ಮೊದಲನೇ ವಾಚನ: ಹಿಬ್ರಿಯರಿಗೆ :7:25 - 8:6
ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಢಾರ ಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು. ನಮಗೆ ಬೇಕಾಗಿದ್ದ ಪ್ರದಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು. ಇವರು ಮಿಕ್ಕ ಪ್ರಧಾನ ಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಆನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರ ಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪ ಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು. ಧರ್ಮಶಾಸ್ತ್ರ ನೇಮಿಸುವ ಪ್ರಧಾನ ಯಾಜಕರು ಕುಂದು ಕೊರತೆಯುಳ್ಳ ಮಾನವರು. ಆದರೆ, ಧರ್ಮಶಾಸ್ತ್ರದ ತರುವಾಯ ಬಂದ ಹಾಗೂ ಶಪಥದಿಂದ ಕೂಡಿದ ದೈವ ವಾಕ್ಯವು ಸದಾ ಸರ್ವ ಸಂಪೂರ್ಣರಾದ ಪುತ್ರನನ್ನೇ ಪ್ರಧಾನ ಯಾಜಕರನ್ನಾಗಿ ನೇಮಿಸುತ್ತದೆ. ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ; ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನ ಯಾಜಕ ನಮಗಿದ್ದಾರೆ. ಅಲ್ಲಿ ಆ ಪವಿತ್ರ ಸ್ಥಾನದಲ್ಲಿ ಮನುಷ್ಯರಿಂದಲ್ಲ, ದೇವರಿಂದಲೇ ನಿರ್ಮಿತವಾದ ನಿಜವಾದ ಗರ್ಭಗುಡಿಯಲ್ಲಿ, ಅವರು ಯಾಜಕ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಪ್ರತಿಯೊಬ್ಬ ಪ್ರಧಾನ ಯಾಜಕನು ಕಾಣಿಕೆಗಳನ್ನೂ ಬಲಿಗಳನ್ನೂ ಅರ್ಪಿಸುವುದಕ್ಕಾಗಿಯೇ ನೇಮಕಗೊಂಡಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ನಮ್ಮ ಈ ಪ್ರಧಾನ ಯಾಜಕರಿಗೂ ಏನಾದರು ಇರಲೇಬೇಕು. ಇವರು ಧರೆಯಲ್ಲೇ ಇದ್ದಿದ್ದರೆ ಯಾಜಕರಾಗಿರುತ್ತಿರಲಿಲ್ಲ. ಏಕೆಂದರೆ ಧರ್ಮಶಾಸ್ತ್ರ ವಿಧಿಸುವ ಕಾಣಿಕೆಗಳನ್ನು ಸಮರ್ಪಿಸುವುದಕ್ಕೆ ಬೇರೆ ಯಾಜಕರು ಇದ್ದಾರೆ. ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸುವಾಗ, ದೇವರು ಆತನಿಗೆ, "ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು," ಎಂದು ಆಜ್ಞೆಯನ್ನಿತ್ತರು. ಯೇಸು, ಆ ಯಾಜಕರ ಸೇವೆಗಿಂತಲೂ ಶ್ರೇಷ್ಠವಾದ ಯಾಜಕ ಸೇವೆಯನ್ನು ಕೈಗೊಂಡಿದ್ದಾರೆ. ಯೇಸುವನ್ನು ಮಧ್ಯಸ್ಥರನ್ನಾಗಿ ಪಡೆದಿರುವ ಒಡಂಬಡಿಕೆಯು ಅಷ್ಟೇ ಶ್ರೇಷ್ಠವಾದುದು. ಏಕೆಂದರೆ ಅದು, ಹಿಂದಿನ ವಾಗ್ದಾನಗಳಿಗಿಂತಲೂ ಉತ್ತಮವಾದ ವಾಗ್ದಾನಗಳನ್ನು ಆಧರಿಸಿದೆ.
ಕೀರ್ತನೆ: 40:7-8, 8-9, 10, 17
ಶ್ಲೋಕ: ಪ್ರಭೂ, ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾದೇಶ
ಶುಭಸಂದೇಶ: ಮಾರ್ಕ 3:7-12
ಯೇಸುಸ್ವಾಮಿ ತಮ್ಮ ಶಿಷ್ಯರ ಜೊತೆಯಲ್ಲಿ ಗಲಿಲೇಯ ಸರೋವರದ ತೀರಕ್ಕೆ ಹೊರಟುಹೋದರು. ಸಾವಿರಾರು ಜನರು ಅವರನ್ನು ಹಿಂಬಾಲಿಸಿದರು. ಈ ಜನರು ಯೇಸು ಮಾಡುತ್ತಿದ್ದ ಮಹಾತ್ಕಾರ್ಯಗಳ ಸಮಾಚಾರವನ್ನು ಕೇಳಿ, ಗಲಿಲೇಯ ಪ್ರಾಂತ್ಯದಿಂದ, ಜೆರುಸಲೇಮ್ ನಗರದಿಂದ, ಇದುಮೇಯ ಪ್ರಾಂತ್ಯದಿಂದ, ಜೋರ್ಡಾನ್ ನದಿಯ ಪೂರ್ವ ಪ್ರದೇಶ ಹಾಗೂ ಟೈರ್-ಸಿದೋನ್ ಪಟ್ಟಣಗಳ ಸುತ್ತಮುತ್ತಲಿಂದ ಬಂದಿದ್ದರು. ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ದ ಮಾಡಲು ಶಿಷ್ಯರಿಗೆ ಹೇಳಿದರು. ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಅವರನ್ನು ಮುಟ್ಟಬೇಕೆಂದು ಮುನ್ನುಗ್ಗಿ ಮೇಲೆ ಮೇಲೆ ಬೀಳುತ್ತಿದ್ದರು. ದೆವ್ವಗಳು ಸಹ ಅವರನ್ನು ಕಂಡಾಗಲೆಲ್ಲಾ ಅವರ ಪಾದಕ್ಕೆರಗಿ, "ನೀವು ದೇವರ ಪುತ್ರ," ಎಂದು ಕಿರುಚುತ್ತಿದ್ದವು. ಆದರೆ ಯೇಸು, ತಾವು ಯಾರೆಂಬುದನ್ನು ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡುತ್ತಿದ್ದರು.
No comments:
Post a Comment