04.11.2019 - "ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು"

ಮೊದಲನೇ ವಾಚನ: ರೋಮನರಿಗೆ 11:29-36

ದೇವರು ತಾವೇ ನೀಡುವ ವರಗಳನ್ನಾಗಲಿ, ಕೊಡುವ ಕರೆಯನ್ನಾಗಲಿ ಹಿಂತೆಗೆದುಕೊಳ್ಳುವವರಲ್ಲ. ಇಸ್ರಯೇಲರಲ್ಲದ ನೀವು ಹಿಂದೊಮ್ಮೆ ದೇವರಿಗೆ ಅವಿಧೇಯರಾಗಿದ್ದಿರಿ. ಆದರೆ ಈಗ ಇಸ್ರಯೇಲರ ಅವಿಧೇಯತೆಯ ನಿಮಿತ್ತ ದೇವರ ದಯೆಯನ್ನು ಹೊಂದಿದ್ದೀರಿ. ಅದೇ ಪ್ರಕಾರ ಅವರು ಈಗ ಅವಿಧೇಯರಾಗಿದ್ದರೂ ನೀವು ಹೊಂದಿದ ಕರುಣೆಯ ನಿಮಿತ್ತ ಅವರು ಕರುಣೆಯನ್ನು ಹೊಂದುವರು. ಏಕೆಂದರೆ, ಸರ್ವರೂ ತಮ್ಮ ಕರುಣೆಯನ್ನು ಸವಿಯುವಂತೆ ದೇವರು ಎಲ್ಲರನ್ನು  ಅವಿಧೇಯತೆ ಎಂಬ ಬಂಧನಕ್ಕೆ ಒಳಪಡಿಸಿದ್ದಾರೆ. ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!
 "ಪ್ರಭುವಿನ ಮನಸ್ಸನ್ನು ಅರಿತವರಾರು?
 ಅವರಿಗೆ ಉಪದೇಶಿಸುವವರಾರು?
 ಮೊದಲೇ ಅವರ ಬಳಿ ಕೊಟ್ಟಿಟ್ಟವರಾರು?
 ಹೀಗೆ ಅವರಿಂದ ಪ್ರತಿಫಲ ಪಡೆದವರಾರು? ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.

ಕೀರ್ತನೆ: 69:30-31, 33-34, 36 
ಶ್ಲೋಕ: ಪ್ರೀತಿಮಯ ದೇವಾ, ಸದುತ್ತರ ನೀಡೆನಗೆ

ಶುಭಸಂದೇಶ: ಲೂಕ 14:12-14 

ಅನಂತರ ತಮ್ಮನ್ನು ಊಟಕ್ಕೆ ಆಮಂತ್ರಿಸಿದವನನ್ನು ನೋಡಿ ಯೇಸುಸ್ವಾಮಿ, "ನೀನು ಊಟ ಅಥವಾ ಔತಣವನ್ನು ಏರ್ಪಡಿಸುವಾಗ ನಿನ್ನ ಸ್ನೇಹಿತರನ್ನಾಗಲಿ, ಸೋದರರನ್ನಾಗಲಿ, ಬಂಧು ಬಳಗದವರನ್ನಾಗಲಿ, ಧನಿಕರಾದ ನೆರೆಯವರನ್ನಾಗಲಿ ಕರೆಯಬೇಡ. ಏಕೆಂದರೆ, ಅವರು ನಿನ್ನನ್ನು ಪ್ರತಿಯಾಗಿ ಕರೆದು ಮುಯ್ಯಿ ತೀರಿಸಿಬಿಡಬಹುದು. ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆ; ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು," ಎಂದರು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...