15.02.21 - “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ?"

ಮೊದಲನೆಯ ವಾಚನ - ಆದಿಕಾಂಡ 4: 1-15, 25. V.14


ಆದಾಮನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತಳು. “ಸರ್ವೇಶ್ವರ ಸ್ವಾಮಿಯ ಅನುಗ್ರಹದಿಂದ ಒಂದು ಗಂಡುಮಗುವನ್ನು ಪಡೆದಿದ್ದೇನೆ” ಎಂದಳು. ತರುವಾಯ ಅವನ ತಮ್ಮನಾದ ಹೇಬೆಲನಿಗೆ ಜನ್ಮವಿತ್ತಳು. ಹೇಬೆಲನು ಕುರಿಗಾಹಿಯಾದನು; ಕಾಯಿನನು ವ್ಯವಸಾಯಗಾರನಾದನು. ಕ್ರಮೇಣ ಕಾಯಿನನು ತಾನು ಬೆಳೆಸಿದ ಫಸಲಲ್ಲಿ ಕೆಲವನ್ನು ತಂದು ಸರ್ವೇಶ್ವರ ಸ್ವಾಮಿಗೆ ಕಾಣಿಕೆಯಾಗಿ ಸಮರ್ಪಿಸಿದನು. ಅಂತೆಯೇ, ಹೇಬೆಲನು ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಸಮರ್ಪಿಸಿದನು. 5ಸರ್ವೇಶ್ವರ ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು; ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಇದರಿಂದ ಕಾಯಿನನು ಕಡುಗೋಪಗೊಂಡನು; ಅವನ ಮುಖ ಸಿಂಡರಿಸಿತು. ಆಗ ಸರ್ವೇಶ್ವರ ಕಾಯಿನನಿಗೆ, “ಕೋಪವೇಕೆ? ಮುಖ ಸಿಂಡರಿಸಿದೆ ಏಕೆ? ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು. ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು. “ನಿನ್ನ ತಮ್ಮನೆಲ್ಲಿ?" ಎಂದು ಸರ್ವೇಶ್ವರ ಕೇಳಿದಾಗ “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ” ಎಂದು ಕಾಯಿನನು ಉತ್ತರ ಕೊಟ್ಟನು. ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು. ನಿನ್ನ ಕೈ ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ನೆಲದಿಂದಾಗಿ ನೀನು ಶಾಪಗ್ರಸ್ತನು; ತಿರಸ್ಕೃತನು. ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು. ಅದಕ್ಕೆ ಕಾಯಿನನು, “ಸರ್ವೇಶ್ವರಾ, ಈ ಶಿಕ್ಷೆ ನನ್ನಿಂದ ಸಹಿಸಲಾಗದಷ್ಟು ಕಠಿಣ. ಈ ನಾಡಿನಿಂದ ನನ್ನನ್ನು ಹೊರದೂಡುತ್ತಿರುವಿರಿ, ತಮ್ಮ ಸಾನ್ನಿಧ್ಯ ನನಗಿನ್ನು ದೊರಕದು; ನೆಲೆ ಇಲ್ಲದ ನಾನು ಲೋಕದಲ್ಲಿ ಅಲೆಮಾರಿಯಾಗಿರಬೇಕು; ಕಂಡಕಂಡವರೆಲ್ಲರು ನನ್ನನ್ನು ಕೊಲ್ಲುವರು” ಎಂದು ಹೇಳಿದನು. ಅದಕ್ಕೆ ಸರ್ವೇಶ್ವರ, “ಇಲ್ಲ, ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳ್ಮಡಿ ದಂಡನೆ ಆಗುವುದು,"ಎಂದು ಹೇಳಿ, ಅವನನ್ನು ಕಂಡವರು ಕೊಲ್ಲದಂತೆ ಅವನ ಮೇಲೆ ಒಂದು ಗುರುತನ್ನು ಇಟ್ಟರು. ಆದಾಮ್ ಮತ್ತು ಅವನ ಹೆಂಡತಿಗೆ ಮತ್ತೊಂದು ಗಂಡುಮಗು ಆಯಿತು. ಅಕೆ, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತಾನವನ್ನು ಅನುಗ್ರಹಿಸಿದ್ದಾರೆ,” ಎಂದುಕೊಂಡು ಅವನಿಗೆ “ಸೇತ್" ಎಂದು ನಾಮಕರಣ ಮಾಡಿದಳು. 
ಪ್ರಭುವಿನ ವಾಕ್ಯ

ಕೀರ್ತನೆ - 50:1, 8, 16-17, 20-21
ಶ್ಲೋಕ: ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I

ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I
ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II

ನಿನ್ನ ಬಲಿಯರ್ಪಣೆಯನು ನಾ ತಪ್ಪೆಣಿಸುತಿಲ್ಲ I
ನನ್ನ ಮುಂದಿವೆ ಸತತ ನಿನ್ನ ದಹನಬಲಿಗಳೆಲ್ಲ II

“ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು? I
ನನ್ನ ನಿಬಂಧನೆಗಳ ನೀವು ಜಪಿಸುವುದೆಂತು?” II

ನನ್ನ ಮಾತುಗಳನು ನೀವು ತಾತ್ಸಾರ ಮಾಡುತ್ತೀರಿ I
ನನ್ನ ತಿದ್ದುಪಾಟುಗಳನು ನೀವು ಧಿಕ್ಕರಿಸುತ್ತೀರಿ II

ಸೋದರನಿಗೆ ವಿರುದ್ಧ ಸುಳ್ಳಾಡಲು ಕೂರುತ್ತೀರಿ I
ಒಡಹುಟ್ಟಿದವರಿಗೆ ಎದುರಾಗಿ ಚಾಡಿಹೇಳುತ್ತೀರಿ II

ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I
ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II

ಶುಭಸಂದೇಶ - ಮಾರ್ಕ 8:11-13


ಆ ಕಾಲದಲ್ಲಿ ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ: “ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿತೋರಿಸು,” ಎಂದು ಕೇಳಿದರು. ಇದನ್ನು ಕೇಳಿ ಯೇಸು, ಮನಸ್ಸಿನಲ್ಲೇ ನೊಂದುಕೊಂಡು, ನಿಟ್ಟುಸಿರಿಟ್ಟು, “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ,” ಎಂದರು. ಅನಂತರ ಯೇಸು ಅವರನ್ನು ಬಿಟ್ಟು, ದೋಣಿಯನ್ನು ಹತ್ತಿ ಸರೋವರದ ಆಚೆದಡಕ್ಕೆ ಹೊರಟುಹೋದರು.
ಪ್ರಭುವಿನ ಶುಭಸಂದೇಶ

No comments:

Post a Comment

12.04.2026 - ನನ್ನ ಪ್ರಭುವೇ, ನನ್ನ ದೇವರೇ

  ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 2:42-47 ಭಕ್ತಾದಿಗಳು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮ...