂತೆಯೇ, ಲೋತನ ಕಾಲದಲ್ಲೂ ನಡೆಯಿತು. ಜನರು ಅನ್ನಪಾನೀಯಗಳಲ್ಲಿ ಆಸಕ್ತರಾಗಿದ್ದರು; ಲೇವಾದೇವಿಯಲ್ಲಿ ತೊಡಗಿದ್ದರು. ನೆಡುವುದರಲ್ಲೂ ನಿರ್ಮಿಸುವುದರಲ್ಲೂ ನಿರತರಾಗಿದ್ದರು. ಲೋತನು ಸೊದೋಮ್ ಊರನ್ನು ಬಿಟ್ಟು ತೆರಳಿದ ದಿನದಂದೇ ಆಕಾಶದಿಂದ ಅಗ್ನಿ ಮತ್ತು ಗಂಧಕದ ಮಳೆ ಸುರಿದು ಎಲ್ಲರನ್ನು ನಾಶಮಾಡಿತು. ನರಪುತ್ರನು ಪ್ರತ್ಯಕ್ಷನಾಗುವದಿನದಲ್ಲೂ ಹಾಗೆಯೇ ನಡೆಯುವುದು. ಆ ದಿನದಲ್ಲಿ ಮಾಳಿಗೆಯ ಮೇಲಿರುವವನು ಮನೆಯಲ್ಲಿರುವ ಸರಕುಸಾಮಗ್ರಿಗಳನ್ನು ತೆಗೆದುಕೊಳ್ಳಲು ಕೆಳಗಿಳಿಯದಿರಲಿ. ಅಂತೆಯೇ, ಹೊಲದಲ್ಲಿರುವವನು ಮನೆಗೆ ಹಿಂದಿರುಗದಿರಲಿ. ಲೋತನ ಪತ್ನಿಗಾದ ಗತಿಯನ್ನು ನೆನಪಿಗೆ ತಂದುಕೊಳ್ಳಿರಿ! ಯಾರು ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಇಚ್ಚಿಸುತ್ತಾನೋ ಅವನು ಅದನ್ನು ಕಳೆದುಕೊಳ್ಳುತ್ತಾನೆ; ಯಾರು ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತಾನೋ ಅವನು ಅದನ್ನು ರಕ್ಷಿಸಿಕೊಳ್ಳುತ್ತಾನೆ. ಆ ರಾತ್ರಿ ಒಂದೇ ಹಾಸಿಗೆಯಲ್ಲಿ ಇಬ್ಬರು ಮಲಗಿದ್ದರೆ, ಆ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು; ಒಬ್ಬನನ್ನು ಬಿಡಲಾಗುವುದು. ಎಂದರು. "ಸ್ವಾಮೀ, ಇದು ಎಲ್ಲಿ ನಡೆಯುವುದು?" ಎಂದು ಶಿಷ್ಯರು ಕೇಳಿದಾಗ, ಯೇಸು, "ಹೆಣವಿದ್ದಲ್ಲಿ ರಣಹದ್ದುಗಳು ಬಂದು ಕೂಡುವುವು," ಎಂದರು.
No comments:
Post a Comment