ಮೊದಲನೇ ವಾಚನ: ಸಿರಾಖ 3:17-18, 20, 28-29
ಮಗನೇ, ಕರ್ತವ್ಯ ನಿರ್ವಹಣೆಯಲ್ಲಿ ವಿನಯದಿಂದ ವರ್ತಿಸುವೆಯಾದರೆ, ದೇವರ ಯ್ಯೋಗ್ಯರಾದವರ ಪ್ರೀತಿಗೆ ನೀನೂ ಪಾತ್ರನಾಗುವೆ. ನೀನು ದೊಡ್ಡವನಾಗೀರುವಷ್ಟು ನಿನ್ನನ್ನೇ ತಗ್ಗಿಸಿಕೊಂಡೆಯಾದರೆ ದೇವರ ಸನ್ನಿಧಿಯಲ್ಲಿ ನಿಮಗೆ ಗಿಟ್ಟುವುದು ಕರುಣೆ, ಅಪೂರ್ವವಾದುದು ದೇವರ ಬಲ ದೀನರಿಂದ ಆತನಿಗೆ ಸಲ್ಲುವುದು ಘನಮಾನ. ಖಂಡನೆಯಿಂದ ಗುಣವಾಗದು ಗರ್ವಿಗೆ ದುಷ್ಟತನದ ಬಳ್ಳಿ ಬೇರೂರಿದೆ ಅವನಲ್ಲೇ, ವಿವೇಕ ಮನಸ್ಸುಳ್ಳವರು ಪಾಠ ಕಲಿಯುವರು ಸಾಮತಿಗಳಂದ ಲಕ್ಷವಿಟ್ಟು ಕೇಳುವನು ಜ್ಞಾನಿ ಹೆಬ್ಬಯಕೆಯಿಂದ.
ಕೀರ್ತನೆ: 68:4-5, 6-7, 10-11
ಶ್ಲೋಕ: ದೇವಾ ಆಸ್ಥೆಯಿಂದೊದಗಿಸಿದೆ ದೀನದಲಿತರಿಗೆ
ಎರಡನೇ ವಾಚನ: ಹಿಬ್ರಿಯರಿಗೆ 12:18-19, 22-24
ನೀವು ಇಸ್ರಯೇಲರಂತೆ ಮುಟ್ಟಬಹುದಾದ ಸೀನಾಯ್ ಬೆಟ್ಟಕ್ಕೆ ಬಂದಿಲ್ಲ. ಅಲ್ಲಿ ಬೆಂಕಿ ಧಗಧಗಿಸುತ್ತಿತ್ತು. ಕಾರ್ಗತ್ತಲು ಕವಿದಿತ್ತು; ಮೋಡದ ಮಬ್ಬು ಮುಸುಕಿತ್ತು; ಬಿರುಗಾಳಿ ಬೀಸುತ್ತಿತ್ತು. ಕಹಳೆಗಳು ಮೊಳಗುತ್ತಿದ್ದವು. ಆಗ ಧ್ವನಿಯೊಂದು ಕೇಳಿಬಂತು. ಅದನ್ನು ಕೇಳಿದವರು, ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು. ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ; ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ; ಅಸಂಖ್ಯಾತ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ; ಸ್ವರ್ಗದಲ್ಲಿ ದಾಖಲೆಯಾಗಿರುವ ಜ್ಯೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯ ಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ; ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾ ರಕ್ತದ ಬಳಿಗೆ ನೀವು ಬಂದಿದ್ದೀರಿ.
ಶುಭಸಂದೇಶ: ಲೂಕ 14:7-14
ಅಂದು ಸಬ್ಬತ್ ದಿನ. ಯೇಸುಸ್ವಾಮಿ ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು. ಅಲ್ಲದೆ, ಅಲ್ಲಿಗೆ ಬಂದಿದ್ದ ಅತಿಥಿಗಳು ಪಂಕ್ತಿಯಲ್ಲಿ ಉತ್ತಮ ಸ್ಥಾನಗಳನ್ನು ಆರಿಸಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಯೇಸು ಸಾಮತಿ ರೂಪದಲ್ಲಿ ಹೀಗೆಂದರು: "ಮದುವೆಯ ಔತಣಕ್ಕೆ ನಿನ್ನನ್ನು ಯಾರಾದರೂ ಆಹ್ವಾನಿಸಿದಾಗ ಪ್ರಧಾನ ಆಸನದಲ್ಲಿ ಹೋಗಿ ಕುಳಿತುಕೊಳ್ಳಬೇಡ. ಏಕೆಂದರೆ, ನಿನಗಿಂತ ಗೌರವಸ್ಥನನ್ನು ಆಹ್ವಾನಿಸಿರಬಹುದು. ನಿಮ್ಮಿಬ್ಬರನ್ನು ಕರೆದಾತ ನಿನ್ನ ಹತ್ತಿರ ಬಂದು, "ಇವನಿಗೆ ನಿನ್ನ ಸ್ಥಳವನ್ನು ಬಿಟ್ಟುಕೊಡು," ಎನ್ನಬಹುದು. ಆಗ ನೀನು ನಾಚಿಕೆಪಟ್ಟುಕೊಂಡು ಕಡೆಯ ಸ್ಥಾನದಲ್ಲಿ ಹೋಗಿ ಕುಳಿತುಕೊಳ್ಳಬೇಕಾಗಬಹುದು. ಅದಕ್ಕೆ ಬದಲಾಗಿ ನಿನ್ನನ್ನು ಆಹ್ವಾನಿಸಿದಾಗ ಕಡೆಯ ಸ್ಥಾನದಲ್ಲಿ ಹೋಗಿ ಕುಳಿತುಕೋ. ಕರೆದವನು ಬಂದು, "ಗೆಳೆಯಾ, ಮೇಲೆ ಬಾ" ಎಂದು ಹೇಳುವನು. ಆಗ ಜೊತೆಗೆ ಕುಳಿತಿರುವ ಅತಿಥಿಗಳೆಲ್ಲರ ಮುಂದೆ ನಿನಗೆ ಗೌರವ ಸಿಗುವುದು. ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು," ಎಂದರು. ಆನಂತರ ತಮ್ಮನ್ನು ಊಟಕ್ಕೆ ಆಮಂತ್ರಿಸಿದವನನ್ನು ನೋಡಿ ಯೇಸುಸ್ವಾಮಿ, "ನೀನು ಊಟ ಆಥವಾ ಔತಣವನ್ನು ಏರ್ಪಡಿಸುವಾಗ ನಿನ್ನ ಸ್ನೇಹಹಿತರನ್ನಾಗಲಿ, ಸೋದರರನ್ನಾಗಲಿ ಕರೆಯಬೇಡ. ಏಕೆಂದರೆ, ಅವರು ನಿನ್ನನ್ನು ಪ್ರತಿಯಾಗಿ ಕರೆದು ಮುಯ್ಯಿ ತೀರಿಸಿಬಿಡಬಹುದು. ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆ; ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ದಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು," ಎಂದರು.