04.10.2019

ಮೊದಲನೇ ವಾಚನ: ಬಾರೂಕ  1:15-22 

ನೀವು ಮಾಡಬೇಕಾದ ಪಾಪನಿವೇದನೆ ಹೀಗಿರಲಿ: ನಮ್ಮ ದೇವರಾದ ಸರ್ವೇಶ್ವರ ಸತ್ಯಸ್ವರೂಪರು; ನಾವಾದರೋ ಇಂದು ನಾಚಿಕೆಗೀಡಾಗಿದ್ದೇವೆ. ನಾವು ಮಾತ್ರವಲ್ಲ, ಜುದೇಯದ ಜನರು, ಜೆರುಸಲೇಮಿನ ನಿವಾಸಿಗಳು, ನಮ್ಮ ಅರಸರು, ಅಧಿಪತಿಗಳು, ಪ್ರವಾದಿಗಳು, ನಮ್ಮ ಪೂರ್ವಜರು ಎಲ್ಲರೂ ಅಂತೆಯೇ ನಾಚಿಕೆಗೀಡಾಗಿದ್ದೇವೆ. ಏಕೆಂದರೆ ದೇವರ ಮುಂದೆ ನಾವು ಪಾಪಿಗಳು, ಅವರಿಗೆ ಅವಿಧೇಯರಾಗಿ ನಡೆದುಕೊಂಡಿದ್ದೇವೆ. ನಾವು ನಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡಲಿಲ್ಲ; ಅವರು ನಮಗೆ ಕೊಟ್ಟ ಆಜ್ಞೆಗಳನ್ನು ಪಾಲಿಸಲಿಲ್ಲ. ನಮ್ಮ ದೇವರಾದ ಸರ್ವೇಶ್ವರ ನಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕರೆತಂದ ದಿನದಿಂದ ಇಂದಿನವರೆಗೂ ನಾವು ಅವರಿಗೆ ಅವಿಧೇಯರಾಗಿಯೇ ನಡೆದುಕೊಂಡಿದ್ದೇವೆ. ಅವರ ಮಾತನ್ನು ಕೇಳದೆ ಉದಾಸಿನರಾಗಿದ್ದೇವೆ. ಆದುದರಿಂದಲೇ ಉಪದ್ರವಗಳು ನಮಗೆ ಅಂಟಿಕೊಂಡಿವೆ. ಹಾಲೂ ಜೇನೂ ಹರಿಯುವ ನಾಡನ್ನು ನಮಗೆ ಕೊಡುವುದಕ್ಕಾಗಿ ನಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕರೆತಂದ ನಮ್ಮ ದೇವರಾದ ಸರ್ವೇಶ್ವರಸ್ವಾಮಿ ತಮ್ಮ ದಾಸ ಮೋಶೆಯ ಮೂಲಕ ಹಾಕಿಸಿದ ಶಾಪ ನಮ್ಮನ್ನು ಇಂದಿಗೂ ಬಿಟ್ಟಿಲ್ಲ. ನಮ್ಮ ದೇವರಾದ ಸರ್ವೇಶ್ವರ ನಮ್ಮ ಬಳಿಗೆ ಕಳುಹಿಸಿದ ಪ್ರವಾದಿಗಳು ನುಡಿದ ದೈವೋಕ್ತಿಗಳನ್ನು ನಾವು ಆಲಿಸದೆ, ಅವರ ಮಾತಿಗೆ ಕಿವಿಗೊಡದೆ ಹೋದೆವು. ಮಾತ್ರವಲ್ಲ, ನಮ್ಮಲ್ಲಿ ಪ್ರತಿಯೊಬ್ಬನು ಅವನವನ ಹೃದಯ ದುಷ್ಪ್ರೇರಣೆಗೆ ಒಳಪಟ್ಟು, ಅನ್ಯದೇವತೆಗಳಿಗೆ ಪೂಜೆಮಾಡಿದ್ದಾನೆ. ನಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದಾಗಿರುವುದನ್ನೇ ಮಾಡಿದ್ದಾನೆ.

ಕೀರ್ತನೆ: 79:1-2, 3-5, 8, 9 
ಶ್ಲೋಕ: ದೇವಾ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ 

ಶುಭಸಂದೇಶ: ಲೂಕ 10:13-16 

ಯೇಸು ಹೀಗೆಂದರು: "ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಬುತ ಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು. ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಸಹನೀಯವಾಗಿರುವುದು. ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತಿಯೋ? ಇಲ್ಲ, ಪಾತಾಳಕ್ಕೇ ಇಳಿಯುವೆ." ಆನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, "ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯ ಮಾಡುವವನು ನನ್ನನ್ನೇ ಅಲಕ್ಷ್ಯ ಮಾಡುತ್ತಾನೆ; ನನ್ನನ್ನು ಅಲಕ್ಷ್ಯ ಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೆ ಅಲಕ್ಷ್ಯ ಮಾಡುತ್ತಾನೆ," ಎಂದರು.

No comments:

Post a Comment

29.08.2026 - ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು

  ಸಂತ ಸ್ನಾನಿಕ ಯೊವಾನ್ನನ ಶಿರಚ್ಛೇದನ ಮೊದಲನೇ ವಾಚನ: ಯೆರೆಮಿಯ: 1: 17-19 ಆದುದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲ...