ನಿತ್ಯ ಜೀವದ ದೈವ ವಾಕ್ಯವು ನನ್ನಯ ಬಾಳಿಗೆ ದಾರಿ ದೀಪವು

 August 2022

01 02 03 04 05 06 07 08 09 10 11 12 13 14 15 16 17 18 19 20 21 22 23 24 25 26 27 28 29 30 31 

02.11.21 - "ಹೀಗೆ ಈ ದುರ್ಜನರು ನಿತ್ಯ ಶಿಕ್ಷೆಗೂ, ಆ ಸಜ್ಜನರು ನಿತ್ಯ ಜೀವಕ್ಕೂ ಹೋಗುವರು"

 ಮೊದಲನೇ ವಾಚನ: ಜ್ಞಾನಗ್ರಂಥ 3:1-9 

ಸಜ್ಜನರ ಆತ್ಮಗಳಿರುವುವು ದೇವರ ಕೈಯೊಳು ಅವರನ್ನು ಮುಟ್ಟದು ಮಹಾಯಾತನೆ ಯಾವುದೂ. ಮಂದಮತಿಯ ಕಣ್ಣಿಗೆ ಸತ್ತವರಂತೆ ಅವರು ಕಾಣಿಸಿಕೊಂಡರು ಅವರು ಗತಿಸಿಹೋದುದು ಅವನಿಂದ ತೊಲಗಿದ ಕೇಡಂತಿತ್ತು. ಸಜ್ಜನರಿಗಾದ ಸಾವು ಮಹಾ ವಿಪತ್ತು ಎಂದವನಿಗೆ ತೋರಿತು. ಅವರಾದರೋ ಶಾಂತಿ ಸಮಾಧಾನದಿಂದ ನೆಮ್ಮದಿಯಾಗಿರುವರು. ಮಾನವನ ದೃಷ್ಟಿಯಲ್ಲಿ ಅವರು ಕಂಡು ಬಂದರು ಶಿಕ್ಷಿಸಲ್ಪಟ್ಟವರಂತೆ ಅವರಲ್ಲಾದರೋ ತುಂಬಿತ್ತು ಅಮರತ್ವದ ನಂಬಿಕೆ ನಿರೀಕ್ಷೆ, ಅವರು ಅನುಭವಿಸಿದ ಶಿಕ್ಷೆ ಅಲ್ಪ, ಹೊಂದುವ ಸೌಭಾಗ್ಯ ಅಪಾರ. ಶೋಧಿಸಿದ ತರುವಾಯ ದೇವರಿಗೆ ಅವರು ಕಂಡು ಬಂದರು ಯೋಗ್ಯಾರ್ಹ. ಶೋಧಿಸಿದರವರನು ಪುಟಕ್ಕಿಟ್ಟ ಚಿನ್ನದಂತೆ, ಅಂಗೀಕೃತರಾದರು ಪೂರ್ಣ ದಹನ ಬಲಿಯಂತೆ. ಪ್ರಕಾಶಿಸುವರು ದೇವರನು ಸಂದರ್ಶಿಸುವ ಕಾಲದಲ್ಲಿ ಹೊಳೆಯುವರು ಒಣ ಹುಲ್ಲಿನೊಳಗಿನ ಕಿಡಿಗಳೋಪಾದಿ. ನ್ಯಾಯ ತೀರಿಸುರವರು ಜನಾಂಗಗಳಿಗೆ ದೊರೆತನ ಮಾಡುವರವರು ಜನಗಳ ಮೇಲೆ ದೇವರ ಪ್ರಜೆಗಳಾಗಿರುವರು ಸದಾಕಾಲಕ್ಕೆ. ಸತ್ಯವನ್ನು ಅರಿವರು ದೇವರಲ್ಲಿ ಭರವಸಯಿಡುವವರು ಅವರೊಂದಿಗೆ ಪ್ರೀತಿಯಿಂದ ಬಾಳುವರು ನಂಬಿಗಸ್ತರು. ದೇವರಿಂದ ಆಯ್ಕೆಯಾದವರಿಗಿರುವುದು ಕೃಪಾನುಗ್ರಹವು ದೇವರೇ ಕಾಪಾಡುವರು ಸಜ್ಜನರನು .

ಕೀರ್ತನೆ: 23:1-3, 3-4, 5, 6 
ಶ್ಲೋಕ:, ಪ್ರಭು ಕುರಿಗಾಹಿಯಾಗಿರಲು ನನಗೆ ಕುಂದುಕೊರತೆಗಳೆಲ್ಲಿಯವು ಎನಗೆ? 

ಎರಡನೇ ವಾಚನ: ರೋಮನರಿಗೆ 6:3-9 

ಸಹೋದರರೇ, ಕ್ರಿಸ್ತ ಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೇ? ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ದೇವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತ ಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವೂ ಸಹ ಹೊಸ ಜೀವವನ್ನು ಹೊಂದಿ ಬಾಳುತ್ತೇವೆ. ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ಥಾನವಾದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ಥಾನ ಹೊಂದುತ್ತೇವೆ. ನಮಗೆ ತಿಳಿದಿರುವಂತೆ ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ. ಹೀಗೆ ಸತ್ತವನು ಪಾಪ ಬಂಧದಿಂದ ಬಿಡುಗಡೆ ಹೊಂದಿದವನು. ಕ್ರಿಸ್ತ ಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ  ವಿಶ್ವಾಸ. ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು  ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ. 

ಶುಭಸಂದೇಶ: ಮತ್ತಾಯ 25:31-46  

"ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು. ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು. ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು. ಆಗ ಆರಸನು ತನ್ನ ಬಲಗಡೆಯಿರುವ ಜನರಿಗೆ, "ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ, ಲೋಕಾದಿಯಿಂದ ನಿಮಗಾಗಿ ಸಿದ್ಧ ಮಾಡಿದ ಸಾಮ್ರಾಜ್ಯವನ್ನು ಸ್ವಾಸ್ಥ್ಯವಾಗಿ ಪಡೆಯಿರಿ. ಏಕೆಂದರೆ, ನಾನು ಹಸಿದಿದ್ದೆ, ನನಗೆ ಆಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ. ಬಟ್ಟೆಬರೆ ಇಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆ ಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ," ಎಂದು ಹೇಳುವನು. ಅದಕ್ಕೆ ಆ ಸಜ್ಜನರು "ಸ್ವಾಮಿಾ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು? ಯಾವಾಗ ತಾವು ಅಪರಿಚಿತರಾಗಿದ್ದನ್ನು ಕಂಡು ನಾವು ಆಶ್ರಯ ಕೊಟ್ಟೆವು? ಬಟ್ಟೆಬರೆಯಿಲ್ಲದ್ದನ್ನು ಕಂಡು ಉಡಲು ಕೊಟ್ಟೆವು? ತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು ಕಂಡು ನಾವು ಸಂಧಿಸಲು ಬಂದೆವು?" ಎಂದು ಕೇಳುವರು. ಆಗ ಅರಸನು ಪ್ರತ್ಯುತ್ತರವಾಗಿ, "ಈ ನನ್ನ ಸಹೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ," ಎನ್ನುವನು. "ಆನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, "ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ. ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರ ಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ," ಎಂದು ಹೇಳುವನು. ಅದಕ್ಕೆ ಅವರು ಕೂಡ, "ಸ್ವಾಮಿಾ, ತಾವು ಯಾವಾಗ ಹಸಿದಿದ್ದೀರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಬಂಧಿಯಾಗಿದ್ದಿರಿ, ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆ ಹೋದೆವು? ಎಂದು ಪ್ರಶ್ನಿಸುವರು. ಅದಕ್ಕೆ ಪ್ರತ್ಯುತ್ತರವಾಗಿ ಅರಸನು, "ಇವರಲ್ಲ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆ ಹೋದಾಗ ಅದನ್ನು ನನಗೇ ಮಾಡಲಿಲ್ಲ," ಎನ್ನುವನು. "ಹೀಗೆ ಈ ದುರ್ಜನರು ನಿತ್ಯ ಶಿಕ್ಷೆಗೂ, ಆ ಸಜ್ಜನರು ನಿತ್ಯ ಜೀವಕ್ಕೂ ಹೋಗುವರು," ಎಂದು ಹೇಳಿದರು ಸ್ವಾಮಿ.

01.11.21

 ಮೊದಲನೇ ವಾಚನ: ಪ್ರಕಟಣಾ ಗ್ರಂಥ 7:2-4, 9-14

ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ: “ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಮಂದಿ. ಅವರ ಬಿಡಿ ಸಂಖ್ಯೆ ಹೀಗಿತ್ತು : ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು. ಅವರು ಗಟ್ಟಿಯಾದ ಧ್ವನಿಯಿಂದ: “ಸಿಂಹಾಸನಾರೂಢರಾದ ದೇವರಿಂದ, ಬಲಿಯರ್ಪಿತರಾದ ಯಜ್ಞದ ಕುರಿಮರಿಯಿಂದ ಲಭಿಸುತ್ತದೆಮಗೆ ಜೀವೋದ್ಧಾರ,” ಎಂದು ಹಾಡಿದರು. ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರಮಾಡಿ, “ಆಮೆನ್‍, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ, ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು. ಸಭಾಪ್ರಮುಖರಲ್ಲಿ ಒಬ್ಬನು, “ಶ್ವೇತಾಂಬರರಾದ ಇವರೆಲ್ಲರೂ ಯಾರು? ಎಲ್ಲಿಂದ ಬಂದರು?” ಎಂದು ನನ್ನ‍ನ್ನು ಪ್ರಶ್ನಿಸಿದನು. ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.

