ಮೊದಲನೇ ವಾಚನ: ಪ್ರೇಷಿತರ ಕಾರ್ಯಕಲಾಪಗಳು 4: 32-35
ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು. ಪ್ರೇಷಿತರು ಪ್ರಭು ಯೇಸುವಿನ ಪುನರುತ್ಥಾನಕ್ಕೆ ಬಹು ಸಾಮಥ್ರ್ಯದಿಂದ ಸಾಕ್ಷಿಕೊಡುತ್ತಿದ್ದರು. ಜನರು ಅವರೆಲ್ಲರನ್ನು ಗೌರವದಿಂದ ಕಾಣುತ್ತಿದ್ದರು. ಅವರಲ್ಲಿ ಕೊರೆತೆಯಿದ್ದವರು ಒಬ್ಬರೂ ಇರಲಿಲ್ಲ. ಕಾರಣ - ಹೊಲಗದ್ದೆ, ಮನೆಮಾರು ಇದ್ದವರೆಲ್ಲರೂ ಅವುಗಳನ್ನು ವಿಕ್ರಯಿಸಿ, ಬಂದ ಹಣವನ್ನು ತಂದು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸುತ್ತಿದ್ದರು. ಇವರು ಅದನ್ನು ಪ್ರತಿ ಒಬ್ಬರಿಗೂ ಅವರವರ ಅವಶ್ಯಕತೆಗೆ ತಕ್ಕಂತೆ ಹಂಚುತ್ತಿದ್ದರು.
ಕೀರ್ತನೆ: 118:2-4, 13-15, 22-24
ಶ್ಲೋಕ: ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ, ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ
ಸಾರಲಿ ಇಸ್ರಯೇಲಿನ ಜನತೆ I
‘ಆತನ ಪ್ರೀತಿ ಶಾಶ್ವತ’ ಎಂದೆ II
ಸಾರಲಿ ಆರೋನನ ವಂಶಲತೆ: I
‘ಆತನ ಪ್ರೀತಿ ಶಾಶ್ವತ’ ಎಂದೆ II
ಸಾರಲಿ ಆತನ ಭಕ್ತರ ಪಂಥ I
ಆತನ ಪ್ರೀತಿ ಶಾಶ್ವತ ಅಂಥ II
ನನ್ನನು ತಳ್ಳಿ ಬೀಳಿಸ ನೋಡಿದರು ನೆಲಕೆ I
ಆದರೆ ಪ್ರಭು ನೆರವು ನೀಡಿದನು ಎನಗೆ II
ಪ್ರಭುವೇ ನನಗೆ ಬಲವು, ಧೈರ್ಯವು I
ಆತನಿಂದಲೇ ನನಗೆ ಉದ್ಧಾರವು II
ಜಯಘೋಷ, ಹರ್ಷಸುನಾದ ಸಜ್ಜನರ ಬಿಡಾರದಿಂದ I
“ಪರಾಕ್ರಮ, ಪ್ರದರ್ಶನ ಪ್ರಭುವಿನ ಬಲಗೈಯಿಂದ II
ಮನೆಕಟ್ಟುವವರು ಮೂಲೆಗೆಸೆದ ಕಲ್ಲು I
ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು II
ಪ್ರಭುವಿನಿಂದಲೆ ಆದ ಈ ಕಾರ್ಯ I
ನಮ್ಮ ಕಣ್ಣಿಗೆ ಅದೆಂತಹ ಆಶ್ಚರ್ಯ! II
ಪ್ರಭುವೇ ನಿಯೋಜಿಸಿದ ದಿನವಿದು I
ಹರ್ಷಿಸಿ ಆನಂದಿಸೋಣ ಇಂದು II
ಎರಡನೇ ವಾಚನ: 1 ಯೊವಾನ್ನ 5: 1-6
ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ. ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಪಾಲಿಸುವುದರಿಂದ ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದು ನಿಶ್ಚಯ ಆಗುತ್ತದೆ. ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ. ದೇವರಿಂದ ಜನಿಸಿದ ಪ್ರತಿ ಒಬ್ಬನೂ ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದು ನಮ್ಮ ವಿಶ್ವಾಸವೇ. ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ? ಕ್ರಿಸ್ತಯೇಸುವೇ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಜಲದಿಂದ ಮಾತ್ರವಲ್ಲ, ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು.
ಶುಭಸಂದೇಶ: ಯೊವಾನ್ನ 20:19-31
ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು. “ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು. ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು. ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ. ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು; ಯಾರ ಪಾಪಗಳನ್ನು ನೀವು ಕ್ಷಮಿಸದೆ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು,” ಎಂದು ನುಡಿದರು. ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸುಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ. ಉಳಿದ ಶಿಷ್ಯರು “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು, ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು. ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು. ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು; ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು. ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು. ಯೇಸು ಅವನಿಗೆ “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು. ಯೇಸು ತಮ್ಮ ಶಿಷ್ಯರ ಕಣ್ಮುಂದೆ ಮಾಡಿದ ಸೂಚಕಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನು ಈ ಪುಸ್ತಕದಲ್ಲಿ ಬರೆದಿಲ್ಲ. ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ: ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.
No comments:
Post a Comment