ಆ ಕಾಲದಲ್ಲಿ ಯೇಸು ಮತ್ತು ಶಿಷ್ಯರು ಗಲಿಲೇಯ ಸರೋವರವನ್ನು ದಾಟಿ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತ್ಯವನ್ನು ಸೇರಿದರು.ಯೇಸುಸ್ವಾಮಿ ದೋಣಿಯಿಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು. ಸಮಾಧಿಯ ಗುಹೆಗಳೇ ಅವನಿಗೆ ವಾಸಸ್ಥಳವಾಗಿದ್ದವು. ಅವನನ್ನು ಬಂಧಿಸಲು ಯಾರಿಂದಲೂ ಆಗುತ್ತಿರಲಿಲ್ಲ; ಸಂಕೋಲೆಯಿಂದ ಬಂಧಿಸುವುದೂ ಅಸಾಧ್ಯವಾಗಿತ್ತು. ಸರಪಳಿ ಸಂಕೋಲೆಗಳಿಂದ ಅವನನ್ನು ಕಟ್ಟಿದಾಗ ಅವುಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಗೆ ತರುವ ಸಾಮರ್ಥ್ಯ ಯಾರಿಗೂ ಇರಲಿಲ್ಲ. ಹಗಲಿರುಳೆನ್ನದೆ ಸಮಾಧಿಯ ಗುಹೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ಅವನು ಅಲೆದಾಡುತ್ತಾ ಅರಚಾಡುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಾ ಇದ್ದನು. ದೂರದಲ್ಲಿ ಬರುತ್ತಿದ್ದ ಯೇಸುಸ್ವಾಮಿಯನ್ನು ಕಂಡು, ಅವನು ಓಡಿಬಂದು ಅವರಿಗೆ ಸಾಷ್ಟಾಂಗವೆರಗಿ, “ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು. ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಈ ಮೊದಲೇ ಕಟ್ಟಪ್ಪಣೆ ಮಾಡಿದ್ದರು. “ನಿನ್ನ ಹೆಸರೇನು?” ಎಂದು ಯೇಸು ಅವನನ್ನು ಕೇಳಲು, “ನನ್ನ ಹೆಸರು ‘ಗಣ’; ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದನು. ಅಲ್ಲದೆ, “ನಮ್ಮನ್ನು ಆ ಪ್ರಾಂತ್ಯದಿಂದ ಹೊರಗಟ್ಟಬೇಡಿ,” ಎಂದು ಯೇಸುವನ್ನು ಬಹಳವಾಗಿ ಬೇಡಿಕೊಂಡನು. ಸಮೀಪದಲ್ಲೇ ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಲ್ಲಿ ಮೇಯುತ್ತಿತ್ತು. ಆ ದೆವ್ವಗಳು, “ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಯೇಸುವನ್ನು ಬೇಡಿಕೊಂಡವು. ಅವರು ಹಾಗೆಯೇ ಅಪ್ಪಣೆಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು. ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು. ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು. ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದಿದ್ದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವನಿಗೆ ವಿವರಿಸಿದರು. ಇದನ್ನು ಕೇಳಿದ ಜನರು ಯೇಸುವಿಗೆ, ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡರು. ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು. ಯೇಸು ಅದಕ್ಕೊಪ್ಪದೆ, “ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ ಎಂದು ಅವರಿಗೆ ವಿವರಿಸು,” ಎಂದರು. ಅಂತೆಯೇ ಅವನು ಹೊರಟುಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯಚಕಿತರಾದರು.
ಪವಿತ್ರ ವಾಚನಗಳನ್ನು ಬ್ಲಾಗಿನ ಮೂಲಕ ತಲುಪಿಸುವ ಚಿಗುರು, ಸುಶ್ರಾವ್ಯ ಹಾಗೂ ಸಂಚಲನ ಬಳಗದ ಪ್ರಯತ್ನವಿದು. ಓದಿ ಧ್ಯಾನಿಸುವ ಭಾಗ್ಯ ನಮ್ಮದಾಗಲಿ
01.02.21 - “ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ?"
ಆ ಕಾಲದಲ್ಲಿ ಯೇಸು ಮತ್ತು ಶಿಷ್ಯರು ಗಲಿಲೇಯ ಸರೋವರವನ್ನು ದಾಟಿ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತ್ಯವನ್ನು ಸೇರಿದರು.ಯೇಸುಸ್ವಾಮಿ ದೋಣಿಯಿಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು. ಸಮಾಧಿಯ ಗುಹೆಗಳೇ ಅವನಿಗೆ ವಾಸಸ್ಥಳವಾಗಿದ್ದವು. ಅವನನ್ನು ಬಂಧಿಸಲು ಯಾರಿಂದಲೂ ಆಗುತ್ತಿರಲಿಲ್ಲ; ಸಂಕೋಲೆಯಿಂದ ಬಂಧಿಸುವುದೂ ಅಸಾಧ್ಯವಾಗಿತ್ತು. ಸರಪಳಿ ಸಂಕೋಲೆಗಳಿಂದ ಅವನನ್ನು ಕಟ್ಟಿದಾಗ ಅವುಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಗೆ ತರುವ ಸಾಮರ್ಥ್ಯ ಯಾರಿಗೂ ಇರಲಿಲ್ಲ. ಹಗಲಿರುಳೆನ್ನದೆ ಸಮಾಧಿಯ ಗುಹೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ಅವನು ಅಲೆದಾಡುತ್ತಾ ಅರಚಾಡುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಾ ಇದ್ದನು. ದೂರದಲ್ಲಿ ಬರುತ್ತಿದ್ದ ಯೇಸುಸ್ವಾಮಿಯನ್ನು ಕಂಡು, ಅವನು ಓಡಿಬಂದು ಅವರಿಗೆ ಸಾಷ್ಟಾಂಗವೆರಗಿ, “ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು. ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಈ ಮೊದಲೇ ಕಟ್ಟಪ್ಪಣೆ ಮಾಡಿದ್ದರು. “ನಿನ್ನ ಹೆಸರೇನು?” ಎಂದು ಯೇಸು ಅವನನ್ನು ಕೇಳಲು, “ನನ್ನ ಹೆಸರು ‘ಗಣ’; ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದನು. ಅಲ್ಲದೆ, “ನಮ್ಮನ್ನು ಆ ಪ್ರಾಂತ್ಯದಿಂದ ಹೊರಗಟ್ಟಬೇಡಿ,” ಎಂದು ಯೇಸುವನ್ನು ಬಹಳವಾಗಿ ಬೇಡಿಕೊಂಡನು. ಸಮೀಪದಲ್ಲೇ ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಲ್ಲಿ ಮೇಯುತ್ತಿತ್ತು. ಆ ದೆವ್ವಗಳು, “ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಯೇಸುವನ್ನು ಬೇಡಿಕೊಂಡವು. ಅವರು ಹಾಗೆಯೇ ಅಪ್ಪಣೆಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು. ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು. ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು. ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದಿದ್ದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವನಿಗೆ ವಿವರಿಸಿದರು. ಇದನ್ನು ಕೇಳಿದ ಜನರು ಯೇಸುವಿಗೆ, ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡರು. ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು. ಯೇಸು ಅದಕ್ಕೊಪ್ಪದೆ, “ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ ಎಂದು ಅವರಿಗೆ ವಿವರಿಸು,” ಎಂದರು. ಅಂತೆಯೇ ಅವನು ಹೊರಟುಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯಚಕಿತರಾದರು.
