ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

27.03.2020 - "ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ"

ಮೊದಲನೇ ವಾಚನ: ಸುಜ್ಜಾನಗ್ರಂಥ 2:1, 12-22

ದೇವರಿಲ್ಲದವರು ಅಪವಾದಮಾಡಿಕೊಂಡರು ಈ ಪರಿ: “ನಮ್ಮ ಬದುಕು ಅಲ್ಪಕಾಲಿಕ ಹಾಗು ದುಃಖಕರ ಮರಣಕ್ಕೆ ಮದ್ದಿಲ್ಲ, ಸತ್ತವರಿಂದ ಹಿಂದಿರುಗಿದವರಿಲ್ಲ; ನೀತಿವಂತನಿಗಾಗಿ ಹೊಂಚುಹಾಕೋಣ ಬಲೆಯೊಡ್ಡಿ ಅವನು ನಮಗೊಂದು ಪೀಡೆ, ನಮ್ಮ ನಡತೆಗೆ ಅಡ್ಡಿ ಆರೋಪಿಸುತ್ತಾನೆ, ಧರ್ಮಕ್ಕೆ ವಿರುದ್ಧ ಪಾಪಕಟ್ಟಿಕೊಂಡೆವೆಂದು ದೂಷಿಸುತ್ತಾನೆ, ಸಂಪ್ರದಾಯದ ವಿರುದ್ಧ ಪಾಪ ಮಾಡಿದೆವೆಂದು. ಹೇಳಿಕೊಳ್ಳುತ್ತಾನೆ ತಾನೇ ದೇವರನು ಬಲ್ಲವನೆಂದು ಕರೆದುಕೊಳ್ಳುತ್ತಾನೆ ತನ್ನನ್ನು ತಾನೇ ದೇವರ ಮಗನೆಂದು. ನಮ್ಮ ಆಲೋಚನೆಗಳನ್ನು ಆಕ್ಷೇಪಿಸುವ ವ್ಯಕ್ತಿ ಅವನು ಅವನನ್ನು ನೋಡಿದ್ದೇ ನಮ್ಮ ಉತ್ಸಾಹ ಕುಂದಿಹೋಗುವುದು. ಏಕೆಂದರೆ ಅವನು ಇತರರಂತೆ ಅಲ್ಲ ಅವನ ಮಾರ್ಗವೋ ನಮಗೆ ವಿಚಿತ್ರ. ಅವನ ಎಣಿಕೆಯಲ್ಲಿ ನಾವೆಲ್ಲರು ನಕಲಿ ನಾಣ್ಯದಂತೆ ನಮ್ಮಿಂದ ದೂರವಾಗುತ್ತಾನೆ ಹೇಸಿಕೆಯನ್ನು ಕಂಡಂತೆ. ನೀತಿವಂತರ ಮರಣ ಸಂತೋಷಕರವೆನ್ನುತ್ತಾನೆ ದೇವರೇ ತನ್ನ ತಂದೆಯೆಂದು ಕೊಚ್ಚಿಕೊಳ್ಳುತ್ತಾನೆ. ಅವನ ಮಾತುಗಳೇ ಸತ್ಯವೇನೋ ನೋಡೋಣ ಅವನ ಜೀವಾಂತ್ಯದ ಗತಿ ಏನೆಂದು ಪರೀಕ್ಷಿಸೋಣ. ನೀತಿವಂತ ದೇವಕುಮಾರನಾಗಿದ್ದರೆ ದೇವರು ಅವನಿಗೆ ನೆರವಾಗಬೇಕು ಶತ್ರುಗಳ ಕೈಯಿಂದ ಅವನನ್ನು ತಪ್ಪಿಸಿ ಕಾಪಾಡಬೇಕು. ಅಂಥವನನ್ನು ಹಿಂಸಿಸಿ, ಪೀಡಿಸಿ, ಪರೀಕ್ಷಿಸೋಣ ಅವನಲ್ಲಿ ಸೌಜನ್ಯ ಎಷ್ಟಿದೆಯೆಂದು ತಿಳಿಯೋಣ ಅನ್ಯಾಯದೆದುರು ತಾಳ್ಮೆಯೆಷ್ಟಿದೆಯೆಂದು ಶೋಧಿಸೋಣ; ಅವಮಾನಕರ ಮರಣಶಿಕ್ಷೆಯನ್ನು ಅವನಿಗೆ ವಿಧಿಸೋಣ ‘ದೇವರು ರಕ್ಷಿಸುತ್ತಾನೆ’ ಎಂದಾಗಿತ್ತಲ್ಲವೇ ಅವನ ವಾದ?” ಈ ಪರಿ ಆಲೋಚಿಸಿ ವಂಚಿತರಾದರು ದುರುಳರು ಅವರ ದುಷ್ಟತನವೇ ಅವರನ್ನು ಕುರುಡರನ್ನಾಗಿಸಿತು. ದೇವರ ನಿಗೂಢ ಯೋಜನೆಯನ್ನು ಅವರು ಅರಿಯಲಿಲ್ಲ ಪವಿತ್ರ ಜೀವನಕ್ಕೆ ದೊರಕುವ ಫಲವನ್ನು ಹಾರೈಸಲಿಲ್ಲ ನಿರ್ದೋಷಿಗಳಿಗೆ ಸಂಭಾವನೆಯಿದೆಯೆಂದು ನಂಬಲಿಲ್ಲ.

ಕೀರ್ತನೆ: 34:17-18, 19-20, 21, 23

ಶ್ಲೋಕ: ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ

ಶುಭಸಂದೇಶ: ಯೊವಾನ್ನ 7:1-2, 10, 25-30


ಇದಾದ ಬಳಿಕ ಯೇಸುಸ್ವಾಮಿ ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ. ಯೆಹೂದ್ಯರ ಪರ್ಣಕುಟೀರಗಳ ಹಬ್ಬವು ಹತ್ತಿರವಾಗುತ್ತಿತ್ತು. ಯೇಸುಸ್ವಾಮಿಯ ಸೋದರರು ಹಬ್ಬಕ್ಕೆ ಹೋದರು. ಯೇಸುವೂ ಅಲ್ಲಿಗೆ ಹೋದರು. ಬಹಿರಂಗವಾಗಿ ಅಲ್ಲ, ಗುಟ್ಟಾಗಿ. ಜೆರುಸಲೇಮಿನ ಕೆಲವು ಮಂದಿ ಇದನ್ನು ಕೇಳಿ, “ಅವರು ಕೊಲ್ಲಬೇಕೆಂದು ಹವಣಿಸುತ್ತಾ ಇರುವುದು ಈತನನ್ನೇ ಅಲ್ಲವೆ? ಇಗೋ, ಈತ ಬಹಿರಂಗವಾಗಿ ಮಾತನಾಡುತ್ತಿದ್ದಾನೆ. ಆದರೂ ಈತನಿಗೆ ವಿರುದ್ಧವಾಗಿ ಅವರಾರೂ ಮಾತೆತ್ತುತ್ತಿಲ್ಲ! ಈತನೇ ಲೋಕೋದ್ಧಾರಕನೆಂದು ಆ ಮುಖಂಡರಿಗೆ ಹೊಳೆದಿರಬಹುದೆ? ಲೋಕೋದ್ಧಾರಕನು ಕಾಣಿಸಿಕೊಳ್ಳುವಾಗ ಆತನು ಎಲ್ಲಿಂದ ಬಂದನೆಂದು ಯಾರಿಗೂ ತಿಳಿದಿರುವುದಿಲ್ಲ. ಆದರೆ ಈತನು ಎಲ್ಲಿಂದ ಬಂದವನೆಂದು ನಮ್ಮೆಲ್ಲರಿಗೂ ತಿಳಿದಿದೆಯಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಆದುದರಿಂದ ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸುಸ್ವಾಮಿ ಆಗ ಗಟ್ಟಿಯಾಗಿ ಇಂತೆಂದರು: “ನಾನು ಯಾರೆಂದು, ಎಲ್ಲಿಂದ ಬಂದವನೆಂದು ನೀವು ಬಲ್ಲಿರೋ? ನಾನು ನನ್ನಷ್ಟಕ್ಕೇ ಬಂದವನಲ್ಲ; ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ. ನಾನಾದರೋ ಆತನನ್ನು ಅರಿತಿದ್ದೇನೆ. ಏಕೆಂದರೆ, ನಾನು ಬಂದುದು ಆತನಿಂದಲೇ. ಆತನೇ ನನ್ನನ್ನು ಕಳುಹಿಸಿದ್ದು,” ಇದನ್ನು ಕೇಳಿದ ಯೆಹೂದ್ಯರು ಯೇಸುವನ್ನು ಹಿಡಿದು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಗಳಿಗೆ ಇನ್ನೂ ಬಾರದೆ ಇದ್ದ ಕಾರಣ ಯಾರೂ ಅವರ ಮೇಲೆ ಕೈ ಹಾಕಲಿಲ್ಲ.

ಮನಸ್ಸಿಗೊಂದಿಷ್ಟು : ಯೇಸುವನ್ನು ನಿರಾಕರಿಸಿದವರನ್ನು ಇಂದಿನ ಶುಭಸಂದೇಶದಲ್ಲಿ ಕಾಣಬಹುದು. ನಾವು ಅವರಿಗಿಂತ ಭಿನ್ನರೆನ್ನಲ್ಲ. ಅಂದಿನ ಯಹೂದ್ಯರಿಗಾದರೂ  ಅವರದೇ ಸಂಪ್ರದಾಯ, ಆಚರಣೆ, ದೇವರ ಬಗ್ಗೆಗಿನ ಕಲ್ಪನೆಯ ಅಡಚಣೆಯಿತ್ತು, ಅವರು ಯೇಸುವನ್ನು ನಿರಾಕರಿಸಿದರು. ಆದರೆ ಹುಟ್ಟಿನಿಂದಲೂ ಯೇಸುವಿನ ವಾಕ್ಯ, ಧರ್ಮಸಭೆಯ ಬೋಧನೆಯೆಲ್ಲವನ್ನು ಕೇಳುತ್ತಲೇ ಬಂದಿರುವ ನಾವು  ನಮ್ಮ ನಡೆ ನುಡಿಯಿಂದ ಕ್ರಿಸ್ತ ಯೇಸುವನ್ನು ನಿರಾಕರಿಸುತ್ತಲೇ ಇದ್ದೇವೆ. ಆದರಿಸುವಂತವರಾಗೋಣ.   

ಪ್ರಶ್ನೆ : ಸತ್ಯಸ್ವರೂಪಿಯಾದ ದೇವರನ್ನು ನಾವು ಅರಿತ್ತಿದ್ದೇವೆಯೇ?

ಪ್ರಭುವೇ,
ಅರಿವಂತೆ ಮಾಡು ನಿಮ್ಮನ್ನೂ 
ನಿಮ್ಮನು ಕಳುಹಿಸಿದಾತನನ್ನು
ನುಡಿವಂತೆ ಮಾಡು ಸದಾ 
ನಿಮ್ಮನ್ನು ನಿಮ್ಮ ಕಳುಹಿಸಿದಾತನ
ಸಂದೇಶವನ್ನು
ನಡೆವಂತೆ ಮಾಡು ಮರೆಯದೆ 
ನಿಮ್ಮ ನಿಮ್ಮನ್ನು ಕಳುಹಿಸಿದಾತನ 
ಮಾರ್ಗವನ್ನು 

No comments:

Post a Comment