ಮೊದಲನೇ ವಾಚನ: ದಾನಿಯೇಲ 7:9-10, 13-14
ನಾನು ನೋಡುತ್ತಿದ್ದ ಹಾಗೆ ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು ಧಗಧಗಿಸುವ ಬೆಂಕಿ ಅದರ ಚಕ್ರಗಳು. ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆ ಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪು ನೀಡಲು ಕುಳಿತುಕೊಂಡರು. ಪಟ್ಟಿ ಪುಸ್ತಕಗಳನ್ನು ತೆರೆಯಲಾಯಿತು. ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನು ಆತನ ಸನ್ನಿಧಿಗೆ ತಂದರು. ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!
ಕೀರ್ತನೆ: 97:1-2, 5-6, 9
ಶ್ಲೋಕ: ಪ್ರಭುವೇ, ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ
ಎರಡನೇ ವಾಚನ: 2 ಪೇತ್ರ 1:16-19
ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿ ಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತಾನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ. ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, "ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ ಅಪಾರ ಮೆಚ್ಚುಗೆಗೆ ಪಾತ್ರನು," ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು. ಆಗ ನಾವು ಆ ಪುನಿತ ಪರ್ವತದ ಮೇಲೆ ಅವರೊಡನೆ ಇದ್ದೆವು; ಸ್ವರ್ಗದಿಂದ ಆ ವಾಣಿಯನ್ನು ನಾವು ಕೇಳಿದೆವು. ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.
ಶುಭಸಂದೇಶ: ಲೂಕ 9:26-36
ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ, ತನ್ನ ಪಿತನ ಹಾಗೂ ದೇವದೂತರ ಪ್ರಭಾವದೊಡನೆ ಬರುವಾಗ, ನಾಚಿಕೆಪಡುವನು," ಇಲ್ಲಿರುವವರಲ್ಲಿ ಕೆಲವರು, ದೇವರ ಸಾಮ್ರಾಜ್ಯವನ್ನು ನೋಡದೆ ಸಾವನ್ನು ಸವಿಯುವುದಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ," ಎಂದರು. ಇದನ್ನೆಲ್ಲ ಹೇಳಿ ಸುಮಾರು ಎಂಟು ದಿನಗಳಾದ ಬಳಿಕ ಪೇತ್ರ, ಯೊವಾನ್ನ ಮತ್ತು ಯಕೋಬ ಇವರನ್ನು ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನು ಹತ್ತಿದರು. ಪ್ರಾರ್ಥನೆ ಮಾಡುವ ಸಮಯದಲ್ಲಿ ಯೇಸುವಿನ ಮುಖಚರ್ಯೆಯು ಮಾರ್ಪಟ್ಟಿತು. ಅವರ ಉಡುಪು ಬೆಳ್ಳಗೆ ಪ್ರಜ್ವಲಿಸಿತು. ಇದ್ದಕಿದ್ದ ಹಾಗೆ ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪ್ರವಾದಿಗಳು ಅವರೊಡನೆ ಮಾತನಾಡುತ್ತಿದ್ದರು. ದಿವ್ಯ ವೈಭವದಿಂದ ಕಂಗೊಳಿಸುತ್ತಿದ್ದ ಇವರಿಬ್ಬರು ಯೇಸು ಜೆರುಸಲೇಮಿನಲ್ಲಿ ಪ್ರಾಣತ್ಯಾಗಮಾಡಿ ದೈವೇಚ್ಛೆಯನ್ನು ನೆರವೆರಿಸಲಿದ್ದ ವಿಷಯವಾಗಿ ಸಂಭಾಷಿಸುತ್ತಿದ್ದರು. ಗಾಢ ನಿದ್ರೆಯಲ್ಲಿದ್ದ ಪೇತ್ರ ಮತ್ತು ಸಂಗಡಿಗರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರೊಡನೆ ನಿಂತಿದ್ದ ಆ ಇಬ್ಬರನ್ನೂ ಕಂಡರು. ಅವರಿಬ್ಬರೂ ಯೇಸುವನ್ನು ಬಿಟ್ಟು ಹೋಗುತ್ತಿರುವಾಗ, ಪೇತ್ರನು ಯೇಸುವಿಗೆ , "ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು - ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು," ಎಂದನು. ತಾನು ಏನು ಹೇಳುತ್ತಿರುವೆನೆಂದೇ ಪೇತ್ರನು ಗ್ರಹಿಸಲಿಲ್ಲ. ಆತನು ಇದನ್ನು ಹೇಳುತ್ತಿದ್ದ ಹಾಗೆ ಮೇಘವೊಂದು ಬಂದು ಅವರನ್ನಾವರಿಸಿತು. ಆ ಮೇಘದಲ್ಲಿ ಅವರು ಅದೃಶ್ಯರಾದಾಗ ಶಿಷ್ಯರು ದಿಗಿಲುಗೊಂಡರು. ಅದರೊಳಗಿಂದ, "ಈತನು ನನ್ನ ಪುತ್ರನು; ನಾನು ಆರಿಸಿಕೊಂಡವನು. ಈತನ ಮಾತಿಗೆ ಕಿವಿಗೊಡಿರಿ," ಎಂಬ ವಾಣಿ ಕೇಳಿಸಿತು. ಆ ವಾಣಿ ಆದಮೇಲೆ ಕಾಣಿಸಿಕೊಂಡವರು ಯೇಸು ಮಾತ್ರ, ಶಿಷ್ಯರು ತಾವು ನೋಡಿದ್ದನ್ನು ಕುರಿತು ಆ ದಿನಗಳಲ್ಲಿ ಏನನ್ನೂ ಹೇಳದೆ, ಯಾರಿಗೂ ತಿಳಿಸದೆ, ತತ್ಕಾಲ ಮೌನದಿಂದ ಇದ್ದರು.


No comments:
Post a Comment