ಎರಡನೇ ವಾಚನ: 1 ಯೊಹಾನ್ನ 3:1-3


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ. ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ. ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.

ಕೀರ್ತನೆ: 24:1-2, 3-4, 5-6
ಶ್ಲೋಕ: ಇಂಥವರೇ ದೇವರ ದರ್ಶನಾಭ್ಯರ್ಥಿಗಳು 

ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ|
ಜಗವು ಅದರ ಜೀವಜಂತುಗಳೆಲ್ಲವೂ ಆತನದೇ||
ಕಡಲನು ತಳಪಾಯವನಾಗಿಸಿದವನು ಆತನೇ|
ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೇ||

ಪಭುವಿನ ಶಿಖರವನು ಏರಬಲ್ಲವನಾರು|
ಆ ನಿವಾಸದಲಿ ನಿಲ್ಲಲು ಯೋಗ್ಯನಾರು||
ಅಂಥವನಿರಬೇಕು ಶುದ್ದ ಹಸ್ತನು, ಸುಮನಸ್ಕನು|
ಅನಾಚಾರಕೆ, ಅಪ್ರಮಾಣಿಕತೆಗೆ ಒಲಿಯನವನು||

ಲಭಿಸುವುದಾತನಿಗೆ ಶುಭ ಪ್ರಭುವಿನಿಂದ|
ನೀತಿಯ ಸತ್ಪಲ ರಕ್ಷಕ ದೇವನಿಂದ||
ಇಂಥವರೇ ದೇವರ ದರ್ಶನಾಭ್ಯರ್ಥಿಗಳು|
ಇಂಥವರೇ ಯಕೋಬ ದೇವನ ಭಕ್ತಾದಿಗಳು||

ಶುಭಸಂದೇಶ: ಮತ್ತಾಯ 5:1-12



ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು. ಆಗ ಯೇಸು ಇಂತೆಂದು ಪ್ರಬೋಧಿಸಿದರು. “ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು. ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು. ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು. ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು. ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.  ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು. ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು. ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.” “ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು. ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು". 

31.10.21 - "ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು"

ಮೊದಲನೆಯ ವಾಚನ: ಧರ್ಮೋಪದೇಶಕಾಂಡ 6:2-6

ಮೋಶೆಯು ಜನರಿಗೆ ಇಂತೆಂದನು: ನೀವು ಹಾಗು ನಿಮ್ಮ ಪುತ್ರಪೌತ್ರೌದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು, ನಾನು ಈಗ ಬೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು, ಆಗ ನೀವು ದಿರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ. ಆದುದರಿಂದ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂ ಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ ಅಭಿವೃದ್ಧಿಯಾಗುವಂತೆ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ. ಇಸ್ರಯೇಲ್ ಜನಾಂಗವೇ ಕೇಳು: ನಿನ್ನ ದೇವರಾದ ಸರ್ವೇಶ್ವರಸ್ವಾಮಿ ಒಬ್ಬರೇ ದೇವರು. ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು. ಈ ದಿನ ನಾನು ನಿನಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿ ನಾಟಿರಲಿ.

ಕೀರ್ತನೆ 138:1-3, 6, 8
ಶ್ಲೋಕ: ಪ್ರಭೂ, ಶಾಶ್ವತವಾಗಿಸು ನಿನ್ನ ಅಚಲ ಪ್ರೀತಿಯನು.


ಹೃದಯಪೂರ್ವಕ ವಂದನೆ ಪ್ರಭೂ ನಿನಗೆ|
ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ|
ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ||

ನಿನ್ನ ಪ್ರೀತಿ ಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ|
ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು|
ಅಧಿಕಮಾಡಿದೆ ನೀನು ನನಾತ್ಮಶಕ್ತಿಯನು||

ಉನ್ನತವಾದರೂ ಗಮನಿಸುವನು ಪ್ರಭು ದೀನರನು|
ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು||
ಶಾಶ್ವತವಾಗಿಸು ನಿನ್ನ ಅಚಲ ಪ್ರೀತಿಯನು|
ಮರೆತುಬಿಡಬೇಡ ನಿನ್ನಯ ಕೈಕೃತಿಯನು||

ಎರಡನೆಯ ವಾಚನ: ಹಿಬ್ರಿಯರಿಗೆ 7:23-28


ಲೇವಿಯರ ಯಾಜಕಸೇವೆಯನ್ನು ಮರಣವು ಮೊಟಕುಗೊಳಿಸುತ್ತಿದ್ದುದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು. ಯೇಸುವಾದರೋ ಚಿರಂಜೀವಿಯಾದುದರಿಂದ ಅವರ ಯಾಜಕತ್ವವು ಶಾಶ್ವತವಾಗಿ ಉಳಿಯುವಂಥಾದ್ದು. ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು. ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ದರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು. ಇವರು ಮಿಕ್ಕ ಪ್ರಧಾನ ಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶ್ವಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು. ಧರ್ಮಶಾಸ್ತ್ರ ನೇಮಿಸಿರುವ ಪ್ರಧಾನ ಯಾಜಕರು ಕುಂದುಕೊರತೆಯುಳ್ಳ ಮಾನವರು. ಆದರೆ, ಧರ್ಮಶಾಸ್ತ್ರದ ತರುವಾಯ ಬಂದ ಹಾಗೂ ಶಪಥದಿಂದ ಕೂಡಿದ ದೈವವಾಕ್ಯವು ಸದಾ ಸರ್ವಸಂಪೂರ್ಣರಾದ ಪುತ್ರನನ್ನೇ ಪ್ರಧಾನ ಯಾಜಕರನ್ನಾಗಿ ನೇಮಿಸುತ್ತದೆ.

ಶುಭಸಂದೇಶ: ಮಾರ್ಕ 12:28-34


ಆ ಕಾಲದಲ್ಲಿ ಪುನರುತ್ಥಾನದ ಬಗ್ಗೆ ತರ್ಕವನ್ನು ಕೇಳುತ್ತಿದ್ದ ಧರ್ಮಶಾಸ್ತ್ರಿಯೊಬ್ಬನು, ಯೇಸು ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು," ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು? " ಎಂದು ಕೇಳಿದನು. ಯೇಸು ಅವನಿಗೆ, "ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ, ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ. ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದಿಲ್ಲ, " ಎಂದರು. ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, " ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ, ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದವು, " ಎಂದನು. ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, "ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ, " ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ

30.10.21

ಮೊದಲನೆಯ ವಾಚನ: ರೋಮನರಿಗೆ 11:1-2, 11-12, 25-29

ಸಹೋದರರೇ, ದೇವರು ತಮ್ಮ ಜನರಾದ ಇಸ್ರಯೇಲರನ್ನು ತಿರಸ್ಕರಿಸಿದ್ದಾರೆ ಎಂದು ಹೇಳೋಣವೇ? ಎಂದಿಗೂ ಇಲ್ಲ. ನಾನು ಸಹ ಇಸ್ರಯೇಲನು, ಅಬ್ರಹಾಮನ ಸಂತತಿಯವನು, ಬೆನ್ಯಮಿನ್ ಮನೆತನಕ್ಕೆ ಸೇರಿದವನು. ದೇವರು ಮುಂಚಿತವಾಗಿಯೇ ಆರಿಸಿಕೊಂಡಿದ್ದ ತಮ್ಮ ಜನಾಂಗವನ್ನು ತಿರಸ್ಕರಿಸಲಿಲ್ಲ. ಹಾಗಾದರೆ ಇಸ್ರಯೇಲರು ಮೇಲೇಳದಂತೆ ಮುಗ್ಗರಿಸಿ ಬಿದ್ದರು ಎಂದು ಹೇಳೋಣವೆ? ಎಂದಿಗೂ ಇಲ್ಲ. ಅವರ ಅಪರಾಧದ ನಿಮಿತ್ತ ಇತರರಿಗೆ ಉದ್ಧಾರ ಲಭಿಸುವಂತಾಯಿತು. ಹೀಗೆ ಇತರರನ್ನು ನೋಡಿ ಅವರೇ ಅಸೂಯೆ ಪಡುವಂತಾಯಿತು. ಅವರ ಅಪರಾಧ ಜಗತ್ತಿಗೆಲ್ಲ ಸೌಭಾಗ್ಯವನ್ನೂ ಅವರ ಅಪಜಯವು ಇತರರಿಗೆಲ್ಲಾ ಆಶೀರ್ವಾದವನ್ನೂ ತರಲು ಕಾರಣವಾದರೆ, ಅವರ ಸಂಪೂರ್ಣ ಪರಿವರ್ತನೆ ಮತ್ತೆಷ್ಟೋ ಕಲ್ಯಾಣವನ್ನು ಉಂಟುಮಾಡಬೇಕಲ್ಲವೆ? ಪ್ರಿಯ ಸಹೋದರರೇ, ನೀವೇ ಬುದ್ದಿವಂತರೆಂದು ಉಬ್ಬಿ ಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣ ಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ. ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: ಲೋಕೋದ್ಧಾರಕನು ಬರುವನು ಸಿಯೋನಿನಿಂದ, ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ. ನಾನು ಪರಿಹರಿಸುವೆನು ಅವರ ಪಾಪಗಳನ್ನು ಅವರೊಡನೆ ಮಾಡಿಕೋಳ್ಳುವೆನಾಗ ಒಡಂಬಡಿಕೆಯನು." ಶುಭಸಂದೇಶವನ್ನು ತಿರಸ್ಕರಿಸಿದ್ದರಿಂದ ಇಸ್ರಯೇಲರು ದೇವರಿಗೆ ಶತ್ರುಗಳಾದರು. ಹೀಗಾದುದು ನಿಮ್ಮ ಹಿತಕ್ಕೋಸ್ಕರವೇ. ದೇವರಿಂದ ಆಯ್ಕೆಯಾದವರಾದ್ದರಿಂದ, ಪಿತಾಮಹ ಅಬ್ರಹಾಮ್, ಇಸಾಕ್ ಮತ್ತು ಯಕೋಬರ ನಿಮಿತ್ತ ಅವರು ದೇವರಿಗೆ ಮಿತ್ರರಾದರು. ದೇವರು ತಾವೇ ನೀಡುವ ವರಗಳನ್ನಾಗಲಿ, ಕೊಡುವ ಕರೆಯನ್ನಾಗಲಿ ಹಿಂತೆದುಕೋಳ್ಳುವವರಲ್ಲ.

