ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

09.04.2020 - “ಸ್ನಾನ ಮಾಡಿಕೊಂಡವನು ಕಾಲುಗಳನ್ನು ತೊಳೆದುಕೊಂಡರೆ ಸಾಕು, ಅವನ ಮೈಯೆಲ್ಲಾ ಶುದ್ಧವಾಗಿರುತ್ತದೆ"

ಮೊದಲನೇ ವಾಚನ: ವಿಮೋಚನಕಾಂಡ 12:1-8, 11-14

ಸರ್ವೇಶ್ವರಸ್ವಾಮಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ ಹೀಗೆಂದರು: “ಎಲ್ಲ ಮಾಸಗಳಲ್ಲಿ ಇದೇ ನಿಮಗೆ ಆದಿ ಮಾಸವಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರಬೇಕು. ಈ ವಿಷಯದಲ್ಲಿ ನೀವು ಇಸ್ರಯೇಲರ ಸಮಾಜಕ್ಕೆಲ್ಲ ಈ ರೀತಿ ಕಟ್ಟಳೆ ಇಡಬೇಕು: ‘ಈ ತಿಂಗಳ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ಆರಿಸಿಕೊಳ್ಳಬೇಕು ಕುಟುಂಬವು ಚಿಕ್ಕದಾಗಿದ್ದು ಒಂದು ಮರಿಯನ್ನು ಪೂರ್ತಿಯಾಗಿ ತಿನ್ನಲಾಗದಿದ್ದರೆ ಹತ್ತಿರದ ನೆರೆಮನೆಯ ಕುಟುಂಬದೊಂದಿಗೆ ಸೇರಿ ಒಬ್ಬೊಬ್ಬನು ಇಷ್ಟಿಷ್ಟು ತಿನ್ನುವನೆಂದು ಲೆಕ್ಕ ಹಾಕಿ ಜನಗಳ ಸಂಖ್ಯಾನುಸಾರ ಮರಿಗಳನ್ನು ಆರಿಸಿಕೊಳ್ಳಲಿ. ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು. ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೆ ವೇಳೆಯಲ್ಲಿ ಇಸ್ರಯೇಲ್ ಸಮಾಜದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು ಅವುಗಳ ರಕ್ತದಲ್ಲಿ ಸ್ವಲ್ಪ ತೆಗೆದು ತಾವು ಆ ಭೋಜನ ಮಾಡುವ ಮನೆಯ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗೂ ಹಚ್ಚಬೇಕು. ಆ ರಾತ್ರಿಯಲ್ಲೇ ಆ ಮಾಂಸವನ್ನು ತಿನ್ನಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿ ಆದ ಪಲ್ಯಗಳ ಸಮೇತ ಊಟಮಾಡಬೇಕು. ಆ ಭೋಜನವನ್ನು ಮಾಡಬೇಕಾದ ಕ್ರಮ ಇದು: ನೀವು ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು, ಬೇಗಬೇಗನೆ ಊಟ ಮಾಡಬೇಕು. ಏಕೆಂದರೆ ಅದು ಸರ್ವೇಶ್ವರಸ್ವಾಮಿಗೆ ಆಚರಿಸತಕ್ಕ ಪಾಸ್ಕಹಬ್ಬ. ‘ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದು ಹೋಗುವೆನು; ಮನುಷ್ಯರಾಗಿ ಇರಲಿ, ಪ್ರಾಣಿಗಳಾಗಿರಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ! ನೀವು ಬಾಗಿಲಿಗೆ ಹಚ್ಚಿದ ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವುದು. ಅದನ್ನು ಕಂಡು ನಿಮಗೆ ಯಾವ ಹಾನಿಯನ್ನು ಮಾಡದೆ ಮುಂದಕ್ಕೆ ದಾಟಿ ಹೋಗುವೆನು. ನಾನು ಈಜಿಪ್ಟಿನವರನ್ನು ಸಂಹರಿಸುವಾಗ ನಿಮಗೆ ಯಾವ ಕೇಡೂ ಆಗದು. ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು’.

ಕೀರ್ತನೆ: 116:12-13, 15-16, 17-18

ಶ್ಲೋಕ: ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ,
ಪಾನಾಪಾತ್ರೆಯಿಂದ ಕುಡಿಯುವಾಗ ಕ್ರಿಸ್ತೇಸುವಿನ ರಕ್ತದಲ್ಲಿ ಪಾಲ್ಗೊಳ್ಳುತ್ತೇವೆ.

ನನಗಿದೆ ಪ್ರಭುವಿನಲಿ ಪ್ರೀತಿ |
ಅಲಿಸಿಹನಾತ ನನ್ನ ವಿನಂತಿ ||

ಪ್ರಭು ಎನಗೆ ಮಾಡಿದ ಮಹೋಪಕಾರಗಳಿಗಾಗಿ |
ನನ್ನಿಂದೇನು ಮಡಲು‌ ಸಾಧ್ಯ
ಪ್ರತಿಯಾಗಿ ? ||
ಎತ್ತಿ ಹಿಡಿವೆನು ರಕ್ಷಣೆಯ
ಪಾನಪಾತ್ರೆಯನು |
ಪ್ರಖ್ಯಾತಪಡಿಸುವೆನು ಪ್ರಭುವಿನ‌ ನಾಮವನು ||

ಪ್ರಭು ಅಲ್ಪವೆಂದೆಣಿಸನು |
ತನ್ನ‌ ಭಕ್ತರ ಮರಣವನು ||
ಹೇ ಪ್ರಭು ಕರುಣಿಸು ನಾ ನಿನ್ನ ಕಿಂಕರನು |
ನಿನ್ನ ದಾಸಿಯ ಮಗನು‌ ನಿನ್ನ ಸೇವಕನು |
ಬಿಡಸಿರುವೆ  ನೀ ನನ್ನ ಬಂಧನಗಳನು ||

ಅರ್ಪಿಸುವೆ ನಾ ನಿನಗೆ ಕೃತಜ್ಞತಾ ಬಲಿಗಳನು |
ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು ||
ಹೇ ಜೆರುಸಲೇಮೇ ನಿನ್ನ ಮಧ್ಯದೊಳು |

ಅತನಿರುವ  ಮಂದಿರದ ಅಂಗಳದೋಳು ||

ಎರಡನೇ ವಾಚನ: 1 ಕೊರಿಂಥಿಯರಿಗೆ 11: 23-26

ಸಹೋದರರೇ, ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ; ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ ರೊಟ್ಟಿಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಅದನ್ನು ಮುರಿದು, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ಇದನ್ನು ನನ್ನ ಸ್ಮರಣೆಗಾಗಿ ಮಾಡಿ,” ಎಂದರು. ಅಂತೆಯೇ ಭೋಜನದ ಕೊನೆಯಲ್ಲಿ ಪಾನ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ,” ಎಂದರು. ಎಂದೇ, ನೀವು ಈ ರೊಟ್ಟಿಯನ್ನು ಭುಜಿಸಿ ಈ ಪಾತ್ರೆಯಿಂದ ಪಾನಮಾಡುವಾಗಲೆಲ್ಲಾ ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ.

ಶುಭಸಂದೇಶ: ಯೊವಾನ್ನ 13:1-15


ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದು ಎಂದು ಯೇಸುಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು. (ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು). ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೇನೆಂದೂ ಯೇಸುವಿಗೆ ತಿಳಿದಿತ್ತು. ಅವರು ಊಟದಿಂದ ಎದ್ದು, ತಮ್ಮ ಮೇಲುಹೊದಿಕೆಯನ್ನು ತೆಗೆದಿಟ್ಟರು. ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡರು. ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ತಮ್ಮ ಶಿಷ್ಯರ ಕಾಲುಗಳನ್ನು ತೊಳೆಯುತ್ತಾ ತಾವು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಒರಸತೊಡಗಿದರು. ಹೀಗೆ, ಅವರು ಸಿಮೋನ ಪೇತ್ರನ ಹತ್ತಿರಕ್ಕೆ ಬಂದಾಗ ಆತ, “ಪ್ರಭುವೇ, ನೀವು ನನ್ನ ಕಾಲುಗಳನ್ನು ತೊಳೆಯುವುದೇ?” ಎಂದನು. ಯೇಸು, “ನಾನು ಮಾಡುತ್ತಿರುವುದು ನಿನಗೆ ಈಗ ಅರ್ಥವಾಗದು, ಮುಂದೆ ಅರ್ಥವಾಗುತ್ತದೆ,” ಎಂದು ಉತ್ತರಿಸಿದರು. “ನೀವು ನನ್ನ ಕಾಲುಗಳನ್ನು ತೊಳೆಯುವುದು ಎಂದಿಗೂ ಕೂಡದು,” ಎಂದು ಪೇತ್ರನು ಪ್ರತಿಭಟಿಸಿದನು. ಅದಕ್ಕೆ ಯೇಸು, “ನಾನು ತೊಳೆಯದಿದ್ದರೆ ನಿನಗೆ ನನ್ನಲ್ಲಿ ಪಾಲು ಇಲ್ಲ,” ಎಂದು ನುಡಿದರು. ಆಗ ಪೇತ್ರನು, “ಹಾಗಾದರೆ ಪ್ರಭೂ, ನನ್ನ ಕಾಲುಗಳನ್ನು ಮಾತ್ರವಲ್ಲ, ನನ್ನ ಕೈಗಳನ್ನೂ ತಲೆಯನ್ನೂ ತೊಳೆಯಿರಿ,” ಎಂದನು. ಯೇಸು, “ಸ್ನಾನಮಾಡಿಕೊಂಡವನು ಕಾಲುಗಳನ್ನು ತೊಳೆದುಕೊಂಡರೆ ಸಾಕು, ಅವನ ಮೈಯೆಲ್ಲಾ ಶುದ್ಧವಾಗಿರುತ್ತದೆ. ನೀವೂ ಕೂಡ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದು ಹೇಳಿದರು. ತಮ್ಮನ್ನು ಗುರುದ್ರೋಹದಿಂದ ಹಿಡಿದುಕೊಡುವವನು ಯಾರೆಂಬುದು ಅವರಿಗೆ ಗೊತ್ತಿತ್ತು. ಅದಕ್ಕಾಗಿಯೇ ಅವರು, ‘ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,’ ಎಂದು ಹೇಳಿದರು. ಶಿಷ್ಯರ ಪಾದಗಳನ್ನು ತೊಳೆದ ಮೇಲೆ ಯೇಸು ತಮ್ಮ ಮೇಲುಹೊದಿಕೆಯನ್ನು ಹಾಕಿಕೊಂಡು ಕುಳಿತುಕೊಂಡರು. ತಮ್ಮ ಶಿಷ್ಯರಿಗೆ, “ನಿಮಗೆ, ನಾನು ಮಾಡಿರುವುದು ಏನೆಂದು ಅರ್ಥವಾಯಿತೇ? ‘ಬೋಧಕರೇ, ಪ್ರಭುವೇ’ ಎಂದು ನೀವು ನನ್ನನ್ನು ಕರೆಯುತ್ತೀರಿ; ನೀವು ಹಾಗೆ ಹೇಳುವುದು ಸರಿಯೆ. ನಾನು ಬೋಧಕನೂ ಹೌದು, ಪ್ರಭುವೂ ಹೌದು. ನಿಮಗೆ ಪ್ರಭುವೂ ಬೋಧಕನೂ ಆಗಿರುವ ನಾನೇ ನಿಮ್ಮ ಕಾಲುಗಳನ್ನು ತೊಳೆದಿರುವಾಗ ನಿವು ಸಹ ಒಬ್ಬರ ಕಾಲುಗಳನ್ನು ಇನ್ನೊಬ್ಬರು ತೊಳೆಯುವ ಹಂಗಿನಲ್ಲಿದ್ದೀರಿ. ನಾನು ನಿಮಗೆ ಒಂದು ಆದರ್ಶವನ್ನು ಕೊಟ್ಟಿದ್ದೇನೆ. ನಾನು ನಿಮಗೆ ಮಾಡಿದಂತೆಯೇ ನೀವೂ ಇತರರಿಗೆ ಮಾಡಿರಿ.

ಮನಸ್ಸಿಗೊಂದಿಷ್ಟು  :  ಯೇಸು ಪಿತನ ಬಳಿಗೆ ಹೋಗುವ ಅಥವಾ ಕಾಣುವ ಹತ್ತಿರದ ಸಮಯದಲ್ಲಿ ಪರ ಪ್ರೀತಿಯ ಉತ್ತುಂಗವನ್ನು ಮೆರೆಯುತ್ತಾರೆ.  
ನಾವು ದೇವರಿಗೆ ಹತ್ತಿರವಾದಷ್ಟೂ ನಮ್ಮಲ್ಲಿನ ಮಾನವೀಯತೆ, ದೀನತೆ, ಪರ ಪ್ರೀತಿ ಜಾಗೃತವಾಗುತ್ತದೆ. ಇನ್ನೂ ಅತ್ಯಂತ ನೋವು, ಕಷ್ಟದ ಸಮಯವೂ ದೇವರ ಸಾನಿಧ್ಯ ಹತ್ತಿರದಲ್ಲೇ ಇರುವ ಸಂಕೇತ. ಯೇಸುವಿನ ಪಾದ ತೊಳೆಯುವಿಕೆ ಈ ಕಾರ್ಯ ನಮ್ಮ ಹೃದಯದಲ್ಲಿನ ಅಹಂ ಅನ್ನು ತೊಳೆದು ಹಾಕಲಿ 

ಪ್ರಶ್ನೆ : ನಾನೇ ಶ್ರೇಷ್ಠನೆಂಬ ನಮ್ಮ ಅಹಮಿಕೆಯ ಯೇಸು ತೊಳೆದು ಶುದ್ಧಿಯಾಗಿಸಲು ನಾವು ಸಿದ್ಧರೇ? 

ಪ್ರಭು,
ಜಗದೊಡೆಯ ನೀ 
ಬಾಗಿಹೆ ಮೊಣಕಾಲೂರಿ 
ಪಾದವ ತೊಳೆಯಲು 
ಲೋಕ ರೂಢಿಯ ಮೀರಿ 
ಗುರುವೂ ದೊರೆಯೂ 
ಸೇವಕನಾಗಳೆಂಬುದ ಸಾರಿ
ಹೊರಡಲಣಿಯಾದ್ದೀರಲ್ಲ   
ಹಿಂಸೆ ತ್ಯಾಗದ ತೆರನ್ನೇರಿ
ತೊಳೆಸಿಕೊಳ್ಳುತ್ತಿರುವೆ ದಿನವೂ  
ಲಜ್ಜೆಯಿಲ್ಲದೆ ಕಾಲ ಚಾಚಿ
ಶುದ್ಧಿಯಾಗಿಸಿ ಈ ನನ್ನ ಮನವ 
ಪಶ್ಚಾತ್ತಾಪದ ಕಣ್ಣೀರಿಳಿಸಿ 

No comments:

Post a Comment