31.01.21 - "ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮ ಪೂಜ್ಯರು ನೀವು,”
ಧರ್ಮೊಪದೇಶಕಾ೦ಡದಿ೦ದ ವಾಚನ 18:15-20
ಸಹೋದರರೇ, ನೀವು ಚಿಂತೆಯಿಲ್ಲದೆ ಇರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ಪ್ರಭುವಿನ ಸೇವೆಯಲ್ಲಿ ತತ್ಪರನಾಗಿರುತ್ತಾನೆ; ಪ್ರಭುವನ್ನು ಮೆಚ್ಚಿಸಲು ಶ್ರಮಿಸುತ್ತಾನೆ. ಮದುವೆ ಆದವನು ಲೋಕವ್ಯವಹಾರಗಳಲ್ಲಿ ಮಗ್ನನಾಗುತ್ತಾನೆ. ತನ್ನ ಸತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾನೆ. ಅಂಥವನು ಉಭಯ ಸಂಕಟಕ್ಕೆ ಸಿಕ್ಕಿಕೊಳ್ಳುತ್ತಾನೆ. ಮದುವೆಯಾಗದ ಮಹಿಳೆ ಅಥವಾ ಕನ್ನಿಕೆ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ದೇಹಾತ್ಮಗಳೆರಡನ್ನೂ ಪ್ರಭುವಿಗೆ ಮೀಸಲಾಗಿಡುತ್ತಾಳೆ. ಆದರೆ ವಿವಾಹಿತ ಸ್ತ್ರೀ ಲೋಕವ್ಯವಹಾರಗಳಲ್ಲಿ ಮಗ್ನಳಾಗಿರುತ್ತಾಳೆ. ತನ್ನ ಪತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾಳೆ. ನಿಮ್ಮನ್ನು ಬಂಧಿಸಲು ಅಲ್ಲ, ಬೆಂಬಲಿಸಲು ಇದನ್ನು ಹೇಳುತ್ತಿದ್ದೇನೆ. ನೀವು ಸಜ್ಜನರಾಗಿ ನಡೆದುಕೊಂಡು, ಭಿನ್ನಭಾವವಿಲ್ಲದೆ ಪ್ರಭುವಿನ ಪಾದಸೇವೆ ಮಾಡಬೇಕೆಂಬುದೇ ನನ್ನ ಆಶೆ. ಪ್ರಭುವಿನ ವಾಕ್ಯ
ಬಳಿಕ ಅವರೆಲ್ಲರೂ ಕಫೆರ್ನವುಮ್ ಎಂಬ ಊರನ್ನು ಸೇರಿದರು. ಸಬ್ಬತ್ ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು. ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು. ಏಕೆಂದರೆ ಯೇಸು, ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಾಣಿಯಿಂದ ಪ್ರಬೋಧಿಸುತ್ತಿದ್ದರು. ಅಲ್ಲಿ ದೆವ್ವ ಹಿಡಿದ ಒಬ್ಬನಿದ್ದನು. ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮ ಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು. ದೆವ್ವವು ಆ ಮನುಷ್ಯನನ್ನು ಒದ್ದಾಡಿಸಿ, ಗಟ್ಟಿಯಾಗಿ ಚೀರುತ್ತಾ ಅವನನ್ನು ಬಿಟ್ಟುಹೋಯಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!” ಎಂದು ಪರಸ್ಪರ ಮಾತಾಡಿಕೊಂಡರು. ಕೂಡಲೇ ಗಲಿಲೇಯ ಪ್ರಾಂತ್ಯದ ಎಲ್ಲೆಡೆಗೂ ಯೇಸುವಿನ ಸಮಾಚಾರ ಹಬ್ಬಿಹರಡಿತು.
30.01.21 - ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು
ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 11:1-2, 8-19
ಆ ದಿನ ಸಾಯಂಕಾಲ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಸರೋವರದ ಆಚೆ ದಡಕ್ಕೆ ಹೋಗೋಣ,” ಎಂದರು. ಆಗ ಶಿಷ್ಯರು ಜನರ ಗುಂಪನ್ನು ಬಿಟ್ಟು ದೋಣಿಯಲ್ಲಿ ಕುಳಿತಿದ್ದ ಯೇಸುವನ್ನು ಹಾಗೆಯೇ ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟರು. ಆ ದೋಣಿಯ ಸಂಗಡ ಬೇರೆ ದೋಣಿಗಳು ಇದ್ದವು. ಸ್ವಲ್ಪ ಮುಂದೆ ಹೋಗುವಷ್ಟರಲ್ಲೇ ದೊಡ್ಡ ಬಿರುಗಾಳಿ ಎದ್ದಿತು. ಅಲೆಗಳು ದೋಣಿಗೆ ಅಪ್ಪಳಿಸ ತೊಡಗಿದವು. ದೋಣಿಯೊಳಗೆ ನೀರು ನುಗ್ಗಿ ಅದು ತುಂಬಿ ಹೋಗುವುದರಲ್ಲಿತ್ತು. ಯೇಸುವಾದರೋ ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ, “ಗುರುವೇ, ನಾವು ಸಾಯುತ್ತಿದ್ದೇವೆ, ತಮಗೆ ಚಿಂತೆಯೇ ಇಲ್ಲವೆ?” ಎಂದರು. ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು. ಅನಂತರ ತಮ್ಮ ಶಿಷ್ಯರಿಗೆ, “ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರು. ಶಿಷ್ಯರಾದರೋ ಭಯಭ್ರಾಂತರಾಗಿ, “ಗಾಳಿಯೂ ಸರೋವರವೂ ಇವರು ಹೇಳುವಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
29.01.21 - ಯೇಸುಸ್ವಾಮಿ ಈ ಬಗೆಯ ಸಾಮತಿಗಳನ್ನು ಉಪಯೋಗಿಸಿ ಜನರಿಗೆ ದೇವರ ಸಂದೇಶವನ್ನು ಅವರವರ ತಿಳುವಳಿಕೆಗೆ ತಕ್ಕಂತೆ ಉಪದೇಶಿಸುತ್ತಿದ್ದರು
28.01.2021 - ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,”
ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 10:19-25
ಕೀರ್ತನೆ: 24:1-2, 3-4, 5-6 -
ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I
ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II
ಕಡಲನು ತಳಪಾಯವನಾಗಿಸಿದವನು ಆತನೆ I
ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೆ II
ಪ್ರಭುವಿನ ಶಿಖರವನು ಏರಬಲ್ಲವನಾರು ? I
ಆ ನಿವಾಸದಲಿ ನಿಲ್ಲಲು ಯೋಗ್ಯನಾರು ? II
ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I
ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II
ಲಭಿಸುವುದಾತನಿಗೆ ಶುಭ ಪ್ರಭುವಿನಿಂದ I
ನೀತಿಯ ಸತ್ಫಲ ರಕ್ಷಕ ದೇವನಿಂದ II
ಇಂಥವರೆ ದೇವರ ದರ್ಶನಾಭ್ಯರ್ಥಿಗಳು I
ಇಂಥವರೆ ಯಕೋಬ ದೇವನ ಭಕ್ತಾದಿಗಳು II
ಮಾರ್ಕನು ಬರೆದ ಶುಭಸ೦ದೇಶ 4:21-25
ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಯಾರಾದರೂ ಉರಿಯುವ ದೀಪವನ್ನು ತಂದು ಬಟ್ಟಲ ಒಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ನಿಶ್ಚಯವಾಗಿಯೂ ಇಲ್ಲ. ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಬೆಳಕಿಗೆ ಬಾರದ ಮುಚ್ಚುಮರೆಯಿಲ್ಲ, ರಟ್ಟಾಗದ ಗುಟ್ಟಿಲ್ಲ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.
27.01.2021 - "ಇನ್ನೂ ಕೆಲವರು ನೂರರಷ್ಟು ಫಲಕೊಡುತ್ತಾರೆ. ಇವರೇ ಹದವಾದ ಭೂಮಿಯಲ್ಲಿ ಬಿದ್ದ ಬೀಜಕ್ಕೆ ಸಮಾನರು,”
ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 10:11-18
ಪ್ರತಿಯೊಬ್ಬ ಯಾಜಕನು ಅನುದಿನವೂ ತನ್ನ ಸೇವೆಯನ್ನು ನಿರ್ವಹಿಸುತ್ತಾನೆ. ಆದರೆ ಇವುಗಳಿಂದ ಎಂದಿಗೂ ಪಾಪ ನಿವಾರಣೆ ಆಗದು. ಕ್ರಿಸ್ತ ಯೇಸು ಪಾಪ ನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ. ಅವರ ಶತ್ರುಗಳು ತಮ್ಮ ಕಾಲಡಿಗೆ ಬರುವ ತನಕ ಅಲ್ಲೇ ಕಾದಿರುತ್ತಾರೆ. ತಾವು ಪುನೀತಗೊಳಿಸಿದವರನ್ನು ಒಂದೇ ಒಂದು ಬಲಿಯರ್ಪಣೆಯಿಂದ ಯೇಸು ನಿರಂತರ ಸಿದ್ಧಿಗೆ ತಂದಿದ್ದಾರೆ. ಇದನ್ನು ಕುರಿತು ಪವಿತ್ರಾತ್ಮರು ಕೂಡ ನಮಗೆ ಸಾಕ್ಷಿಕೊಡುತ್ತಾರೆ: “ಆ ದಿನಗಳು ಬಂದ ಮೇಲೆ ನಾನು ಅವರೊಡನೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು : ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ನಾಟಿಸುವೆನು; ಅವರ ಮನದಲ್ಲಿ ಬರೆಯುವೆನು.” ಎಂದು ಹೇಳಿದ ನಂತರವೇ, “ಅವರ ಪಾಪಗಳನ್ನೂ ತಪ್ಪುನೆಪ್ಪುಗಳನ್ನೂ ನೆನಪಿಗೆ ತಂದುಕೊಳ್ಳೆನು,” ಎಂದಿದ್ದಾರೆ.ಪಾಪಗಳ ಕ್ಷಮಾಪಣೆಯಾದ ಬಳಿಕ ಪಾಪ ಪರಿಹಾರಕ ಬಲಿಯ ಅವಶ್ಯಕತೆ ಇಲ್ಲ.ಕೀರ್ತನೆ: 110:1, 2, 3, 4
“ಆಸೀನನಾಗಿರು ನೀನು ನನ್ನ ಬಲಗಡೆಗೆ I
ಸಿಯೋನಿನ ಹೊರಗು ವಿಸ್ತರಿಸುವನು
ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ
ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I
ಮಾರ್ಕನು ಬರೆದ ಶುಭಸ೦ದೇಶ 4:1-20
ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ಮತ್ತೆ ಬೋಧಿಸಲಾರಂಭಿಸಿದರು. ಜನರು ಕಿಕ್ಕಿರಿದು ಸುತ್ತಲೂ ನೆರೆದುಬಂದಿದ್ದರು. ಆದುದರಿಂದ ಅವರು ಸರೋವರದಲ್ಲಿದ್ದ ದೋಣಿಯೊಂದನ್ನು ಹತ್ತಿ ಕುಳಿತರು. ಜನರು ದಡದಲ್ಲೇ ಉಳಿದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಗಳ ಮೂಲಕ ಬೋಧಿಸುತ್ತಾ ಹೀಗೆಂದರು: “ಕೇಳಿ, ಒಬ್ಬ ರೈತ ಬಿತ್ತುವುದಕ್ಕೆ ಹೊರಟ. ಬಿತ್ತನೆಮಾಡುತ್ತಾ ಇದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದುದೇ ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು. ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲುನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ಬಹಳ ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು; ಬಿಸಿಲೇರಿದಾಗ ಬಾಡಿದವು; ಆಳವಾಗಿ ಬೇರೂರಲು ಆಗದ ಕಾರಣ ಅವು ಒಣಗಿಹೋದವು. ಇನ್ನು ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಸಸ್ಯಗಳ ಸಮೇತ ಅವುಗಳನ್ನು ಅದುಮಿಬಿಟ್ಟವು. ಆದುದರಿಂದ ಅವು ಫಲಕೊಡಲಿಲ್ಲ. ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು ತೆನೆಬಿಟ್ಟವು. ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರವತ್ತರಷ್ಟು ಮತ್ತೆ ಕೆಲವು ನೂರರಷ್ಟು ಫಸಲನ್ನು ಕೊಟ್ಟವು.” ಈ ಸಾಮತಿಯನ್ನು ಹೇಳಿದ ಬಳಿಕ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದರು. ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡುಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು. ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ,
26.01.21 - “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ"
ಮೊದಲನೇ ವಾಚನ: 2 ತಿಮೊಥೇಯನಿಗೆ 1:1-8
ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ! ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದ ಪಡಬೇಕೆಂದು ಹಂಬಲಿಸುತ್ತಿದ್ದೇನೆ. ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ. ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಫಿಸುತ್ತೇನೆ. ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ. ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.
