ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

20.03.2019 - "ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ"

ಮೊದಲನೇ ವಾಚನ: ಯೆರೆಮೀಯ 18:18-20

ಆಗ ಜನರು, "ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ," ಎಂದುಕೊಂಡರು. ಯೆರೆಮೀಯ: "ಸರ್ವೇಶ್ವರಾ, ನನ್ನ ಕಡೆಗೆ ಕಿವಿಗೊಡಿ. ನನ್ನೊಡನೆ ವಾದಿಸುವವರ ಮಾತನ್ನು ಗಮನಿಸಿ ನೋಡಿ. ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ಕೀರ್ತನೆ: 31:5-6, 14, 15-16

ಶ್ಲೋಕ: ಪ್ರಭೂ, ಕಾಪಾಡಲಿ ಎನ್ನನು ನಿನ್ನಂತ ಪ್ರೇಮವು

ಶುಭಸಂದೇಶ: ಮತ್ತಾಯ 20:17-28


ಯೇಸುಸ್ವಾಮಿ ಜೆರುಸಲೇಮಿನತ್ತ ಹೋಗುವಾಗ ದಾರಿಯಲ್ಲಿ, ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು, "ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯ ಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು ಆತನು ಮರಣ ದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯ ಮಾಡುವರು, ಕೊರಡೆಗಳಿಂದ ಹೊಡೆಯುವರು. ಮತ್ತು ಶಿಲುಬೆಗೇರಿಸುವರು. ಅತನಾದರೋ ಮೂರನೇ ದಿನ ಪುನರುತ್ದಾನ ಹೊಂದುವನು," ಎಂದರು. ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳು. "ತಮ್ಮಿಂದ ನನಗೊಂದು ಉಪಕಾರ ಆಗಬೇಕು," ಎಂದು ಯೇಸುಸ್ವಾಮಿಯ ಪಾದಕ್ಕೆರಗಿದಳು. "ನಿನ್ನ ಕೋರಿಕೆ ಏನು"? ಎಂದರು ಯೇಸು. ಅದಕ್ಕೆ ಅವಳು, "ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು," ಎಂದು ಕೋರಿದಳು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, "ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೇ" ಎಂದು ಪ್ರಶ್ನಿಸಿದರು. "ಹೌದು ಆಗುತ್ತದೆ," ಎಂದು ಅವರು ಮರು ನುಡಿದರು. ಆಗ ಯೇಸು "ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ, ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧ ಮಾಡಲಾಗಿದೆಯೋ ಅವರಿಗೇ ಸಿಗುವುದು." ಎಂದು ನುಡಿದರು. ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು. ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, "ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ. ಇದು ನಿಮಗೆ ಗೊತ್ತು. ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ. ಹಾಗೆಯೇ ನರಪುತ್ರನು  ಸೇವೆ ಸೇವೆ ಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ  ಬಂದಿದ್ದಾನೆ," ಎಂದು ಹೇಳಿದರು.

ಮನಸಿಗೊಂದಿಷ್ಟು : " ಎಲ್ಲರಿಗೂ ಸ್ವರ್ಗ ಬೇಕು, ಆದರೆ ಸಾಯಲು ಯಾರೂ ಸಿದ್ದರಿಲ್ಲ", ಎನ್ನುತ್ತಾನೆ ಚಿಂತಕನೊಬ್ಬ. ತನ್ನ ಮಕ್ಕಳಿಗೆ ಒಳಿತನ್ನು ಬಯಸುವ ಒಬ್ಬ ತಾಯಿಯ ಸಹಜ ಪ್ರೀತಿಯನ್ನು ಇಂದಿನ ಶುಭ ಸಂದೇಶದಲ್ಲಿ ಕಾಣುತ್ತೇವೆ. ಆದರೆ ಅದಕ್ಕೆ ಮೀರಿದ ಉದಾತ್ತವಾದ ಸಂದೇಶ ಕ್ರಿಸ್ತನದು. ಶ್ರೇಷ್ಠನಾಗ ಬಯಸುವವನು ಸೇವಕನಾಗಲಿ, ಪ್ರಥಮನು ದಾಸನಾಗಿರಲಿ ಎನ್ನುತ್ತಾರೆ ಯೇಸು. ಹೇಳುವುದು ಮಾತ್ರವಲ್ಲದೆ ತಾವೇ ಅದರಂತೆ ನಡೆದುಕೊಳ್ಳುತ್ತಿದ್ದಾರೆ. ಸೇವೆಗೆ, ನಮ್ರತೆಗೆ ನಮಗೆ ಇದಕ್ಕಿಂತ ಪ್ರೇರಣೆ ಬೇಕೆ?

ಪ್ರಶ್ನೆ :  ’ದಾಸನಾಗಿರು’ ಎಂಬ ಯೇಸುವಿನ ವಾಕ್ಯಕ್ಕೆ ನಾವೆಷ್ಟು ಬದ್ಧ?

No comments:

Post a Comment