ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

30.03.2019 - ನನಗೆ ಬೇಕಾದುದು ದೈವಜ್ಞಾನ, ದಹನ ಬಲಿದಾನವಲ್ಲ.

ಮೊದಲನೇ ವಾಚನ: ಹೊಶೇಯ 6:1-6

ಸರ್ವೇಶ್ವರ ಇಂತೆನ್ನುತ್ತಾರೆ; ನನ್ನನ್ನು ಜನರು ಮರೆ ಹೋಗುತ್ತಾ ಹೀಗೆನ್ನುವರು: "ಬನ್ನಿ ಸರ್ವೇಶ್ವರ ಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು. ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು. ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು." ಆದರೆ ಸರ್ವೇಶ್ವರ ಹೇಳುವುದೇನೆಂದರೆ: "ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗದ ಇಬ್ಬನಿಯಂತಿದೆ. ಖಂಡ ತುಂಡವಾದ ತೀರ್ಪು ನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯ ದಂಡನೆ ಮಿಂಚಿನಂತೆ ಹೊರಡುವುದು. ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನ ಬಲಿದಾನವಲ್ಲ.

ಕೀರ್ತನೆ: 51:3-4, 18-19, 20-21

ಶ್ಲೋಕ: ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ

ಶುಭಸಂದೇಶ: ಲೂಕ 18:9-14

ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು:  "ಒಮ್ಮೆ, ಇಬ್ಬರು ಪ್ರಾರ್ಥನೆ ಮಾಡಲು ದೇವಾಲಯಕ್ಕೆ ಹೋದರು. ಇವರಲ್ಲಿ ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕ ವಸೂಲಿಯವನು. ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆ ಮಾಡಿದ: "ಓ ದೇವರೇ, ನಾನು ಇತರರ ಹಾಗೆ ಅಲ್ಲ ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೆನೆ;. ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ.'  "ಸುಂಕ ವಸೂಲಿಯವನಾದರೋ ದೂರದಲ್ಲೆ ನಿಂತು, ತಲೆಯನ್ನು ಮೇಲಕ್ಕೆ ಎತ್ತದೆ, 'ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ," ಎನ್ನುತ್ತಾ ಎದೆ ಬಡಿದುಕೊಂಡ. "ದೇವರ ದೃಷ್ಟಿಯಲ್ಲಿ ಪಾಪ ಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕ ವಸೂಲಿಯವನು, ಆ ಫರಿಸಾಯನಲ್ಲ. ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನ ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು," ಎಂದರು ಯೇಸು.

ಮನಸಿಗೊಂದಿಷ್ಟು : ತಪ್ಪು ಕಾರಣಗಳಿಗೆ ದೇವರನ್ನು ವಂದಿಸುವುದಕ್ಕೆ ಒಂದು ಉದಾಹರಣೆಯನ್ನು ಇಂದಿನ ಶುಭಸಂದೇಶದಲ್ಲಿ ಕಾಣಬಹುದು. ನಾವು ಇತರರಿಗಿಂತ ಮೇಲು, ನಮ್ಮ ಜೀವನ, ಪರಿಸ್ಥಿತಿ ಇತರರಿಗಿಂತ ಚೆನ್ನಾಗಿದೆ ಎನ್ನುತ್ತಾ ಅದಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುವುದು ಅಮಾನವೀಯ. ನಾವು ಅದೆಷ್ಟೇ ಇತರರಿಗಿಂತೆ ಮೇಲು ಅಂದುಕೊಂಡರೂ ದೇವರ ಕಣ್ಣಲ್ಲಿ ನಮ್ಮ ಸ್ಥಾನವೇನು ಎಂಬುದೇ ಅಂತಿಮ. ಆ ’ಅಂತಿಮ’ ಒಪ್ಪಿಗೆಯತ್ತ ನಮ್ಮ ಬಾಳು, ಚಿತ್ತ ಹರಿಯಲಿ.

ಪ್ರಶ್ನೆ : ನಮ್ಮ ಅಂತರಂಗವನ್ನು ಬಲ್ಲ ದೇವರ ಮುಂದೆ ನಾವೆಷ್ಟು ಎತ್ತರ?

No comments:

Post a Comment