10.02.21 - "ಮನುಷ್ಯನ ಅಂತರಂಗದಿಂದ ಹೊರ ಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)”

ಮೊದಲನೆಯ ವಾಚನ - ಅದಿಕಾಂಡ 2: 4-9, 15-17



ದೇವರಾದ ಸರ್ವೇಶ್ವರ ಸ್ವಾಮಿ ಪರಲೋಕ - ಭೂಲೋಕಗಳನ್ನು ಸೃಷ್ಟಿಮಾಡಿದಾಗ ಯಾವ ಗಿಡಗಳೂ ಭೂಮಿಯಲ್ಲಿ ಇರಲಿಲ್ಲ. ಯಾವ ಬೀಜವೂ ಮೊಳೆತಿರಲಿಲ್ಲ. ಏಕೆಂದರೆ ದೇವರಾದ ಸರ್ವೇಶ್ವರ ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡಲು ಮನುಷ್ಯನೂ ಇರಲಿಲ್ಲ. ಆದರೂ ಭೂಮಿಯಿಂದ ನೀರು ಉಕ್ಕಿ ಬಂದು ನೆಲಕ್ಕೆ ನೀರೆರೆಯುತ್ತಿತ್ತು. ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು. ಇದಲ್ಲದೆ, ದೇವರಾದ ಸರ್ವೇಶ್ವರ ಪೂರ್ವ ದಿಕ್ಕಿನಲ್ಲಿರುವ ಏದೆನ್ ಪ್ರದೇಶದಲ್ಲಿ ಒಂದು ಉದ್ಯಾನವನವನ್ನು ಮಾಡಿ ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು. “ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು. ದೇವರಾದ ಸರ್ವೇಶ್ವರ ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ವನವನ್ನು ಕೃಷಿ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಬಿಟ್ಟರು. ಇದಲ್ಲದೆ, ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ, “ನೀನು ಈ ತೋಟದಲ್ಲಿರುವ ಎಲ್ಲ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು. ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.
ಪ್ರಭುವಿನ ವಾಕ್ಯ

ಕೀರ್ತನೆ - 104, 1-2, 27-30
ಶ್ಲೋಕ: ಭಜಿಸು ನನ್ನ ಮನವೇ, ಭಜಿಸು, ಪ್ರಭುವನು

ಪ್ರಭು, ನನ್ನ ದೇವಾ, ನೀ ಸರ್ವೋತ್ತಮನು I
ಮಹಿಮೆ ಪ್ರತಾಪಗಳಿಂದ ಭೂಷಿತನು II

ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I
ಹರಡಿಸಿರುವೆ ಆಗಸವನು ಗುಡಾರದಂತೆ II

ಸಕಾಲದಲೊದಗಿಸುವೆ ಆಹಾರವನು I
ನಂಬಿಕೊಂಡಿವೆ ಆ ಜೀವಿಗಳು ನಿನ್ನನು II

ನೀ ಉಸಿರನ್ನೂದಲು ಹೊಸದಾಗುವುವು I
ಪುನಶ್ಚೇತನಗೊಳ್ಳುವುದು ಜಗವೆಲ್ಲವು II

ಶುಭಸಂದೇಶ - ಮಾರ್ಕ 7: 14-23

ಆ ಕಾಲದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಮನುಷ್ಯನ ಅಂತರಂಗದಿಂದ ಹೊರ ಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)” ಎಂದರು. ಯೇಸು ಜನರ ಗುಂಪನ್ನು ಬಿಟ್ಟು ಮನೆ ಸೇರಿದ ಬಳಿಕ ಶಿಷ್ಯರು, ಅವರ ಬಳಿಗೆ ಬಂದು ಆ ಸಾಮತಿಯ ಅರ್ಥವೇನೆಂದು ಕೇಳಿದರು. ಅದಕ್ಕೆ ಅವರು, “ನೀವು ಕೂಡ ಮಂದಮತಿಗಳೋ? ನಿಮಗೂ ಇದು ಅರ್ಥವಾಗದೋ? ಹೊರಗಿನಿಂದ ಮನುಷ್ಯನ ಒಳಕ್ಕೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಅವನು ತಿಂದದ್ದು ಅವನ ಹೃದಯವನ್ನು ಹೊಕ್ಕದೆ, ಹೊಟ್ಟೆಯನ್ನು ಮಾತ್ರ ಸೇರಿ, ಬಳಿಕ ದೇಹದಿಂದ ವಿಸರ್ಜಿತವಾಗುತ್ತದೆ. (ಹೀಗೆ ಆಹಾರ ಪದಾರ್ಥಗಳು ಯಾವುವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದರು.) ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವ ಯೋಚನೆಗಳು ಅವನನ್ನು ಕಲುಷಿತಗೊಳಿಸುತ್ತವೆ. ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ, ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ. ಈ ಎಲ್ಲಾ ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ಧ ಮಾಡುತ್ತವೆ,” ಎಂದರು. 
ಪ್ರಭುವಿನ ಶುಭಸಂದೇಶ

No comments:

Post a Comment

09.01.2026 - ಸ್ವಾವಿೂ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ

  ಮೊದಲನೇ ವಾಚನ: 1 ಯೊವಾನ್ನ 5: 5-13 ಪ್ರಿಯರೇ, ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ...