15.05.2019 - "ಪಿತನು ಹೇಳಿದಂತೆಯೇ ನಾನು ಮಾತನಾಡುತ್ತೇನೆ"

ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 12:24-13:5

ದೇವರ ಶುಭಸಂದೇಶವಾದರೋ ಹಬ್ಬಿ ಹರಡತೊಡಗಿತು. ಬಾರ್ನಬ ಮತ್ತು ಸೌಲನು ತಮ್ಮ ಧರ್ಮಕಾರ್ಯವನ್ನು ಮುಗಿಸಿಕೊಂಡು ಮಾರ್ಕ ಎಂದು ಹೆಸರುಗೊಂಡ ಯೊವಾನ್ನನೊಂದಿಗೆ ಜೆರುಸಲೇಮಿನಿಂದ ಹಿಂದಿರುಗಿದರು. ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂಬ ಕರೆಯಲಾದ ಸಿಮೆಯೋನ್, ಸಿರೇನಿನ  ಲೂಸಿಯಸ್, ಸಾಮಂತ ಹೆರೋದನ ಬಾಲ್ಯಸ್ನೆಹಿತ ಮೆನಹೇಲ ಮತ್ತು ಸೌಲ. ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವೃತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, "ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ," ಎಂದರು. ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆ ಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ  ಕಳುಹಿಸಿಕೊಟ್ಟರು. ಹೀಗೆ ಪವಿತ್ರಾತ್ಮ ಅವರೇ ಕಳುಹಿಸಿದ ಬಾರ್ನಬ ಮತ್ತು ಸೌಲ ಸೆಲೂಸಿಯಾಕ್ಕೆ ಹೋದರು. ಅಲ್ಲಿಂದ ಸೈಪ್ರಸ್ ದ್ವೀಪಕ್ಕೆ ನೌಕಯಾನ ಮಾಡಿದರು. ಅವರು ಸಲಮೀಸ್ ಎಂಬ ಸ್ಥಳಕ್ಕೆ ಬಂದಾಗ ಯೆಹೂದ್ಯರ ಪ್ರಾರ್ಥನಾ ಮಂದಿರಗಳಿಗೆ ಹೋಗಿ ಶುಭಸಂದೇಶವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೊವಾನ್ನ ಅವರ ಸಂಗಡವಿದ್ದು ಅವರಿಗೆ ನೆರವಾಗುತ್ತಿದ್ದನು.

ಕೀರ್ತನೆ: 67:2--3, 5, 6, 8
ಶ್ಲೋಕ: ನಿನ್ನ ಕೀರ್ತಿಸಲಿ ದೇವಾ, ಜನರು ಸಂಕೀರ್ತಿಸಲಿ ಅವರೆಲ್ಲರೂ

ಶುಭಸಂದೇಶ: ಯೊವಾನ್ನ 12:44-50

ಯೇಸುಸ್ವಾಮಿ ಗಟ್ಟಿಯಾಗಿ ಕೂಗಿ ಇಂತೆಂದರು: "ನನ್ನಲ್ಲಿ ವಿಶ್ವಾಸವಿಡುವವನು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿದಾತನಲ್ಲೇ ವಿಶ್ವಾಸವಿಡುತ್ತಾನೆ. ನನ್ನನ್ನು ಕಾಣುವವನು ನನ್ನನ್ನು ಕಳುಹಿಸಿದಾತನನ್ನೇ ಕಾಣುತ್ತಾನೆ. ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ. ಯಾವನಾದರೂ ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದೆ ಹೋದರೆ ಅಂಥವನಿಗೆ ತೀರ್ಪುಕೊಡುವವನು ನಾನಲ್ಲ. ನಾನು ಬಂದುದು ಲೋಕದ ಉದ್ಧಾರಕ್ಕಾಗಿ, ತೀರ್ಪು ಕೊಡುವುದಕ್ಕಾಗಿ ಅಲ್ಲ ನನ್ನನ್ನು ನಿರಾಕರಿಸಿ ನನ್ನ  ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ. ಅದು ಯಾವುದೆಂದರೆ ನಾನು ಆಡಿದ ಮಾತೇ. ಅಂತಿಮ ದಿನದಂದು ಅದೇ ಅವನಿಗೆ ತೀರ್ಪುಕೊಡುವುದು. ಏಕೆಂದರೆ, ನನ್ನಷ್ಟಕ್ಕೆ ನಾನೇ ಇದನ್ನೆಲ್ಲಾ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿದ ಪಿತನೇ. ನಾನು ಏನು ಹೇಳಬೇಕು, ಯಾವ ಮಾತನ್ನು ಆಡಬೇಕು ಎಂದು ನನಗೆ ಆಜ್ಞೆ ಮಾಡಿದ್ದಾರೆ ಅವರ ಆಜ್ಞೆಯೇ ನಿತ್ಯಜೀವದಾಯಕ ಎಂದು ನಾನು ಬಲ್ಲೆ. ಆದ್ದರಿಂದಲೇ ಪಿತನು ಹೇಳಿದಂತೆಯೇ ನಾನು ಮಾತನಾಡುತ್ತೇನೆ.

No comments:

Post a Comment

28.08.2026 - ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು

  ಮೊದಲನೇ ವಾಚನ: 1 ಕೊರಿಂಥಿಯರಿಗೆ 1:17-25 ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ...