ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

22.03.2020 - “ಸ್ವಾವಿೂ, ನಾನು ವಿಶ್ವಾಸಿಸುತ್ತೇನೆ,”

ಮೊದಲನೇ ವಾಚನ: 1 ಸಮುವೇಲ 16:1, 6-7, 10-13


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು. ಸಮುವೇಲನು ಎಲೀಯಾಬನನ್ನು ನೋಡಿ ತನ್ನಷ್ಟಕ್ಕೆ, “ನಿಶ್ಚಯವಾಗಿ ಸರ್ವೇಶ್ವರ ಅಭಿಷೇಕಕ್ಕೆ ಆರಿಸಿಕೊಂಡವನು ನನ್ನ ಮುಂದೆಯೇ ಇದ್ದಾನೆ,” ಎಂದುಕೊಂಡನು. ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು. ಹೀಗೆ ಜೆಸ್ಸೆಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನೂ ಅವನ ಬಳಿಗೆ ಬರಮಾಡಿದರೂ ಅವನು, “ಸರ್ವೇಶ್ವರ ಇವರನ್ನು ಆರಿಸಿಕೊಳ್ಳಲಿಲ್ಲ,” ಎಂದು ನುಡಿದನು. ಅನಂತರ ಸಮುವೇಲನು ಜೆಸ್ಸೆಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ?” ಎಂದು ಕೇಳಿದನು. ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿದ್ದಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ,” ಎಂದು ಉತ್ತರಕೊಟ್ಟನು.

ಆಗ ಸಮುವೇಲನು, “ಅವನನ್ನು ಇಲ್ಲಿಗೆ ಬರಮಾಡು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು,” ಎಂದು ಹೇಳಿದನು. ಜೆಸ್ಸೆಯನು ಅವನನ್ನು ಕರೆದುತರಿಸಿದನು. ಅವನು ಕೆಂಬಣ್ಣದವನು, ಸುಂದರನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು. ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟು ಹೋದನು.

ಕೀರ್ತನೆ: 23:1-3, 3-4, 5, 6
ಶ್ಲೋಕ: ಪ್ರಭು ಕುರಿಗಾಹಿಯಾಗಿರಲು ಎನಗೆ, ಕುಂದುಕೊರತೆಗಳೆಲ್ಲಿಯವು ಎನಗೆ?

ಎರಡನೇ ವಾಚನ: ಎಫೆಸಿಯರಿಗೆ 5:8-14

ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ; ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ. ಕಾರಣ - ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು. ಪ್ರಭುವಿಗೆ ಮೆಚ್ಚಿಕೆಯಾದುದು ಯಾವುದೆಂಬುದನ್ನು ಕಲಿತುಕೊಳ್ಳಿರಿ. ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ. ಆ ಜನರು ಗುಟ್ಟಾಗಿ ಮಾಡುವ ಕೃತ್ಯಗಳು ಹೇಳುವುದಕ್ಕೂ ಅವಮಾನಕರವಾದುವು. ಬೆಳಕು ಬೆಳಗಿಸುವ ವಸ್ತುಗಳೆಲ್ಲವೂ ಕಂಗೊಳಿಸುವುವು. ಹೀಗೆ ಕಂಗೊಳಿಸುವುದೆಲ್ಲವೂ ಬೆಳಕಾಗುವುದು. ಆದ್ದರಿಂದ: “ನಿದ್ರೆಮಾಡುವವನೇ ಎದ್ದೇಳು ಸತ್ತವರನ್ನು ಬಿಟ್ಟು ಬಾ ಎಚ್ಚೆತ್ತು ನಿನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.

ಶುಭಸಂದೇಶ: ಯೊವಾನ್ನ 9:1-41


ಯೇಸುಸ್ವಾಮಿ ನಡೆದು ಹೋಗುತ್ತಿದ್ದಾಗ, ಒಬ್ಬ ಹುಟ್ಟು ಕುರುಡನನ್ನು ಕಂಡರು. ಶಿಷ್ಯರು, “ಗುರುದೇವಾ, ಇವನು ಕುರುಡನಾಗಿ ಹುಟ್ಟಬೇಕಾದರೆ ಅದಕ್ಕೆ ಯಾರ ಪಾಪ ಕಾರಣ? ಇವನದೋ ಅಥವಾ ಇವನನ್ನು ಹೆತ್ತವರದೋ?” ಎಂದು ಕೇಳಿದರು. ಅದಕ್ಕೆ ಉತ್ತರವಾಗಿ ಯೇಸು, ಇವನ ಪಾಪವಾಗಲಿ, ಇವನನ್ನು ಹೆತ್ತವರ ಪಾಪವಾಗಲಿ ಇದಕ್ಕೆ ಕಾರಣವಲ್ಲ, ದೇವರ ಕಾರ್ಯ ಇವನಲ್ಲಿ ವ್ಯಕ್ತವಾಗುವಂತೆ ಹೀಗಾಗಿದೆ. ಹಗಲಿರುವಾಗಲೇ ನನ್ನನ್ನು ಕಳುಹಿಸಿರುವಾತನ ಕೆಲಸವನ್ನು ನಾನು ಮಾಡುತ್ತಿರಬೇಕು. ರಾತ್ರಿ ಆದಮೇಲೆ ಯಾರೂ ಕೆಲಸಮಾಡಲಾಗದು. ಜಗತ್ತಿನಲ್ಲಿ ನಾನಿರುವಾಗ ಜಗದ ಜ್ಯೋತಿ ನಾನೇ,” ಎಂದು ನುಡಿದರು. ತರುವಾಯ ನೆಲದಲ್ಲಿ ಉಗುಳಿ, ಮಣ್ಣಿನ ಲೇಪಮಾಡಿ, ಅದನ್ನು ಕುರುಡನ ಕಣ್ಣಿಗೆ ಲೇಪಿಸಿ, “ನೀನು ಶಿಲೋವಾಮಿನ ಕೊಳಕ್ಕೆ ಹೋಗಿ ತೊಳೆದುಕೋ,” ಎಂದು ಹೇಳಿದರು. (‘ಶಿಲೋವಾಮ್’ ಎಂದರೆ ಕಳುಹಿಸಲಾದವನು ಎಂದರ್ಥ). ಅದರಂತೆಯೇ ಆ ಕುರುಡನು ಹೋಗಿ ಕಣ್ಣುಗಳನ್ನು ತೊಳೆದುಕೊಂಡನು; ಹಿಂದಿರುಗಿದಾಗ ಅವನಿಗೆ ಕಣ್ಣು ಬಂದಿತ್ತು. ಪುನಃ ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು. “ಹೌದು ಅವನೇ,” ಎಂದರು ಕೆಲವರು. “ಇಲ್ಲ, ಇವನು ಅವನಂತೆ ಕಾಣುತ್ತಾನೆ, ಅಷ್ಟೆ,” ಎಂದರು ಇತರರು. ಆ ಕುರುಡನು “ನಾನೇ ಅವನು” ಎಂದು ತಿಳಿಸಿದನು. ಆಗ ಅವರು, “ಹಾಗಾದರೆ ನಿನಗೆ ಕಣ್ಣು ಹೇಗೆ ಬಂತು?” ಎಂದು ಕೇಳಿದರು. ಅದಕ್ಕೆ ಅವನು, “ಯೇಸು ಎಂಬುವರು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿದರು, ‘ಶಿಲೋವಾಮಿಗೆ ಹೋಗಿ ತೊಳೆದುಕೊ,’ ಎಂದು ಹೇಳಿದರು; ನಾನು ಹೋಗಿ ತೊಳೆದುಕೊಂಡೆ; ನನಗೆ ಕಣ್ಣು ಬಂತು,” ಎಂದು ಹೇಳಿದನು. ಅದಕ್ಕೆ ಅವರು, “ಆತ ಎಲ್ಲಿದ್ದಾನೆ?” ಎಂದು ವಿಚಾರಿಸಿದರು. ಅವನು ಉತ್ತರವಾಗಿ “ನಾನರಿಯೆ,” ಎಂದನು. ಆಗ ಆ ಜನರು ಅವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಹೋದರು. ಏಕೆಂದರೆ, ಯೇಸುಸ್ವಾಮಿ ಮಣ್ಣಿನ ಲೇಪವನ್ನು ಮಾಡಿ ಅವನಿಗೆ ಕಣ್ಣುಕೊಟ್ಟ ದಿನ ಸಬ್ಬತ್ ದಿನವಾಗಿತ್ತು. ಕಣ್ಣು ಬಂದುದು ಹೇಗೆಂದು ಫರಿಸಾಯರು ಅವನನ್ನು ಮತ್ತೆ ಕೇಳಿದರು. “ಯೇಸು ನನ್ನ ಕಣ್ಣುಗಳಿಗೆ ಮಣ್ಣಿನ ಲೇಪವನ್ನು ಹಚ್ಚಿದರು; ನಾನು ಹೋಗಿ ಕಣ್ಣುಗಳನ್ನು ತೊಳೆದುಕೊಳ್ಳುತ್ತಲೇ ನನಗೆ ದೃಷ್ಟಿ ಬಂತು,” ಎಂದನು ಅವನು. ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕ ಕಾರ್ಯಗಳನ್ನು ಮಾಡಲು ಸಾಧ್ಯವೇ?” ಎಂದರು. ಹೀಗೆ ಅವರಲ್ಲೇ ಭಿನ್ನ ಬೇಧವುಂಟಾಯಿತು. ಆದ್ದರಿಂದ ಫರಿಸಾಯರು ಆ ಕುರುಡನನ್ನು ಕುರಿತು, “ಅವನೇ ನಿನಗೆ ಕಣ್ಣು ಕೊಟ್ಟನೆಂದು ಹೇಳುತ್ತೀಯಲ್ಲಾ, ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ವಿಚಾರಿಸಿದರು. ಅದಕ್ಕೆ ಅವನು, “ಅವರೊಬ್ಬ ಪ್ರವಾದಿಯೇ ಸರಿ,” ಎಂದನು. ಆ ಕುರುಡನು ಹಿಂದೆ ನಿಜವಾಗಿಯೂ ಕುರುಡನಾಗಿದ್ದು ಈಗ ದೃಷ್ಟಿ ಪಡೆದಿದ್ದಾನೆ ಎಂದು ಯೆಹೂದ್ಯ ಅಧಿಕಾರಿಗಳು ನಂಬಲು ಒಪ್ಪಲಿಲ್ಲ. ಈ ಕಾರಣ ಅವನ ಹೆತ್ತವರನ್ನು ಕರೆಯಿಸಿ, “ಇವನು ನಿಮ್ಮ ಮಗನೋ? ಇವನು ಹುಟ್ಟು ಕುರುಡನೋ? ಹಾಗಾದರೆ ಇವನಿಗೆ ಈಗ ಕಣ್ಣು ಬಂದದ್ದು ಹೇಗೆ?” ಎಂದು ಕೇಳಿದರು. ಅದಕ್ಕೆ ಅವನ ತಂದೆ ತಾಯಿಗಳು, “ಇವನಿಗೆ ದೃಷ್ಟಿ ಬಂದದ್ದು ಹೇಗೆ ಎಂದು ನಮಗೆ ಗೊತ್ತಿಲ್ಲ; ಇವನಿಗೆ ಕಣ್ಣುಕೊಟ್ಟವರು ಯಾರೆಂದೂ ನಮಗೆ ತಿಳಿಯದು. ಇವನನ್ನೇ ಕೇಳಿ, ಹೇಗೂ ಪ್ರಾಯದವನಾಗಿದ್ದಾನಲ್ಲವೆ? ತನ್ನ ವಿಷಯವಾಗಿ ತಾನೇ ಮಾತನಾಡಬಲ್ಲ,” ಎಂದು ಉತ್ತರಿಸಿದರು. ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾ ಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು. ಆದುದರಿಂದಲೇ, “ಅವನು ಪ್ರಾಯದವನು, ಅವನನ್ನೇ ಕೇಳಿ” ಎಂದು ಅವನ ತಂದೆತಾಯಿಗಳು ಹೇಳಿದ್ದು. ಅಧಿಕಾರಿಗಳು ಆ ಹುಟ್ಟು ಕುರುಡನನ್ನು ಮತ್ತೆ ಕರೆಯಿಸಿ, “ನೀನು ದೇವರ ಮುಂದೆ ಪ್ರಮಾಣ ಮಾಡಿ ಹೇಳು. ಆ ಮನುಷ್ಯ ಪಾಪಿಯೆಂದು ನಮಗೆ ಗೊತ್ತು,” ಎಂದು ಕೇಳಿದರು. ಉತ್ತರವಾಗಿ ಅವನು, “ಅವರು ಪಾಪಿಯೋ, ಅಲ್ಲವೋ ನಾನರಿಯೆ; ಆದರೆ ನಾನೊಮ್ಮೆ ಕುರುಡನಾಗಿದ್ದೆ; ಈಗಲಾದರೋ ಕಣ್ಣು ಕಾಣಿಸುತ್ತದೆ ಇಷ್ಟು ಮಾತ್ರ ಬಲ್ಲೆ,” ಎಂದು ಹೇಳಿದನು. “ಅವನು ನಿನಗೇನು ಮಾಡಿದ? ನಿನಗೆ ಹೇಗೆ ಕಣ್ಣು ಬರಿಸಿದ?” ಎಂದು ಅವರು ಮತ್ತೆ ಪ್ರಶ್ನಿಸಿದರು. ಅವನು, “ನಿಮಗೆ ಆಗಲೇ ಹೇಳಿದ್ದೇನೆ. ಆದರೆ ನೀವು ನಂಬುವುದಿಲ್ಲ. ಅದನ್ನೇ ಏಕೆ ಮತ್ತೆ ಮತ್ತೆ ಕೇಳುತ್ತೀರಿ? ಅವನ ಶಿಷ್ಯರಾಗಲು ನಿಮಗೂ ಮನಸ್ಸಿದೆಯೇ?” ಎಂದನು. ಆಗ ಅಧಿಕಾರಿಗಳು ಅವನನ್ನು ಶಪಿಸಿದರು. “ನೀನೇ ಅವನ ಶಿಷ್ಯ, ನಾವು ಮೋಶೆಯ ಶಿಷ್ಯರು. ಮೋಶೆಯೊಡನೆ ದೇವರು ಮಾತನಾಡಿದರು ಎಂಬುದನ್ನು ನಾವು ಬಲ್ಲೆವು. ಆದರೆ ಇವನು ಎಲ್ಲಿಯವನೋ ನಾವು ಅರಿಯೆವು,” ಎಂದರು. ಅದಕ್ಕೆ ಆ ಕುರುಡ, “ಏನಾಶ್ಚರ್ಯ! ನನಗೆ ಕಣ್ಣು ಬರಿಸಿದ್ದಾರೆ. ಆದರೂ ‘ಅವನು ಎಲ್ಲಿಯವನೋ ನಾವರಿಯೆವು’ ಎನ್ನುತ್ತೀರಿ. ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ. ಹುಟ್ಟು ಕುರುಡನಿಗೆ ಯಾರಾದರೂ ಕಣ್ಣುಕೊಟ್ಟ ಸುದ್ದಿಯನ್ನು ಲೋಕ ಸೃಷ್ಟಿಯಾದಾಗಿನಿಂದ ಒಬ್ಬರೂ ಕೇಳಿಲ್ಲ.

ಇವರು ದೇವರಿಂದ ಬಂದವರು ಅಲ್ಲದಿದ್ದರೆ ಇಂಥದ್ದೇನನ್ನೂ ಮಾಡಲಾಗುತ್ತಿರಲಿಲ್ಲ,” ಎಂದನು. ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು. ನಮಗೇ ಬುದ್ಧಿ ಹೇಳ ಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿ ಬಿಟ್ಟರು. ಹುಟ್ಟು ಕುರುಡನನ್ನು ಹೊರಗೆ ತಳ್ಳಿದ ವಾರ್ತೆ ಯೇಸುಸ್ವಾಮಿಯ ಕಿವಿಗೆ ಮುಟ್ಟಿತು. ಯೇಸು ಅವನನ್ನು ಕಂಡು, “ನರಪುತ್ರನಲ್ಲಿ ನಿನಗೆ ವಿಶ್ವಾಸವಿದೆಯೇ?” ಎಂದು ಕೇಳಿದರು. ಅವನು, “ಅವರು ಯಾರೆಂದು ತಿಳಿಸಿ ಸ್ವಾವಿೂ, ನಾನು ವಿಶ್ವಾಸಿಸುತ್ತೇನೆ,” ಎಂದನು. ಯೇಸು, “ನೀನು ಆತನನ್ನು ಕಂಡಿದ್ದೀಯೆ, ನಿನ್ನೊಡನೆ ಮಾತನಾಡುತ್ತಿರುವ ನಾನೇ ಆತನು,” ಎಂದರು. “ಸ್ವಾವಿೂ, ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳುತ್ತಾ ಅವನು ಯೇಸುವಿಗೆ ಅಡ್ಡಬಿದ್ದನು. ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪು ಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು. ಅಲ್ಲಿ ನಿಂತಿದ್ದ ಫರಿಸಾಯರು ಈ ಮಾತನ್ನು ಕೇಳಿ, “ಹಾಗಾದರೆ ನಾವು ಕೂಡ ಕುರುಡರೋ?” ಎಂದು ಪ್ರಶ್ನಿಸಿದರು. ಯೇಸು, “ನೀವು ಕುರುಡರೇ ಆಗಿದ್ದರೆ ಪಾಪಿಗಳಾಗುತ್ತಿರಲಿಲ್ಲ, ಆದರೆ, ‘ನಮಗೆ ಕಣ್ಣು ಕಾಣುತ್ತದೆ,’ ಎಂದು ಹೇಳಿಕೊಳ್ಳುತ್ತೀರಿ; ಆದ್ದರಿಂದ ನೀವು ಪಾಪಿಗಳಾಗಿದ್ದೀರಿ,” ಎಂದರು.





