01.07.2020 - "ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ?"

ಮೊದಲನೇ ವಾಚನ: ಆಮೋಸ 5:14-15, 21-24

ಕೆಟ್ಟದ್ದನ್ನು ಬಿಟ್ಟುಬಿಡಿ, ಒಳ್ಳೆಯದನ್ನು ಆಸಕ್ತಿಯಿಂದ ಮಾಡಿ; ನೀವು ಬಾಳುವಿರಿ. ಆಗ ನೀವು ಹೇಳಿಕೊಳ್ಳುವಂತೆ, ಸೇನಾಧೀಶ್ವರ ದೇವರಾದ ಸರ್ವೇಶ್ವರ ನಿಮ್ಮೊಡನೆ ಇರುವರು. ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯ ಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆತೋರಿಯಾರು. “ನಿಮ್ಮ ಹಬ್ಬಹುಣ್ಣಿಮೆಗಳನ್ನು ಹಗೆ ಮಾಡುತ್ತೇನೆ, ತುಚ್ಛೀಕರಿಸುತ್ತೇನೆ. ನಿಮ್ಮ ಉತ್ಸವಗಳ ವಾಸನೆಯೂ ನನಗೆ ಬೇಡ. ನೀವು ನನಗೆ ದಹನಬಲಿದಾನಗಳನ್ನು, ಧಾನ್ಯ ನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು. ನಿಮ್ಮ ಭಜನೆ ನಿಂತುಹೋಗಲಿ; ನಿಮ್ಮ ವೀಣಾವಾದ್ಯಗಳು ತೊಲಗಲಿ. ನ್ಯಾಯನೀತಿ ಹೊಳೆಯಂತೆ ಹರಿಯಲಿ; ಸದ್ಧರ್ಮ ಮಹಾನದಿಯಂತೆ ಪ್ರವಹಿಸಲಿ.

ಕೀರ್ತನೆ: 50:7, 8-9, 10-11, 12-13, 16, 17

ಶ್ಲೋಕ: ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ದರವನು

ಶುಭಸಂದೇಶ: ಮತ್ತಾಯ 8:28-34


ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ಕಡೆಯಿದ್ದ ಗದರೇನ ಎಂಬ ಪ್ರಾಂತ್ಯಕ್ಕೆ ಬಂದರು. ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಹೊರಬಂದು ಅವರಿಗೆ ಎದುರಾದರು. ಅವರಿಬ್ಬರೂ ಮಹಾಕ್ರೂರಿಗಳು. ಈ ಕಾರಣ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ. ಅವರು ಯೇಸುವನ್ನು ನೋಡಿದೊಡನೆಯೇ "ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?" ಎಂದು ಕೂಗಿಕೊಂಡರು. ಹಂದಿಗಳ ದೊಡ್ಡ ಹಿಂಡೊಂದು ಅಲ್ಲಿಂದ ಸ್ವಲ್ಪ ದೂರದಲ್ಲೇ ಮೇಯುತ್ತಿತ್ತು. "ನೀವು ನಮ್ಮನ್ನು ಹೊರದೂಡಿದ್ದೇ ಆದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ," ಎಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು, "ಹೋಗಿ" ಎಂದು ಅಪ್ಪಣೆಯಿತ್ತರು. ದೆವ್ವಗಳು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆಕ್ಷಣವೇ ಆ ಹಿಂಡೆಲ್ಲಾ ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ, ಸರೋವರಕ್ಕೆ ಬಿದ್ದು, ನೀರುಪಾಲಾಗಿ ಹೋಯಿತು. ಹಂದಿ ಮೇಯಿಸುತ್ತಿದ್ದವರು ಅಲ್ಲಿಂದ ಪಲಾಯನ ಮಾಡಿ ಊರಿಗೆ ಓಡಿಹೋಗಿ ನಡೆದದ್ದೆಲ್ಲವನ್ನೂ ಮತ್ತು ದೆವ್ವ ಮೆಟ್ಟಿದ್ದವರಿಗೆ ಸಂಭವಿಸಿದ್ದನ್ನೂ ವರದಿಮಾಡಿದರು. ಆಗ ಊರಿಗೆ ಊರೇ ಯೇಸುವನ್ನು ನೋಡಲು ಬಂದಿತು. ಅವರನ್ನು ಕಂಡು ತಮ್ಮ ಆಸುಪಾಸನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡಿತು.

No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...