14.02.2019 - ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು

ಮೊದಲನೇ ವಾಚನ: ಆದಿಕಾಂಡ 2:18-25

ಆನಂತರ ದೇವರಾದ ಸರ್ವೇಶ್ವರ, "ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿ ಮಾಡುವೆನು," ಎಂದರು. ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆನರು ಆಯಿತು. ಹೀಗೆ ಮನುಷ್ಯನು ಎಲ್ಲ ಸಾಕು ಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡು ಮೃಗಗಳಿಗೂ ಹೆಸರಿಟ್ಟನು; ಆದರೆ ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ. ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು. ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಬರಮಾಡಿದರು. ಅವನು ಆಕೆಯನ್ನು ನೋಡಿ ಹೀಗೆಂದನು: 'ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು, ನನ್ನೊಡಲಿನ ಒಡಲು; ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು." ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು. ಆ ಸ್ತ್ರಿ ಪುರುಷರಿಬ್ಬರೂ ಬೆತ್ತಲೆ ಆಗಿದ್ದರೂ ನಾಚಿಕೊಳ್ಳಲಿಲ್ಲ.

ಕೀರ್ತನೆ: 128:1-2, 3, 4-5

ಶ್ಲೋಕ: ಧನ್ಯನು ಪ್ರಭುವಿನಲಿ ಭಯಭಕ್ತಿಯುಳ್ಳವನು

ಶುಭಸಂದೇಶ: ಮಾರ್ಕ 7:24-30

ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪಟ್ಟಣಗಳ ಸಮೀಪವಿದ್ದ ಪ್ರದೇಶಕ್ಕೆ ಹೋಗಿ ಒಂದು ಮನೆಯಲ್ಲಿ ಇಳಿದುಕೊಂಡರು. ತಾವು ಜನರ ಕಣ್ಣಿಗೆ ಬೀಳಬಾರದೆಂಬುದು ಅವರ ಇಚ್ಛೆಯಾಗಿದ್ದರೂ ಅದು ಸಾಧ್ಯವಾಗಲಿಲ್ಲ. ಹೊರನಾಡಾದ ಸಿರಿಯ ದೇಶದ ಫೆನಿಷ್ಯ ಪ್ರಾಂತ್ಯಕ್ಕೆ ಸೇರಿದ ಗ್ರೀಕ್ ಮಹಿಳೆಯೊಬ್ಬಳು ಅವರ ವಿಷಯವನ್ನು ಕೇಳಿ, ಒಡನೆ ಅಲ್ಲಿಗೆ ಬಂದು ಅವರ ಪಾದಕ್ಕೆರಗಿದಳು ಆಕೆಯ ಚಿಕ್ಕಮಗಳಿಗೆ ದೆವ್ವ ಹಿಡಿದಿತ್ತು. ತನ್ನ ಮಗಳಿಂದ ಪಿಶಾಚಿಯನ್ನು ಹೊರಗಟ್ಟಬೇಕಂದು ಆಕೆ ಯೆಸುವನ್ನು ಬೇಡಿಕೊಂಡಳು. ಆದರೆ ಯೇಸು ಆಕೆಗೆ, "ಮೊದಲು ಮಕ್ಕಳು ತಿಂದು ತೃಪ್ತಿಪಡೆಯಲಿ, ಮಕ್ಕಳ ಅಹಾರವನ್ನು ನಾಯಿಗಳಿಗೆ ಎಸೆಯುವುದು ಸರಯಲ್ಲ," ಎಂದರು. ಅದಕ್ಕೆ ಆಕೆ, "ಅದು ನಿಜ ಸ್ವಾಮೀ; ಆದರೂ ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ? ಎಂದಳು. ಆಕೆಯ ಮಾತುಗಳನ್ನು ಕೇಳಿ ಯೇಸು, "ಚೆನ್ನಾಗಿ ಹೇಳಿದೆ, ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ," ಎಂದರು. ಆಕೆ ಮನೆಗೆ ಹೋದಾಗ, ಮಗಳು ಹಾಸಿಗೆಯ ಮೇಲೆ ಸುಖವಾಗಿ ಮಲಗಿರುವುದನ್ನು ಕಂಡಳು. ದೆವ್ವ ಅವಳನ್ನು ಬಿಟ್ಟುಹೋಗಿತ್ತು.

ಮನಸಿಗೊಂದಿಷ್ಟು :  ಇಂದಿನ ಶುಭ ಸಂದೇಶದಲ್ಲಿನ ಮಹಿಳೆ ಅಂದಿನ ಅನ್ಯ ಧರ್ಮಿಯ ವಿಶ್ವಾಸಿಗಳ ಪ್ರತೀಕವಾಗಿ ನಿಲ್ಲುತ್ತಾಳೆ. ಜೀವದಾಯಕ ರೊಟ್ಟಿ ಬಳಿಯಲ್ಲೇ ಇದ್ದರೂ  ಕಾಣದಂತಿದ್ದ ದೇವರ ಸ್ವಂತ ಜನರಾದ ಯೆಹೂದ್ಯರ ನಡುವೆ ಚೂರುಪಾರಲ್ಲೇ ಯೇಸುವಿನಿಂದ ಭಾಗ್ಯ ಪಡೆದ ಆ ಮಹಿಳೆ ನಮಗೆ ಆದರ್ಶವಾಗತ್ತಾಳೆ. 

ಪ್ರಶ್ನೆ : ನಮ್ಮದು ವಿಶ್ವಾಸದಿಂದ ಮಗಳನ್ನು ಗುಣಪಡಿಸಿಕೊಂಡ ಮಹಿಳೆಯ ಮನಸೇ ಅಥವಾ  ನಿರಾಸಕ್ತಿಯ ಯಹೂದ್ಯರದೇ?    

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...