ಮೊದಲನೇ ವಾಚನ: ಹಿಬ್ರಿಯರಿಗೆ 2:14-19
ಇದಲ್ಲದೆ, ಮಕ್ಕಳು ರಕ್ತ ಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತ ಮಾಂಸಧಾರಿಯಾದರು. ಹೀಗೆ ಮರಣಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣ ಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು. ಅವರು ಉದ್ಧಾರ ಮಾಡ ಬಂದುದು ಖಂಡಿತವಾಗಿ ದೇವದೂತರನ್ನಲ್ಲ, ಅಬ್ರಹಾಮನ ಸಂತತಿಯನ್ನು. ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಗಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು. ಸ್ವತಃ ತಾವೇ ಶೋಧನೆಗೊಳಗಾಗಿ ಯಾತನೆಯನ್ನು ಅನುಭವಿಸಿದ್ಧರಿಂದ ಶೋಧನೆಗೊಳಗಾಗುವವರಿಗೇ ನೆರವಾಗಲು ಯೇಸು ಸಮರ್ಥರಾದರು.
ಕೀರ್ತನೆ: 105:1-2, 3-4, 6-7, 8-9
ಶ್ಲೋಕ: ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ಧಾನವನು
ಶುಭಸಂದೇಶ: ಮಾರ್ಕ 1:29-39
ಯೇಸುಸ್ವಾಮಿ ಪ್ರಾರ್ಥನಾ ಮಂದಿರದಿಂದ ಹೊರಟು ಯಕೋಬ ಮತ್ತು ಯೊವಾನ್ನನ ಸಂಗಡ ಸಿಮೋನ ಹಾಗೂ ಆಂದ್ರೇಯನ ಮನೆಗೆ ಹೋದರು. ಸಿಮೋನನ ಅತ್ತೆ ಜ್ವರದಿಂದ ಮಲಗಿದ್ದಳು. ಇದನ್ನು ಯೇಸುವಿಗೆ ತಿಳಿಸಿದರು. ಯೇಸು ಆಕೆಯ ಬಳಿಗೆ ಹೋಗಿ ಕೈ ಹಿಡಿದು ಎಬ್ಬಿಸಿದರು. ಜ್ವರ ಬಿಟ್ಟುಹೋಯಿತು. ಆಕೆ ಅವರೆಲ್ಲರನ್ನು ಸತ್ಕರಿಸಿದಳು. ಸಂಜೆ ಸೂರ್ಯ ಮುಳುಗಿದ ಮೇಲೆ ಜನರು ರೋಗಿಗಳನ್ನೂ ದೆವ್ವಹಿಡಿದವರನ್ನು ಯೇಸುವಿನ ಬಳಿಗೆ ಕರೆತಂದರು. ಊರಿಗೆ ಊರೇ ಆ ಮನೆಯ ಬಾಗಿಲಲ್ಲಿ ನೆರೆಯಿತು. ನಾನಾ ರೋಗಗಳಿಂದ ನರಳುತ್ತಿದ್ದವರನ್ನು ಯೇಸು ಗುಣಪಡಿಸಿದರು. ದೆವ್ವ ಹಿಡಿದವರಿಂದ ದೆವ್ವ ಬಿಡಿಸಿದರು. ತಾವು ಯಾರೆಂಬುದನ್ನು ದೆವ್ವಗಳು ಅರಿತಿದ್ದುದರಿಂದ ಯೇಸು ಅವುಗಳಿಗೆ ಮಾತನಾಡಲು ಅವಕಾಶ ಕೊಡಲಿಲ್ಲ. ಮುಂಜಾನೆ ಬೆಳಕು ಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆ ಮಾಡುತ್ತಿದ್ದರು. ಇತ್ತ, ಸಿಮೋನನೂ ಅವನ ಜೊತೆಗಾರರೂ ಯೇಸುವನ್ನು ಹುಡುಕಿಕೊಂಡು ಹೋದರು. ಅವರನ್ನು ಕಂಡ ಕೂಡಲೇ, "ಎಲ್ಲರು ತಮ್ಮನ್ನೆ ಹುಡುಕುತ್ತಿದ್ದಾರೆ," ಎಂದು ತಿಳಿಸಿದರು. ಅದಕ್ಕೆ ಯೇಸು, "ಅಕ್ಕಪಕ್ಕದ ಊರುಗಳಿಗೆ ಹೋಗೋಣ ಅಲ್ಲೂ ನಾನು ಶುಭಸಂದೇಶವನ್ನು ಸಾರಬೇಕು. ನಾನು ಬಂದಿರುವುದು ಈ ಉದ್ದೇಶಕ್ಕಾಗಿಯೇ," ಎಂದರು. ಆನಂತರ ಯೇಸು ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾಮಂದಿರಗಳಲ್ಲಿ ಪ್ರಬೋಧಿಸುತ್ತಾ ದೆವ್ವಗಳನ್ನು ಬಿಡಿಸುತ್ತಾ ಬಂದರು.
No comments:
Post a Comment