28.01.2021 - ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,”

ಹಿಬ್ರಿಯರಿಗೆ ಬರೆದ ಪತ್ರದಿ೦ದ ವಾಚನ 10:19-25

ಹೀಗಿರುವಲ್ಲಿ, ಪ್ರಿಯ ಸಹೋದರರೇ, ಯೇಸುಸ್ವಾಮಿ ತಮ್ಮ ದೇಹವೆಂಬ ತೆರೆಯ ಮೂಲಕ ನಮಗೆ ಹೊಸದಾದ ಸಜ್ಜೀವಮಾರ್ಗವನ್ನು ತೆರೆದಿಟ್ಟಿದ್ದಾರೆ. ಅದರ ಮೂಲಕ ಗರ್ಭಗುಡಿಯನ್ನು ಧೈರ್ಯದಿಂದ ಪ್ರವೇಶಿಸುವ ಹಕ್ಕು ಅವರ ರಕ್ತಧಾರೆಯಿಂದಲೇ ನಮಗೆ ದೊರೆತಿದೆ. ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠಯಾಜಕ ನಮಗಿದ್ದಾರೆ. ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ. ಕೊಟ್ಟ ಮಾತನ್ನು ದೇವರು ಮೀರುವುದಿಲ್ಲ. ಆದ್ದರಿಂದ ನಾವು ನಿವೇದಿಸುವ ನಂಬಿಕೆ ನಿರೀಕ್ಷೆಯಲ್ಲಿ ಚಂಚಲರಾಗದೆ ಸದೃಢರಾಗಿರೋಣ. ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ. ಸಭೆ ಸೇರುವ ರೂಢಿಯನ್ನು ಕೆಲವರು ಕೈಬಿಟ್ಟಿದ್ದಾರೆ. ನಾವು ಹಾಗೆ ಮಾಡದಿರೋಣ. ನಿಮಗೆ ತಿಳಿದಿರುವಂತೆ ಪ್ರಭು ಪ್ರತ್ಯಕ್ಷರಾಗುವ ದಿನವು ಸಮೀಪಿಸುತ್ತಿರುವುದರಿಂದ ಮತ್ತಷ್ಟು ಹೆಚ್ಚಾಗಿ ಒಬ್ಬರನ್ನೊಬ್ಬರು ಪ್ರೋತ್ಸಾಹಿಸೋಣ. 
ಪ್ರಭುವಿನ ವಾಕ್ಯ

ಕೀರ್ತನೆ: 24:1-2, 3-4, 5-6 - 
ಶ್ಲೋಕ: ಇಂಥವರೆ ದೇವರ ದರ್ಶನಾಭ್ಯರ್ಥಿಗಳು

ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I
ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II

ಕಡಲನು ತಳಪಾಯವನಾಗಿಸಿದವನು ಆತನೆ I
ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೆ II

ಪ್ರಭುವಿನ ಶಿಖರವನು ಏರಬಲ್ಲವನಾರು ? I
ಆ ನಿವಾಸದಲಿ ನಿಲ್ಲಲು ಯೋಗ್ಯನಾರು ? II

ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I
ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II

ಲಭಿಸುವುದಾತನಿಗೆ ಶುಭ ಪ್ರಭುವಿನಿಂದ I
ನೀತಿಯ ಸತ್ಫಲ ರಕ್ಷಕ ದೇವನಿಂದ II

ಇಂಥವರೆ ದೇವರ ದರ್ಶನಾಭ್ಯರ್ಥಿಗಳು I
ಇಂಥವರೆ ಯಕೋಬ ದೇವನ ಭಕ್ತಾದಿಗಳು II

ಮಾರ್ಕನು ಬರೆದ ಶುಭಸ೦ದೇಶ 4:21-25


ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಯಾರಾದರೂ ಉರಿಯುವ ದೀಪವನ್ನು ತಂದು ಬಟ್ಟಲ ಒಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ನಿಶ್ಚಯವಾಗಿಯೂ ಇಲ್ಲ. ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಬೆಳಕಿಗೆ ಬಾರದ ಮುಚ್ಚುಮರೆಯಿಲ್ಲ, ರಟ್ಟಾಗದ ಗುಟ್ಟಿಲ್ಲ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.

“ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು; ಇನ್ನೂ ಅಧಿಕವಾಗಿ ಕೊಡುವರು. ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು 
ಪ್ರಭು ಕ್ರಿಸ್ತರ ಶುಭಸ೦ದೇಶ

No comments:

Post a Comment

25.02.2026 - ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು

  ಮೊದಲನೇ ವಾಚನ: ಯೋನ 3: 1-10 ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು: “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿ...