ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

23.03.21 - “ನಾನು ಹೊರಟು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ"

ಮೊದಲನೇ ವಾಚನ: ಸಂಖ್ಯಾಕಾಂಡ 21:4-9


ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸ ದಿಂದ ಅವರಿಗೆ ಬೇಸರವಾಯಿತು. ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತಾಡ ತೊಡಗಿದರು: “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜೆಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,” ಎಂದು ಹೇಳತೊಡಗಿದರು. ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹುಜನ ಸತ್ತುಹೋದರು. ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು. ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, “ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿ ಒಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು,” ಎಂದು ಆಜ್ಞಾಪಿಸಿದರು. ಅಂತೆಯೆ ಮೋಶೆ ಕಂಚಿನಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.

ಕೀರ್ತನೆ: 102:2-3, 16-18, 19-21
ಶ್ಲೋಕ: ಕಿವಿಗೊಡು ಪ್ರಭೂ, ನನ್ನ ಪ್ರಾರ್ಥನೆಗೆ ನನ್ನ ಕೂಗು ಸೇರಲಿ ನಿನ್ನ ಬಳಿಗೆ

ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ I
ನನ್ನ ಕೂಗು ಸೇರಲಿ ನಿನ್ನ ಬಳಿಗೆ II
ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I
ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II

ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು I
ಭಯಪಡುವರು ನಿನ್ನ ಪ್ರತಾಪಕೆ ಭೂರಾಜರುಗಳು II
ಏಕೆನೆ ಪುನರುದ್ಧರಿಸುವನು ಸಿಯೋನನು I
ಪ್ರತ್ಯಕ್ಷಮಾಡುವನಾತ ತನ್ನ ಮಹಿಮೆಯನು II

ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I
ನೆರವೇರಿಸದೆ ಬಿಡನು ಅವರ ಕೋರಿಕೆಯನು II
ಮುಂದಣ ಸಂತತಿಗಿದು ಶಾಸನವಾಗಿರಲಿ I
ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ II

ಭೂಲೋಕವನು ವೀಕ್ಷಿಸಿದನು ಪ್ರಭು ಪರಲೋಕದಿಂದ I
ದೃಷ್ಟಿಸಿದನು ತನ್ನ ಉನ್ನತ ಪವಿತ್ರಸ್ಥಾನದಿಂದ II
ಆಲಿಸಿದಾತನು ಬಂಧಿತರ ಗೋಳಾಟವನು I
ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು II

ಶುಭಸಂದೇಶ: ಯೊವಾನ್ನ 8:21-30

ಯೇಸುಸ್ವಾಮಿ ಯೆಹೂದ್ಯರಿಗೆ, “ನಾನು ಹೊರಟುಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು. ಅದಕ್ಕೆ ಯೆಹೂದ್ಯರು, ‘ತಾನು ಹೋಗುವಲ್ಲಿಗೆ ನಮ್ಮಿಂದ ಬರಲಾಗದಂತೆ! ಹಾಗೆಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬುದು ಇವನ ಇಂಗಿತವೆ?’ ಎಂದು ಮಾತನಾಡಿಕೊಂಡರು. “ನೀವು ನರಲೋಕದವರು, ನಾನು ಪರಲೋಕದವನು. ನಿಮ್ಮಂತೆ ನಾನು ಇಹಲೋಕದವನಲ್ಲ, ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆ ಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು. ಅವರು, “ನೀನು ಯಾರು?” ಎಂದು ಪ್ರಶ್ನಿಸಿದರು. ಯೇಸು, “ನಾನು ಯಾರೆಂದು ನಿಮಗೆ ಮೊದಲಿನಿಂದಲೂ ತಿಳಿಸುತ್ತಾ ಬಂದಿದ್ದೇನೆ. ನಿಮ್ಮನ್ನು ಕುರಿತು ನಾನು ಎಷ್ಟೋ ಹೇಳಿಯೇನು; ಎಷ್ಟೋ ಖಂಡಿಸಿಯೇನು. ಆದರೆ ನನ್ನನ್ನು ಕಳುಹಿಸಿದಾತನು ಹೇಳಿದ್ದನ್ನೇ ಲೋಕಕ್ಕೆ ಸಾರುತ್ತೇನೆ. ಆತನು ಸತ್ಯಸ್ವರೂಪಿ,” ಎಂದು ಹೇಳಿದರು. ಯೇಸುಸ್ವಾಮಿ ತಮ್ಮ ಪಿತನನ್ನು ಕುರಿತು ಹೀಗೆನ್ನುತ್ತಿದ್ದಾರೆಂದು ಅವರು ಅರಿತುಕೊಳ್ಳಲಿಲ್ಲ. ಎಂದೇ ಯೇಸು ಮತ್ತೆ ಇಂತೆಂದರು: “ನರ ಪುತ್ರನನ್ನು ನೀವು ಮೇಲಕ್ಕೇರಿಸಿದಾಗ, ‘ಇರುವಾತನೇ ನಾನು’ ಎಂದು ನಿಮಗೆ ತಿಳಿಯುವುದು. ನಾನಾಗಿಯೇ ಏನನ್ನೂ ಮಾಡುವುದಿಲ್ಲವೆಂದೂ ಪಿತನು ನನಗೆ ಬೋಧಿಸಿದಂತೆ ನಾನು ಮಾತನಾಡುತ್ತೇನೆಂದೂ ನಿಮಗೆ ಆಗ ಅರಿವಾಗುವುದು. ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಂಗಿಯಾಗಿ ಬಿಟ್ಟಿಲ್ಲ.” ಯೇಸುಸ್ವಾಮಿ ಹೀಗೆ ಹೇಳಿದ್ದನ್ನು ಕೇಳಿ ಹಲವರಿಗೆ ಅವರಲ್ಲಿ ನಂಬಿಕೆ ಹುಟ್ಟಿತು.

ಮನಸ್ಸಿಗೊಂದಿಷ್ಟು : ಯೇಸು ಸ್ವಾಮಿ ಬಹಳ ಬೇಸರವಾಗಿ ಮಾತನಾಡುವುದನ್ನು ಕಾಣಬಹುದು. ಅಂತರಂಗದ ನಮ್ಮೆಲ್ಲ ಹುಳುಕುಗಳು ನಮಗೆ ತಿಳಿದಿದೆ , ಅದು ಯೇಸುವಿಗೂ ತಿಳಿದಿದೆ. ಅವೆಲ್ಲವನ್ನೂ ತಿಳಿಗೊಳಿಸಲು ನಮ್ಮ ಆಧ್ಯಾತ್ಮಿಕ ವೈದ್ಯನಾಗಿ, ರಕ್ಷಕನಾಗಿ ಬರುವ ಯೇಸುವನ್ನು ನಾವು ತಿರಸ್ಕರಿಸುತ್ತಾ ನಡೆದರೆ, ನಮ್ಮ ಬಗ್ಗೆಯೂ ಯೇಸು ಸ್ವಾಮಿ ಬೇಸರಗೊಳ್ಳಬಹುದು ಎಂಬ ಮುನ್ನೆಚ್ಚರಿಕೆ ನಮ್ಮದಾಗಲಿ.

ಪ್ರಶ್ನೆ : ಹಂಬಲಗಳ ನಮ್ಮ ಬಾಳಲ್ಲಿ ಯೇಸುವಿನ ಹಂಬಲಿಕೆ ಎಷ್ಟು?

No comments:

Post a Comment