ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

10.02.2019 - "ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು"

ಮೊದಲನೇ ವಾಚನ: ಯೆಶಾಯ 6:1-8

ರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ  ದರ್ಶನವಾಯಿತು. ಉನ್ನತೋನ್ನತ ಸಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು. ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲ ಸೋಕದಂತೆ ನಿಂತಿದ್ದರು. ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ: "ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ; ಜಗವೆಲ್ಲ ಆತನ ಪ್ರಭಾವಭರಿತ" ಎಂದು ಕೂಗಿ ಹೇಳಿದನು. ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು  ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ!" ಎಂದು ಕೂಗಿ ಕೊಂಡೆನು. ಆಗ ಸೆರಾಫಿಯರಲ್ಲಿ - ತೇಜಸ್ವಿಯೊಬ್ಬನು ಬಲಿಪೀಠದಿಂದ, ಉರಿಯುವ ಕೆಂಡವೊಂದನ್ನು ಇಕ್ಕಳದಿಂದ ಹಿಡಿದಕೊಂಡು ನನ್ನತ್ತ ಹಾರಿ ಬಂದನು. ಆ ಉರಿ ಕೆಂಡವನ್ನುನನ್ನ ಬಾಯಿಗೆ ಮುಟ್ಟಿಸಿ: "ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು", ಎಂದನು. ಆಗ, "ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?" ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು," ಇಗೋ, ನಾನು ಸಿದ್ದ, ನನ್ನನ್ನು ಕಳುಹಿಸಿ" ಎಂದೆನು.

ಕೀರ್ತನೆ: 138:1-3, 4-5, 7-8,
ಶ್ಲೋಕ: ಪ್ರಭೂ, ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ

ಎರಡನೇ ವಾಚನ: 1 ಕೊರಿಂಥಿಯರಿಗೆ  15:1-11


ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನ ನೆನಪಿಗೆ ತಂದುಕೊಳ್ಳಿರಿ.  ನೀವು ಅದನ್ನು ಸ್ವೀಕರಿಸಿದ್ಧೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ಧೀರಿ. ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು. ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತ ಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು. ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ದಾನ ಹೊಂದಿದರು. ಆನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು. ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತು ಹೋಗಿದ್ದರೂ ಬಹುಮಂದಿ ಇಂದಿಗೂ ಬದುಕಿದ್ದಾರೆ. ಅದಾದ ಮೇಲೆ ಯಕೋಬನಿಗೂ ಆನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು. ಕಟ್ಟಕಡೆಗೆ ದಿನ ತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು. ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು. ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ, ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ. ನಾನಾದರೇನು, ಅವರಾದರೇನು? ನಾವು ಸಾರುವ ಸಂದೇಶ ಒಂದೇ. ಅದನ್ನು ನೀವು ನಂಬಿದ್ದೀರಿ.

 ಶುಭಸಂದೇಶ: ಲೂಕ 5:1-11

ಮ್ಮೆ ಯೇಸುಸ್ವಾಮಿ ಗೆನಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕು ನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು. ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ, ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು ಬೋಧನೆ ಮುಗಿದದ್ದೇ ಸಿಮೋನನಿಗೆ, "ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನು ಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ," ಎಂದರು. ಅದಕ್ಕೆ ಸಿಮೋನನು "ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆಕೊಟ್ಟು ಬಲೆಗಳನ್ನು ಹಾಕುತ್ತೇವೆ," ಎಂದನು. ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿ ರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದು ಹೋಗುವುದರಲ್ಲಿದ್ದವು. ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆ ಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು. ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, "ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!" ಎಂದನು. ಹಿಡಿದ ಮೀನಿನ ರಾಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು. ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು - ಯಕೋಬ ಮತ್ತು ಯೊವಾನ್ನರು - ಹಾಗೆಯೇ ಬೆರಗಾಗಿದ್ದರು ಆಗ ಯೇಸು ಸಿಮೋನನಿಗೆ, "ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ," ಎಂದರು. ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನು ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಮನಸಿಗೊಂದಿಷ್ಟು : ರಾತ್ರಿಯೆಲ್ಲಾ ಬಲೆ ಹಾಕಿ ಮೀನು ಸಿಗದಿದ್ದರೂ ಯೇಸುವಿನ ಒಂದು ಮಾತಿಗೆ ಮತ್ತೆ ಬಲೆ ಹಾಕಿ ರಾಶಿ ಮಾಡಿಕೊಂಡ ಪೇತ್ರ. ನಂತರ ಯೇಸುವಿನ ಒಂದೇ ಒಂದು ಕರೆಗೆ ಎಲ್ಲವನ್ನು ಬಿಟ್ಟು ಪೇತ್ರ ತೋರಿದ ಬದ್ಧತೆ ಅಸಮಾನ್ಯ. ಶ್ರೀಮಂತರಾಗಿದ್ದ ಯಕೋಬ ಯೊವಾನ್ನ ಸಹೋದರರೂ ಇದೇ ಕತೆ. ಆದರಿಂದಲೇ ಆ ಪ್ರೇಷಿತರ ಹೆಸರು, ಕಾರ್ಯಗಳು 2000 ವರ್ಷಗಳ ನಂತರವೂ ಅಮರರಾಗಿ ಉಳಿದಿವೆ.

ಪ್ರಶ್ನೆ:  ಪೇತ್ರ, ಯೊವಾನ್ನ, ಯಕೋಬರ ಸ್ಥಾನದಲ್ಲಿ ನಾನಿದಿದ್ದರೆ ಯೇಸುವಿನ ಕರೆಗೆ ನನ್ನ ಪ್ರತಿಕ್ರಿಯೆ ಏನಿರುತಿತ್ತು?

No comments:

Post a Comment