ಕೀರ್ತನೆ 94:12-13, 14-15, 17-18
ಶ್ಲೋಕ: ಕೈಬಿಡನು ಪ್ರಭು ತನ್ನ ಸ್ವಕೀಯರನು.

ಪ್ರಭೂ, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ|
ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ|
ನೆಮ್ಮದಿ ನೀಡುವೆ ಅವನು ಸಂಕಟದಲ್ಲಿರುವಾಗ||

ತಳ್ಳಿಬಿಡಲು ಪ್ರಭು, ತನ್ನ ಜನರನು|
ಕೈಬಿಡುವನು ತನ್ನ ಸ್ವಕೀಯರನು||
ನ್ಯಾಯತೀರ್ಪು ಮರಳಿ ತಿರುಗುವುದು ನೀತಿಯತ್ತ|
ನೇರ ಮನಸ್ಕರೆಲ್ಲ ಮಾಡುವರು ಅದನು ಸಮರ್ಥ||

ನನಗಿಲ್ಲದಿದ್ದರೆ ಪ್ರಭುವಿನ ಮರುಕ|
ಮರೆಯಾಗುತ್ತಿತ್ತೆನಗೆ ಅಧೋಲೋಕ||
ನನ್ನ ಕಾಲು ಜಾರಿಹೋಯಿತು ಎನ್ನುವುದರೊಳಗೆ|
ನಿನ್ನ ಅಚಲ ಪ್ರೀತಿ, ಪ್ರಭು ನೆರವಾಯಿತೆನಗೆ||

ಶುಭಸಂದೇಶ: ಲೂಕ 14:1, 7-11

ಆ ಕಾಲದಲ್ಲಿ ಸಬ್ಬತ್ ದಿನ ಯೇಸು ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು. ಅಲ್ಲಿಗೆ ಬಂದಿದ್ದ ಅತಿಥಿಗಳು ಪಂಕ್ತಿಯಲ್ಲಿ ಉತ್ತಮ ಸ್ಥಾನಗಳನ್ನು ಆರಿಸಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಯೇಸು ಸಾಮತಿ ರೂಪದಲ್ಲಿ ಹೀಗೆಂದರು: " ಮದುವೆಯ ಔತನಕ್ಕೆ ನಿನ್ನನ್ನು ಯಾರಾದರೂ ಆಹ್ವಾನಿಸಿದಾಗ ಪ್ರಧಾನ ಆಸನದಲ್ಲಿ ಹೋಗಿ ಕುಳಿತುಕೊಳ್ಳಬೇಡ. ಏಕೆಂದರೆ, ನಿನಗಿಂತ ಗೌರವಸ್ಥನನ್ನು ಆಹ್ವಾನಿಸಿರಬಹುದು. ನಿಮ್ಮಿಬ್ಬರನ್ನು ಕರೆದಾತ ನಿನ್ನ ಹತ್ತಿರ ಬಂದು, " ಇವನಿಗೆ ನಿನ್ನ ಸ್ಥಳವನ್ನು ಬಿಟ್ಟುಕೊಡು, ' ಎನ್ನಬಹುದು. ಆಗ ನೀನು ನಾಚಿಕೆ ಪಟ್ಟುಕೊಂಡು ಕಡೆಯ ಸ್ಥಾನದಲ್ಲಿ ಹೋಗಿ ಕುಳಿತುಕೊಳ್ಳಬೇಕಾಗಬಹುದು. ಅದಕ್ಕೆ ಬದಲಾಗಿ ನಿನ್ನನ್ನು ಆಹ್ವಾನಿಸಿದಾಗ ಕಡೆಯ ಸ್ಥಾನದಲ್ಲಿ ಹೋಗಿ ಕುಳಿತುಕೋ. ಕರೆದವನು ಬಂದು, ' ಗೆಳೆಯಾ, ಮೇಲೆ ಬಾ ' ಎಂದು ಹೇಳುವನು. ಆಗ ಜೊತೆಗೆ ಕುಳಿತಿರುವ ಅತಿಥಿಗಳೆಲ್ಲರ ಮುಂದೆ ನಿನಗೆ ಗೌರವ ಸಿಗುವುದು. ಅಂತೆಯೇ, ತನ್ನನ್ನು ತಾನೇ ಮೇಲಕ್ಕೆಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು, ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು, " ಎಂದರು.

29.10.21 - "ಸಬ್ಬತ್ ದಿನ ಗುಣಪಡಿಸುವುದು ಸರಿಯೋ ತಪ್ಪೋ? "

ಮೊದಲನೆಯ ವಾಚನ: ರೋಮನರಿಗೆ 9:1-5
ನನ್ನ ಜನರಾದ ಯೆಹೂದ್ಯರ ವಿಷಯವಾಗಿ ನನಗೆ ಅತೀವ ದುಃಖವೂ ನಿರಂತರ ಮನೋವೇದನೆಯೂ ಉಂಟಾಗುತ್ತದೆ. ಇದು ಸುಳ್ಳಲ್ಲ, ಕ್ರಿಸ್ತ ಯೇಸುವಿನಲ್ಲಿ ಸತ್ಯವಾಗಿಯೇ ಹೇಳುತ್ತಿದ್ದೇನೆ. ಪವಿತ್ರಾತ್ಮಧೀನವಾಗಿರುವ ನನ್ನ ಮನಸ್ಸೇ ಇದಕ್ಕೆ ಸಾಕ್ಷಿಯಾಗಿದೆ. ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತ ಯೇಸುವಿನಿಂದ ಬಹಿಷ್ಕ್ರತನಾಗಿ ಶಾಪಗ್ರಸ್ತನಾಗಲು ಸಹ ಸಿದ್ದನಿದ್ದೇನೆ. ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು, ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು, ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು, ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು. ಅಬ್ರಹಾಮ್, ಇಸಾಕ್, ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತ ಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.

ಕೀರ್ತನೆ 147:12-15, 19-20
ಶ್ಲೋಕ: ಹೊಗಳಲಿ ಇವರೆಲ್ಲರೂ ಪ್ರಭುವಿನ ನಾಮವನು.

ಯುವಕರೂ ಯುವತಿಯರೂ ಮುದುಕರೂ ಮಕ್ಕಳೂ|
ಹೊಗಳಲಿ ಇವರೆಲ್ಲರೂ ಪ್ರಭುವಿನ ನಾಮವನು||
ಭೂಮ್ಯಾಕಾಶ ಮೀರಿದ ಆತನ ನಾಮವನು|
ಆತನ ಮಹತ್ತದ ಏಕೈಕ ನಾಮವನು||

ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ|
ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ|
ತನ್ನ ಆಪ್ತಜನರಾದ ಇಸ್ರಯೇಲರಿಗೆ||
ಕಳುಹಿಸುವನು ಧರೆಗೆ ತನ್ನ ಆಣತಿ|
ಸಿದ್ಧಿಯಾಗುವುದದು ಬಲು ಶೀಘ್ರದಿ||

ಕಳಿಸಿಹನು ತನ್ನ ವಾಕ್ಯವನು ಯಕೋಬ್ಯರಿಗೆ|
ತನ್ನ ವಿಧಿನಿಯಮಗಳನು ಇಸ್ರಯೇಲರಿಗೆ||
ಬೇರಾವ ಜನಾಂಗಗಕ್ಕೂ ಆತ ಹೀಗೆ ಮಾಡಿಲ್ಲ|
ಆತನ ವಿಧಿವಿಧಾನಗಳನು ಅವರಿಗೆ ತಿಳಿಸಿಲ್ಲ||

