23.02.2020 - "ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ?"

ಮೊದಲನೇ ವಾಚನ: ಯಾಜಕಕಾಂಡ 19:1-2, 17-18

ಇಸ್ರಯೇಲ್ ಸಮಾಜದವರಿಗೆ ಹೀಗೆ ಆಜ್ಞಾಪಿಸುವಂತೆ ಸರ್ವೇಶ್ವರಸ್ವಾಮಿ ಮೋಶೆಗೆ ಹೇಳಿದರು: "ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವಂತೆ ನೀವು ಕೂಡ ಪರಿಶುದ್ಧರಾಗಿರಬೇಕು. “ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು. ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ, ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.

ಕೀರ್ತನೆ: 103:1-2, 3-4, 8-10, 12-13

ಶ್ಲೋಕ: ಪ್ರಭು ದಯಾಳು, ಕೃಪಾಪೂರ್ಣನು.

ಎರಡನೇ ವಾಚನ: 1 ಕೊರಿಂಥಿಯರಿಗೆ 3:16-23

ಸಹೋದರರೇ, ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ. ಯಾವನಾದರೂ ದೇವಾಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುತ್ತಾರೆ. ದೇವರ ಆಲಯವು ಪವಿತ್ರವಾದುದು. ನೀವೇ ಆ ಆಲಯ. ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ. ಇಹಲೋಕದ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲವುದಲ್ಲಿಯೇ ಸಿಕ್ಕಿಸುವರು” ಎಂದೂ “ಜ್ಞಾನಿಗಳ ಯೋಜನೆಗಳು ನಿಷ್ಫಲವೆಂಬುದು ಪ್ರಭುವಿಗೆ ತಿಳಿದಿದೆ” ಎಂದೂ ಲಿಖಿತವಾಗಿದೆಯಲ್ಲವೆ? ಆದ್ದರಿಂದ ಕೇವಲ ನರಮಾನವರನ್ನೇ ನೆಚ್ಚಿಕೊಂಡು ಯಾರೂ ಹೆಚ್ಚಳಪಡದಿರಲಿ. ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ - ಇವರಾಗಲಿ; ಜಗತ್ತು, ಜೀವ, ಮರಣ – ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ. ಆದರೆ ನೀವು ಕ್ರಿಸ್ತ ಯೇಸುವಿಗೆ ಸೇರಿದವರು; ಕ್ರಿಸ್ತಯೇಸು ದೇವರಿಗೆ ಸೇರಿದವರು.

ಘೋಷಣೆ: ಅಲ್ಲೆಲೂಯ, ಅಲ್ಲೆಲೂಯ!
ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯ ಜಯವಾಗಲಿ/
ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ//ಅಲ್ಲೆಲೂಯ!

ಶುಭಸಂದೇಶ: ಮತ್ತಾಯ 5:38-48

ಯೇಸು ತಮ್ಮ ಶಿಷ್ಯರಿಗೆ ಇಂತೆಂದರು: " ’ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಬದಲಾಗಿ ಹಲ್ಲು’ ಎಂಬುದನ್ನು ನೀವು ಕೇಳಿದ್ದೀರಿ. ಆದರೆ ನನ್ನ ಬೋಧೆ ಇದು: ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು. ನಿನ್ನೊಡನೆ ವ್ಯಾಜ್ಯಮಾಡಿ ನಿನ್ನ ಒಳ ಅಂಗಿಯನ್ನು ಕಿತ್ತುಕೊಳ್ಳುವವನಿಗೆ ಹೊರ ಅಂಗಿಯನ್ನೂ ಕೊಟ್ಟುಬಿಡು. ಯಾರಾದರೂ ಒಂದು ಕಿಲೊವಿೂಟರ್ ದೂರ ಬಾ ಎಂದು ನಿನ್ನನ್ನು ಒತ್ತಾಯಪಡಿಸಿದರೆ ಅವನೊಡನೆ ಎರಡು ಕಿಲೊವಿೂಟರ್ ಹೋಗು; ಬೇಡಿಕೊಳ್ಳುವವನಿಗೆ ಕೊಡು. ಸಾಲ ಕೇಳಬಂದವನಿಂದ ಮುಖ ತಿರುಗಿಸಿಕೊಳ್ಳಬೇಡ." "ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು" ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ. ನಾನು ಹೇಳುವುದನ್ನು ಗಮನಿಸಿರಿ: ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ. ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ. ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿ ಮಾಡುವವರೂ ಹಾಗೆ ಮಾಡುವುದಿಲ್ಲವೇ? ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ? ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ."

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...