ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4:23-31
ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯ ಯಾಜಕರು ಹಾಗೂ ಪ್ರಜಾ ಪ್ರಮುಖರು ತಮಗೆ ಹೇಳಿದ್ದನ್ನು ಅವರಿಗೆ ವರದಿಮಾಡಿದರು. ಈ ಸಮಾಚಾರವನ್ನು ಕೇಳಿದ ಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: “ಪ್ರಭುವೇ, ಇಹಪರಗಳನ್ನೂ ಸಮುದ್ರ ಸಾಗರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದವರು ನೀವೇ. ಸರ್ವೇಶ್ವರನಿಗೂ ಆತ ಅಭಿಷೇಕಿಸಿದವನಿಗೂ ವಿರುದ್ಧ ‘ಅನ್ಯಧರ್ಮಿಯರೇಕೆ ರೋಷಭರಿತರಾದರು? ಜನರೇಕೆ ವ್ಯರ್ಥ ಒಳಸಂಚು ಹೂಡಿದರು? ಲೋಕಾಧಿಪತಿಗಳೇಕೆ ಸನ್ನದ್ಧರಾದರು? ಜನನಾಯಕರೇಕೆ ಸಮಾಲೋಚಿಸಿದರು?’ ಎಂದು ನಮ್ಮ ಪಿತಾಮಹ ಹಾಗೂ ನಿಮ್ಮ ದಾಸನಾದ ದಾವೀದನ ಬಾಯಿಂದ ನುಡಿಸಿದಿರಿ. “ಅಂತೆಯೇ, ನಿಮ್ಮ ಪರಮಪೂಜ್ಯ ದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು. ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು. ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ. ಸ್ವಸ್ಥಪಡಿಸುವ ನಿಮ್ಮ ಅಮೃತ ಹಸ್ತವನ್ನು ಚಾಚಿರಿ; ನಿಮ್ಮ ಪರಮ ಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.” ಹೀಗೆ ಪ್ರಾರ್ಥನೆ ಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.
ಕೀರ್ತನೆ: 2:1-3, 4-7, 7-9
ದೊಂಬಿಯೇಳುವುದೇತಕೆ ಅನ್ಯದೇಶವಿದೇಶಗಳು?
I
ಕುತಂತ್ರ ಹೂಡುವುದೇಕೆ ಅನ್ಯಜಾತಿಜನಾಂಗಗಳು?
II
ದೇವನಿಗು,
ಅವನಭಿಷಿಕ್ತನಿಗು ವಿರುದ್ಧವಾಗಿ I
ನಿಂತಿಹರು ನೃಪರು ಸಮರ ಸನ್ನದ್ಧರಾಗಿ I
ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II
ಅವರೆಮಗೆ ತೊಡಿಸಿಹ ಬೇಡಿಗಳನು ಮುರಿಯೋಣ” ಎನ್ನುತಿಹರು I
“ಅವರೆಮಗೆ ಹಾಕಿದ ಬಂಧನಗಳನು ಹರಿಯೋಣ” ಎನ್ನುತಿಹರು II
ಪರದಲಿ ಆಸೀನನಾಗಿಹ ಪ್ರಭು ನಗುವನಿದಕೆ I
ಗುರಿಮಾಡದಿರನು ಇವರೆಲ್ಲರನು ಪರಿಹಾಸ್ಯಕೆ II
ಅನಂತರ ಸಿಡಿದೆದ್ದು ಹೀಗೆಂದು ನುಡಿವನು:
“ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I
ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I
ಈ ಪರಿ ಕೆರಳಿ ಕಳವಳಗೊಳಿಸುವನು ಅವರನು II
ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆಂದನು:
I
“ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II
ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I
ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II
ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I
ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II
ಶ್ಲೋಕ: ದೇವರನ್ನು ಆಶ್ರಯಿಸುವವರಿಗಿದೆ ಸೌಭಾಗ್ಯ, ಸಂತೋಷ
ಶುಭಸಂದೇಶ: ಯೊವಾನ್ನ 3:1-8
ನಿಕೊದೇಮನೆಂಬ ಫರಿಸಾಯನು ಇದ್ದನು. ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸುಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿದಂಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು. ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು. ಅದಕ್ಕೆ ನಿಕೊದೇಮನು, “ವಯಸ್ಸಾದ ಒಬ್ಬನು ಹೊಸದಾಗಿ ಹುಟ್ಟುವುದಾದರೂ ಹೇಗೆ? ತಾಯಿಯ ಗರ್ಭವನ್ನು ಮತ್ತೊಮ್ಮೆ ಹೊಕ್ಕು ಅವನು ಹುಟ್ಟಲು ಸಾಧ್ಯವೇ?” ಎಂದು ಕೇಳಿದನು. ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು. ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ. ನೀವು ಹೊಸ ಜನ್ಮ ಪಡೆಯಬೇಕೆಂದು ನಾನು ಹೇಳಿದ್ದನ್ನು ಕೇಳಿ ಬೆರಗಾಗಬೇಕಿಲ್ಲ. ಗಾಳಿ ತನಗೆ ತೋಚಿದ ಕಡೆ ಬಿಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು.
No comments:
Post a Comment