18.03.20 - "ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ದುಮಾಡಲು ನಾನು ಬಂದೆನೆಂದು ತಿಳಿಯಬೇಡಿ"

ಮೊದಲನೇ ವಾಚನ:  ಧರ್ಮೋಪದೇಶಕಾಂಡ 4:1, 5-9

“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು. “ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.ನಾವು ಮೊರೆಯಿಡುವಾಗಲೆಲ್ಲಾ ನಮ್ಮ ದೇವರಾದ ಸರ್ವೇಶ್ವರ ನಮಗೆ ಸಮೀಪವಾಗಿರುವಂತೆ ಬೇರೆ ಯಾವ ಜನಾಂಗಕ್ಕೆ, ಅದೆಷ್ಟೇ ದೊಡ್ಡದಾಗಿರಲಿ, ಯಾವ ದೇವರು ಹೀಗೆ ಸಮೀಪವಾಗಿರುತ್ತಾರೆ? ನಾನು ಈ ದಿನ ನಿಮ್ಮ ಮುಂದಿಡುವ ಇಂಥ ನ್ಯಾಯಯುತವಾದ ಆಜ್ಞಾವಿಧಿಗಳನ್ನು ಒಳಗೊಂಡ ಈ ಧರ್ಮಶಾಸ್ತ್ರಕ್ಕೆ ಸಮಾನವಾದುದು ಬೇರೆ ಯಾವ ಜನಾಂಗಕ್ಕೆ ಉಂಟು? ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ

ಕೀರ್ತನೆ: 147:12-13,15-16,19-20

ಶ್ಲೋಕಜೆರುಸಲೆಮೇ, ಕೀರ್ತಿಸು ಪ್ರಭುವನು

ಶುಭಸಂದೇಶಮತ್ತಾಯ - 5 :17-19


ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ದುಮಾಡಲು ನಾನು ಬಂದೆನೆಂದು ತಿಳಿಯಬೇಡಿ. ರದ್ದುಮಾಡಲು ಅಲ್ಲ, ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ. ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.

ಮನಸ್ಸಿಗೊಂದಿಷ್ಟು : ನಮ್ಮ ಇಡೀ  ಜೀವನವೇ ಈ ಜಗತ್ತನ್ನು , ಈ ಜಗದ ಜನರನ್ನು ಮೆಚ್ಚಿಸುವತ್ತಲೇ ಗಿರಕಿ ಹೊಡೆಯುತ್ತಿರುತ್ತದೆ. ಇದರ ನಡುವೆ  ಸ್ವರ್ಗ ಸಾಮ್ರಾಜ್ಯದಲ್ಲಿ ಮಹಾತ್ಮರೆನಿಸಿಕೊಳ್ಳುವ ಭಾಗ್ಯ ನಮ್ಮದಾಗುವ ದಾರಿಯನ್ನು ಯೇಸು ತಿಳಿಸುತ್ತಿದ್ದಾರೆ. ನಮ್ಮೆಲ್ಲಾ ಧಾರ್ಮಿಕ ಆಚರಣೆಗಳ  ನಡುವೆ ಧರ್ಮಶಾಸ್ತ್ರವನ್ನು ಪಾಲಿಸುವುದೇ ನಮ್ಮ ಗುರಿಯಾಗಬೇಕಲ್ಲವೇ? 

ಪ್ರಶ್ನೆ : ಸ್ವರ್ಗ ಸಾಮ್ರಾಜ್ಯ ನಿಜಕ್ಕೂ ನಮ್ಮ ಬಾಳಿನ ಗುರಿಯಾಗಿದೆಯೇ?

ಪ್ರಭುವೇ,
ಸ್ವರ್ಗಸಾಮ್ರಾಜ್ಯಕ್ಕೆ
ನಾ ಎಷ್ಟು ಹತ್ತಿರ 
ಎಂಬ ಪ್ರಶ್ನೆಗೆ ಹುಡುಕಬೇಕಾಗಿದೆ ಉತ್ತರ
ಸ್ವರ್ಗರಾಜ್ಯದ ಕಣ್ಣಲ್ಲಿ 
ಆಗಲು ನಾ ಮಹಾತ್ಮ 
ಹೆಜ್ಜೆ ಹಾಕುತ್ತಿರಲಿ 
ಈ ಲೋಕದಿ ನನ್ನಾತ್ಮ 

No comments:

Post a Comment

0105.2026 - ಇವನು ಆ ಬಡಗಿಯ ಮಗನಲ್ಲವೇ?

ಮೊದಲನೆಯ ವಾಚನ: ಆದಿಕಾಂಡದಿಂದ ಇಂದಿನ ವಾಚನ 1:26-2:3 ದೇವರು, "ನಮ್ಮಂತೆಯೇ ಇರುವ ಹಾಗೂ ನಮ್ಮನ್ನು ಹೋಲುವ ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನ...