ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

02.04.2020 - "ನನ್ನ ಘನತೆ ಗೌರವವನ್ನು ಸಾರುವವರಾದರೋ ನನ್ನ ಪಿತನು"

ಮೊದಲನೇ ವಾಚನ: ಆದಿಕಾಂಡ 17:3-9

ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು. ದೇವರು ಅವನಿಗೆ, “ನಾನು ನಿನಗೆ ವಾಗ್ದಾನ ಮಾಡಿ ಹೇಳುತ್ತೇನೆ: ನೀನು ಅನೇಕ ರಾಷ್ಟ್ರಗಳಿಗೆ ಮೂಲ ಪುರುಷನಾಗುವೆ. ಇನ್ನು ಮುಂದೆ ನಿನಗೆ ‘ಅಬ್ರಾಮ’ ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಟ್ರಗಳಿಗೆ ಮೂಲಪುರುಷನನ್ನಾಗಿ ನೇಮಿಸುವುದರಿಂದ ನಿನಗೆ ‘ಅಬ್ರಹಾಮ’ ಎಂಬ ಹೆಸರಿರುವುದು. ನಿನ್ನನ್ನು ಅತ್ಯಂತ ಫಲದಾಯಕ ಪುರುಷನನ್ನಾಗಿ ಮಾಡುತ್ತೇನೆ. ನಿನ್ನಿಂದ ರಾಷ್ಟ್ರಗಳೂ ರಾಜರುಗಳೂ ಉತ್ಪತ್ತಿಯಾಗುವರು. ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ. ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.” ಇದಲ್ಲದೆ ದೇವರು ಅಬ್ರಹಾಮನಿಗೆ ಹೀಗೆಂದು ಹೇಳಿದರು: “ನೀನು ಕೂಡ ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು. ನೀನು ಮಾತ್ರವಲ್ಲ, ನಿನ್ನ ಸಂತತಿಯವರು ತಲತಲಾಂತರಕ್ಕೂ ಅದನ್ನು ಕೈಗೊಂಡು ನಡೆಯಬೇಕು.

ಕೀರ್ತನೆ: 105:4-5, 6-7, 8-9

ಶ್ಲೋಕ: ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು

ಶುಭಸಂದೇಶ: ಯೊವಾನ್ನ 8:51-59


ಯೇಸುಸ್ವಾಮಿ ಯೆಹೂದ್ಯರಿಗೆ: "ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯ ಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು. “ನೀನು ದೆವ್ವ ಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ; ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ಶ್ರೇಷ್ಟನೋ? ಆತನೂ ಸಾವಿಗೀಡಾದನು, ಪ್ರವಾದಿಗಳೂ ಸಾವಿಗೆ ಈಡಾಗಿರುವರು; ನೀನು ಯಾರೆಂದು ನಿನ್ನ ಎಣಿಕೆ?” ಎಂದು ಆ ಯೆಹೂದ್ಯ ಅಧಿಕಾರಿಗಳು ಕೇಳಿದರು. ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆ ಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆ ಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ. ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ. ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ತಾನು ಕಾಣುವನೆಂದು ಹಿಗ್ಗಿದನು. ಆತನು ಅದನ್ನು ಕಂಡೂ ಆಯಿತು; ಹಿಗ್ಗಿಯೂ ಆಯಿತು,” ಎಂದು ಉತ್ತರ ಕೊಟ್ಟರು. ಯೆಹೂದ್ಯರು, “ನಿನಗಿನ್ನೂ ಐವತ್ತು ವರ್ಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯಾ?” ಎಂದರು. ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರು ನುಡಿದರು. ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟು ಹೋದರು.

ಮನಸ್ಸಿಗೊಂದಿಷ್ಟು : ಹಿಂದೆ ಇಂದು ಮುಂದೂ  ಇರುವ ಯೇಸುವಿನ ಮಾತಿಗೆ ಶರಣಾದರೆ ನಮಗೆ ಪ್ರವಾದಿಗಳೂ ಕಾಣದಂಥ ಭಾಗ್ಯ ಸಿಗುತ್ತದೆ ಎಂಬ ಭರವಸೆ ಇಂದಿನ ಶುಭಸಂದೇಶದಲ್ಲಿದೆ. ನಮಗೆ ಶರಣಾಗುವ ಮನಸ್ಸಿದೆಯೇ ಎಂಬುದು ಪ್ರಶ್ನೆ. ನಾವು ಇಂದು ದೇವರಿಗೆ ಬಿಟ್ಟು ಮತ್ತೆಲ್ಲದಕ್ಕೂ ಶರಣಾಗುತ್ತಿದ್ದೇವೆ. ಯಾವುದಕ್ಕೆ ನಮ್ಮ ಆದ್ಯತೆ ಎಂದು ಚಿಂತಿಸುವ ಕಾಲವಿದು. 

ಪ್ರಶ್ನೆ : ನಮ್ಮ ಬದುಕು ಯಾವುದಕ್ಕೆ ಶರಣಾಗಿದೆ?

ಪ್ರಭುವೇ,
ಎಲ್ಲವ ಸವಿದು ಅಲೆದು
ಏಕಾಂತಕ್ಕೆ ಮರಳಲು 
ಇರುವುದೊಂದೇ ಮಡಿಲು 
ಕಾರಿ ಹಗೆ ಕೋಪ ಮತ್ಸರ 
ಒಳಗೊಳಗೆ ಮನ ತತ್ತರ 
ನೆಮ್ಮದಿಯ ಅಲೆ ತರಲು  
ಇರುವುದೊಂದೇ ಕಡಲು 
ಶರಣೆನ್ನ ಮನವು ನಿನಗೆ 
ನಿನ್ನೆಡೆಗೆ ನನ್ನದೆಲ್ಲವು ಕೊನೆಗೆ 

No comments:

Post a Comment