ಮೊದಲನೇ ವಾಚನ: ಸುಜ್ಞಾನ 6:12-16
ಸುಜ್ಞಾನವೆಂಬಾಕೆ ತೇಜೋ ಪುಂಜಳಾಗಿ ಇರುವಳು, ಅವಳ ಕಾಂತಿ ಕುಂದದು ಪ್ರೀತಿಸುವವರಿಗೆ ಸಹಜವಾಗಿ ಗೋಚರ ಆಗುವಳು ಅರಸುವವರಿಗೆ ಸಿಕ್ಕುವಳು ತನ್ನನ್ನು ತಿಳಿಯ ಲಪೇಕ್ಷಿಸುವವರ ಹತ್ತಿರಕ್ಕೆ ತಾನೇ ಬಂದು ತಿಳಿಯಪಡಿಸಿ ಕೊಳ್ಳುತ್ತಾಳೆ ಅವಳನ್ನು ಹುಡುಕುಲು ನಸುಕಿನಲೇ ಏಳುವ ಪರಿ ಶ್ರಮ ಬೇಡ ಕಾರಣ ತನ್ನ ಬಾಗಿಲಲೇ ಅವಳು ಕುಳಿತಿರುವುದನ್ನೆ ಕಾಣುವನಾತ ಅವಳ ಮೇಲೆ ನಿಗವಿಟ್ಟಿರುವವನು ಬುದ್ದಿ ಸಂಪನ್ನನಾಗುವನು ಅವಳನ್ನೇ ಕಾಯುತ್ತಿರುವನು ಚಿಂತೆಯಿಂದ ಬೇಗ ಮುಕ್ತನಾಗುವನು ಸುಜ್ಞಾನ ತನಗೆ ಯೋಗ್ಯರಾದವರನ್ನು ಅರಸುತ್ತ ಸಂಚರಿಸುತ್ತಾಳೆ ಹಾದಿಯಲ್ಲಿ ಅವರಿಗೆ ಪ್ರಸನ್ನಳಾಗಿ ಕಾಣಿಸುತ್ತಾಳೆ ಅವರ ಪ್ರತಿಯೊಂದು ಆಲೋಚನೆಯಲ್ಲೂ ಅವರೊಂದಿಗೆ ಇರುತ್ತಾಳೆ.
ಕೀರ್ತನೆ: 63:2, 3-4, 5-6, 7-8
ಶ್ಲೋಕ: ದೇವಾ, ನಿಯೆನ್ನ ದೇವಾ, ನಿನಗಾಗಿ ನಾ ಕಾದಿರುವೆ.
ಎರಡನೇ ವಾಚನ: 1 ಥೆಸೆಲೋನಿಯರಿಗೆ 4:13-17
ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು. ಯೇಸು ಸತ್ತು ಪುನರುತ್ಥಾನ ಹೊಂದಿದರೆಂದು ನಾವು ವಿಶ್ವಾಸಿಸುತ್ತೇವೆ ಅಲ್ಲವೇ? ಹಾಗೆಯೇ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟು ಮರಣಹೊಂದಿದವರನ್ನು ದೇವರು ಯೇಸುಕ್ರಿಸ್ತರೊಡನೆ ಮರಳಿ ಕರೆದುಕೊಳ್ಳುತ್ತಾರೆ. ಪ್ರಭುವಿನ ವಾಕ್ಯದ ಆಧಾರದ ಮೇಲೆ ನಾವು ನಿಮಗೆ ಹೇಳುತ್ತೇವೆ: ಪ್ರಭು ಪುನರಾಗಮಿಸುವಾಗ, ಇನ್ನೂ ಬದುಕಿರುವ ನಾವು ಮೃತರಾಗಿರುವ ಇತರರಿಗಿಂತಲೂ ಮುಂದಿನವರಾಗುವುದಿಲ್ಲ. ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ. ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.
ಶುಭಸಂದೇಶ:, ಮತ್ತಾಯ 25:1-13
ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: “ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತು ಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು. ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು. ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು. ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು. “ನಡುರಾತ್ರಿಯ ವೇಳೆ. ‘ಇಗೋ, ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ,’ ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು. ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು. ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು. 9ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು. ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು. ಉಳಿದ ಕನ್ಯೆಯರು ಅನಂತರ ಬಂದರು. ‘ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ಕೂಗಿಕೊಂಡರು. ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ. ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.
No comments:
Post a Comment