ಆ ಕಾಲದಲ್ಲಿ ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು. ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ. ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ, ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು. “ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ.
25.01.2021
ಮೊದಲನೇ ವಾಚನ:ಪ್ರೇಷಿತರ ಕಾರ್ಯಕಲಾಪಗಳು 22:3-16
24.01.2021 - “ನನ್ನನ್ನು ಹಿಂಬಾಲಿಸಿ ಬನ್ನಿ, ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,”
ಮೊದಲನೇ ವಾಚನ: ಯೋನ 3:1-5, 10
ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು,” ಎಂದಿತು. ಸ್ವಾಮಿಯ ಆಜ್ಞಾನುಸಾರ ಯೋನನು ನಿನೆವೆಗೆ ಹೋದನು. ಅದೊಂದು ವಿಸ್ತಾರವಾದ ನಗರ. ಅದನ್ನು ಹಾದುಹೋಗಲು ಮೂರು ದಿನಗಳು ಹಿಡಿಯುತ್ತಿತ್ತು. ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣ ಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, “ಜನರೇ ಕೇಳಿ: ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು,” ಎಂದನು. ಆ ನಗರದ ನಿವಾಸಿಗಳು ದೇವರ ಸಂದೇಶವನ್ನು ನಂಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆಂದು ನಿರ್ಧರಿಸಿದರು. ಹಿರಿಯರು ಮೊದಲುಗೊಂಡು ಕಿರಿಯರವರೆಗೆ – ಎಲ್ಲರೂ ಮನಃಪರಿವರ್ತನೆಯ ಚಿಹ್ನೆಯಾಗಿ ಗೋಣಿತಟ್ಟನ್ನು ಉಟ್ಟುಕೊಂಡರು. ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನ ಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.
23.01.21 - ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತು
22.01.21 - ಯೇಸು ಹನ್ನೆರಡು ಮಂದಿಯನ್ನು ಆಯ್ದುಕೊಂಡು, ‘ಪ್ರೇಷಿತರು’ ಎಂದು ಅವರಿಗೆ ಹೆಸರಿಟ್ಟರು.
ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 8:6-13
ಸಹೋದರರೇ, ಯೇಸು, ಆ ಯಾಜಕರ ಸೇವೆಗಿಂತಲೂ ಶ್ರೇಷ್ಠವಾದ ಯಾಜಕಸೇವೆಯನ್ನು ಕೈಗೊಂಡಿದ್ದಾರೆ. ಯೇಸುವನ್ನು ಮಧ್ಯಸ್ಥರನ್ನಾಗಿ ಪಡೆದಿರುವ ಒಡಂಬಡಿಕೆಯು ಅಷ್ಟೇ ಶ್ರೇಷ್ಠವಾದುದು. ಏಕೆಂದರೆ ಅದು, ಹಿಂದಿನ ವಾಗ್ದಾನಗಳಿಗಿಂತಲೂ ಉತ್ತಮವಾದ ವಾಗ್ದಾನಗಳನ್ನು ಆಧರಿಸಿದೆ. ಮೊದಲನೆಯ ಒಡಂಬಡಿಕೆ ದೋಷರಹಿತ ಆಗಿದ್ದಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ. ಆದರೆ ದೇವರು ಆ ಒಡಂಬಡಿಕೆಗೆ ಸೇರಿದ ಜನರನ್ನು ಆರೋಪಿಸುತ್ತಾ ಇಂತೆಂದಿದ್ದಾರೆ: “ಇಗೋ, ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ್ಯ ವಂಶದವರೊಂದಿಗೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಕಾಲವು ಬರಲಿದೆ, ಎಂದರು ಸರ್ವೇಶ್ವರ. ಈ ಒಡಂಬಡಿಕೆ, ನಾನು ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕೈಹಿಡಿದು ಕರೆತಂದಾಗ ಮಾಡಿದ ಒಡಂಬಡಿಕೆಯಂತಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ; ಎಂದೇ, ನಾನು ಅವರನ್ನು ಲಕ್ಷಿಸಲೂ ಇಲ್ಲ, ಎಂದರು ಸರ್ವೇಶ್ವರ. ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ. ‘ಸರ್ವೇಶ್ವರನನ್ನು ಅರಿತುಕೊಳ್ಳಿರಿ’ ಎಂದು ನೆರೆಯವನಿಗಾಗಲಿ, ಸೋದರನಿಗಾಗಲಿ ಯಾರೂ ಬೋಧಿಸಬೇಕಾಗಿಲ್ಲ. ಹಿರಿಯಕಿರಿಯರು ಎಲ್ಲರೂ ನನ್ನನ್ನು ಅರಿಯುವರು. ಅವರ ಪಾಪಗಳನ್ನು ಕ್ಷಮಿಸುವೆನು ಅವರ ತಪ್ಪುನೆಪ್ಪುಗಳನು ನೆನಪಿಗೆ ತಂದುಕೊಳ್ಳೆನು ಎಂದರು ಸರ್ವೇಶ್ವರ.” ಇಲ್ಲಿ ‘ಹೊಸ ಒಡಂಬಡಿಕೆ’ ಎಂದು ಹೇಳಿ, ಹಿಂದಿನದನ್ನು ಹಳೆಯದಾಗಿಸಿದ್ದಾರೆ. ಹಳತಾದುದು ಹಾಗೂ ಮುದಿಯಾದುದು ಅಳಿದುಹೋಗುವಂಥಾದ್ದು. ಪ್ರಭುವಿನ ವಾಕ್ಯ
