ಮೊದಲನೆಯ ವಾಚನ: ಯಾಜಕಕಾಂಡ 23:1, 4-11, 15-16, 27, 34-38
ಇಸ್ರಯೇಲರಿಗೆ ಈ ಪ್ರಕಾರ ಆಜ್ಞಾಪಿಸಬೇಕೆಂದು ಸರ್ವೇಶ್ವರಸ್ವಾಮಿ ಮೋಶೆಗೆ ಹೇಳಿದರು. " ಸರ್ವೇಶ್ವರನಿಂದ ನೇಮಕವಾದ ಹಬ್ಬದ ದಿನಗಳನ್ನು ನಿಯಮಿತ ಕಾಲದಲ್ಲಿ ಪ್ರಕಟಿಸಬೇಕು : ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ವೇಳೆಯಲ್ಲಿ ಸರ್ವೇಶ್ವರ ನೇಮಿಸಿದ ಪಾಸ್ಕಹಬ್ಬವಾಗಬೇಕು. ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಅಂದು ಮೊದಲ್ಗೊಂಡು ಏಳು ದಿನಗಳಲ್ಲೂ ನೀವು ಸರ್ವೇಶ್ವರನಿಗೆ ದಹನಬಲಿಗಳನ್ನು ಸಮರ್ಪಿಸಬೇಕು. ಏಳನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು. ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನಿಗೆ ದಹನಬಲಿಗಳನ್ನು ಸಮರ್ಪಿಸಬೇಕು. ಏಳನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಅಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು." ಮೋಶೆಯ ಮುಖಾಂತರ ಇಸ್ರಯೇಲರಿಗೆ ಸರ್ವೇಶ್ವರ ಹೀಗೆ ಆಜ್ಞಾಪಿಸಿದರು : " ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿ ತಂದೊಪ್ಪಿಸಬೇಕು. ನೀವು ಅಂಗೀಕೃತರಾಗುವಂತೆ ಯಾಜಕನು ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿ ಎತ್ತಬೇಕು. ಸಬ್ಬತ್ ದಿನದ ಮಾರನೆಯ ದಿನ ಮೊದಲ್ಗೊಂಡು, ಅಂದರೆ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ಆರತಿ ಎತ್ತಿದ ದಿನ ಮೊದಲ್ಗೊಂಡು, ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ, ಐವತ್ತು ದಿನಗಳನ್ನು ಎಣಿಸಬೇಕು. ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಸರ್ವೇಶ್ವರನಿಗೆ ಹೊಸ ಬೆಳೆಯ ನೈವೇದ್ಯವನ್ನು ಸಮರ್ಪಿಸಬೇಕು. ಪೂರ್ಣವಾಗಿ ಉಪವಾಸ ಮಾಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನಮಾಡಬೇಕು. ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲ್ಗೊಂಡು ಏಳು ದಿನಗಳವರೆಗೆ ಪರ್ಣಕುಟೀರಗಳ ಜಾತ್ರೆಯನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಮೊದಲನೆಯ ದಿನ ದೇವಾರಧನೆಗಾಗಿ ಸಭೆ ಸೇರಬೇಕು, ಯಾವ ದುಡಿಮೆಯನ್ನೂ ಕೈಗೊಳ್ಳಬಾರದು. ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಿಬೇಕು. ಎಂಟನೆಯ ದಿನದಂದು ದೇವಾರಧನೆಗಾಗಿ ಸಭೆಸೇರಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಅಂದು ಎಲ್ಲ ದುಡಿಮೆಯನ್ನು ನಿಲ್ಲಿಸಬೇಕು. ಸರ್ವೇಶ್ವರ ನೇಮಿಸಿರುವ ಸಬ್ಬತ್ ದಿನಗಳನ್ನು ಮತ್ತು ಮೇಲೆ ಹೇಳಿದ ಸ್ವಾಮಿಯ ಹಬ್ಬದ ದಿನಗಳನ್ನು ನೀವು ಆಚರಿಸಬೇಕು. ಆ ದಿನಗಳಲ್ಲಿ ನೀವು ದೇವಾರಾಧನೆಗಾಗಿ ಸಭೆಸೇರುವಂತೆ ಜನರಿಗೆ ಪ್ರಕಟಿಸಬೇಕು. ಸರ್ವೇಶ್ವರನಿಗೆ ಒಪ್ಪಿಸಬೇಕಾದ ಕಪ್ಪಕಾಣಿಕೆಗಳನ್ನೂ ಹರಕೆಗಳನ್ನೂ ಸಲ್ಲಿಸಬೇಕಲ್ಲದೆ ಮೇಲೆ ಸೂಚಿಸಿರುವ ಹಬ್ಬಗಳಲ್ಲಿ ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ದಹನಬಲಿ, ನೈವೇದ್ಯದ್ರವ್ಯ, ಶಾಂತಿಸಮಾಧಾನ ಬಲಿ, ಪಾನದ್ರವ್ಯ ಇವುಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಹೋಮಮಾಡಬೇಕು."
ಕೀರ್ತನೆ 81:2-3, 4-5, 9-10
ಶ್ಲೋಕ: ಹಾಡಿರಿ ಶುಭಗೀತೆಯನು ಬಲಪ್ರಧನಾದ ದೇವನಿಗೆ.
ಆರಂಭಿಸಿ ಸಂಗೀತವನು ಬಾರಿಸಿ ಮೃದಂಗವನು,
ನುಡಿಸಿರಿ ಮಧುರ ವೀಣೆಯನು ಸ್ವರಮಂಡಲವನು,,
ಊದಿರಿ ಕೊಂಬನು ಅಮವಾಸ್ಯೆಯಲಿ,
ಉತ್ಸವ ದಿನವಾದ ಪೂರ್ಣಿಮೆಯಲಿ,,
ದೇವರಿತ್ತ ನಿಯಮವದು ಯಕೋಬ್ಯರಿಗೆ,
ಕೊಟ್ಟ ಕಟ್ಟಳೆಯದು ಇಸ್ರಯೇಲರಿಗೆ,,
ಈಜಿಪ್ಟಿರಿಗೆದುರಾಗಿ ತೆರಳಿದಂದು,
ಜೋಸೆಫ್ಯರಿಗಾತ ವಿಧಿಸಿದಾಜ್ಞೆಯನು,,
ಇರಬಾರದು ಅನ್ಯದೇವತೆಗಳು ನಿಮ್ಮಲ್ಲಿ,
ಪರದೇವತೆಗಳ ಪೂಜೆ ಕೂಡದು ನಿಮ್ಮಲ್ಲಿ,
ತೆರೆಯಿರಿ ನಿಮ್ಮ ಬಾಯನು,
ತುಂಬಿಸಿ ತೃಪ್ತಿಪಡಿಸುವೆ ನಾನದನು,,
ಶುಭಸಂದೇಶ ವಾಚನ: ಮತ್ತಾಯ 13:54-58
ಆ ಕಾಲದಲ್ಲಿ ಯೇಸು ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋದನೆ ಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, " ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು ? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ ? ಇವನು ಆ ಬಡಗಿಯ ಮಗನಲ್ಲವೇ ? ಮರಿಯಳು ಇವನ ತಾಯಲ್ಲವೇ ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೇ ? ಹಾಗಾದರೆ ಇವನಿಗೆ ಇದೆಲ್ಲಾ ಎಲ್ಲಿಂದ ಬಂತು ? " ಎಂದು ಮಾತಾಡಿಕೊಂಡು ಯೇಸುವನ್ನು ತಿರಸ್ಕರಿಸಿದರು. ಅವರಿಗೆ ಯೇಸು, " ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು, ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು, " ಎಂದು ಹೇಳಿದರು. ಅವರ ಅವಿಶ್ವಾಸದ ಕಾರಣ ಯೇಸು ಅದ್ಬುತಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.
No comments:
Post a Comment