ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

09.03.2019 - "ನನ್ನನ್ನು ಹಿಂಬಾಲಿಸು,"

ಮೊದಲನೇ ವಾಚನ: ಯೆಶಾಯ 58:9-14
ರ್ವೇಶ್ವರ ಇಂತೆನ್ನುತ್ತಾರೆ: ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನು ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು. ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿ ಹೋಗದ ಬುಗ್ಗೆಯಂತೆಯು ನೀವು ಇರುವಿರಿ. ಪುರಾತನ ಕಾಲದ ಪಾಳು ಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. "ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ, ಹಳೆಯ ದಾರಿಗಳನ್ನು ಸರಾಗಮಾಡಿದ ರಾಷ್ಟ್ರ" ಎಂಬ ಬಿರುದು ನಿಮಗೆ ಬರುವುದು.  ನೀವು ಸಬ್ಬತ್ ದಿನವನ್ನು ತಾತ್ಪಾರ ಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆ ಮಾತುಗಳಲ್ಲಿ  ಕಾಲ ಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್ ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು  ಸನ್ಮಾನಿಸಿದ್ದೆ  ಆದರೆ ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತ ಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಂತಕವಾಗಿ ಅನುಭವಿಸುವಂತೆ ಮಾಡುವೆನು," ಇದು ಸರ್ವೇಶ್ವರ ಸ್ವಾಮಿಯ ನುಡಿ.

ಕೀರ್ತನೆ: 86:1-2, 3-4,5-6

ಶ್ಲೋಕ: ನಿನ್ನ ಸತ್ಯಪಥದಲಿ ನಾ ನಡೆವಂತೆ ಬೋಧಿಸೆನಗೆ ಪ್ರಭೂ, ನಿನ್ನ ಮಾರ್ಗವನು

ಶುಭಸಂದೇಶ: ಲೂಕ 5:27-32
ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿದ್ದಾಗ ಲೇವಿ ಎಂಬ ಸುಂಕದವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತ್ತಿದ್ದನು. "ನನ್ನನ್ನು ಹಿಂಬಾಲಿಸು," ಎಂದು ಹೇಳಿ ಯೇಸು ಅವನನ್ನು ಕರೆದರು. ಲೇವಿಯು ಎದ್ದು ಎಲ್ಲವನ್ನೂ ಪರಿತ್ಯಜಿಸಿ, ಯೇಸುವನ್ನು ಹಿಂಬಾಲಿಸಿದನು. ತರುವಾಯ ಆ ಲೇವಿ ತನ್ನ ಮನೆಯಲ್ಲಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಬಹುಜನ ಸಂಕದವರೂ ಇತರರೂ ಯೇಸುವಿನ ಪಂಕ್ತಿಯಲ್ಲೇ ಊಟಕ್ಕೆ ಕುಳಿತ್ತಿದ್ದರು ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, "ನೀವು ಸುಂಕದವರ ಪಾಪಿಷ್ಟರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?" ಎಂದು ಪ್ರಶ್ನಿಸಿದರು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ, "ವೈದ್ಯನ ಅವಶ್ಯಕತೆಯಿರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ; ನಾನು ಬಂದಿರುವುದು ಧರ್ಮಿಷ್ಠರನ್ನು ಕರೆಯುವುಕ್ಕಲ್ಲ, 'ಪಶ್ಚಾತ್ತಾಪಪಟ್ಟು ಪಾಪಕ್ಕೆ  ವಿಮುಖರಾಗಿ, ದೇವರಿಗೆ ಅಭಿಮುಖಿಗಳಾಗಿರಿ' ಎಂದು ಪಾಪಿಷ್ಠರನ್ನು ಕರೆಯುವುದಕ್ಕೆ," ಎಂದರು.

ಮನಸಿಗೊಂದಿಷ್ಟು :  ಸುಂಕ ವಸೂಲಿ ಮಾಡುತ್ತಿದ್ದ, ಸುಖ ಜೀವನ ನಡೆಸುತ್ತಿದ್ದವನು ಯೇಸುವಿನ ’ಹಿಂಬಾಲಿಸು’ ಎಂಬ ಒಂದೇ ಮಾತಿಗೆ ಅವರನ್ನು ಹಿಂಬಾಲಿಸಿದನು. ನಮ್ಮದೇ ಆದ ಜಂಜಾಟದಲ್ಲಿ ಮುಳುಗಿರುವ ನಮಗೆ ಆ "ಹಿಂಬಾಲಿಸು" ಕೇಳುತ್ತಿದ್ದರೂ ಕೇಳದಂತೆ ಬಾಳುತ್ತಿದ್ದೇವೆ. ಆಧ್ಯಾತ್ಮಿಕವಾಗಿ ಬಳಲುತ್ತಿದ್ದರೂ ಲೋಕದ ಮಾನದಂಡದ ಪ್ರಕಾರ ನಮ್ಮನ್ನೇ ಆರೋಗ್ಯವಂತರೆಂದುಕೊಂಡಿದ್ದೇವೆ.
ದೇವರಿಗೆ ಅಭಿಮುಖರಾಗಬೇಕಾಗಿದೆ.

 ಪ್ರಶ್ನೆ : ನಮಗೆ ಆ ದೈವೀಕ ವೈದ್ಯನ ಅವಶ್ಯಕತೆಯಿದೆ ಎಂಬ ಅರಿವು ನಮಗಿದೆಯೇ?

No comments:

Post a Comment