17.12.2019 - ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ

ಮೊದಲನೇ ವಾಚನ: ಆದಿಕಾಂಡ 49:8-10


ಯಕೋಬನ ಮಕ್ಕಳೇ, ಕೂಡಿಬಂದು ಕೇಳಿ ನೀವೆಲ್ಲರು, ಆಲಿಸಿ ನಿಮ್ಮ ತಂದೆ ಇಸ್ರಯೇಲಿನ ಮಾತನ್ನು: ಯೆಹೂದನೇ, ವಂದಿಸುವರು ನಿನ್ನನ್ನು ಸಹೋದರರು, ನಿನ್ನ ಕೈಯಲ್ಲಿರುವುದು ಶತ್ರುಗಳ ಕುತ್ತಿಗೆಯು: ಎರಗುವರು ನಿನಗೆ ನಿನ್ನ ಅಣ್ಣತಮ್ಮಂದಿರು. ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ, ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ; ಕಾಲು ಮಡಿಚಿ ಹೊಂಚುಕೂತ ಕೇಸರಿಯಂತೆ. ಈ ಸಿಂಹಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ? ರಾಜ್ಯಾಧಿಕಾರ ಪಡೆದವನು ಬರುವ ತನಕ; ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ; ತಪ್ಪದು ರಾಜದಂಡ ಯೆಹೂದನ ಕೈಯಿಂದ,  ಕದಲದು ಮುದ್ರೆಕೋಲು ಅವನ ವಂಶದಿಂದ.

ಕೀರ್ತನೆ: 72:1-2, 3-4, 7-8, 17

ಶ್ಲೋಕ: ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ, ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ

ಶುಭಸಂದೇಶ: ಮತ್ತಾಯ 1:1-17

ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ: ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು. ಯೂದನಿಗೆ ತಾಮರ ಎಂಬುವಳಿಂದ ಪೆರಸ್ ಹಾಗೂ ಜೆರಹನ್ ಹುಟ್ಟಿದರು. ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್, ಸಲ್ಮೋನನಿಗೆ ರಹಾಬ್ ಎಂಬುವಳಿಂದ ಬೊವಜ್, ಬೊವಜನಿಗೆ ರೂತ್ ಎಂಬುವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ, ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್, ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಅಸನ್ ಹುಟ್ಟಿದರು. ಅಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು. ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು. ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್, ಆಮೋನನಿಗೆ ಯೋಷೀಯ ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು. ಬಾಬಿಲೋನಿಗೆ ಸೆರೆಹೋದ ದಾಸ್ಯದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಳ್, ಸಲಥಿಯೇಲನಿಗೆ ಜೆರುಬಾಬೆಲ್, ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್, ಎಲ್ಯಕೀಮನಿಗೆ ಅಜೋರ್ ಹುಟ್ಟಿದರು. ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್, ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು. ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು. ಈ ಮರಿಯಳಿಂದಲೇ  "ಕ್ರಿಸ್ತ"  ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು: ಹೀಗೆ ಒಟ್ಟು, ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು, ದಾವೀದನಿಂದ ಬಾಬಿಲೋನಿನ ದಾಸ್ಯದಿನಗಳವರೆಗೆ ಹದಿನಾಲ್ಕು, ಬಾಬಿಲೋನಿನ ದಾಸ್ಯದಿನಗಳಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...