28.06.2020 - "ನನಗೋಸ್ಕರವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಾಪಾಡಿಕೊಳ್ಳುತ್ತಾನೆ."

ಮೊದಲನೇ ವಾಚನ: 2 ಅರಸುಗಳು 4:8-11, 14-16

ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಶ್ರೀಮಂತ ಮಹಿಳೆ ಇದ್ದಳು. ಆಕೆ ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗವಾಗಿ ಹೋಗುವಾಗಲೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು. ಆ ಮಹಿಳೆ ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಿಂದ ಹೋಗುತ್ತಾ ಬರುತ್ತಾ ಇರುವ ಆ ವ್ಯಕ್ತಿ ಒಬ್ಬ ಸಂತನು ಹಾಗು ದೈವಪುರುಷನು ಆಗಿರುತ್ತಾನೆಂದು ನನಗೆ ಗೊತ್ತಾಯಿತು. ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸೋಣ. ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ; ಅವನು ಇಲ್ಲಿಗೆ ಬಂದಾಗೆಲ್ಲಾ ಅದರಲ್ಲಿ ವಾಸಮಾಡಲಿ,” ಎಂದು ಹೇಳಿದಳು. ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು. ಆಮೇಲೆ ಎಲೀಷನು ಗೇಹಜಿಯನ್ನು, “ನಾವು ಆಕೆಗೆ ಯಾವ ಉಪಕಾರ ಮಾಡಬಹುದು?” ಎಂದು ಕೇಳಿದನು. ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ,” ಎಂದನು. ಇದನ್ನು ಕೇಳಿ ಎಲೀಷನು ಆ ಮಹಿಳೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಅವನು ಹೋಗಿ ಕರೆದನು. ಆಕೆ ಬಂದು ಬಾಗಿಲಿನ ಹತ್ತಿರ ನಿಂತಳು. ಎಲೀಷನು ಆಕೆಗೆ, “ನೀನು ಬರುವ ವರ್ಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವೆ,” ಎಂದನು. 

ಕೀರ್ತನೆ: 89:2-3, 16-17, 18-19

ಶ್ಲೋಕ: ಪ್ರಭೂ, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು

ಎರಡನೇ ವಾಚನ: ರೋಮನರಿಗೆ 6:3-4, 8-11

ಕ್ರಿಸ್ತಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೆ? ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ. ಕ್ರಿಸ್ತಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ. ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ. ಏಕೆಂದರೆ, ಅವರು ಪಾಪದ ಪಾಲಿಗೆ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ಸತ್ತವರು. ಅವರು ಈಗ ಜೀವಿಸುವುದು ದೇವರಿಗಾಗಿಯೇ. ಅಂತೆಯೇ ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ದೇವರಿಗಾಗಿ ಮಾತ್ರ ಯೇಸುಕ್ರಿಸ್ತರಲ್ಲಿ ಜೀವಿಸುವವರೆಂದೂ ಪರಿಗಣಿಸಿರಿ.

ಶುಭಸಂದೇಶ:  ಮತ್ತಾಯ 10:37-42


ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: “ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ. ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗೋಸ್ಕರವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಾಪಾಡಿಕೊಳ್ಳುತ್ತಾನೆ. “ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುತ್ತಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುತ್ತಾನೆ. ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸುವವನು ಪ್ರವಾದಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಸತ್ಪುರುಷನಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”

No comments:

Post a Comment

11.01.26 - "ಅವರು ನಮಗೆ ಪವಿತ್ರಾತ್ಮ ಅವರಿಂದಲೂ ಅಗ್ನಿಯಿಂದಲೂ ದಿಕ್ಷಾಸ್ನಾನ ಕೊಡುವರು"

ಮೊದಲನೇ ವಾಚನ: ಯೆಶಾಯ 40:1-5, 9-11 (ಯೆಶಾಯ: 41:1-4, 6-7) ನಿಮ್ಮ ದೇವರು ಇಂತೆನ್ನುತ್ತಾರೆ: "ಸಂತೈಸಿ, ನನ್ನ ಜನರನ್ನು ಸಂತೈಸಿರಿ. ಜೆರುಸಲೇಮಿನೊಡನೆ ಪ್ರೀತಿಯ...