ಶುಭಸಂದೇಶ: ಲೂಕ 14:1-6

ಆ ಕಾಲದಲ್ಲಿ ಸಬ್ಬತ್ ದಿನ. ಯೇಸು ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು. ಅಲ್ಲೇ ಅವರ ಮುಂದೆ ಜಲೋದರ ರೋಗಿಯೊಬ್ಬನು ಇದ್ದನು. "ಸಬ್ಬತ್ ದಿನ ಗುಣಪಡಿಸುವುದು ಸರಿಯೋ ತಪ್ಪೋ? " ಎಂದು ಯೇಸು ಫರಿಸಾಯರನ್ನೂ ಶಾಸ್ತ್ರಜ್ಞರನ್ನೂ ಕೇಳಿದರು. ಅದಕ್ಕವರು ಮೌನವಾಗಿದ್ದರು. ಯೇಸು ರೋಗಿಯ ಕೈ ಹಿಡಿದು ಗುಣಪಡಿಸಿ ಕಳಿಸಿಬಿಟ್ಟರು. ಅನಂತರ, " ನಿಮ್ಮಲ್ಲಿ ಒಬ್ಬನ ಮಗನಾಗಲಿ, ಎತ್ತಾಗಲಿ ಬಾವಿಯಲ್ಲಿ ಬಿದ್ದರೆ, ಸಬ್ಬತ್ ದಿನವಾಗಿದ್ದರೂ ನೀವು ತಡ ಮಾಡದೆ ಮೇಲಕ್ಕೆ ಎತ್ತುವುದಿಲ್ಲವೇ? " ಎಂದು ಕೇಳಿದರು. ಅದಕ್ಕೂ ಅವರು ನಿರುತ್ತರರಾದರು.

28.10.21

 ಮೊದಲನೇ ವಾಚನ: ಎಫೆಸಿಯರಿಗೆ 2:19-22

ಸಹೋದರರೇ, ನೀವು ಇನ್ನು ಮೇಲೆ ಪರಕೀಯರೂ  ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ. ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮಖ್ಯ ಮೂಲೆಗಲ್ಲು. ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ. ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.

ಕೀರ್ತನೆ: 19:2-3, 4-5
ಶ್ಲೋಕ: ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ

ಶುಭಸಂದೇಶ: ಲೂಕ 6:12-19

ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು. ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ "ಪ್ರೇಷಿತರು" ಎಂದು ಹೆಸರಿಟ್ಟರು. ಹೀಗೆ ಅಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೇಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ, ಮತ್ತಾಯ ಮತ್ತು ತೋಮ, ಆಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ, ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ. ಆನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು. ಯೇಸುವಿನ ಬೋಧನೆಯನ್ನು ಕೇಳುವುದಕ್ಕೂ ತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ಅಲ್ಲಿಗೆ ಬಂದು ಸೇರಿದ್ದರು. ದೆವ್ವಪೀಡಿತರು ಕೂಡ ಬಂದು ಸ್ವಸ್ಥರಾಗುತ್ತಿದ್ದರು. ಯೇಸುವಿನಿಂದ ದಿವ್ಯ ಶಕ್ತಿ ಹರಿದು ಎಲ್ಲರನ್ನೂ ಗುಣಪಡಿಸುತ್ತಿತ್ತು. ಆದುದರಿಂದ ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.

27.10.21

 ಮೊದಲನೇ ವಾಚನ: ರೋಮನರಿಗೆ 8:26-30

ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಅತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ. ಅಂತರಂಗಗಳನ್ನು ಈಕ್ಷಿಸುವ ದೇವರು ಪವಿತ್ರಾತ್ಮರ ಇಂಗಿತವೇನೆಂದು ಬಲ್ಲರು. ಏಕೆಂದರೆ, ದೇವರ ಚಿತ್ತದ ಪ್ರಕಾರವೇ ಪವಿತ್ರಾತ್ಮರು ದೇವಜನರಿಗಾಗಿ ಬಿನ್ನವಿಸುತ್ತಾರೆ. ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು. ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ. ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋ ಅವರನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ. ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.

ಕೀರ್ತನೆ: 13:4-5, 6
ಶ್ಲೋಕ: ಪ್ರಭೂ, ನಿನ್ನಚಲ ಪ್ರೀತಿಯಲ್ಲಿದೆ ನನಗೆ ವಿಶ್ವಾಸ

ಶುಭಸಂದೇಶ: ಲೂಕ 13:22-30

ಯೇಸುಸ್ವಾಮಿ ಊರುರೂಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಉಪದೇಶಮಾಡಿಕೊಂಡು ಜೆರುಸಲೇಮಿನತ್ತ ಪ್ರಯಾಣಮಾಡುತ್ತಿದ್ದರು. ಆಗ ಒಬ್ಬನು, "ಸ್ವಾಮಿಾ, ಜೀವೋದ್ಧಾರ ಹೊಂದುವವರು ಕೆಲವರು ಮಾತ್ರವೋ?", ಎಂದು ವಿಚಾರಿಸಿದನು. ಆಗ ಯೇಸು ಜನರಿಗೆ, "ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು. ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ  ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, "ಸ್ವಾಮಿಾ , ನಮಗೆ ಬಾಗಿಲು ತೆರೆಯಿರಿ," ಎಂದು ನೀವು ಕೇಳುವಿರಿ. ಅದಕ್ಕೆ ಅವನು, "ನೀವು ಎಲ್ಲಿಯವರೋ ನಾನು ಅರಿಯೆ" ಎನ್ನುವನು. ಆಗ ನೀವು, "ನಿಮ್ಮೊಂದಿಗೆ ನಾವು ಊಟಮಾಡಿದ್ದೇವೆ; ನೀವು ನಮ್ಮ ಬೀದಿಗಳಲ್ಲಿ ಉಪದೇಶಮಾಡಿದ್ದೀರಿ," ಎಂದು ಹೇಳಲಾರಂಭಿಸುವಿರಿ. ಆದರೆ ಅವನು ಪುನಃ, ನೀವು ಎಲ್ಲಿಯವರೋ ನಾನರಿಯೆ. ಅಕ್ರಮಿಗಳೆ, ಎಲ್ಲರೂ ನನ್ನಿಂದ ತೊಲಗಿರಿ," ಎಂದು ಸ್ವಷ್ಟವಾಗಿ ನುಡಿಯುವನು. ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲುಕಡಿತವೇನು!! 29 ಚತುರ್ದಿಕ್ಕುಗಳಿಂದಲೂ ಜನರು ಬಂದು, ದೇವರ ಸಾಮ್ರಾಜ್ಯದ ಹಬ್ಬದೂಟಗಳಲ್ಲಿ ಭಾಗಿಗಳಾಗುವರು. "ಇಗೋ, ಕಡೆಯವರಲ್ಲಿ ಕೆಲವರು ಮೊದಲಿಗರಾಗುವರು. ಮೊದಲಿಗರಲ್ಲಿ ಕೆಲವರು ಕಡೆಯವರಾಗುವರು," ಎಂದರು.

26.10.21 - "ದೇವರ ಸಾಮ್ರಾಜ್ಯವು ಒಂದು ಸಾಸಿವೆಕಾಳಿನಂತೆ ಇದೆ".

 ಮೊದಲನೇ ವಾಚನ: ರೋಮನರಿಗೆ 8:18-25


ಸಹೋದರರೇ, ಇಂದಿನ ಕಾಲದಲ್ಲಿ ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಮುಂದೆ ನಮಗೆ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಹೋಲಿಸುವುದಕ್ಕೂ ಬಾರದವುಗಳೆಂದು ನಾನು ಎಣಿಸುತ್ತೇನೆ. ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೋ ಎಂದು ಸೃಷ್ಟಿ ಸಮಸ್ತವು ಬಹು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಇದು ಅದರ  ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ ಆಯಿತು. ಆದರು ಸೃಷ್ಟಿಗೆ ನಿರೀಕ್ಷೆಯೊಂದಿದೆ. ಅದೇನೆಂದರೆ, ಸೃಷ್ಟಿಯು ಸಹ ವಿನಾಶವಿಧಿಯಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮಾಯುತ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ, ಎಂಬುದೇ. ಸೃಷ್ಟಿಸಮಸ್ತವು ಇಂದಿನವರೆಗೆ ನರಳುತ್ತಾ ಪ್ರಸವವೇದನೆಪಡುತ್ತಾ ಇದೆ ಎಂಬುದು ನಮಗೆ ತಿಳಿದಿದೆ. ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೆ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ. ನಾವು ಜೀವೋದ್ಧಾರ ಹೊಂದಿದವರೂ ಇನ್ನೂ ನಿರೀಕ್ಷಿಸುವವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆಯೆನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ? ಪ್ರತ್ಯಕ್ಷವಾಗದೆ ಇರುವುದನ್ನು ನಾವು ನಿರೀಕ್ಷಿಸುವವರಾಗಿದ್ದರೆ ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.

