07.09.20 - “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದ. ಕೈ ಸ್ವಸ್ಥವಾಯಿತು.

ಮೊದಲನೇ ವಾಚನ: 1 ಕೊರಿಂಥಿಯರಿಗೆ 5:1-8 

ಸಹೋದರರೇ,  ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ. ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ? ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮ ಹತ್ತಿರವಿದ್ದೇನೆ. ನಿಮ್ಮ ಸಂಗಡವೇ ಇರುವವನಂತೆ ಅವನಿಗೆ ಏನುಮಾಡಬೇಕೆಂದು ಈಗಾಗಲೇ ತೀರ್ಮಾನಿಸಿದ್ದೇನೆ. ಅದೇನೆಂದರೆ: ನೀವು ಸಭೆಸೇರಿ, ಪ್ರಭು ಯೇಸುವಿನ ಶಕ್ತಿಯ ಆಧಾರದ ಮೇಲೆ ಅವನನ್ನು ಸೈತಾನನಿಗೆ ಒಪ್ಪಿಸಿಬಿಡಬೇಕು. ನಾನು ಆತ್ಮಿಕವಾಗಿ ನಿಮ್ಮ ಮಧ್ಯೆಯಿರುತ್ತೇನೆ. ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು. ನೀವು ಜಂಬ ಕೊಚ್ಚಿಕೊಳ್ಳುವುದು ತರವಲ್ಲ. ಒಂದಿಷ್ಟು ಹುಳಿ, ಹಿಟ್ಟನ್ನೆಲ್ಲಾ ಹುದುಗೆಬ್ಬಿಸುತ್ತದೆಂಬುದನ್ನು ನೀವು ಚೆನ್ನಾಗಿ ಬಲ್ಲಿರಿ. ನೀವು ಹುಳಿಯಿಲ್ಲದ ಕಣಕವಾಗಿದ್ದೀರಿ. ಅಪ್ಪಟ ರೊಟ್ಟಿಯಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ಏಕೆಂದರೆ, ಪಾಸ್ಕ ಯಜ್ಞದ ಕುರಿಮರಿಯಾದ ಕ್ರಿಸ್ತಯೇಸು ಬಲಿಯಾಗಿದ್ದಾರೆ. ಆದಕಾರಣ ನಾವು ದುಷ್ಟತನ, ಕೆಡುಕುತನವೆಂಬ ಹುಳಿಹಿಟ್ಟನ್ನು ವರ್ಜಿಸೋಣ. ಪರಿಶುದ್ಧತೆ ಮತ್ತು ಸತ್ಯತೆ ಎಂಬ ಹುಳಿಯಿಲ್ಲದ ಹೊಸರೊಟ್ಟಿಯನ್ನು ತಿಂದು ಪಾಸ್ಕಹಬ್ಬವನ್ನು ಆಚರಿಸೋಣ.

ಕೀರ್ತನೆ: 5:5-6, 7, 12

ಶ್ಲೋಕ: ಸತ್ಯಪಥದಲಿ ನಡೆಸೆನ್ನನು ದೇವಾ

ಶುಭಸಂದೇಶ: ಲೂಕ 6:6-11

ಒಂದು ಸಬ್ಬತ್ ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದರು. ಅಲ್ಲಿ ಬಲಗೈ ಬತ್ತಿಹೋಗಿದ್ದ ಒಬ್ಬಾತ ಇದ್ದನು. ಅವನನ್ನು ಸಬ್ಬತ್ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು. ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈ ಉಳ್ಳವನಿಗೆ, “ಬಂದು ಇಲ್ಲಿ ನಿಲ್ಲು,” ಎಂದರು. ಅವನು ಎದ್ದುಬಂದು ನಿಂತನು. ಆಗ ಯೇಸು ಅವರಿಗೆ, “ನಾನು ನಿಮಗೊಂದು ಪ್ರಶ್ನೆ ಹಾಕುತ್ತೇನೆ: ಸಬ್ಬತ್ತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ?” ಎಂದರು. ಅನಂತರ ಸುತ್ತಲೂ ಇದ್ದವರೆಲ್ಲರನ್ನು ದಿಟ್ಟಿಸಿ ನೋಡಿ ಬತ್ತಿದ ಕೈಯುಳ್ಳವನ ಕಡೆಗೆ ತಿರುಗಿ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದ. ಕೈ ಸ್ವಸ್ಥವಾಯಿತು. ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.


ಸಂತ ಮರಿಯಮ್ಮನವರ ಗೀತೆಗಳು - ಚಿಗುರು ಬಳಗ 





No comments:

Post a Comment

28.05.2026 - ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು.

  ಮೊದಲನೆಯ ವಾಚನ: 1 ಪೇತ್ರ 2:2-5,9-12 ಸಹೋದರರೇ, ಹೊಸಜನ್ಮ ಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ. ಜೀವೋದ್...