ಆ ಕಾಲದಲ್ಲಿ ಯೇಸುಸ್ವಾಮಿ ಬೆಟ್ಟವನ್ನೇರಿ, ತಮಗೆ ಒಪ್ಪಿಗೆಯಾದವರನ್ನು ಕರೆದರು. ಅವರು ಹತ್ತಿರಕ್ಕೆ ಬಂದರು. ಯೇಸು ಹನ್ನೆರಡು ಮಂದಿಯನ್ನು ಆಯ್ದುಕೊಂಡು, ‘ಪ್ರೇಷಿತರು’ ಎಂದು ಅವರಿಗೆ ಹೆಸರಿಟ್ಟರು. “ನನ್ನ ಜೊತೆಯಲ್ಲಿ ಇರಲು ನಿಮ್ಮನ್ನು ಆರಿಸಿಕೊಂಡಿದ್ದೇನೆ. ಶುಭಸಂದೇಶವನ್ನು ಸಾರಲು ನಿಮ್ಮನ್ನು ಕಳುಹಿಸುತ್ತೇನೆ. ದೆವ್ವಗಳನ್ನು ಬಿಡಿಸುವ ಅಧಿಕಾರವನ್ನು ನಿಮಗೆ ಕೊಡುತ್ತೇನೆ", ಎಂದು ಅವರಿಗೆ ಹೇಳಿದರು. ಹೀಗೆ ನೇಮಕಗೊಂಡ ಹನ್ನೆರಡು ಮಂದಿ ಯಾರೆಂದರೆ : ಸಿಮೋನ (ಯೇಸು ಈತನಿಗೆ ‘ಪೇತ್ರ’ ಎಂದು ಹೆಸರಿಟ್ಟರು). ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ (ಯೇಸು ಇವರಿಬ್ಬರಿಗೆ ‘ಬೊವನೆರ್ಗೆಸ್’ ಎಂದರೆ ‘ಸಿಡಿಲಮರಿಗಳು’ ಎಂಬ ಹೆಸರನ್ನಿಟ್ಟರು). ಅಂದ್ರೆಯ, ಫಿಲಿಪ್ಪ, ಬಾರ್ತಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಕೋಬ, ತದ್ದಾಯ, ದೇಶಾಭಿಮಾನಿ ಆದ ಸಿಮೋನ ಮತ್ತು ಮುಂದೆ ಗುರುದ್ರೋಹಿಯಾಗಲಿದ್ದ ಇಸ್ಕರಿಯೋತ. ಪ್ರಭು ಕ್ರಿಸ್ತರ ಶುಭಸ೦ದೇಶ
21.01.21 - ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಅವರನ್ನು ಮುಟ್ಟಬೇಕೆಂದು ಮುನ್ನುಗ್ಗಿ ಮೇಲೆ ಮೇಲೆ ಬೀಳುತ್ತಿದ್ದರು
ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 7:25--8:6
ಆ ಕಾಲದಲ್ಲಿ ಯೇಸುಸ್ವಾಮಿ ತಮ್ಮ ಶಿಷ್ಯರ ಜೊತೆಯಲ್ಲಿ ಗಲಿಲೇಯ ಸರೋವರದ ತೀರಕ್ಕೆ ಹೊರಟು ಹೋದರು. ಸಾವಿರಾರು ಜನರು ಅವರನ್ನು ಹಿಂಬಾಲಿಸಿದರು. ಈ ಜನರು ಯೇಸು ಮಾಡುತ್ತಿದ್ದ ಮಹತ್ಕಾರ್ಯಗಳ ಸಮಾಚಾರವನ್ನು ಕೇಳಿ, ಗಲಿಲೇಯ ಪ್ರಾಂತ್ಯದಿಂದ, ಜುದೇಯ ಪ್ರಾಂತ್ಯದಿಂದ, ಜೆರುಸಲೇಮ್ ನಗರದಿಂದ, ಇದು ಮೇಯ ಪ್ರಾಂತ್ಯದಿಂದ ಜೋರ್ಡನ್ ನದಿಯ ಪೂರ್ವಪ್ರದೇಶ ಹಾಗೂ ಟೈರ್-ಸಿದೋನ್ ಪಟ್ಟಣಗಳ ಸುತ್ತಮುತ್ತಲಿಂದ ಬಂದಿದ್ದರು. ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ಧವಾಗಿಡಲು ಶಿಷ್ಯರಿಗೆ ಹೇಳಿದರು. ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಅವರನ್ನು ಮುಟ್ಟಬೇಕೆಂದು ಮುನ್ನುಗ್ಗಿ ಮೇಲೆ ಮೇಲೆ ಬೀಳುತ್ತಿದ್ದರು. ದೆವ್ವಗಳು ಸಹ ಅವರನ್ನು ಕಂಡಾಗಲೆಲ್ಲಾ ಅವರ ಪಾದಕ್ಕೆರಗಿ, “ನೀವು ದೇವರ ಪುತ್ರ", ಎಂದು ಕಿರುಚುತ್ತಿದ್ದವು. ಆದರೆ ಯೇಸು, ತಾವು ಯಾರೆಂಬುದನ್ನು ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡುತ್ತಿದ್ದರು.
20.01.21 - “ಸಬ್ಬತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ?"
ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 7:1-3, 15-17
ಆ ಕಾಲದಲ್ಲಿ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಪುನಃ ಹೋದರು. ಅಲ್ಲಿ ಒಬ್ಬ ಬತ್ತಿದ ಕೈಯುಳ್ಳವನು ಇದ್ದನು. ಅವನನ್ನು ಸಬ್ಬತ್ದಿನದಲ್ಲಿ ಗುಣಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಕೆಲವರು ಹೊಂಚು ಹಾಕುತ್ತಿದ್ದರು. ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ, “ಸಬ್ಬತ್ ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ. ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು. ಫರಿಸಾಯರು ಅಲ್ಲಿಂದ ಹೊರಗೆ ಹೋದರು. ಕೂಡಲೇ ಹೆರೋದಿಯರೊಡನೆ ಸೇರಿಕೊಂಡು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.
