ಮೊದಲನೇ ವಾಚನ: ಎಫೆಸಿಯರಿಗೆ 2:19-22
ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತುದೇವರ ಮನೆತನದವರು ಆಗಿದ್ದೀರಿ. ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯ ಮೂಲೆಗಲ್ಲು. ಇಡೀ ಕಟ್ಟಡವು ಅವರನ್ನೇ ಆದರಿಸಿ, ಎಲ್ಲಾ ಭಾಗಗಳು ಒಂದಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ. ಯೇಸುಕ್ರಿಸ್ತರ ಅನ್ಯೋನತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.
ಕೀರ್ತನೆ: 117:1bc, 2
ಶ್ಲೋಕ: ಆತನನು ಹೊಗಳಿ ಹಾಡಿ ಸರ್ವಜನಾಂಗಗಳೇ
ಶುಭಸಂದೇಶ: ಯೊವಾನ್ನ 20:24-29
ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸುಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ. ಉಳಿದ ಶಿಷ್ಯರು "ನಾವು ಪ್ರಭುವನ್ನು ನೋಡಿದೆವು," ಎಂದು ಹೇಳಿದರು. ಅದಕ್ಕೆ ಅವನು, "ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ," ಎಂದುಬಿಟ್ಟನು. ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರೊಡನೆ ನಿಂತು, "ನಿಮಗೆ ಶಾಂತಿ" ಎಂದರು. ಆಮೇಲೆ ತೋಮನಿಗೆ, "ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು; ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು," ಎಂದು ಹೇಳಿದರು. ಆಗ ತೋಮನು, "ನನ್ನ ಪ್ರಭುವೇ, ನನ್ನ ದೇವರೇ," ಎಂದನು. ಯೇಸು ಅವನಿಗೆ "ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು," ಎಂದು ಹೇಳಿದರು.
No comments:
Post a Comment