ಕೀರ್ತನೆ: 126:1-2, 2-3, 4-5, 6

ಶ್ಲೋಕ: ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ

ಶುಭಸಂದೇಶ: ಲೂಕ 13:18-21


ಆಗ ಯೇಸುಸ್ವಾಮಿ, "ದೇವರ ಸಾಮ್ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ಯಾವುದಕ್ಕೆ ಹೋಲಿಸಲಿ? ಅದು ಒಂದು ಸಾಸಿವೆ ಕಾಳಿನಂತೆ ಇದೆ. ಒಬ್ಬನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಬಿತ್ತಿದನು. ಅದು ಬೆಳೆದು ಮರವಾಯಿತು. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಮಾಡತೊಡಗಿದವು," ಎಂದರು. ಪನಃ ಯೇಸುಸ್ವಾಮಿ, "ದೇವರ ಸಾಮ್ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ? ಅದು ಹುಳಿಹಿಟ್ಟಿನಂತೆ ಇದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು," ಎಂದರು.

25.10.21

ಮೊದಲನೆಯ ವಾಚನ: ರೋಮನರಿಗೆ  8:12-17

ಸಹೋದರರೇ, ನಾವು ಶರೀರಸ್ವಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬಾಳುವ ಹಂಗಿನಲ್ಲೂ ಇಲ್ಲ. ನೀವು ಶರೀರಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ. ಯಾರು ಯಾರು ದೇವರ ಆತ್ಮನಿಗೆ ಮಣಿದು ನಡೆಯುತ್ತಾರೋ ಅವರು ದೇವರ ಮಕ್ಕಳು. ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, " ಅಪ್ಪಾ, ತಂದೆಯೇ " ಎಂದು ಕರೆಯುತ್ತೇವೆ. ನಾವು ದೇವರ ಮಕ್ಕಳೆಂಬುದಕ್ಕೆ ದೇವರ ಆತ್ಮ ನಮ್ಮ ಅಂತರಾತ್ಮದೊಂದಿಗೆ ಸಾಕ್ಷಿ ನುಡಿಯುತ್ತಾರೆ. ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು, ಕ್ರಿಸ್ತ ಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತ ಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.

ಕೀರ್ತನೆ 68:1, 3, 5-6, 19-20
ಶ್ಲೋಕ: ನಮ್ಮ ದೇವರು ಜೀವೋದ್ಧಾರಕ ದೇವರು.

ಎಚ್ಚರಗೊಳ್ಳಲಿ ದೇವನೆಚ್ಚರಗೊಳ್ಳಲಿ|
ಆತನ ವಿರೋಧಿಗಳು ಪಲಾಯನ ಗೈಯಲಿ||
ಸಜ್ಜನರಾದರೋ ಸಂತೋಷಿಸಲಿ|
ದೇವರ ಮುಂದೆ ಆನಂದಿಸಲಿ|
ಅತುಳ ಹರ್ಷಾನಂದಗೊಳ್ಳಲಿ||

ದಿವ್ಯಧಾಮದಲ್ಲಿಹ ಆ ದೇವ|
ತಬ್ಬಲಿಗೆ ತಂದೆ, ವಿಧವೆಗಾಶ್ರಯ||
ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ|
ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ||

ಸ್ತುತಿಯಾಗಲಿ ನಮ್ಮನುದ್ದರಿಸುವಾ ದೇವನಿಗೆ|
ನಮ್ಮನನುದಿನ ಬಿಡದೆ ಸಹಿಸಿಕೊಳ್ಳುವಾ ದೇವನಿಗೆ||
ನಮ್ಮ ದೇವರು ಜೀವೋದ್ಧಾರಕ ದೇವರು ಹೌದು|
ಸಾವಿಂದ ತಪ್ಪಿಸುವ ಶಕ್ತಿ ಸ್ವಾಮಿ ದೇವರದು||

ಶುಭಸಂದೇಶ: ಲೂಕ 13:10-17

ಆ ಕಾಲದಲ್ಲಿ ಒಂದು ಸಬ್ಬತ್ ದಿನ ಯೇಸು ಪ್ರಾರ್ಥನಾಮಂದಿರದಲ್ಲಿ ಬೋಧಿಸುತ್ತಿದ್ದರು. ಹದಿನೆಂಟು ವರ್ಷಗಳಿಂದ ದೆವ್ವಪೀಡಿತಳಾಗಿ ನರಳುತ್ತಿದ್ದ ಒಬ್ಬ ಮಹಿಳೆ ಅಲ್ಲಿದ್ದಳು. ಈಕೆ ಒಬ್ಬ ಗೂನಿ, ನೆಟ್ಟಿಗೆ ನಿಲ್ಲಲು ಸ್ವಲ್ಪವೂ ಆಗುತ್ತಿರಲಿಲ್ಲ. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು, " ನೋಡಮ್ಮಾ, ನೀನು ವ್ಯಾಧಿಯಿಂದ ಬಿಡುಗಡೆಯಾದೆ, " ಎಂದು ಹೇಳಿ, ಆಕೆಯ ಮೇಲೆ ತಮ್ಮ ಹಸ್ತಗಳನ್ನಿಟ್ಟರು. ತಕ್ಷಣವೇ ಆಕೆ ನೆಟ್ಟಗಾದಳು ಮತ್ತು ದೇವರಿಗೆ ಸ್ತುತಿಸ್ತೋತ್ರ ಸಲ್ಲಿಸಿದಳು. ಯೇಸು ಸಬ್ಬತ್ ದಿನದಲ್ಲಿ ಗುಣಮಾಡಿದ್ದನ್ನು ಕಂಡು, ಪ್ರಾರ್ಥನಾಮಂದಿರದ ಅಧಿಕಾರಿ ಕುಪಿತನಾದನು. ಕೂಡಿದ್ದ ಜನರನ್ನು ಉದ್ದೇಶಿಸಿ, " ಕೆಲಸ ಮಾಡಲು ಆರು ದಿನಗಳಿವೆ, ಆ ದಿನಗಳಲ್ಲಿ ಬಂದು ಗುಣಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಕೂಡದು, " ಎಂದನು. ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, " ಕಪಟಿಗಳೇ, ಸಬ್ಬತ್ ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ? ಅಬ್ರಹಾಮನ ವಂಶಜಳಾದ ಈಕೆಯನ್ನು ಸೈತಾನನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು, ಈ ಕಟ್ಟಿನಿಂದ ಈಕೆಯನ್ನು ಸಬ್ಬತ್ ದಿನ ಬಿಡಿಸಬಾರದಿತ್ತೆ? " ಎಂದರು. ಈ ಉತ್ತರವನ್ನು ಕೇಳಿ ಯೇಸುವಿನ ವಿರೋಧಿಗಳೆಲ್ಲರೂ ನಾಚಿದರು. ಜನರ ಕೂಟವಾದರೋ ಅವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಕಂಡು ಸಂತೋಷಪಟ್ಟಿತು.

24.10.21 - "ದಾವೀದ ಕುಲಪುತ್ರರೇ, ನನಗೆ ದಯೆತೋರಿ"

ಮೊದಲನೆಯ ವಾಚನ: ಯೆರೆಮೀಯ 31:7-9

ಸರ್ವೇಶ್ವರ ಹೀಗೆನ್ನುತ್ತಾರೆ: " ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ, ಜನಾಂಗಗಳಾ  ರೋಮಣಿಗೆ ಜೈಕಾರ ಮಾಡಿರಿ. 'ಸರ್ವೇಶ್ವರ ಅಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು ' ಎಂದು ಗೋಷಿಸುತ್ತಾ ಸ್ತುತಿಸಿರಿ. ಇಗೋ ನೋಡು, ಅವರನ್ನು ಬರಮಾಡುವೆನು ಉತ್ತರ ದೇಶದಿಂದ ಅವರನ್ನು ಒಂದುಗೂಡಿಸುವೆನು ದಿಗಂತಗಳಿಂದ. ಅವರೊಡನೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು. ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.

ಕೀರ್ತನೆ 126:16
ಶ್ಲೋಕ: ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ.

ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ|
ಅದೊಂದು ಕನಸು ಕಂಡಂಡಿತ್ತು ನಮಗೆ ಆವಾಗ|
ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ||

ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ|
ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ||
ಪ್ರಭು ನಮಗೆ ಮಹತ್ಕಾರ್ಯಮಾಡಿದುದು ಖಚಿತ|
ಎಂತಲೇ ನಾವಾನಂದಭರಿತರಾಗುವುದು ಉಚಿತ||

ಬತ್ತಿದ ನದಿಯಲಿ ನೀರು ಮರಳಿ ಉಕ್ಕಿ ಹರಿವಂತೆ|
ನೀಡು ಸಿರಿ ಸೌಭಾಗ್ಯ ಹೇ ಪ್ರಭೂ, ನಮಗೆ ಮತ್ತೆ||
ಅಳುತ್ತಳುತ್ತಾ ಬಿತ್ತುವವರು ನಲಿನಲಿಯುತ್ತಾ ಕೊಯ್ಯುವರು|
ದುಃಖಿಸುತ್ತಾ ಬೀಜ ಬಿತ್ತಲು ಹೋದವನು|
ಹರ್ಷಿಸುತ್ತಾ ಕೊಯ್ದುತರುವನು ತೆನೆಗಳನು||

ಎರಡನೆಯ ವಾಚನ: ಹಿಬ್ರಿರಿಯರಿಗೆ  5:1-6

ಪ್ರತಿಯೊಬ್ಬ ಪ್ರಧಾನ ಯಾಜಕ ಜನರ ಮಧ್ಯದಿಂದ ಆರಿಸಲಾದವನು, ಜನರ ಪರವಾಗಿ ದೇವರ ಸನ್ನಿಧಿಯಲ್ಲಿ ಸೇವೆಸಲ್ಲಿಸಲು ಮತ್ತು ಪಾಪಪರಿಹಾರಕ್ಕಾಗಿ ಬಲಿಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಲು ನೇಮಕಗೊಂಡವನು. ತಾನೂ ದುರ್ಬಲ ಮಾನವನಾದ ಕಾರಣ, ಆತನು ಅಜ್ಞಾನಿಗಳನ್ನೂ ದುರ್ಮಾರ್ಗಿಗಳನ್ನೂ ಸಹಾನುಭೂತಿಯಿಂದ ಕಾಣಬಲ್ಲನು. ಜನರಿಗೋಸ್ಕರ ಹೇಗೋ ಹಾಗೆಯೇ ತನ್ನ ದೌರ್ಬಲ್ಯದ ನಿಮಿತ್ತ ತನಗೋಸ್ಕರವೂ ಆತನು ಪಾಪಪರಿಹಾರಕಬಲಿಯನ್ನು ಅರ್ಪಿಸಬೇಕಾಗಿದೆ. ಅಲ್ಲದೆ, ಪ್ರಧಾನ ಯಾಜಕನೆಂಬ ಗೌರವಪದವಿಯನ್ನು ತನ್ನಷ್ಟಕ್ಕೆ ತಾನೇ ಯಾರೂ ವಹಿಸಿಕೊಳ್ಳರು. ಆರೋನನಂತೆ ಅವರೂ ದೇವರಿಂದ ಕರೆಹೊಂದಿದವರಾಗಿರಬೇಕು. ಅದೇ ರೀತಿ ಕ್ರಿಸ್ತ ಯೇಸು, ಪ್ರಧಾನ ಯಾಜಕನೆಂಬ ಉನ್ನತ ಪದವಿಗೆ ತನ್ನನ್ನೇ ಏರಿಸಿಕೊಳ್ಳಲಿಲ್ಲ. "ನೀನೇ ನನ್ನ ಪುತ್ರನು, ನಾನೇ ನಿನ್ನನ್ನು ಪಡೆದಿದ್ದೇನೆ, " ಎಂದ ದೇವರೇ ಅವರನ್ನು ಆ ಪದವಿಗೆ ಏರಿಸಿದರು. ಅವರೇ ಮತ್ತೊಂದು ಕಡೆಯಲ್ಲಿ : " ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕ, " ಎಂದಿದ್ದಾರೆ.

ಶುಭಸಂದೇಶ: ಮಾರ್ಕ 10:46-52

ಆ ಕಾಲದಲ್ಲಿ ಯೇಸು ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು. ಅಲ್ಲಿಂದ ಹೊರಡುವಾಗ ಜನರ ದೊಡ್ಡ ಗುಂಪು ಅವರನ್ನು ಹಿಂಬಾಲಿಸಿತು. ಕುರುಡು ಭಿಕ್ಷುಗಾರನಾದ, ತಿಮಾಯನ ಮಗ ಬಾರ್ತಿಮಾಯನು ದಾರಿಯ ಮಗ್ಗುಲಲ್ಲಿ ಕುಳಿತಿದ್ದನು. ಆ ಮಾರ್ಗವಾಗಿ ಹೋಗುತ್ತಿರುವಾತನು ನಜರೇತಿನ ಯೇಸು ಎಂದು ಕೇಳಿದೊಡನೆಯೇ, ಅವನು, "ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, "ಎಂದು ಗಟ್ಟಿಯಾಗಿ ಕೂಗಿಕೊಂಡನು. ಅನೇಕರು ' ಸುಮ್ಮನಿರು ' ಎಂದು ಅವನನ್ನು ಗದರಿಸಿದರು. ಅವನಾದರೋ, "ದಾವೀದ ಕುಲಪುತ್ರರೇ, ನನಗೆ ದಯೆತೋರಿ, " ಎಂದು ಇನ್ನಷ್ಟು ಗಟ್ಟಿಯಾಗಿ ಕೂಗಿಕೊಂಡನು. ಇದನ್ನು ಕೇಳಿ ಯೇಸು ಅಲ್ಲೇ ನಿಂತು, " ಅವನನ್ನು ಕರೆದುಕೊಂಡು ಬನ್ನಿ, " ಎಂದು ಅಪ್ಪಣೆಮಾಡಿದರು. ಅವರು ಹೋಗಿ, " ಏಳು, ಭಯಪಡಬೇಡ, ಯೇಸು ನಿನ್ನನ್ನು ಕರೆಯುತ್ತಿದ್ದಾರೆ, " ಎಂದು ಹೇಳಿದರು. ಅವನು ತನ್ನ ಮೇಲುಹೊದಿಕೆಯನ್ನು ಅಲ್ಲೇ ಬಿಟ್ಟು ತಟ್ಟನೆ ಎದ್ದು, ಯೇಸುವಿನ ಬಳಿಗೆ ಬಂದನು. ಯೇಸು, " ನನ್ನಿಂದ ನಿನಗೆ ಏನಾಗಬೇಕು? " ಎಂದು ಕೇಳಿದರು. ಅದಕ್ಕೆ ಅವನು, "ಗುರುದೇವಾ! ನನಗೆ ಕಣ್ಣುಕಾಣುವಂತೆ ಮಾಡಿ, " ಎಂದು ಪ್ರಾರ್ಥಿಸಿದನು. ಯೇಸು ಅವನಿಗೆ, " ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥ ಮಾಡಿದೆ, " ಎಂದರು. ಆ ಕ್ಷಣವೇ ಅವನಿಗೆ ದೃಷ್ಟಿ ಬಂದಿತು. ಅವನೂ ಯೇಸುವನ್ನು ಹಿಂಬಾಲಿಸಿ ಹಿಂದೆ ಹೋದನು.

23.10.21

ಮೊದಲನೇ ವಾಚನ: ರೋಮನರಿಗೆ 8:1-11

ಸಹೋದರರೇ, ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ. ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ - ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪ ಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣ ದಂಡನೆಯನ್ನು ವಿಧಿಸಿದರು. ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮ ಅವರ ಚಿತ್ತಾಕ್ಕನುಸಾರವಾಗಿ ನಡೆಯುವ ನಮ್ಮಲ್ಲಿ ಧರ್ಮಶಾಸ್ತ್ರದ ನೀತಿನಿಯಮಗಳು ನೆರವೇರುವಂತೆ ದೇವರು ಹೀಗೆ ಮಾಡಿದರು. ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ಶರೀರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ. ಪವಿತ್ರಾತ್ಮ ಅವರಿಗೆ ಅನುಸಾರವಾಗಿ ನಡೆಯುವವರಾದರೋ ಆತ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ. ಶರೀರ ಸ್ವಭಾವದಲ್ಲೇ ಮಗ್ನರಾಗಿರುವುದರ ಪರಿಣಾಮ ಸಜ್ಜೀವ ಮತ್ತು ಶಾಂತಿಸಮಾಧಾನ. ಶರೀರ ಸ್ವಭಾವದಲ್ಲೇ ಮಗ್ನರಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ. ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ದೇವರನ್ನು  ಮೆಚ್ಚಿಸಲು ಸಾಧ್ಯವೇ ಇಲ್ಲ. ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತ ಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ. ಆದರೆ ಕ್ರಿಸ್ತ ಯೇಸು ನಿಮ್ಮಲ್ಲಿ ವಾಸಿಸಿದರೆ, ಪಾಪದ ನಿಮಿತ್ತ ನಿಮ್ಮ ಶರೀರ ಮರಣಕ್ಕೆ ಗುರಿಯಾಗಿದ್ದರೂ ನೀವು ದೇವರೊಡನೆ ಸತ್ಸಂಬಂಧವನ್ನು ಪಡೆದಿರುವುದರಿಂದ ಪವಿತ್ರಾತ್ಮ ನಿಮಗೆ ಜೀವಾಳವಾಗಿರುತ್ತಾರೆ. ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.

ಕೀರ್ತನೆ: 24:1-2, 3-4, 5-6
ಶ್ಲೋಕ: ಇಂಥವರೇ ದೇವರ  ದರ್ಶನಾಭ್ಯರ್ಥಿಗಳು

ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ|
ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ||
ಕಡಲನು ತಳಪಾಯವನಾಗಿಸಿದವನು ಆತನೇ|
ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೇ||

ಪ್ರಭುವಿನ ಶಿಖರವನು ಏರಬಲ್ಲವನಾರು?|
ಆ ನಿವಾಸದಲಿ ನಿಲ್ಲಲು ಯೋಗ್ಯನಾರು?||
ಅಂಥವನಿರಬೇಕು ಶುದ್ದ ಹಸ್ತನು, ಸುಮನಸ್ಕನು|
ಅನಾಚಾರಕೆ, ಅಪ್ರಮಾಣಿಕತೆಗೆ ಒಲಿಯನವನು||

ಲಭಿಸುವುದಾತನಿಗೆ ಶುಭ ಪ್ರಭುವಿನಿಂದ|
ನೀತಿಯ ಸತ್ಪಲ ರಕ್ಷಕ ದೇವನಿಂದ ||
ಇಂಥವರೇ ದೇವರ ದರ್ಶನಾಭ್ಯರ್ಥಿಗಳು|
ಇಂಥವರೇ ಯಕೋಬ ದೇವನ ಭಕ್ತಾದಿಗಳು||

ಶುಭಸಂದೇಶ: ಲೂಕ 13:1-9

ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು. ಅದಕ್ಕೆ ಯೇಸು, "ಇಂಥಾ ಕೊಲೆಗೆ ಈಡಾದವರು ಇತರ ಎಲ್ಲ ಗಲಿಲೇಯದವರಿಗಿಂತ ಹೆಚ್ಚು ಪಾಪಿಗಳೆಂದು ಭಾವಿಸುತ್ತೀರೋ? ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆ ಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ. ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೇ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸುತ್ತೀರೋ? ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ," ಎಂದರು. ಆನಂತರ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: "ಒಬ್ಬನು ತನ್ನ ದ್ರಾಕ್ಷಿ ತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದ. ಒಮ್ಮೆ ಅವನು ಬಂದು ಅದರಲ್ಲಿ ಹಣ್ಣನ್ನು ಹುಡುಕಲು ಒಂದೂ ಕಾಣಿಸಲಿಲ್ಲ. ತೋಟಗಾರನನ್ನು ಕರೆದು, "ನೋಡು, ಮೂರು ವರ್ಷಗಳಿಂದ ಈ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಇದ್ದೇನೆ. ಒಂದಾದರೂ ಕಂಡುಬರಲಿಲ್ಲ. ಇನ್ನು ಇದನ್ನು ಕಡಿದು ಹಾಕು. ಭೂಮಿಗೆ ಭಾರವಾಗಿ ಅದರ ಸಾರವನ್ನು ಇದೇಕೆ ವ್ಯರ್ಥಮಾಡಬೇಕು?" ಎಂದು ಹೇಳಿದ. ಅದಕ್ಕೆ ತೋಟಗಾರನು, ಸ್ವಾಮಿಾ, ಈ ಒಂದು ವರ್ಷ ಇದು ಹಾಗೆಯೇ ಇರಲಿ ಬಿಡಿ. ಅಷ್ಟರಲ್ಲಿ ಸುತ್ತಲೂ ಪಾತಿತೆಗೆದು ಗೊಬ್ಬರ ಹಾಕುತ್ತೇನೆ. ಮುಂದಿನ ವರ್ಷ ಹಣ್ಣುಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದುಹಾಕೋಣ," ಎಂದನು.

22.10.21 - "ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು"

 ಮೊದಲನೇ ವಾಚನ: ರೋಮನರಿಗೆ 7:18-25

ಸಹೋದರರೇ, ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯತನವೆಂಬುದೇನೂ ನೆಲೆಗೊಂಡಿಲ್ಲ. ಇದು ನನಗೆ ಗೊತ್ತು. ಏಕೆಂದರೆ, ಒಳಿತನ್ನು ಮಾಡಬೇಕೆಂಬ ಮನಸ್ಸು ನನಗಿದ್ದರೂ ಅದನ್ನು ಮಾಡಲು ನನ್ನಿಂದ ಆಗುತ್ತಿಲ್ಲ. ನಾನು ಬಯಸುವ ಒಳ್ಳೆಯದನ್ನು ಮಾಡದೆ, ನಾನು ಬಯಸದ ಕೆಟ್ಟದ್ದನ್ನೇ ಮಾಡುವವನಾಗಿದ್ದೇನೆ. ನಾನು ಬಯಸದೆ ಇರುವುದನ್ನೇ ಮಾಡಿದರೆ ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು. ನಾನು ಒಳಿತನ್ನು ಮಾಡಬಯಸಿದರೂ ಕೇಡು ನನ್ನ ಕೈಬಿಡುತ್ತಿಲ್ಲ. ಇದೇ ಒಂದು ನಿಯಮವಾಗಿ ನನ್ನಲ್ಲಿ ಕಂಡುಬರುತ್ತದೆ. ನನ್ನ ಅಂತರಂಗದಲ್ಲಿ ದೈವ ನಿಯಮವನ್ನು ಕುರಿತು ಆನಂದಿಸುತ್ತೇನೆ. ನನ್ನ ಇಂದ್ರಿಯಗಳಲ್ಲಿಯಾದರೋ ಬೇರೊಂದು ನಿಯಮವನ್ನು ಕಾಣುತ್ತೇನೆ.  ಇದು ನನ್ನ ಅಂತರಂಗ ನಿಯಮಕ್ಕೆ ತದ್ವಿರುದ್ಧವಾಗಿ ಕಾದಾಡುತ್ತದೆ; ನನ್ನ ಇಂದ್ರಿಯಗಳಲ್ಲಿ ನೆಲೆಗೊಂಡಿರುವ ಪಾಪ ನಿಯಮಕ್ಕೆ ನನ್ನನ್ನು ಖೈದಿಯನ್ನಾಗಿಸುತ್ತದೆ. ಅಯ್ಯೋ, ನಾನೆಂಥ ನಿರ್ಭಾಗ್ಯನು! ಸಾವಿನ ದವಡೆಗೆ ಸಿಕ್ಕಿರುವ ಈ ಶರೀರದಿಂದ ನನ್ನನ್ನು ಬಿಡಿಸುವವರು ಯಾರು? ದೇವರೇ. ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಕೃತಜ್ಞತೆ ಸಲ್ಲಲಿ! ನನ್ನಷ್ಟಕ್ಕೆ ನಾನೇ ದೇವರ ನಿಯಮವನ್ನು ಮನಃಪೂರ್ವಕವಾಗಿ ಪಾಲಿಸಲು ಬಯಸುತ್ತೇನೆ. ನನ್ನ ಈ ದೇಹದಲ್ಲಾದರೋ ಪಾಪದ ನಿಯಮಕ್ಕೆ ಬದ್ಧನಾಗಿದ್ದೇನೆ.

ಕೀರ್ತನೆ: 119:66, 68, 76-77, 93-94
ಶ್ಲೋಕ: ಪ್ರಭೂ, ಬೋಧಿಸೆನಗೆ ನಿನ್ನ ನಿಬಂಧನೆಗಳನು

ಶುಭಸಂದೇಶ: ಲೂಕ 12:54-59

ಯೇಸುಸ್ವಾಮಿ ಜನಸಮೂಹವನ್ನು ನೋಡಿ, "ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೇ, ಭಾರಿ ಮಳೆ ಬರುತ್ತದೆ ಎನ್ನುತ್ತೀರಿ; ಹಾಗೆಯೇ ಆಗುತ್ತದೆ. ದಕ್ಷಿಣ ದಿಕ್ಕಿನ ಗಾಳಿ ಬೀಸಿದಾಗ ಉರಿಬಿಸಿಲು ಎನ್ನುತ್ತೀರಿ; ಅಂತೆಯೇ ಇರುತ್ತದೆ. ಆಷಾಡಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ; ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ? ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು? ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯಾಧಿಕಾರಿಯ ಕೈಗೊಪ್ಪಿಸಬಹುದು ಸೆರೆಯಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು. ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ," ಎಂದರು.

21.10.21 - "ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ"

ಮೊದಲನೇ ವಾಚನ: ರೋಮನರಿಗೆ 6:19-23

ಸಹೋದರರೇ, ಇದನ್ನು ಅರ್ಥಮಾಡಿಕೊಳ್ಳಲು ನೀವು ಆಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ. ನೀವು ಪಾಪಕ್ಕೆ ಗುಲಾಮರಾಗಿದ್ದಾಗ ದೇವಸಂಬಂಧಕ್ಕೆ ಒಳಗಾಗಿರಲಿಲ್ಲ. ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಃದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯ ಫಲ. ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧ ಜೀವನ;  ಅಂತಿಮವಾಗಿ ಅಮರ ಜೀವನ, ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.

