ಮೊದಲನೇ ವಾಚನ: 2 ಕೊರಿಂಥಿಯರಿಗೆ 3:4-11
ಕ್ರಿಸ್ತ ಯೇಸುವಿನ ಮುಖಾಂತರ ನಮಗೆ ದೇವರಲ್ಲಿ ಇಂಥ ಭರವಸೆ ಇರುವುದರಿಂದಲೇ ಇದನ್ನು ಹೇಳುತ್ತಿದ್ದೇವೆ. ನಮ್ಮ ಸ್ವಂತ ಶಕ್ತಿಯಿಂದಲೇ ಏನನ್ನೋ ಸಾಧಿಸಿಬಿಟ್ಟಿದ್ದೇವೆ ಎಂದು ಹೇಳಿಕೊಳ್ಳುವ ಸಾಮರ್ಥ್ಯ ನಮಗಿಲ್ಲ. ನಮ್ಮ ಸಾಮರ್ಥ್ಯವೆಲ್ಲ ದೇವರಿಂದಲೇ ಬಂದುದು. ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆಯ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು, ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು, ಸಜೀವದಾಯಕವಾದುದು. ಕಲ್ಲಿನ ಮೇಲೆ ಕೊರೆಯಲಾದ ಶಾಸನ ಪ್ರಕಟವಾದಾಗ ದೇವರ ಮಹಿಮೆ ಕಾಣಿಸಿಕೊಂಡಿತು. ಆಗ ಮೋಶೆಯ ಮುಖವನ್ನು ಆವರಿಸಿದ್ದ ಪ್ರಭೆ ಕುದಿಸಿ ಹೋಗುವಂಥದ್ದಾಗಿದ್ದರೂ ಆ ಪ್ರಭೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಯೇಲರಿಗೆ ಆಗಲಿಲ್ಲ. ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿತ್ತಾದರೆ ಪವಿತ್ರಾತ್ಮ ಚೈತನ್ಯದಿಂದ ಕೂಡಿದ ಸೇವೆಯು ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು? ದಂಡನೆಗೆ ಗುರಿಮಾಡುವ ಈ ಶಾಸನ ಸೇವೆ ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು? ಈ ಸೇವೆಯ ಅಪರಮಿತ ಮಹಿಮೆಯ ಮುಂದೆ ಹಿಂದಿನ ಶಾಸನದ ಮಹಿಮೆ ಇಲ್ಲದಂತಾಗಿದೆ. ಅಳಿದು ಹೋಗುವಂಥದ್ದೇ, ಅಷ್ಟು ಮಹಿಮೆಯಿಂದ ಕೂಡಿತ್ತಾದರೆ, ಶಾಶ್ವತವಾಗಿಉಳಿಯುವಂಥದ್ದು ಮತ್ತೆಷ್ಟು ಮಹಿಮೆಯಿಂದ ಕೂಡಿರಬೇಕು?
ಕೀರ್ತನೆ: 99:5, 6, 7, 8, 9
ಶ್ಲೋಕ: ಪರಮ ಪವಿತ್ರನು ನಮ್ಮ ದೇವನು
ಶುಭಸಂದೇಶ: ಮತ್ತಾಯ 5:17-19
ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ಧುಮಾಡಲು ನಾನು ಬಂದನೆಂದು ತಿಳಿಯಬೇಡಿ. ರದ್ಧುಮಾಡಲು ಅಲ್ಲ, ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ. ಭುಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.
No comments:
Post a Comment