ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

15.02.2019 - "ಎಪ್ಪಥಾ " ಎಂದರೆ 'ತೆರೆಯಲಿ'

ಮೊದಲನೇ ವಾಚನ: ಆದಿಕಾಂಡ 3:1-8

ಸರ್ವೇಶ್ವರನಾದ ದೇವರು ಉಂಟುಮಾಡಿದ ಭೂಜಂತುಗಳಲ್ಲಿ ಅತಿಯುಕ್ತಿ ಉಳ್ಳದ್ದು ಸರ್ಪ, ಅದು ಮಹಿಳೆಯ ಬಳಿಗೆ ಬಂದು, "ಏನಮ್ಮಾ ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಕೂಡದು ಎಂದು ದೇವರು ಆಜ್ಞೆ ಮಾಡಿರುವುದು ನಿಜವೋ"? ಎಂದು ಕೇಳಿತು. ಅದಕ್ಕೆ ಅ ಮಹಿಳೆ, "ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು; ಆದರೆ ಅದರ ನಡುವೆಯಿರುವ ಈ ಮರದ ಹಣ್ಣನ್ನು ಮಾತ್ರ ತಿನ್ನಲೂ ಕೂಡದು, ಮುಟ್ಟಲೂ ಕೂಡದು. "ತಿಂದರೆ ಸಾಯುವಿರಿ' ಎಂದು ದೇವರು ಹೇಳಿದ್ದಾರೆ" ಎಂದು ಉತ್ತರ ಕೊಟ್ಟಳು. ಆಗ ಆ ಸರ್ಪ, "ಆ ಮಾತು ನಿಜವಲ್ಲ, ನೀವು ಸಾಯುವುದು ಸುಳ್ಳು ಇದರ ಹಣ್ಣನ್ನು ತಿಂದ ಕೂಡಲೆ ನಿಮ್ಮ ಕಣ್ಣುಗಳು ತೆರೆಯುವುವು. ನೀವು ದೇವರಂತೆ ಆಗಿ ಒಳಿತು - ಕೆಡುಕುಗಳನ್ನರಿತ ಜ್ಞಾನಿಗಳು ಆಗಿಬಿಡುವಿರಿ. ಇದು ದೇವರಿಗೆ ಚೆನ್ನಾಗಿ ಗೊತ್ತುಂಟು," ಎಂದಿತು. ಆಗ ಆ ಮಹಿಳೆ, "ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ, ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ" ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು. ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತೆಲೆ ಆಗಿದ್ದೇವೆಂದು ತಿಳಿದು ಅವರು ಅಂಜೂರದ ಎಲೆಗಳನ್ನು ಹೊಲಿದು ಉಟ್ಟುಕೊಂಡರು. ಅಂದು, ಸಂಜೆಯ ತಂಗಾಳಿಯಲ್ಲಿ, ಸರ್ವೇಶ್ವರನಾದ ದೇವರು ತೋಟದೊಳಗೆ ಸಂಚರಿಸುವ ಸಪ್ಪಳವು ಕೇಳಿಸಿತು. ಅವರಿಗೆ ಕಾಣಿಸಿಕೊಳ್ಳಬಾರದೆಂದು ಆದಾಮನೂ ಹವ್ವಳೂ ಹಿಂದೆ ಅವಿತುಕೊಂಡರು.

ಕೀರ್ತನೆ: 32:1-2, 5, 6-7

ಶ್ಲೋಕ: ಯಾರ ದ್ರೋಹ ವಿಮೋಚನೆಯಾಗಿದೆಯೋ ಅವರೇ ಧನ್ಯರು

ಶುಭಸಂದೇಶ: ಮಾರ್ಕ 7:31-37

ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಸಿದೋನಿನ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲೇಯ ಸರೋವರದ ತೀರಕ್ಕೆ ಹಿಂದಿರುಗಿದರು ಮಾತನಾಡಲಾಗದ ಒಬ್ಬ ಕಿವುಡನನ್ನು ಜನರು ಅವರ ಬಳಿಗೆ ಕರೆತಂದರು. ಅವನ ಮೇಲೆ ಕೈಗಳನ್ನಿಡಬೇಕೆಂದು ಬೇಡಿಕೊಂಡರು. ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದೊಯ್ದು, ತಮ್ಮ ಬೆರಳುಗಳನ್ನು ಅವನ ಕಿವಿಯೊಳಗೆ ಇಟ್ಟರು. ತಮ್ಮ ಉಗುಳಿನಿಂದ ಅವನ ನಾಲಿಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೀರ್ಘವಾಗಿ ಉಸಿರೆಳೆದು, "ಎಪ್ಪಥಾ " ಎಂದರೆ 'ತೆರೆಯಲಿ'  ಎಂದರು. ತಕ್ಷಣವೇ ಅವನ ಕಿವಿಗಳು ತೆರೆದವು; ನಾಲಿಗೆಯ ಬಿಗಿ ಸಡಿಲಗೊಂಡಿತು; ಅವನು ಸರಾಗವಾಗಿ ಮಾತನಾಡತೊಡಗಿದನು. ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಜನರಿಗೆ ಕಟ್ಟಪ್ಪಣೆ ಮಾಡಿದರು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಆಸಕ್ತಿಯಿಂದ ಈ ಕಾರ್ಯವನ್ನು ಪ್ರಚಾರ ಮಾಡಿದರು. ಎಲ್ಲರೂ ಆಶ್ಚರ್ಯಭರಿತರಾಗಿ, "ಇವರು ಎಲ್ಲಾ ಕಾರ್ಯಗಳನ್ನು ಚೆನ್ನಾಗಿ  ಮಾಡುತ್ತಾರೆ: ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!" ಎಂದುಕೊಳ್ಳುತ್ತಿದ್ದರು.

ಮನಸಿಗೊಂದಿಷ್ಟು :  ಇಂದಿನ ಶುಭಸಂದೇಶದಲ್ಲಿ ಮಾತನಾಡಲಾಗದ ಕಿವುಡನಂಥ ಪರಿಸ್ಥಿತಿ ನಮ್ಮಲ್ಲಿ ಎಷ್ಟೋ ಜನರದು. ದೈವ ವಾಕ್ಯಗಳಿಗೆ ಕಿವುಡಾಗಿ, ದೈವ ವಾಕ್ಯವನ್ನು ಯಾವುದೇ ರೀತಿಯಲ್ಲಿ ಸಾರದ ಮೂಕರಂತ ಬಾಳು ನಮ್ಮದು. ಅವನನ್ನಾದರೂ ಜನರು ಯೇಸುವಿನ ಬಳಿಗೆ ಕರೆತಂದರು. ಆದರೆ ನಾವು ನಮ್ಮ ಪಾಪಗಳಿಂದ ದೂರ ದೂರ ಹೋಗುತ್ತಲೇ ಇದ್ದೇವೆ . 

ಪ್ರಶ್ನೆ : ಯೇಸು 'ಎಪ್ಪಾಥಾ' ಎನ್ನಲು ತುದಿಗಾಲಿನಲ್ಲಿದ್ದಾರೆ, ನಾವು ಗುಣಮುಖರಾಗಲು ಸಿದ್ಧವಿದ್ದೇವೆಯೇ?

No comments:

Post a Comment