ಮನಸ್ಸಿಗೊಂದಿಷ್ಟು :  ಹುಟ್ಟಿನಿಂದಲೇ ಕುರುಡನಾಗಿದ್ದ ವ್ಯಕ್ತಿಗೆ ಯೇಸು ದೃಷ್ಟಿ ನೀಡಿದರೂ ನಂಬದವರು ಇದ್ದರು ಎನ್ನುತ್ತದೆ ಇಂದಿನ ಶುಭಸಂದೇಶ. ಅಷ್ಟು ಮಾತ್ರವಲ್ಲದೆ ಆ ಗುಣ ಹೊಂದಿದ ವ್ಯಕ್ತಿಯನ್ನೂ ವ್ಯಂಗ ಮಾಡುತ್ತಾರೆ, ದೂಷಿಸುತ್ತಾರೆ.  ಇದು ಆಶ್ಚರ್ಯದ ಸಂಗತಿಯೇನ್ನಲ್ಲ. ಇಂದಿಗೂ ದೇವರ ಕಾರ್ಯಗಳು ನೆರವೇರುತ್ತದೆ ಎಂಬುದನ್ನು ನಂಬದವರು ನಮ್ಮ ನಡುವೆಯೇ ಇದ್ದಾರೆ. ನಂಬುವವರನ್ನು, ವ್ಯಂಗ ಮಾಡುವವರು ಈಗಲೂ ಇದ್ದಾರೆ. ನಮ್ಮ ಮನೋಭಾವ ಹಾಗಾಗದಿರಲಿ. 

ಪ್ರಶ್ನೆ : ವಿಶ್ವಾಸದ ಕುರುಡುತನದಿಂದ ಬಳಲುತ್ತಿರುವ ನಮ್ಮ ಕಣ್ಣುಗಳು ತೆರೆಯಬೇಕೆಂಬ ಆಸೆ ನಮಗಿದೆಯೇ?

ಪ್ರಭುವೇ,
ಹುಟ್ಟಿನಿಂದಲೂ ನಿಮ್ಮವರೇ   
ಎನ್ನಿಸಿಗೊಂಡಿದ್ದರೂ 
ಬೆನ್ನು ಮಾಡಿದ್ದೇವೆ ಬೆಳಕಿಗೆ 
ನಮ್ಮ ಅವಿಶ್ವಾಸದ 
ಅಂಧತ್ವವನ್ನು ನೀಗಿಸಿ
ಬೆಳಕು ನೀಡಿ 
ಕಣ್ಣು ಮನಸ್ಸಿಗೆ  
ಪಡೆದ ಬೆಳಕು ಸಾರಲಿ 
ನಿಮ್ಮ ಮಹಿಮೆ 
ಸಾರಿ ಹರಡಲಿ 
ದೈವ ನಲುಮೆ 

No comments:

Post a Comment