ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 13:26-33
"ನನ್ನ ಸಹೋದರರೇ ಅಬ್ರಹಾಮನ ಸಂತತಿಯವರೇ ಮತ್ತು ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಿಮಗಾಗಿಯೇ. ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ಧಾರಕನೆಂದು ಅರಿತುಕೊಳ್ಳಲಿಲ್ಲ ಪ್ರತಿ ಸಬ್ಬತ್ ದಿನ ಓದಲಾದ ಪ್ರವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದಂಡನೆಯನ್ನು ವಿಧಿಸಿ ಆ ಪ್ರವಾದನೆಗಳು ನಿಜವಾಗಲು ಕಾರಣರಾದರು. ಮರಣದಂಡನೆ ವಿಧಿಸಲು ಯಾವ ಕಾರಣವಿಲ್ಲದಿದ್ದರೂ ಅವರನ್ನು ಕೊಲ್ಲಿಸುವಂತೆ ಪಿಲಾತನನ್ನು ಕೇಳಿಕೊಂಡರು ಯೇಸುವನ್ನು ಕುರಿತು ಪವಿತ್ರಗ್ರಂಥ ಹೇಳುವುದೆಲ್ಲವೂ ನೆರವೇರಿದ ಮೇಲೆ ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಮಾಡಿದರು. ಆದರೆ ದೇವರು ಅವರನ್ನು ಮರಣದಿಂದ ಪುನರುತ್ದಾನಗೊಳಿಸಿದರು. ಹೀಗೆ ಪುನರುತ್ದಾನ ಹೊಂದಿದ ಯೇಸು, ಗಲಿಲೇಯದಿಂದ ತಮ್ಮೊಡನೆ ಜೆರುಸಲೇಮಿಗೆ ಬಂದಿದ್ದವರಿಗೆ ಕಾಣಿಸಿಕೊಂಡರು. ಆ ವ್ಯಕ್ತಿಗಳೇ ಈಗ ನಮ್ಮ ಜನರ ಮಧ್ಯೆ ಇರುವ ಯೇಸುವಿನ ಪರವಾದ ಸಾಕ್ಷಿಗಳು. ನಾವೀಗ ನಿಮಗೆ ಸಾರುವ ಶುಭಸಂದೇಶ ಇದು: ದೇವರು ಯೇಸುಸ್ವಾಮಿಯನ್ನು ಪುನರುತ್ದಾನಗೊಳಿಸಿದ್ದಾರೆ. ಈ ಮೂಲಕ ನಮ್ಮ ಪೂರ್ವಜರಿಗೆ ಮಾಡಿದ ವಾಗ್ದಾನವನ್ನು ಅವರ ಸಂತತಿಯಾದ ನಮಗಿಂದು ಈಡೇರಿಸಿದ್ದಾರೆ. ಎರಡನೆಯ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: 'ನೀನೇ ನನ್ನ ಪುತ್ರ, ನಾನಿಂದು ನಿನ್ನ ಜನಕ."
ಕೀರ್ತನೆ: 2:6-7, 8-9, 10-11
ಶ್ಲೋಕ: ಈ ದಿನ ನಾನಿನ್ನ ಹಡೆದಿಹೆನು; ನೀನೆನಗೆ ಮಗನು
ಶುಭಸಂದೇಶ: ಯೊವಾನ್ನ 14:1-6
ಯೇಸುಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, "ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ. ನನ್ನ ಪಿತನ ಆಸ್ಥಾನದಲ್ಲಿಅನೇಕ ನೀವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ. ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು. ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವು ಇರಬೇಕು. ನಾನು ಹೋಗುವ ಎಡೆಗೆ ಮಾರ್ಗವು ನಿಮಗೆ ತಿಳಿದೆ ಇದೆ," ಎಂದು ಹೇಳಿದರು. ಆಗ ತೋಮನು, "ಪ್ರಭುವೇ ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?" ಎಂದು ಕೇಳಿದನು. ಅದಕ್ಕೆ ಯೇಸು, "ಮಾರ್ಗವೂ, ಸತ್ಯವೂ, ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು," ಎಂದರು.
No comments:
Post a Comment