ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

08.01.2020 - ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ

ಮೊದಲನೇ ವಾಚನ:  1 ಯೊವಾನ್ನ 4:11-18 

ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು. ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ. ದೇವರು ನಮಗೆ ತಮ್ಮ ಆತ್ಮವನ್ನು ನೀಡಿರುವುದರಿಂದಲೇ ನಾವು ಅವರಲ್ಲಿಯೂ ಅವರು ನಮ್ಮಲ್ಲಿಯೂ ನೆಲಸಿರುವುದನ್ನು ತಿಳಿದುಕೊಳ್ಳುತ್ತೇವೆ.  ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟಿದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ. ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲಸಿದ್ದಾರೆ.  ಅವನೂ ದೇವರಲ್ಲಿ ನೆಲಸಿದ್ದಾನೆ. ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ. ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ. ಪ್ರೀತಿ ಇರುವಲ್ಲಿ ಭೀತಿ ಇರುವುದಿಲ್ಲ. ಪೂರ್ಣ ಪ್ರೀತಿ ಭೀತಿಯನ್ನು ಹೊರದೂಡುತ್ತದೆ. ಭೀತಿ ಇರುವಲ್ಲಿ ಯಾತನೆ ಇರುತ್ತದೆ. ಭೀತಿಯಿಂದಿರುವವನು ಪ್ರೀತಿಯಲ್ಲಿ ಸಿದ್ದಿಗೆ ಬಂದವನಲ್ಲ. 

ಕೀರ್ತನೆ: 72:1-2, 10, 12-13 
ಶ್ಲೋಕ: ರಾಷ್ಟ್ರಗಳು ಸಾಷ್ಟಾಂಗವೆರಗಲಿ ಸರ್ವೇಶ್ವರಸ್ವಾಮಿಗೆ .

ಶುಭಸಂದೇಶ:  ಮಾರ್ಕ  6:45-52 


ಯೇಸುಸ್ವಾಮಿ, ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಸರೋವರದ ಆ ಕಡೆಗಿದ್ದ ಬೆತ್ಸಾಯಿದಕ್ಕೆ ಹೋಗುವಂತೆ ಆಜ್ಞಾಪಿಸಿದರು. ಜನರನ್ನು ಬೀಳ್ಕೊಟ್ಟ ಬಳಿಕ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋದರು. ಕತ್ತಲೆ ಕವಿದಾಗ ದೋಣಿಯು ಸರೋವರದ ಮಧ್ಯೆ ಸಾಗಿತು. ಇತ್ತ ಯೇಸು ಒಬ್ಬರೇ ದಡದಲ್ಲಿದ್ದರು. ಎದುರುಗಾಳಿ ಬೀಸುತ್ತಿದ್ದದರಿಂದ ಶಿಷ್ಯರು ಹುಟ್ಟುಹಾಕಿ ದಣಿದು ಹೋಗಿದ್ದರು. ಇದನ್ನು ಕಂಡ ಯೇಸು ಸರೋವರದ ನೀರಿನ ಮೇಲೆ ನಡೆದುಕೊಂಡು ಅವರ ಕಡೆಗೆ ಬಂದು, ಅವರನ್ನು ದಾಟಿ ಮುಂದೆ ಹೋಗುವುದರಲ್ಲಿದ್ದರು. ಆಗ ಸುಮಾರು ರಾತ್ರಿ ಕಡೇ ಜಾವದ ಸಮಯ.  ಸರೋವರದ ಮೇಲೆ ನಡೆದು ಬರುತ್ತಿದ್ದ ಯೇಸುವನ್ನು ಶಿಷ್ಯರು ನೋಡಿದರು; ಭೂತವೆಂದು ಭಾವಿಸಿ ಭಯದಿಂದ ಚೀರಿದರು. ಅವರೆಲ್ಲರೂ ಯೇಸುವನ್ನು ನೋಡಿ ದಿಗಿಲುಗೊಂಡಿದ್ದರು. ತಕ್ಷಣವೇ ಯೇಸು ಅವರೊಡನೆ ಮಾತನಾಡುತ್ತಾ, "ಭಯಪಡಬೇಡಿ, ಬೇರೆ ಯಾರೂ ಅಲ್ಲ, ನಾನೇ; ಧ್ಯರ್ಯದಿಂದಿರಿ," ಎಂದು ಅವರೊಡನೆ ಮಾತನಾಡಿ ದೋಣಿಯನ್ನು ಹತ್ತಿದರು. ಆಗ ಎದುರುಗಾಳಿ ನಿಂತು ಹೋಯಿತು. ಶಿಷ್ಯರು ಬೆಕ್ಕಸಬೆರಗಾದರು. ಅವರ ಬುದ್ಧಿ ಮಂದವಾಗಿತ್ತು. ರೊಟ್ಟಿಗಳ ಅದ್ಬುತವನ್ನು ಅವರು ಇನ್ನೂ  ಗ್ರಹಿಸಿಕೊಂಡಿರಲಿಲ್ಲ.

No comments:

Post a Comment