ಮೊದಲನೇ ವಾಚನ: ಆದಿಕಾಂಡ 1:20-2:4
ಆಮೇಲೆ ದೇವರು, "ಹಲವಾರು ಜಲ ಜಂತುಗಳು ನೀರಿನಲ್ಲಿ ತಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ," ಎಂದರು. ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳಸಕಲವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು. ಅವುಗಳಿಗೆ ದೇವರು, "ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ," ಎಂದುಹೇಳಿ ಆಶೀರ್ವದಿಸಿದರು. ಹೀಗೆ ಬೈಗೂ ಬೆಳಗೂ ಆಗಿ ಐದನೆಯ ದಿನ ಆಯಿತು. ಆ ಬಳಿಕ ದೇವರು, "ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ, ದೊಡ್ಡ - ಚಿಕ್ಕ ಸಾಕುಪ್ರಾಣಿಗಳೂ ಕಾಡು ಮೃಗಗಳೂ ಹುಟ್ಟಲಿ," ಎಂದರು. ಅಂತೆಯೇ ಆಯಿತು. ಎಲ್ಲ ತರದ ದೊಡ್ಡ - ಚಿಕ್ಕ ಕಾಡು ಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು ಅದಾದನಂತರ ದೇವರು, "ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ, ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ," ಎಂದರು. ಹೀಗೆ ದೇವರು; ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ, ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ, ಸೃಷ್ಟಿದರವರನ್ನು ಸ್ತ್ರೀಪುರುಷರನ್ನಾಗಿ. ಅವರನ್ನು ದೇವರು ಆಶೀರ್ವಧಿಸಿ, "ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯುವಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ. ಇನ್ನೂ, ಭೂಮಿಯಲ್ಲಿರುವ ಎಲ್ಲ ದವಸ ಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ನಿಮಗೆ ಅಹಾರವಾಗಿ ಕೊಟ್ಟಿದ್ದೇನೆ. ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಅಹಾರವಾಗಿ ಕೊಟ್ಟಿದ್ದೇನೆ," ಎಂದು ಹೇಳಿದರು. ಹಾಗೆಯೇ ಅಯಿತು. ತಾವುಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು. ಪರಲೋಕ--ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು.ದೇವರುತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು. ಇತಿ, ಪರಲೋಕ - ಭೂಲೋಕಗಳ ನಿರ್ಮಣ ಚರಿತ್ರೆ.
ಕೀರ್ತನೆ: 8:4-5, 6-7, 8-9
ಶ್ಲೋಕ: ಹರಡಿದೆ ಪ್ರಭೂ, ನಿನ್ನ ಸಿರಿನಾಮ ಜಗದಾದ್ಯಂತ
ಶುಭಸಂದೇಶ: ಮಾರ್ಕ 7:1-13
ಒಮ್ಮೆ ಫರಿಸಾಯರು ಮತ್ತು ಜೆರುಸಲೇಮಿನಿಂದ ಕೆಲವು ಮಂದಿ ಧರ್ಮಶಾಸ್ತ್ರಿಗಳು ಯೇಸುಸ್ವಾಮಿಯ ಬಳಿಗೆ ಬಂದು ಸೇರಿದರು. ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಅವರು ನೋಡಿದರು. ಫರಿಸಾಯರು ಇತರ ಯೆಹೂದ್ಯರಂತೆ ಕೈಗಳನ್ನು ವಿಧಿ ಬದ್ಧವಾಗಿ ತೊಳೆಯದೆ ಊಟ ಮಾಡುವುದಿಲ್ಲ. ಇದು ಅವರ ಪೂರ್ವಜರಿಂದ ಬಂದ ಸಂಪ್ರದಾಯ. ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನ ಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ಧವಾಗಿ ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದವು. ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, "ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟ ಮಾಡುತ್ತಿದ್ದಾರಲ್ಲಾ?" ಎಂದು ಯೇಸುವನ್ನು ಕೇಳಿದರು. ಅದಕ್ಕೆ ಯೇಸು, "ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನ್ನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವ ವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.' "ನೀವು ದೇವರ ಆಜ್ಞೆಗಳನ್ನು ತೊರೆದು ಮಾನವ ನಿರ್ಮಿತ ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ! "ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು." ಎಂಬುದು ಮೋಶೆ ವಿಧಿಸಿದ ಆಜ್ಞೆ, ನೀವಾದರೋ, ಒಬ್ಬನು ತನ್ನ ತಂದೆಗೆ ಅಥವಾ ತಾಯಿಗೆ 'ನನ್ನಿಂದ ನಿಮಗೆ ಸಲ್ಲತಕ್ಕದ್ದು "ಕೊರ್ಬಾನ್" (ಎಂದರೆ ದೇವರಿಗೆ ಮುಡಿಪು) ಎಂದು ಹೆಳಿಬಿಟ್ಟರೆ ಸಾಕು. ಮುಂದೆ ಅವನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನೂ ಮಾಡುವುದಕ್ಕೆ ನೀವು ಬಿಡುವುದಿಲ್ಲ. ಹೀಗೆ ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ. ಇಂಥಾ ಕೃತ್ಯಗಳು ಇನ್ನೆಷ್ಟೋ!"
ಮನಸಿಗೊಂದಿಷ್ಟು : ನಾವೆಲ್ಲರೂ ನಮಗಾಗಿ ಶ್ರೇಷ್ಟವಾದುದ್ದನ್ನೇ
ಬಯಸುತ್ತೇವೆ. ಆದರೆ ಯೇಸು ನಮ್ಮ ಹೃದಯಗಳು ಶ್ರೇಷ್ಟವಾಗಬೇಕೆಂದು ಬಯಸುತ್ತಾರೆ. ಫರಿಸಾಯರ ಮುಂದೆ
ಹಾಗೂ ಅವರ ಮಾನವ ಕಲ್ಪಿತ ಆಚರಣೆಗಳ ಸಾಮಾನ್ಯರಲ್ಲಿ ಸಾಮಾನ್ಯರಾಗಿದ್ದ ತಮ್ಮ ಶಿಷ್ಯರನ್ನು ಬಿಟ್ಟುಕೊಡದೆ
ಅವರ ಮುಗ್ದತೆಯನ್ನು ಸಮರ್ಥಿಸಿಕೊಳ್ಳುತ್ತಾರೆ.
ಪ್ರಶ್ನೆ : ನಮ್ಮದು ಆ ಫರಿಸಾಯರಂತೆ ಕೇವಲ ಮಾನವ ಕಲ್ಪಿತ ಆಚರಣೆಗಳಿಗೆ
ಕಟ್ಟು ಬಿದ್ದ ಶ್ರೇಷ್ಟತೆಯ ವ್ಯಸನದ ಮನಸೇ ಅಥವಾ ಯೇಸುವನ್ನು ಮೆಚ್ಚಿಸಬಹುದಾದ ದೈವ ಸಂಕಲ್ಪಿತ ನಡಿಗೆಯೇ?
No comments:
Post a Comment