ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

04.02.2019 - ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ?

ಮೊದಲನೇ ವಾಚನ: ಹಿಬ್ರಿಯರಿಗೆ 11:32-40

ಇನ್ನೂ ಹೇಳಬೇಕೇ? ಗಿಡಿಯೋನ್, ಬಾರಾಕ್, ಸಂಸೋನ್, ಯೆಪ್ತಾಹ, ದಾವೀದ, ಸಾಮುವೇಲ ಇವರನ್ನೂ ಇತರ ಪ್ರವಾದಿಗಳನ್ನೂ ಕುರಿತು ಹೇಳಬೇಕಾದರೆ ನನಗೆ ಸಮಯ ಸಾಲದು. ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ  ವಾಗ್ದಾನಗಳನ್ನು ಪಡೆದರು; ಸಂಹಗಳ ಬಾಯನ್ನು ಬಂದಿಸಿದರು. ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು. ವಿಶ್ವಾಸದಿಂದಲೇ ಮಹಿಳೆಯರು ಮೃತರಾಗಿದ್ದ ತಮ್ಮವರನ್ನು ಮರಳಿ ಜೀವಂತರಾಗಿ ಪಡೆದರು. ಕೆಲವರು ಇದಕ್ಕಿಂತ ಶ್ರೇಷ್ಠವಾದ ಪುನರುತ್ದಾನವನ್ನು ಪಡೆಯುವ ಉದ್ದೇಶದಿಂದ ಬಿಡುಗಡೆಯನ್ನು ನಿರಾಕರಿಸಿ ಹಿಂಸೆಬಾಧೆಗಳಿಗೆ ತುತ್ತಾಗಿ ಮರಣವನ್ನಪ್ಪಿದರು. ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು,  ಸೆರೆಸಂಕಲೆಗಳನ್ನು ಅನುಭವಿಸಿದರು. ಮತ್ತೆ ಕಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿ ಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು; ಇಂಥವರಿಗೆ ಈ ಲೋಕ ತಕ್ಕ ಸ್ಥಳವಾಗಿರಲಿಲ್ಲ. ಈ ಕಾರಣದಿಂದ, ಅವರು ಕಾಡು ಬೆಟ್ಟಗಳಲ್ಲೂ ಗುಹೆ ಕಣಿವೆಗಳಲ್ಲೂ ತಲೆಮರೆಸಿಕೊಂಡಿದ್ದರು. ಇವರೆಲ್ಲರೂ ವಿಶ್ವಾಸವುಳ್ಳವರಾದುದರಿಂದಲೇ ಸಜ್ಜನರೆಂದು ಹೆಸರುವಾಸಿಯಾದರು. ಆದರೂ ದೇವರು ವಾಗ್ದಾನಮಾಡಿದ ಸತ್ಪಲಗಳನ್ನು ಸವಿಯಲಿಲ್ಲ. ಏಕೆಂದರೆ ದೇವರು ನಮ್ಮೆಲ್ಲರಿಗೋಸ್ಕರ, ಶ್ರೇಷ್ಠವಾದ ಯೋಜನೆಯೊಂದನ್ನು ರೂಪಿಸಿ, ನಮ್ಮೊಡನೆಯೇ ಅಂದಿನ ವಿಶ್ವಾಸಿಗಳೂ ಸಿದ್ಧಿಗೆ ಬರಬೇಕೆಂದು ಸಂಕಲ್ಪಸಿದರು.

