ಸಾಧಾರಣ ಕಾಲದ ೩೪ನೇ ಸೋಮವಾರ
ಮೊದಲನೇ ವಾಚನ: ಪ್ರಕಟನೆ 14:1-3, 4-5
ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು. ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು. ಇದಲ್ಲದೆ, ಸ್ವರ್ಗದಿಂದ ಮಹಾಧ್ವನಿಯೊಂದು ಕೇಳಿಸಿತು. ಅದು ಭೋರ್ಗರೆಯುವ ಜಲ ಪ್ರವಾಹದಂತೆಯೂ ದೊಡ್ಡ ಗುಡುಗಿನ ಗರ್ಜನೆಯಂತೆಯೂ ಇತ್ತು. ನಾವು ಕೇಳಿದಂಥ ದ್ವನಿ ಕಿನ್ನರಿಯನ್ನು ನುಡಿಸುತ್ತಿರುವ ವಾದ್ಯಗಾರರ ಸ್ವರದಂತಿತ್ತು. ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ, ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ. ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು. ಸುಳ್ಳ ಮಾತು ಅವರ ಬಾಯಿಂದ ಬರುವುದಿಲ್ಲ ; ಅವರು ನಿರ್ದೋಷಿಗಳು.
ಕೀರ್ತನೆ: 24:1bc-2, 3-4ab, 5-6
ಶ್ಲೋಕ: ಇಂಥವರೇ ದೇವರ ದರ್ಶನಾಭ್ಯರ್ಥಿಗಳು.
ಶುಭಸಂದೇಶ: ಲೂಕ 21:1-4
ದೇವಾಲಯದ ಕಾಣಿಕೆಯ ಪೆಟ್ಟಿಗೆಯಲ್ಲಿ ಧನವಂತರು ತಮ್ಮ ಕಾಣಿಕೆಗಳನ್ನು ಹಾಕುತ್ತಿದ್ದುದನ್ನು ಯೇಸುಸ್ವಾಮಿ ಗಮನಿಸಿದರು. ಅಷ್ಟರಲ್ಲಿ ಒಬ್ಬ ಬಡವಿಧವೆ ಅಲ್ಲಿಗೆ ಬಂದು, ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು. ಅದನ್ನು ಕಂಡು ಯೇಸು, "ಈ ಬಡವಿಧವೆ ಅವರೆಲ್ಲರಿಗಿಂತಲೂ ಹೆಚ್ಚಾಗಿ ಅರ್ಪಿಸಿದಳೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಅವರೆಲ್ಲರು ತಮ್ಮ ಅಪರಮಿತ ಐಶ್ವರ್ಯದಿಂದ ಕಾಣಿಕಯಿತ್ತರು; ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು," ಎಂದರು.
No comments:
Post a Comment