ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

05.02.2019 - "ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ"

ಮೊದಲನೇ ವಾಚನ: ಹಿಬ್ರಿಯರಿಗೆ 12:1-4

ದ ಕಾರಣ ಇಷ್ಟು ಮಂದಿ ಸಾಕ್ಷಿಗಳು ದೊಡ್ಡ  ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನು ಅಂಟಿಕೊಳ್ಳುವ ಪಾಪವನ್ನು ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು ಸ್ಥಿರ ಚಿತ್ತದಿಂದ ಭಾಗವಹಿಸೋಣ. ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನವನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ. ಪಾಪಿಗಳಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು  ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ. ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ  ಬಂದಿಲ್ಲ.

ಕೀರ್ತನೆ: 22:26-27, 28, 30, 31-32
ಶ್ಲೋಕ: ಹರಿವುದು ಸ್ತುತಿ ಭಕ್ತರ ಬಾಯಿಂದ

ಶುಭಸಂದೇಶ: ಮಾರ್ಕ 5:21-43

ಯೇಸುಸ್ವಾಮಿ ದೋಣಿಯನ್ನೇರಿ ಸರೋವರದ ಈಚೆ ದಡಕ್ಕೆ ಮರಳಿದರು. ತೀರವನ್ನು ಸೇರಿದೊಡನೆ ಜನರು ದೊಡ್ಡ ಗುಂಪಾಗಿ ಅವರ ಸುತ್ತಲೂ ನೆರೆದರು. ಪ್ರಾರ್ಥನಾ ಮಂದಿರದ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನ ಹೆಸರು ಯಾಯೀರ. ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, "ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣ ಹೊಂದಿ ಬದುಕುವಂತೆ ಅನುಗ್ರಹಿಸಬೇಕು," ಎಂದು ಬಹಳವಾಗಿ ವಿನಂತಿಸಿದನು. ಯೇಸು ಅವನ ಜೊತೆಯಲ್ಲಿ ಹೊರಟರು. ದೊಡ್ಡ ಜನಸ್ತೋಮವು ಯೇಸುವನ್ನು ಮುತ್ತಿಕೊಂಡು ಅವರ ಜೊತೆಯಲ್ಲೇ ಹೊರಟಿತು. ಹನ್ನೆರಡು ವರ್ಷಗಳಿಂಲೂ ರಕ್ತಸ್ರಾವ ರೋಗದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿದ್ದಳು. ಅನೇಕ ವೈದ್ಯರಿಂದ ಚಿಕಿತ್ಸೆ ಪಡೆದಿದ್ದರೂ ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯ ಮಾಡಿದ್ದರೂ ಅವಳ ರೋಗ ಮಾತ್ರ ಉಲ್ಬಣ ಆಗುತ್ತಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ. ಯೇಸುವಿನ ವಿಷವಾಗಿ ಜನರು ಹೇಳುತ್ತಿದ್ದುದನ್ನು ಆಕೆ ಕೇಳಿ, ಜನರ ಗುಂಪಿನಲ್ಲಿ ಸೇರಿ, ಯೇಸುವನ್ನು ಹಿಂಬಾಲಿಸಿದಳು. "ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣ ಹೊಂದುವೆನು" ಎಂದುಕೊಂಡು ಯೇಸುವಿನ ಉಡುಪನ್ನು ಮುಟ್ಟಿದಳು. ಅದನ್ನು ಮುಟ್ಟಿದಾಕ್ಷಣ ಅವಳ ರಕ್ತಸ್ರಾವ ನಿಂತುಹೋಯಿತು. ಕಾಡುತ್ತಿದ್ದ ವ್ಯಾಧಿಯಿಂದ ತಾನು ಗುಣ ಹೊಂದಿದ್ದೇನೆಂದು ಆಕೆಗೆ ಅರಿವಾಯಿತು. ಇತ್ತ ಯೇಸು, ರೋಗವನ್ನು ಗುಣಪಡಿಸುವ ಶಕ್ತಿ ತಮ್ಮಿಂದ ಹೊರ ಹೊಮ್ಮಿದ್ದನ್ನು ತಕ್ಷಣ ತಿಳಿದು, ಸುತ್ತಲಿದ್ದ ಜನರತ್ತ ತಮ್ಮ ದೃಷ್ಟಿಯನ್ನು ಹರಿಸಿ, "ನನ್ನ ಉಡುಪನ್ನು ಮುಟ್ಟಿದವರಾರು?" ಎಂದು ಪ್ರಶ್ನಿಸಿದರು. ಅದಕ್ಕೆ ಶಿಷ್ಯರು, "ತಮ್ಮ ಸುತ್ತಲೂ ಜನರು ಮುತ್ತಿಕೊಂಡಿರುವುದು ತಮಗೆ ತಿಳಿದೇ ಇದೆ. ಆದರೂ ನನ್ನನ್ನು ಮುಟ್ಟಿದವರು ಯಾರು?" ಎಂದು ಕೇಳುತ್ತೀರಲ್ಲಾ" ಎಂದರು. ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರೆಂದು ಗುರುತಿಸಲು ಸುತ್ತಲೂ ನೋಡುತ್ತಿದ್ದರು. ತನ್ನಲ್ಲಿ ಸಂಭವಿಸಿದ್ದನ್ನು ಅರಿತ ಆ ಮಹಿಳೆ ಭಯದಿಂದ ನಡುಗುತ್ತಾ ಮುಂದೆ ಬಂದು ಯೇಸುವಿನ ಪಾದಕ್ಕೆ ಎರಗಿ, ಅವರಿಗೆ ನಡೆದ ಸಂಗತಿಯನ್ನು ತಿಳಿಸಿದಳು. ಯೇಸು ಆಕೆಗೆ, "ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿ ಮುಕ್ತಳಾಗಿ ಆರೋಗ್ಯದಿಂದಿರು," ಎಂದು ಅನುಗ್ರಹಿಸಿದರು. 

ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ ಯಾಯೀರನ ಮನೆಯಿಂದ ಕೆಲವರು ಬಂದು ಅವನಿಗೆ, "ನಿಮ್ಮ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುತ್ತೀರಿ?" ಎಂದರು. ಅವರು ಹೇಳಿದ ಮಾತುಗಳನ್ನು ಯೇಸು ಕೇಳಿಯೂ ಅವನ್ನು ಲಕ್ಷಕ್ಕೆ ತೆಗೆದುಕೊಳ್ಳದೆ ಯಾಯಿರನಿಗೆ, "ಭಯಪಡಬೇಡ, ನಿನ್ನಲ್ಲಿ ವಿಶ್ವಾಸ ಒಂದಿದ್ದರೆ ಸಾಕು," ಎಂದರು. ಅನಂತರ ಪೇತ್ರ, ಯಕೋಬ ಹಾಗೂ ಅವನ ಸೋದರ ಯೊವಾನ್ನ, ಇವರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಯಾಯಿರನ ಮನೆಯನ್ನು ತಲುಪಿದರು. ಅಲ್ಲಿ ಜನರ ಗೋಳಾಟ, ಗೊಂದಲದ ದೃಷ್ಯ ಅವರ ಕಣ್ಣಿಗೆ ಬಿತ್ತು. ಯೇಸು ಮನೆಯೊಳಕ್ಕೆ ಹೋಗಿ,  " ಏತಕ್ಕೆ ಇಷ್ಟೆಲ್ಲಾ ಗಲಭೆ,  ಗೋಳಾಟ? ಬಾಲಕಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ," ಎಂದರು. ಇದನ್ನು ಕೇಳಿದವರು, ಯೇಸುವನ್ನು ಪರಿಹಾಸ್ಯ ಮಾಡಿದರು. ಆದರೆ ಯೇಸು ಎಲ್ಲರನ್ನೂ ಹೊರಕ್ಕೆ ಕಳುಹಿಸಿ ಬಾಲಕಿಯ ತಂದೆ ತಾಯಿಯನ್ನು ಮತ್ತು ತಮ್ಮೊಂದಿಗಿದ್ದ ಮೂವರು ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಬಾಲಕಿ ಮಲಗಿದ್ದ ಕೊಠಡಿಯನ್ನು ಪ್ರವೇಶಿಸಿದರು. ಆಕೆಯ ಕೈಹಿಡಿದು, "ತಲಿಥಾಕೂಮ್" ಎಂದರು. ('ಮಗಳೇ ನಿನಗೆ ಹೇಳುತ್ತೇನೆ, ಎದ್ದೇಳು" ಎಂಬುದು ಆ ಮಾತಿನ ಅರ್ಥ). ಅವಳು ತಟ್ಟನೆ ಎದ್ದು ನಡೆದಾಡತೊಡಗಿದಳು. ಅಲ್ಲಿದ್ದವರೆಲ್ಲರೂ ಆಶ್ಚರ್ಯಭರಿತರಾದರು. ಅವಳಿಗೆ ಹನ್ನೆರೆಡು ವರ್ಷ ವಯಸ್ಸು ಆಗಿತ್ತು. ಈ ವಿಷಯವನ್ನು ಬೇರೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಬಾಲಕಿಗೆ ತಿನ್ನಲು ಏನಾದರು ಕೊಡುವಂತೆ ತಿಳಿಸಿದರು.

ಮನಸಿಗೊಂದಿಷ್ಟು : ನಾವೂ ಸಹಾ ಆ ಸ್ತ್ರೀಯಂತೆ ಗುಣವಾಗದಂತ ಬವಣೆಯಿಂದ ಬಳಲುತ್ತಿರಬಹುದು. ಯಾರದೋ ಮೇಲಿನ ಅಸಹನೆ,  ಕೋಪ, ಮರೆಯಲಾಗದ ಅವಮಾನ, ನೋವು ನಮ್ಮನ್ನು ಕ್ಷಮೆ ನೀಡಲಾಗದಂತೆ ಬಾಧಿಸುತ್ತಿರಬಹುದು. ಯೇಸುವಿನ ಉಡುಪಿನ ತುದಿ ಮುಟ್ಟಿದಂತೆ ಒಂದು ಸಣ್ಣ  ಪ್ರಾರ್ಥನೆ ಅದನ್ನು ಹೋಗಲಾಡಿಸಬಹುದು. ಇಲ್ಲವೇ ಯೇಸುವೇ ಆ ಬಾಲಕಿಯ ಮನೆಗೆ ಬಂದಂತೆ ನಮ್ಮೊಳಗೆ ಬಂದು ಆ ಬಾಧೆಯಿಂದ ’ಎದ್ದೇಳು’ ಎಬ್ಬಿಸಬಹುದು. ಬೇಕಾಗಿರುವುದು ವಿಶ್ವಾಸ. 

ಪ್ರಶ್ನೆ : "ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ" ಎಂದು ಹೇಳಿಸಿಕೊಳ್ಳುವಷ್ಟು ವಿಶ್ವಾಸ ನಮ್ಮಲ್ಲಿದೆಯೇ?

No comments:

Post a Comment