ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

19.03.2020 - "ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆಹೋಯಿತೇ?”

ಮೊದಲನೇ ವಾಚನ: 2 ಸಮುವೇಲ -7:4-5, 12-14, 16

ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು:  ನೀನು ಹೋಗಿ 
ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು 
ಕಟ್ಟಬೇಕೆಂದಿರುವೆಯೋ. ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನುಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನುನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನುಸರ್ವಶಕ್ತರಾದ ಸರ್ವೇಶ್ವರಾ, ಇಸ್ರಯೇಲ್ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನುಎಂದು ವಾಗ್ದಾನಮಾಡಿದ್ದೀರಿ. ಆದುದರಿಂದಲೇ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆಸರ್ವೇಶ್ವರಾ, ಸರ್ವೇಶ್ವರಾ, ನೀವು ನಮ್ಮ ದೇವರು; ನಿಮ್ಮ ವಾಕ್ಯ ಸತ್ಯವಾದದ್ದು; ತಮ್ಮ ದಾಸನಾದ ನನಗೆ ಇಂಥ ಶ್ರೇಷ್ಠ ವಾಗ್ದಾನ ಮಾಡಿದ್ದೀರಿನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಸದಾಕಾಲ ನಿಮ್ಮ ಅನುಗ್ರಹ ಅದರ ಮೇಲಿರಲಿ. ಸರ್ವೇಶ್ವರಾ, ಸರ್ವೇಶ್ವರಾ, ವಾಗ್ದಾನ ಮಾಡಿದವರು ತಾವೇ. ತಮ್ಮ ಆಶೀರ್ವಾದದಿಂದ ತಮ್ಮ ದಾಸನಾದ ನನ್ನ ಮನೆತನದಲ್ಲಿ ನಿತ್ಯ ಸೌಭಾಗ್ಯ ನೆಲಸಿರಲಿ!” ಎಂದನು.

ಕೀರ್ತನೆ: 89:2-3, 4-5, 27, 29

ಶ್ಲೋಕ

ಶುಭಸಂದೇಶಲೂಕ - 2: 41-51


ಯೇಸುಸ್ವಾಮಿಯ ತಂದೆತಾಯಿಗಳು ಪ್ರತಿವರ್ಷವೂ ಪಾಸ್ಕಹಬ್ಬಕ್ಕೆ ಜೆರುಸಲೇಮಿಗೆ ಹೋಗುತ್ತಿದ್ದರು.ಯೇಸುವಿಗೆ ಹನ್ನೆರಡು ವರ್ಷವಾದಾಗ ವಾಡಿಕೆಯ ಪ್ರಕಾರ ಹಬ್ಬಕ್ಕೆ ಹೋದರುಹಬ್ಬ ಮುಗಿಸಿಕೊಂಡು ಅವರು ಹಿಂದಿರುಗಿ ಬರುವಾಗ ಬಾಲಕಯೇಸು ಜೆರುಸಲೇಮಿನಲ್ಲಿಯೇ ಉಳಿದುಬಿಟ್ಟರುಇದು ತಂದೆತಾಯಿಗಳಿಗೆ ತಿಳಿಯದು. ಮಗನು ಯಾತ್ರಿಕರ ಗುಂಪಿನಲ್ಲಿ ಬರುತ್ತಿರಬಹುದೆಂದು ಭಾವಿಸಿ ಒಂದು ದಿನದ ಪ್ರಯಾಣ ಬಂದುಬಿಟ್ಟಿದ್ದರು. ನಂತರ ಮಗನನ್ನು ಕಾಣದೆ ತಮ್ಮ ಬಂಧುಬಳಗದವರಲ್ಲೂ ಪರಿಚಿತರಲ್ಲೂ ಹುಡುಕಾಡಿದರು. ಅಲ್ಲೆಲ್ಲೂ ಕಾಣದೆ ಅವರನ್ನು ಹುಡುಕಿಕೊಂಡು ಜೆರುಸಲೇಮಿಗೆ ಮರಳಿ ಬಂದರು.ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು.ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು. ತಂದೆತಾಯಿಗಳು ಮಗನನ್ನು ಅಲ್ಲಿ ಕಂಡು ವಿಸ್ಮಯಗೊಂಡರು. ಆಗ ತಾಯಿಯು, “ಕಂದಾ, ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಪಟ್ಟು ನಿನ್ನನ್ನು ಹುಡುಕಾಡಿದೆವಲ್ಲಾ,” ಎಂದಳು. ಅದಕ್ಕೆ ಉತ್ತರವಾಗಿ ಯೇಸು, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆ ಹೋಯಿತೇ?” ಎಂದರು. ಆದರೆ ಅವರ ಮಾತು ತಂದೆತಾಯಿಗಳಿಗೆ ಅರ್ಥವಾಗಲಿಲ್ಲ.ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.

ಮನಸ್ಸಿಗೊಂದಿಷ್ಟು : ಇಡೀ ಶುಭ ಸಂದೇಶದಲ್ಲಿ ಜೋಸೆಫರು ಏನಾದರೂ ಮಾತಾಡಿದ್ದು ನಾವು ಕೇಳಿಲ್ಲ. ಆದರೆ ದೇವರ ಚಿತ್ತಕ್ಕೆ ತಲೆ ಬಾಗಿದ ಅವರು ಯೇಸುವಿನ ಜನನದ ಅತ್ಯಂತ ಕಷ್ಟದ ಹಾಗೂ ಆತಂಕದ ಸಮಯದಲ್ಲಿ ತಮ್ಮ ಪಾತ್ರವನ್ನು ವಹಿಸುತ್ತಾರೆ. ಅಪಾಯಗಳಿಗೆ ಎದೆಯೊಡ್ಡುತ್ತಾರೆ. ದೇವರಿಂದ ಕೇವಲ ನಮ್ಮ ಅವಶ್ಯಕತೆಗಳನ್ನು ಕೇಳುವುದರಲ್ಲೇ ನಮ್ಮ ಆಧ್ಯಾತ್ಮಿಕ ಜೀವನವನ್ನು ಕಂಡುಕೊಂಡಿರುವ ನಾವು ಜೋಸೆಫರ ಜೀವನದಿಂದ ಕಲಿಯಬೇಕಾದುದು ಬಹಳಷ್ಟಿದೆ.  

ಪ್ರಶ್ನೆ : ದೇವರ ಚಿತ್ತಕೆ ನಾವೆಷ್ಟು ತಲೆಬಾಗುತ್ತಿದ್ದೇವೆ ?

ಪ್ರಭುವೇ,
ನಿಮಗಾಗಿ ನಿಲ್ಲುವ
ಸ್ಥಿರತೆ  ನನ್ನ 
ಕಾಲುಗಳಿಗಿರಲಿ 
ನಿಮಗಾಗಿ ನಡೆಯುವ 
ನಿರಂತರತೆ  ನನ್ನ 
ಪಾದಗಳಿಗಿರಲಿ 
ನನ್ನ ಶಿರ ನಿಮ್ಮ 
ಚಿತ್ತಕೆ ಬಾಗುತ್ತಿರಲಿ 
ನಿಮ್ಮ ಕಾರ್ಯಗಳಿಗೆ 
ಕೈ ಜೋಡಿಸುವಲ್ಲಿ  
ಈ ನನ್ನ ಕೈ ನಿಮ್ಮ 
ಸದಾ ಸ್ತುತಿಸುತ್ತಿರಲಿ 
-ಚಿತ್ತ 

No comments:

Post a Comment