19.01.21 - "ಸಬ್ಬತ್ ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ"
ಸಹೋದರರೇ, ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ. ನೀವು ಹೊಂದಿರುವ ನಿರೀಕ್ಷೆ ಪೂರ್ಣವಾಗಿ ಕೈಗೂಡುವಂತೆ ನಿಮ್ಮಲ್ಲಿ ಪ್ರತಿಯೊಬ್ಬನೂ ಮೊದಲಿನ ಆಸಕ್ತಿಯನ್ನು ಕಡೆಯತನಕವೂ ತೋರಿಸಬೇಕೆಂದು ಹಾರೈಸುತ್ತೇನೆ. ನೀವು ಆಲಸಿಗಳಾಗಿರಬಾರದು; ವಿಶ್ವಾಸದಿಂದಲೂ ಬಹು ತಾಳ್ಮೆಯಿಂದಲೂ ದೈವ ವಾಗ್ದಾನಗಳನ್ನು ಬಾಧ್ಯವಾಗಿಸಿಕೊಂಡವರನ್ನು ಅನುಸರಿಸಬೇಕು. ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮ್ಮ ಮಾತನ್ನು ಈಡೇರಿಸುವುದಾಗಿ ಶಪಥಮಾಡಿದರು. ತಮಗಿಂತಲೂ ಮೇಲಾದವರಾರೂ ಇಲ್ಲವಾದ ಕಾರಣ ತಮ್ಮ ಸ್ವಂತ ಹೆಸರಿನಲ್ಲೇ ಶಪಥಮಾಡಿದರು. “ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಹೆಚ್ಚಿಸಿಯೇ ತೀರುವೆನು,” ಎಂದರು. ಅಂತೆಯೇ, ಅಬ್ರಹಾಮನು ದೀರ್ಘಕಾಲ ಕಾದಿದ್ದು ದೇವರ ವಾಗ್ದಾನದ ಫಲವನ್ನು ಪಡೆದನು. ಮನುಷ್ಯರು ತಮಗಿಂತಲೂ ಹೆಚ್ಚಿನವರ ಮೇಲೆ ಆಣೆಯಿಡುವುದು ವಾಡಿಕೆ. ಹೀಗೆ ಆಣೆಯಿಟ್ಟು ಪ್ರಮಾಣಮಾಡಿದರೆ ಎಲ್ಲ ವಿವಾದಗಳು ಕೊನೆಗೊಳ್ಳುತ್ತವೆ. ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು. ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು. ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು. ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.
ಅದೊಂದು ಸಬ್ಬತ್ದಿನ. ಯೇಸುಸ್ವಾಮಿ ಗೋದಿಯ ಹೊಲಗಳಲ್ಲಿ ಹಾದು ಹೋಗುತ್ತಿದ್ದರು. ಜೊತೆಯಲ್ಲಿದ್ದ ಅವರ ಶಿಷ್ಯರು ತೆನೆಗಳನ್ನು ಕೀಳಲಾರಂಭಿಸಿದರು. ಇದನ್ನು ಕಂಡ ಫರಿಸಾಯರು,, “ನೋಡು, ಸಬ್ಬತ್ದಿನದಲ್ಲಿ ನಿಷಿದ್ಧವಾದುದನ್ನು ನಿನ್ನ ಶಿಷ್ಯರು ಮಾಡುತ್ತಿದ್ದಾರೆ, ಇದು ಸರಿಯೇ?” ಎಂದು ಯೇಸುವನ್ನು ಪ್ರಶ್ನಿಸಿದರು. ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ? ಪ್ರಧಾನಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ, ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?’ ಎಂದು ಅವರನ್ನು ಕೇಳಿದರು. ಬಳಿಕ ಯೇಸು ಅವರಿಗೆ, “ಸಬ್ಬತ್ ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ. ಆದುದರಿಂದ ನರಪುತ್ರನು ಸಬ್ಬತ್ತಿಗೂ ಒಡೆಯ,” ಎಂದರು.
18.01.21
ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 5:1-10
17.01.21 - ‘ಮೆಸ್ಸೀಯ’ ಸಿಕ್ಕಿದ್ದಾರೆ,”
ಮೊದಲನೇ ವಾಚನ: 1 ಸಮುವೇಲ 3:3-10, 19
ಸಮುವೇಲನು ಸರ್ವೇಶ್ವರನ ಮಂದಿರದಲ್ಲಿ, ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ದೇವರ ದೀಪ ಇನ್ನೂ ಉರಿಯುತ್ತಿತ್ತು. ಆಗ ಸರ್ವೇಶ್ವರಸ್ವಾಮಿ ಸಮುವೇಲನನ್ನು ಕರೆದರು. ಸಮುವೇಲನು, “ಇಗೋ ಬಂದೇ,” ಎಂದು ಉತ್ತರಕೊಟ್ಟು, ಒಡನೆ ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಏಲಿ, “ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು. ಸಮುವೇಲನು ಹೋಗಿ ಮಲಗಿದನು. ಸರ್ವೇಶ್ವರ ಪುನಃ, “ಸಮುವೇಲನೇ,” ಎಂದು ಕರೆದರು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಅವನು, “ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು. ಈವರೆಗೂ ಸಮುವೇಲನಿಗೆ ಸರ್ವೇಶ್ವರನ ನೇರ ಅನುಭವ ಆಗಿರಲಿಲ್ಲ. ದೇವರ ವಾಣಿ ಅವನಿಗೆ ಕೇಳಿಸಿರಲಿಲ್ಲ. ಸರ್ವೇಶ್ವರ ಸಮುವೇಲನನ್ನು ಮೂರನೆಯ ಸಾರಿ ಕರೆದರು. ಅವನು ತಟ್ಟನೆ ಏಲಿಯ ಹತ್ತಿರ ಓಡಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿರಲ್ಲಾ,” ಎಂದನು. ಹುಡುಗನನ್ನು ಕರೆದವರು ಸರ್ವೇಶ್ವರನೇ ಎಂದು ಏಲಿಗೆ ತಿಳಿಯಿತು. ಅವನು ಸಮುವೇಲನಿಗೆ, “ಹೋಗಿ ಮಲಗಿಕೋ; ಮತ್ತೆ ಅವರು ನಿನ್ನನ್ನು ಕರೆದರೆ, ‘ಸರ್ವೇಶ್ವರಾ, ಅಪ್ಪಣೆಯಾಗಲಿ; ತಮ್ಮ ದಾಸ ಕಾದಿದ್ದಾನೆ,’ ಎಂದು ಹೇಳು,” ಎಂದನು. ಸಮುವೇಲನು ಹಿಂದಿರುಗಿ ಹೋಗಿ ತನ್ನ ಸ್ಥಳದಲ್ಲೇ ಮಲಗಿಕೊಂಡನು. ಸರ್ವೇಶ್ವರ ಪ್ರತ್ಯಕ್ಷರಾಗಿ ಹಿಂದಿನಂತೆಯೇ, “ಸಮುವೇಲನೇ, ಸಮುವೇಲನೇ,” ಎಂದರು. ಸಮುವೇಲನು, “ಅಪ್ಪಣೆಯಾಗಲಿ, ತಮ್ಮ ದಾಸನಾದ ನಾನು ಕಾದಿದ್ದೇನೆ,” ಎಂದನು. ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೆ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.
