ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

18.11.2018

ಸಾಧಾರಣ ಕಾಲದ 33ನೇ ಭಾನುವಾರ  



ಮೊದಲನೇ ವಾಚನ: ದಾನಿಯೇಲ 12:1-3 

"ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತ ಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವ ಭಾದ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು. ಸತ್ತ ಧೂಳಿನ ಮಣ್ಣಿನಲ್ಲಿ 'ದೀರ್ಘನಿದ್ರೆ' ಮಾಡುತ್ತಿರುವ ಅನೇಕರು ಏಳುವರು, ಎಚ್ಚೆತ್ತವರಲ್ಲಿ ಕೆಲವರು ನಿತ್ಯ ಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು. ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು."

-ಪ್ರಭುವಿನ ವಾಕ್ಯ

 ಕೀರ್ತನೆ: 16:5, 8, 9-10, 11 
 ಶ್ಲೋಕ: ನೀಡು ದೇವಾ ರಕ್ಷಣೆಯನು, ನಾ ನಿನಗೆ ಶರಣಾಗತನು. 

ಎರಡನೇ ವಾಚನ: ಹಿಬ್ರಿಯರಿಗೆ  10: 11-14, 18 

ಪ್ರತಿಯೊಬ್ಬ ಯಾಜಕನು ಅನುದಿನವೂ ತನ್ನ ಸೇವೆಯನ್ನು ನಿರ್ವಹಿಸುತ್ತಾನೆ. ಆದರೆ ಇವುಗಳಿಂದ ಎಂದಿಗೂ ಪಾಪ ನಿವಾರಣೆ ಆಗದು. ಕ್ರಿಸ್ತ ಯೇಸು ಪಾಪ ನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ. ಅವರ ಶತ್ರುಗಳು ತಮ್ಮ ಕಾಲಡಿಗೆ ಬರುವತನಕ ಅಲ್ಲೇ ಕಾದಿರುತ್ತಾರೆ. ತಾವು ಪುನೀತಗೊಳಿಸಿದವರನ್ನು ಒಂದೇ ಒಂದು ಬಲಿಯರ್ಪಣೆಯಿಂದ ಯೇಸು ನಿರಂತರ ಸಿದ್ಧಿಗೆ ತಂದಿದ್ದಾರೆ. ಪಾಪ ಕ್ಷಮಾಪಣೆಯಾದ ಬಳಿಕ ಪಾಪ ಪರಿಹಾರಕ ಬಲಿಯ ಅವಶ್ಯಕತೆ ಇಲ್ಲ. 

-ಪ್ರಭುವಿನ ವಾಕ್ಯ


ಶುಭಸಂದೇಶ: ಮಾರ್ಕ 13:24-32 

"ಆ ದಿನಗಳಲ್ಲಿ ಈ ಸಂಕಷ್ಟಗಳು ಮುಗಿದ ಬಳಿಕ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು. ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು. ಆತನು ದೇವದೂತರನ್ನು ಜಗತ್ತಿನ ನಾಲ್ಕು ದಿಕ್ಕುಗಳಿಗೂ ಕಳುಹಿಸಿ, ತಾನು ಆರಿಸಿಕೊಂಡವರನ್ನು ವಿಶ್ವದ ಅಷ್ಟ ದಿಕ್ಕುಗಳಿಂದಲೂ ಒಟ್ಟುಗೂಡಿಸುವನು. "ಅಂಜೂರದ ಮರದಿಂದ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಎಳೆ ರೆಂಬೆಗಳಲ್ಲಿ ಎಲೆಗಳು ಚಿಗುರುವಾಗ ವಸಂತಕಾಲ ಸಮೀಪಿಸಿತು ಎಂದು ಅರಿತುಕೊಳ್ಳುತ್ತೀರಿ. ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ನರಪುತ್ರನು ಸಮೀಪಿಸಿದ್ದಾನೆ, ಹೊಸ್ತಿಲಲ್ಲೇ ಇದ್ದಾನೆಂದು ತಿಳಿದುಕೊಳ್ಳಿ. ಇವೆಲ್ಲವು ಸಂಭವಿಸುವುದಕ್ಕೆ ಮುಂಚೆ ಈ ಪೀಳಿಗೆ ಗತಿಸಿ ಹೋಗುವುದೆಂದು ಒತ್ತಿ ಹೇಳುತ್ತೇನೆ. ಭೂಮ್ಯಾಕಾಶಗಳು ಗತಿಸಿಹೋಗುವುವು, ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುವುವು. "ಆ ದಿನವಾಗಲಿ, ಆ ಗಳಿಗೆಯಾಗಲಿ, ಯಾವಾಗ ಬರುವುದೆಂದು ಪಿತನ ಹೊರತು ಮತ್ತಾರೂ ಅರಿಯರು. ಸ್ವರ್ಗದಲ್ಲಿರುವ ದೂತರೇ ಆಗಲಿ, ಪುತ್ರನೇ ಆಗಲಿ, ಅದನ್ನು ಅರಿಯರು."

No comments:

Post a Comment