ಕೀರ್ತನೆ: 31:20, 21, 22, 23, 14
ಶ್ಲೋಕ: ಧೈರ್ಯದಿಂದಿರಲಿ ನಿರುತ ನಿಮ್ಮೆಲ್ಲರ ಹೃದಯ

ಶುಭಸಂದೇಶ: ಮಾರ್ಕ 5:1-20

ಅವರೆಲ್ಲರು ಗಲಿಲೇಯ ಸರೋವರವನ್ನು ದಾಟಿ ಆಚೆಯ ದಡದಲ್ಲಿದ್ದ ಗೆರಸೇನರ ಪ್ರಾಂತ್ಯವನ್ನು ಸೇರಿದರು. ಯೇಸುಸ್ವಾಮಿ ದೋಣಿಯಾಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು. ಸಮಾಧಿಯ ಗುಹೆಗಳೇ ಅವನಿಗೆ ವಾಸಸ್ಥಳವಾಗಿದ್ದವು. ಅವನನ್ನು ಬಂಧಿಸಲು ಯಾರಿಂದಲೂ ಆಗುತ್ತಿರಲಿಲ್ಲ. ಸಂಕೋಲೆಗಳಿಂದ ಬಂಧಿಸುವುದೂ ಅಸಾಧ್ಯವಾಗಿತ್ತು. ಸರಪಳಿ ಸಂಕೋಲೆಗಳಿಂದ ಅವನನ್ನು ಕಟ್ಟಿದಾಗ ಅವುಗಳನ್ನು ತಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಗೆ ತರುವ ಸಾಮರ್ಥ್ಯ ಯಾರಿಗು ಇರಲಿಲ್ಲ. ಹಗಲಿರುಳೆನ್ನದೆ ಸಮಾಧಿಯ ಗುಹೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ಅವನು ಅಲೆದಾಡುತ್ತಾ ಕಲ್ಲುಗಳಿಂದ ತನಗೆ ತಾನೇ ಚಚ್ಚಿಕೊಳ್ಳುತ್ತಾ ಇದ್ದನು. ದೂರದಲ್ಲಿ ಬರುತ್ತಿದ್ದ ಯೇಸುಸ್ವಾಮಿಯನ್ನು ಕಂಡು, ಅವನು ಓಡಿಬಂದು ಅವರಿಗೆ ಸಾಷ್ಟಾಂಗವೆರಗಿ, " ದೇವರಾಣೆ ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ," ಎಂದು ಅಬ್ಬರಿಸಿದನು. ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಈ ಮೊದಲೇ ಕಟ್ಟಪ್ಪಣೆ ಮಾಡಿದರು. "ನಿನ್ನ ಹೆಸರೇನು?" ಎಂದು ಯೇಸು ಅವನನ್ನು ಕೇಳಲು "ನನ್ನ ಹೆಸರು 'ಗಣ'; ಏಕೆಂದರೆ ನಾವು ಬಹುಮಂದಿ ಇದ್ದೇವೆ," ಎಂದನು.  ಅಲ್ಲದೆ, "ನಮ್ಮನ್ನು ಆ ಪ್ರಾಂತ್ಯದಿಂದ ಹೊರಗಟ್ಟಬೇಡಿ," ಎಂದು ಯೇಸುವನ್ನು ಬಹಾಳವಾಗಿ ಬೇಡಿಕೊಂಡನು. ಸಮೀಪದಲ್ಲೇ ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಲ್ಲಿ ಮೇಯುತ್ತಿತ್ತುಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ?. ಆ ದೆವ್ವಗಳು, "ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ," ಎಂದು ಯೇಸುವನ್ನು ಬಹಳವಾಗಿ ಬೇಡಿಕೊಂಡವು. ಅವರು ಹಾಗೆಯೆ ಅಪ್ಪಣೆ ಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ  ಹೊಕ್ಕವು. ಇದರ ಪರಾಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು. ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು  ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು. ದೆವ್ವ ಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು ಸ್ವಸ್ಥ ಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು. ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವರಿಗೆ ವಿವರಿಸಿದರು. ಇದನ್ನು ಕೇಳಿದ ಜನರು ಯೇಸುವಿಗೆ, ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡರು. ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, "ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ," ಎಂದು ಬಿನ್ನವಿಸಿಕೊಂಡನು. ಯೇಸು ಅದಕೊಪ್ಪದೆ, "ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರ ಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ, ಎಂದು ಅವರಿಗೆ ವಿವರಿಸು," ಎಂದರು. ಅಂತೆಯೇ ಅವನು ಹೊರಟು ಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯಚಕಿತರಾದರು.

ಮನಸಿಗೊಂದಿಷ್ಟು :  "ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ?" ಎಂಬ ಆ ದೆವ್ವ ಪೀಡಿತನ ಮಾತು ಎಷ್ಟೋ ಸಲ ನಮ್ಮ ಮಾತುಗಳ ಸಹ. ಕ್ರಿಸ್ತನ ಮೌಲ್ಯ ಹಾಗೂ ಆಶಯಕ್ಕೆ ವಿರುದ್ಧವಾದ ನಮ್ಮ ಬಾಳನ್ನು ಕ್ರಿಸ್ತ ಪ್ರಶ್ನಿಸಿದಾಗ, ಮನಸಾಕ್ಷಿಯನ್ನು ಅಲ್ಲಾಡಿಸಿದಾಗ ನಮ್ಮ ಮನಸ್ಸು ಲೌಕೀಕತೆಯೆಡೆಗೇ ಹೆಚ್ಚು ಒಲವು ತೋರಿಸುತ್ತಾ, ಈ ಮೇಲಿನ ಮಾತುಗಳು ನಮ್ಮಿಂದ ಹೊರಡುತ್ತದೆ. ಬದಲಾಗಿ ನಮನ್ನು ಎಲ್ಲಾ ದುಷ್ಟತೆಯಿಂದ ತಪ್ಪಿಸು ಎಂಬ ಪ್ರಾರ್ಥನೆ ನಮ್ಮದಾಗಲಿ.

ಪ್ರಶ್ನೆ : ದೇವರು ನಮಗೆ ಮಾಡಿರುವ ಅಸಂಖ್ಯ ಉಪಕಾರಗಳನ್ನು ನಾವು ಧನ್ಯತೆಯಿಂದ ನೆನೆಯುತ್ತಿದ್ದೇವೆಯೇ? ಅದನ್ನು ಪ್ರಕಟಿಸುತ್ತಿದ್ದೇವೆಯೇ?

No comments:

Post a Comment