ಮೊದಲನೇ ವಾಚನ: ಹಿಬ್ರಿಯರಿಗೆ: 11:1-7
ವಿಶ್ವಾಸವೆಂಬುದು ನಾವು ನಿರೀಕ್ಷಿಸುವಂಥವುಗಳು ನಮಗೆ ದೊರೆಯುತ್ತವೆ ಎಂಬ ದೃಢನಂಬಿಕೆ ಹಾಗು ಕಣ್ಣಿಗೆ ಕಾಣದಂಥವುಗಳು ನಿಶ್ಚಯವಾದವು ಎಂಬ ನಿಲುವು ಆಗಿದೆ. ನಮ್ಮ ಪೂರ್ವಜರು ದೈವಸಮ್ಮತಿಯನ್ನು ಪಡೆದದ್ದು ವಿಶ್ವಾಸದಿಂದಲೇ; ವಿಶ್ವವು ದೇವರ ವಾಣಿಯಿಂದ ಉಂಟಾಯಿತು ಎಂಬುದನ್ನು ಮತ್ತು ಗೋಚರವಾದುವುಗಳು ಅಗೋಚರವಾದವುಗಳಿಂದ ಉಂಟಾದವು ಎಂಬುದನ್ನು ವಿಶ್ವಾಸದಿಂದಲೇ ತಿಳಿಯುತ್ತೇವೆ. ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ. ವಿಶ್ವಾಸವಿದ್ದುದರಿಂದಲೇ ಹನೋಕನು ಮೃತ್ಯುವಿಗೆ ತುತ್ತಾಗದಂತೆ ದೇವರ ಬಳಿಗೆ ಒಯ್ಯಲ್ಪಟ್ಟನು. ದೇವರು ಅತನನ್ನು ಕರೆದುಕೊಂಡಿದ್ದರಿಂದ ಆತನು ಯಾರಿಗೂ ಕಾಣಸಿಗಲಿಲ್ಲ. ಆತನು ಹೀಗೆ ಒಯ್ಯಲ್ಪಡುವುದಕ್ಕೆ ಮುಂಚೆ ದೇವರಿಗೆ ಮೆಚ್ಚುಗೆಯಾಗಿದ್ದನು ಎಂಬುದಕ್ಕೆ ಸಾಕ್ಷ್ಯಾಧಾರವಿದೆ. ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವುದೆಂದು ನಂಬಬೇಕು. ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಧಕ್ಕೆ ಭಾಧ್ಯಸ್ಥನಾದನು.
ಕೀರ್ತನೆ: 145: 2-3, 4-5, 10-11
ಶ್ಲೋಕ: ಪ್ರಭು ನಿನ್ನನ್ನು ಸ್ತುತಿಪುದು ಸೃಷ್ಟಿಯೆಲ್ಲವು, ಕೊಂಡಾಡುವುದು ನಿನ್ನ ಭಕ್ತ ಸಮೂಹವು.
ಶುಭಸಂದೇಶ: ಮಾರ್ಕ 9:2-13
ಆರು ದಿನಗಳ ಬಳಿಕ ಪೇತ್ರ, ಯಕೋಬ ಮತ್ತು ಯೊವಾನ್ನ ಇವರನ್ನು ಮಾತ್ರ ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಯೇಸು ರೂಪಾಂತರ ಹೊಂದಿದರು. ಆಗ ಅವರ ಉಡುಪು ಅತ್ಯಂತ ಶುಭ್ರವಾಗಿ ಹೊಳೆಯಿತು. ಜಗದ ಯಾವ ಅಗಸನಿಂದಲೂ ಮಡಿ ಮಾಡಲಾಗದಷ್ಟು ಅದು ಬಿಳುಪಾಗಿತ್ತು. ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಶಿಷ್ಯರಿಗೆ ಕಾಣಿಸಿತು. ಆಗ ಪೇತ್ರನು ಯೇಸುವಿಗೆ, "ಗುರು ದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು; ತಮಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು," ಎಂದನು. ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದೇ ತಿಳಿಯಲಿಲ್ಲ. ಶಿಷ್ಯರು ಅಷ್ಟು ಭಯಭ್ರಾಂತರಾಗಿದ್ದರು! ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, "ಈತನು ನನ್ನ ಪುತ್ರ ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ," ಎಂಬ ವಾಣಿ ಕೇಳಿಸಿತು. ತಕ್ಷಣ, ಶಿಷ್ಯರು ಸತ್ತಲು ನೋಡಲು ತಮ್ಮೊಂದಿಗೆ ಯೇಸುವೊಬ್ಬರನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.
ಅನಂತರ ಯೇಸು ಮತ್ತು ಅವರ ಶಿಷ್ಯರು ಬೆಟ್ಟದಿಂದ ಇಳಿದು ಬರುವಾಗ, "ನರಪುತ್ರನು ಸತ್ತು ಪುನರುತ್ದಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿ," ಎಂದು ಆಜ್ಞಾಪಿಸಿದರು. ಅಂತೆಯೇ ಶಿಷ್ಯರು ಇದನ್ನು ಯಾರಿಗೂ ಹೇಳಲಿಲ್ಲ; ಆದರೂ "ಸತ್ತು ಪುನರುತ್ದಾನ ಹೊಂದುವುದು' ಎಂದರೆ ಏನು? ಎಂದು ತಮ್ಮ ತಮ್ಮೊಳಗೆ ಚರ್ಚಿಸಿಕೊಂಡರು. ಅನಂತರ, "ಎಲೀಯನು ಮೊದಲು ಬರಬೇಕಾದುದು ಅಗತ್ಯವೆಂದು ಶಾಸ್ತ್ರಜ್ಞರು ಹೇಳುತ್ತಾರಲ್ಲಾ, ಅದು ಹೇಗೆ" ಎಂದು ಶಿಷ್ಯರು ಯೇಸುವನ್ನು ಕೇಳಿದರು. ಅದಕ್ಕೆ ಅವರು, "ಎಲೀಯನು ಮೊದಲು ಬಂದು ಎಲ್ಲವನ್ನೂ ಸಜ್ಜುಗೊಳಿಸುವನೆಂಬುದೇನೋ ನಿಜ. ಆದರೂ ನರಪುತ್ರನು ಜನರಿಂದ ತೀವ್ರ ಯಾತನೆಯನ್ನು ಅನುಭವಿಸಿ ಅವರಿಂದ ತಿರಸ್ಕೃತನಾಗಬೇಕು," ಎಂದು ಪವಿತ್ರಗ್ರಂಥದಲ್ಲಿ ಬರೆದಿದೆಯಲ್ಲವೆ; ಇದು ಹೇಗೆ? ಆದರೆ ನಾನು ನಿಮಗೆ ಹೇಳುವುದೇನೆಂದರೆ, 'ಎಲೀಯನು ಬಂದಾಗಿದೆ; ಆತನ ವಿಷಯವಾಗಿ ಮೊದಲೇ ಬರೆದಿರುವಂತೆ ಜನರು ತಮ್ಮ ಇಚ್ಚಾನುಸಾರ ಆತನನ್ನು ಹಿಂಸಿಸಿದ್ದೂ ಆಗಿದೆ," ಎಂದರು.
ಮನಸಿಗೊಂದಿಷ್ಟು : ಅಂದು ಆ ಬೆಟ್ಟದಲ್ಲಿ ಅದದ್ದು ಯೇಸುವಿಗೆ ಒಂದು ರೀತಿಯ ಅನುಭವವಾದರೆ, ಶಿಷ್ಯರಿಗಾದರೋ ಮತ್ತೊಂದು ರೀತಿಯ ಅನುಭವ. ಅಲ್ಲಿ ಏನಾಗುತ್ತಿದೆ, ಏನಾಯಿತು ಎಂದು ತಿಳಿಯದೆ ಗೊಂದಲದಲ್ಲಿದ್ದರೂ, ಅದು ಅವರ ಮುಂದಿನ ಹೆಜ್ಜೆಗಳಿಗೆ ಒಂದು ಅಸ್ಪಷ್ಟ ಮುನ್ನುಡಿಯಾಯಿತು. ಆ ಗೊಂದಲದ ಅನುಭವವೇ ಮುಂದೆ ಸ್ಪಷ್ಟ ರೂಪವನ್ನು ಪಡೆಯಿತು. ನಮ್ಮ ಬಾಳಿನಲ್ಲೂ ಅದೆಷ್ಟೋ ಬಾರಿ ನಾವು ಗೊಂದಲಗಳಲ್ಲಿದ್ದರೂ ವಿಶ್ವಾಸ ನಮ್ಮನ್ನು ದಡ ಸೇರಿಸುತ್ತದೆ.
ಪ್ರಶ್ನೆ : ನಮ್ಮ ಅಸ್ಪಷ್ಟ ಕ್ಷಣಗಳಲ್ಲಿ ಕ್ರಿಸ್ತ ನಮಗೆಷ್ಟು ಆಪ್ತ?
No comments:
Post a Comment