ಮೊದಲನೇಯ ವಾಚನ : ಯೆಜೆಕಿಯೇಲ 18 : 21-28
"ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲ ವಿಧಿಗಳನ್ನು ಕೈಗೊಂಡು, ನ್ಯಾಯ ನೀತಿಗಳನ್ನು ನಡೆಸಿದರೆ ಸಾಯನು; ಖಂಡಿತ ಜೀವಿಸುವನು. ಅವನು ಮಾಡಿದ ಯಾವ ಅಪರಾಧವೂ ಆತನ ಲೆಕ್ಕಕ್ಕೆ ಸೇರದು. ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು. ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ. ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು. "ಆದರೆ ನೀವು, 'ಸರ್ವೇಶ್ವರನ ಕ್ರಮ ಸರಿಯಿಲ್ಲ' ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ ನನ್ನ ಕ್ರಮವು ಸರಿಯಿಲ್ಲವೇ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ. ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿಂದಲೇ ಸಾಯಬೇಕಾಯಿತು. ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು. ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ಧರಿಂದ ಸಾಯನು, ಖಂಡಿತ ಜೀವಿಸುವನು.
ಕೀರ್ತನೆ: 130: 1-2, 3-4, 5-7, 7-8
ಶ್ಲೋಕ: ಪಾಪಗಳ ನೀ ಪಟ್ಟಿ ಮಾಡಿದೆಯಾದರೆ ಪ್ರಭೂ ನಿನ್ನ ಮುಂದೆ ಯಾರು ತಾನೆ ನಿಲ್ಲಬಲ್ಲರು ವಿಭೂ?
ಶುಭಸಂದೇಶ: ಮತ್ತಾಯ 5:20-26
"ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ." "ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು' ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ: ತನ್ನ ಸೋದರನ ಮೇಲೆ (ನಿಷ್ಕಾರಣವಾಗೆ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾಣೆಗೆ ಒಳಗಾಗುವನು; 'ಮುರ್ಖ' ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು. ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಃಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ, ನಿನ್ನ ಕಾಣಿಕೆಯನ್ನು ಆ ಬಲೀಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನ ಮಾಡಿಕೊ, ಆನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು." "ನಿನ್ನ ಎದುರಾಳಿ ನಿನ್ನನ್ನು ನ್ಯಾಯ ಸ್ಥಾನಕ್ಕೆ ಎಳೆಯುವಾಗ ಮಾರ್ಗ ಮಧ್ಯೆದಲ್ಲೇ ಅವನೊಡನೆ ಬೇಗ ಸಂಧಾನ ಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೋಲೀಸರ ವಶಕ್ಕೆ ಬಿಡಬಹುದು. ಆನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು! ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿ ಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು.
ಮನಸಿಗೊಂದಿಷ್ಟು : ಯೇಸು ಇಲ್ಲಿ ಅತ್ಯಂತ ಸರಳವೂ ಆದರೆ ಕಷ್ಟವೂ ಆದ ಪರಿಹಾರವನ್ನು ಕೊಡುತ್ತಾರೆ. ಅದೆಷ್ಟೋ ದ್ವೇಷ, ಮನಸ್ತಾಪಗಳು ಮೊಳಕೆಯಲ್ಲೇ ಪರಿಹರಿಸಬಹುದಾದರೂ ಅದು ಕುಟುಂಬಗಳಿಗೆ, ಮುಂದಿನ ತಲೆ ಮಾರುಗಳಿಗೂ ಸಾಗುವುದನ್ನು ನಾವು ಕಾಣುತ್ತೇವೆ. ಭಾರತದಂತ ದೇಶದಲ್ಲಿ ಅತ್ಯಂತ ಹೆಚ್ಚಿನ ಮೊಕದೊಮ್ಮೆಗಳು ಕೇಸುಗಳು ದಾಖಲಾಗುವುದು ಹೊಲ ಗದ್ದೆಗಳ ನಡುವಿನ ದಾರಿಯ ಕಾರಣಕ್ಕೇ. ಇಲ್ಲಿ ಸೋತು ಗೆಲ್ಲುವ, ಗೆದ್ದು ಸೋಲುವ ಮಾರ್ಗ ಯೇಸುವಿನದು.
ಪ್ರಶ್ನೆ : ನಾವು ಮತ್ತೊಬ್ಬರನ್ನು ತುಚ್ಛೀಕರಿಸಿದ ಸಂದರ್ಭಗಳ ಲೆಕ್ಕ ನಮ್ಮಲ್ಲಿದೆಯೇ?
No comments:
Post a Comment