ಸಹೋದರರೇ, “ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ. ಪ್ರಭುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನೂ ತಮ್ಮ ಪರಾಕ್ರಮದಿಂದ ಎಬ್ಬಿಸುವರು. ನಿಮ್ಮ ದೇಹಗಳು ಕ್ರಿಸ್ತಯೇಸುವಿನ ಅಂಗಗಳೆಂದು ನಿಮಗೆ ತಿಳಿಯದೇ? ಹಾಗಾದರೆ ನಾನು ಕ್ರಿಸ್ತಯೇಸುವಿನ ಅಂಗಗಳನ್ನು ತೆಗೆದು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಇಲ್ಲ. ಆದರೆ ಪ್ರಭುವಿನ ಅನ್ಯೋನ್ಯತೆಯಲ್ಲಿ ಇರುವವನು ಅವರೊಂದಿಗೆ ಆಧ್ಯಾತ್ಮಿಕವಾಗಿ ಒಂದಾಗಿರುತ್ತಾನೆ. ವ್ಯಭಿಚಾರದಿಂದ ದೂರ ಸರಿಯಿರಿ. ಮಾನವನು ಮಾಡುವ ಇತರ ಪಾಪಗಳು ದೇಹಕ್ಕೆ ಬಾಹಿರವಾದವುಗಳು. ವ್ಯಭಿಚಾರ ಮಾಡುವಾತನು ತನ್ನ ದೇಹಕ್ಕೇ ದ್ರೋಹ ಬಗೆಯುತ್ತಾನೆ. ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ. ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.
ಮಾರನೆಯ ದಿನ ಯೊವಾನ್ನನು ತನ್ನಿಬ್ಬರು ಶಿಷ್ಯರ ಸಂಗಡ ನಿಂತುಕೊಂಡಿರುವಾಗ, ಯೇಸು ಸ್ವಾಮಿ ಆ ಮಾರ್ಗವಾಗಿ ಹೋಗುತ್ತಿದ್ದರು. ಅವರನ್ನು ನೋಡುತ್ತಲೇ ಯೊವಾನ್ನನು ತನ್ನ ಆ ಶಿಷ್ಯರಿಗೆ, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ,” ಎಂದು ಹೇಳಿದನು. ಇದನ್ನು ಕೇಳಿದ ಆ ಶಿಷ್ಯರು ಯೇಸುವನ್ನು ಹಿಂಬಾಲಿಸಿದರು. ಯೇಸು ಸ್ವಾಮಿ, ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಿದರು. ಅವರು, “ರಬ್ಬೀ, ತಾವು ವಾಸಮಾಡುವುದೆಲ್ಲಿ?” ಎಂದು ವಿಚಾರಿಸಿದರು. (’ರಬ್ಬಿ’ ಎಂದರೆ ಗುರುದೇವ ಎಂದು ಅರ್ಥ.) ಯೇಸು ಉತ್ತರವಾಗಿ, “ಬಂದು ನೋಡಿ” ಎನ್ನಲು ಅವರು ಹೋಗಿ ಯೇಸು ಸ್ವಾಮಿ ಇದ್ದ ಸ್ಥಳವನ್ನು ಕಂಡು ಆ ದಿನವನ್ನು ಅವರೊಡನೆ ಕಳೆದರು. ಆಗ ಸಾಯಂಕಾಲ ಸುಮಾರು ನಾಲ್ಕು ಗಂಟೆಯಾಗಿತ್ತು. ಯೊವಾನ್ನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ್ದ ಇಬ್ಬರು ಶಿಷ್ಯರಲ್ಲಿ ಸಿಮೋನ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನು. ಇವನು ಮೊದಲು ತನ್ನ ಸಹೋದರ ಸಿಮೋನನನ್ನು ಕಂಡು, “ನಮಗೆ ‘ಮೆಸ್ಸೀಯ’ ಸಿಕ್ಕಿದ್ದಾರೆ,” ಎಂದು ತಿಳಿಸಿ ಅವನನ್ನು ಯೇಸುವಿನ ಬಳಿಗೆ ಕರತಂದನು. (’ಮೆಸ್ಸೀಯ’ ಎಂದರೆ ಅಭಿಷಿಕ್ತನಾದ ಲೋಕೋದ್ಧಾರಕ ಎಂದು ಅರ್ಥ). ಯೇಸು ಸಿಮೋನನನ್ನು ನೋಡಿ, “ಯೊವಾನ್ನನ ಮಗನಾದ ಸಿಮೋನನೇ, ಇನ್ನು ಮುಂದೆ ನಿನ್ನನ್ನು ಕೇಫನೆಂದು ಕರೆಯುವರು,” ಎಂದು ನುಡಿದರು. (’ಕೇಫ’ ಎಂದರೆ ‘ಪೇತ್ರ’ ಇಲ್ಲವೇ ‘ಬಂಡೆ’ ಎಂದರ್ಥ).
16.01.21 - "ನನ್ನನ್ನು ಹಿಂಬಾಲಿಸು""
ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 4:12-16
ಸಹೋದರರೇ, ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು. ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು. ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ. ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ. ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.
15.01.21 - “ನಾನು ನಿನಗೆ ಆಜ್ಞಾಪಿಸುತ್ತೇನೆ; ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು”
ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 4:1-5, 11
ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ. ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು. ಲೋಕಾದಿಯಲ್ಲೇ, ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿದ್ದರೂ ಅವರು, “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು,” ಎಂದು ಹೇಳಿದ್ದಾರೆ. ವಿಶ್ವಾಸಿಸುವ ನಾವಾದರೋ ಆ ವಿಶ್ರಾಂತಿಯ ನೆಲೆಯನ್ನು ಸೇರುತ್ತೇವೆ. ಪವಿತ್ರಗ್ರಂಥದ ಒಂದೆಡೆಯಲ್ಲಿ, ಏಳನೆಯ ದಿನವನ್ನು ಕುರಿತು: “ದೇವರು ತಮ್ಮ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು,” ಎಂದು ಬರೆದಿದೆ. ಮೇಲೆ ಹೇಳಿದ ವಚನದಲ್ಲಾದರೋ, “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ,” ಎಂದಿದೆ. ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.ಕೀರ್ತನೆ: 78:3, 4, 6-7, 8
ಪೇಳ್ವೆವು ನಾವು ಕೇಳಿ ತಿಳಿದುಕೊಂಡವುಗಳನೆ I
ಪೂರ್ವಜರೆಮಗೆ ತಿಳಿಸಿದ ಸಂಗತಿಗಳನೆ I
ಪ್ರಭುವಿನ ಮಹಿಮೆ ಪರಾಕ್ರಮದ ಪವಾಡಗಳನೆ II
ಮರೆಮಾಡೆವು ಅವರ ಸಂತತಿಯಾದ ನಿಮಗೆ I
ವಿವರಿಸುವೆವು ಮುಂಬರಲಿರುವ ಪೀಳಿಗೆಗೆ II
“ಗೊತ್ತಾಗಲಿ ಇವೆಲ್ಲ ಮುಂದಿನ ತಲೆಮಾರಿಗೆ I
ತಿಳಿಸುತ್ತ ಹೋಗಲಿ ಮಕ್ಕಳು ಮೊಮ್ಮಕ್ಕಳಿಗೆ” II
ಆಗ ತಮ್ಮ ಪ್ರಾಚೀನ ಪೂರ್ವಿಕರಂತೆ ಅವರಾಗರು I
ಮೊಂಡರು, ಅವಿಧೇಯರು, ದೈವದ್ರೋಹಿಗಳು, ಚಪಲಚಿತ್ತರು II
ಮರೆಯರು ನನ್ನ ಮಹತ್ಕಾರ್ಯಗಳನು I
ಇಡುವರು ನನ್ನಲ್ಲೇ ಭರವಸೆಯನು I
ಕೈಗೊಳ್ಳುವರು ನನ್ನ ಆಜ್ಞೆಗಳನು II
ಮಾರ್ಕನು ಬರೆದ ಶುಭಸ೦ದೇಶ 2:1-12
ಕೆಲವು ದಿನಗಳು ಕಳೆದ ಬಳಿಕ ಯೇಸುಸ್ವಾಮಿ ಮತ್ತೊಮ್ಮೆ ಕಫೆರ್ನವುಮಿಗೆ ಬಂದರು. ಅವರು ಮನೆಯಲ್ಲಿದ್ದಾರೆಂಬ ಸುದ್ದಿ ಹಬ್ಬಿತು. ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಇದರಿಂದಾಗಿ ಮನೆಯೊಳಗೆ ಮಾತ್ರವಲ್ಲ, ಹೊರಗಡೆಯೂ ಸ್ಥಳ ಸಾಲದೆ ಹೋಯಿತು. ಯೇಸು ಅಲ್ಲಿ ಸೇರಿದ್ದ ಜನಸ್ತೋಮಕ್ಕೆ ದೇವರ ವಾಕ್ಯವನ್ನು ಬೋಧಿಸತೊಡಗಿದರು. ಆಗ ಒಬ್ಬ ಪಾರ್ಶ್ವವಾಯುರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಕೆಲವರು ಅಲ್ಲಿಗೆ ಬಂದರು. ಜನಸಂದಣಿಯ ನಿಮಿತ್ತ ಅವನನ್ನು ಯೇಸುವಿನ ಸಮೀಪಕ್ಕೆ ಸಾಗಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಅವರು ಯೇಸು ಇದ್ದ ಮನೆಯ ಮೇಲ್ಛಾವಣಿಯನ್ನು ತೆರೆದು, ದೊಡ್ಡ ಕಿಂಡಿಯೊಂದನ್ನು ಮಾಡಿ, ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ ಆ ಪಾರ್ಶ್ವವಾಯು ರೋಗಿಗೆ, “ಮಗು, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.
14.01.21 - “ತಾವು ಮನಸ್ಸು ಮಾಡಿದ್ದಲ್ಲಿ ನನ್ನನ್ನು ಗುಣ ಮಾಡಬಲ್ಲಿರಿ,”
ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 3:7-14
ಆದಕಾರಣ ಪವಿತ್ರಾತ್ಮ ಹೇಳುವ ಪ್ರಕಾರ: “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು. ಮರುಭೂಮಿಯಲ್ಲವರು ದೇವರನು ಪರೀಕ್ಷಿಸಿದರು ಆತನ ವಿರುದ್ಧ ಅಲ್ಲೇ ದಂಗೆ ಎದ್ದರು. ಎಂದೇ ದೇವರಿಂತೆಂದರು: ಮರುಭೂಮಿಯಲಿ ಅವರೆನ್ನನು ಕೆಣಕಿದರು; ನಲವತ್ತು ವರುಷ ನಾನೆಸಗಿದ ಮಹತ್ಕಾರ್ಯಗಳನು ಕಂಡರಾದರೂ ಎನ್ನ ಕೆಣಕಿ ಪರೀಕ್ಷಿಸಿದರು. ಎಂತಲೇ ಆ ಜನರ ವಿರುದ್ಧ ಕೆರಳಿ ಇಂತೆಂದನು: ಹಾದಿ ತಪ್ಪಿದ ಹೃದಯಿಗಳು ಇವರೆಂದಿಗೂ, ಗ್ರಹಿಸಿಕೊಳ್ಳರಿವರು ಎನ್ನ ಮಾರ್ಗವನು ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು.” ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ. ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ “ಇಂದು” ಎನ್ನುವ ಕಾಲವು ಇರುವ ತನಕ ಪ್ರತಿನಿತ್ಯವು ಒಬ್ಬರನ್ನೊಬ್ಬರು ಎಚ್ಚರಿಸಿರಿ. ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.
ಆ ಕಾಲದಲ್ಲಿ ಕುಷ್ಠರೋಗಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, ಮೊಣಕಾಲೂರಿ, “ತಾವು ಮನಸ್ಸುಮಾಡಿದ್ದಲ್ಲಿ ನನ್ನನ್ನು ಗುಣಮಾಡಬಲ್ಲಿರಿ,” ಎಂದು ದೈನ್ಯದಿಂದ ಬೇಡಿಕೊಂಡನು. ಯೇಸುವಿನ ಮನ ಕರಗಿತು. ಅವರು ಕೈಚಾಚಿ, ಕುಷ್ಠರೋಗಿಯನ್ನು ಮುಟ್ಟಿ, “ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು. ತಕ್ಷಣ ಅವನ ಕುಷ್ಠವು ಮಾಯವಾಯಿತು. ಅವನು ಗುಣಹೊಂದಿದನು. ಯೇಸು ಅವನಿಗೆ, “ಎಚ್ಚರಿಕೆ! ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು. ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು.
09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ
ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 15:22-31 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬ...
-
ಮೊದಲನೇ ವಾಚನ: ಯೆಶಾಯ 58:1-9 ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿ...
-
ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 18:9-18 ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು, ನಾನು ನಿನ್ನೊಡನೆ ಇದ್...



