ಕೀರ್ತನೆ: 1:1-2, 3, 4, 6
ಶ್ಲೋಕ: ಪ್ರಭುವಿನಲ್ಲೇ ಭರವಸೆಯಿಟ್ಟು ನಡೆಯುವಾತನು ಧನ್ಯನು

ದುರ್ಜನರ ಆಲೋಚನೆಯಂತೆ ನಡೆಯದೆ|
ಪಾಪಾತ್ಮರ ಪಥದಲಿ ಕಾಲೂರದೆ|
ಧರ್ಮನಿಂದಕರ ಕೂಟದಲಿ ಕೂರದೆ|
ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವನಾರೋ ಅವನೇ ಧನ್ಯನು|
ಹಗಲಿರುಳೆನ್ನದೆ ಅದನೇ ಧ್ಯಾನಿಸುತ್ತಿರುವವನಾರೋ ಅವನೇ ಧನ್ಯನು||

ನದಿಯ ಬದಿಯಲೇ ಬೆಳೆದಿಹ ಮರದಂತೆ|
ಸಕಾಲಕೆ ಫಲವೀವ ವೃಕ್ಷದಂತೆ||
ಎಲೆಬಾಡದೆ ಪಸಿರಿರುವ ತರುವಂತೆ|
ಸಿಗುವುದು ಅವನ ಕಾರ್ಯಗಳಿಗೆ ಸಫಲತೆ||

ದುರಳರಾದರೋ ತೂರಿ ಹೋಗುವರು|
ಬಿರುಗಾಳಿಗೆ ತರಗೆಲೆಯಾಗುವರು||
ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ|
ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ||

ಶುಭಸಂದೇಶ: ಲೂಕ 12:49-53

ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: " ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ. ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ. ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. ಹೇಗೆಂದರೆ, ಒಂದೇ ಮನೆಯಲ್ಲಿರುವ ಐವರಲ್ಲಿ, ಇಂದಿನಿಂದ ಇಬ್ಬರಿಗೆ ವಿರುದ್ಧ ಮೂವರು, ಮೂವರಿಗೆ ವಿರುದ್ಧ ಇಬ್ಬರು ವಿಭಾಗವಾಗುವರು. ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು," ಎಂದರು.

20.10.21 - "ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು."

ಮೊದಲನೇ ವಾಚನ: ರೋಮನರಿಗೆ 6:12-18


ಸಹೋದರರೇ, ಆದ್ದರಿಂದ ದೈಹಿಕ ದುರಿಚ್ಛೆಗಳಿಗೆ ದಾಸರಾಗಿ ನೀವು ನಡೆಯದಂತೆ, ನಿಮ್ಮ ನಶ್ವರ ಶರೀರಗಳ ಮೇಲೆ ಪಾಪವು ತನ್ನ ದಬ್ಬಾಳಿಕೆಯನ್ನು ಇನ್ನೆಂದಿಗೂ ನಡೆಸದಿರಲಿ. ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನೆಗಳನ್ನಾಗಿ ದೇವರಿಗೆ ಒಪ್ಪಿಸಿಕೊಂಡಿರಿ. ಏಕೆಂದರೆ ಪಾಪವು ಇನ್ನೆಂದಿಗೂ ನಿಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗದು; ನೀವಿನ್ನು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ದೈವಾನುಗ್ರಹಕ್ಕೆ ಮಾತ್ರ ಅಧೀನರು. ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೇ ಜೀವಿಸೋಣವೆ? ಸರ್ವಥಾ ಇಲ್ಲ. ಯಾರ ಕೈ ಕೆಳಗೆ ಗುಲಾಮರಾಗಿರಲು ನಿಮ್ಮನ್ನೇ ಒಪ್ಪಿಸಿಕೊಳ್ಳುತ್ತೀರೋ ಅವರಿಗೆ ನೀವು ಶರಣಾಗುತ್ತೀರಿ. ನೀವು ಪಾಪಕ್ಕೆ ಗುಲಾಮರಾದರೆ ಮರಣವೇ ನಿಮಗೆ ಗತಿ; ದೇವರಿಗೆ ಶರಣಾದರೆ ಸತ್ಸಂಬಂಧವೇ ಅದರ ಸತ್ಪರಿಣಾಮ. ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ; ಪಾಪಬಂಧನದಿಂದ ಬಿಡುಗಡೆ ಹೊಂದಿ ದೇವಸಂಬಂಧಕ್ಕೆ ಒಳಗಾದಿರಿ.

ಕೀರ್ತನೆ: 124:1-3, 4-6, 7-8
ಶ್ಲೋಕ: ನಮಗುದ್ಧಾರ ಪ್ರಭುವಿನ ನಾಮದಲಿ

ಶುಭಸಂದೇಶ: ಲೂಕ 12:39-48

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಹೀಗೆಂದರು: "ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ. ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು," ಎಂದರು. ಆಗ ಪೇತ್ರನು, "ಪ್ರಭೂ, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ?"ಎಂದು ಕೇಳಿದನು. ಅದಕ್ಕೆ ಪ್ರಭು ಹೀಗೆಂದರು: "ಪ್ರಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ. ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು. ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಆದರೆ ಆ ಸೇವಕನು ತನ್ನಲ್ಲೇ, "ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ", ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು. ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ. ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು."

19.10.21 - "ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ"

ಮೊದಲನೇ ವಾಚನ: ರೋಮನರಿಗೆ 5:12, 15, 17-19, 20-21

ಸಹೋದರರೇ, ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪ ಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥ ವರಗಳು ಇನ್ನೂ ಅಧಿಕಾಧಿಕವಾದುವು ಎಂಬುದು ನಿಜ. ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ. ಒಬ್ಬನ ಅಪರಾಧದಿಂದ ಎಲ್ಲಾ ಮಾನವರು ದಂಡನೆಯ ತೀರ್ಪಿಗೆ ಗುರಿಯಾಗುತ್ತಾರೆ. ಹಾಗೆಯೇ ಒಬ್ಬನ ಸತ್ಕಾರ್ಯದಿಂದ ಎಲ್ಲಾ ಮಾನವರು ವಿಮೋಚನೆಯನ್ನೂ ಸಜ್ಜೀವವನ್ನೂ ಪಡೆಯುತ್ತಾರೆ. ಹೇಗೆ ಒಬ್ಬ ಮನುಷ್ಯನ  ವಿಧೇಯತೆಯಿಂದ ಎಲ್ಲರೂ ದೇವರೊಡನೆ ಸತ್ಸಂಬಂಧವನ್ನು  ಹೊಂದುತ್ತಾರೆ. ಅಪರಾಧಗಳು ಹೆಚ್ಚಿದಂತೆ ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು. ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರ ಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.

ಕೀರ್ತನೆ: 40: 7-8, 8-9, 10, 17
ಶ್ಲೋಕ: ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ

ಬೇಡವಾದವು ನಿನಗೆ ಯಜ್ಞಾರ್ಪಣೆ ಬಲಿಕಾಣಿಕೆ|
ಬಯಸಿಲ್ಲ ನೀ ಹೋಮವನೆ, ಪರಿಹಾರಿಕ ಬಲಿಯನೆ|
ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ||

ನಾನೋಗೊಡುತ ಇಂತೆಂದೆ, " ಇಗೋ ನಾನೇ ಬರುತ್ತಿರುವೆ|
ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ?||

ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ|
ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ||

ನಿನ್ನನ್ನು ಅರಸುವವರೆಲ್ಲರು ಹರ್ಷಾನಂದಗೊಳ್ಳಲಿ|
ನಿನ್ನ ರಕ್ಷಣಾಪ್ರಿಯರು ಸತತ ' ಪ್ರಭು ಪರಾಕ್ರಮಿ ' ಎನ್ನಲಿ||

ಶುಭಸಂದೇಶ: ಲೂಕ 12:35-38


ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ. ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧವಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದಿರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ. ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು, ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು."

18.10.21

ಮೊದಲನೆಯ ವಾಚನ: 2 ತಿಮೋಥೆಯ 4:10-17

ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ. ಲೂಕನು ಮಾತ್ರ ನನ್ನ ಜೊತೆಯಿದ್ದಾನೆ. ನೀನು ಬರುವಾಗ ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನ ಸೇವೆ ನನಗೆ ಅಗತ್ಯವಾಗಿದೆ. ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದ್ದೇನೆ. ನೀನು ಬರುವಾಗ ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ನನ್ನ ಮೇಲಂಗಿಯನ್ನು ತೆಗೆದುಕೊಂಡು ಬಾ. ನನ್ನ ಕೆಲವು ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಸುರುಳಿಗಳನ್ನೂ ತಪ್ಪದೆ ತೆಗೆದುಕೊಂಡು ಬಾ. ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು. ನೀನು ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಮ್ಮ ಬೋಧನೆಗೆ ಅವನು ಕಟುವಾದ ವಿರೋಧಿಯಾಗಿದ್ದಾನೆ. ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ. ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮಿಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು.

ಕೀರ್ತನೆ 145:11, 12-13, 17-18
ಶ್ಲೋಕ: ಪ್ರಭೂ, ನಿನ್ನ ಭಕ್ತಸಮೂಹವು ಪ್ರಸಿದ್ಧಪಡಿಸುವುದು, ನಿನ್ನ ರಾಜ್ಯದ ಮಹತ್ವವನು.

ಪ್ರಭೂ, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು|
ಕೊಂಡಾಡುವುದು ನಿನ್ನನು ಭಕ್ತಸಮೂಹವು||
ಪ್ರಸಿದ್ದಪಡಿಸುವರು ನಿನ್ನ ರಾಜ್ಯದ ಮಹತ್ವವನು|
ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು||

ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು|
ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು||
ಶಾಶ್ವತವಾದುದು ನಿನ್ನ ರಾಜ್ಯವು|
ಇರುವುದೆಂದಿಗು ನಿನ್ನ ಆಳ್ವಿಕೆಯು||

ನುಡಿಯಲಿ ಪ್ರಭು ಸದಾ ಪ್ರಮಾಣಿಕನು|
ನಡೆಯಲಿ ಆತನು ಸದಾ ಪ್ರೀತಿಮಯನು||
ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ|
ಯಥಾರ್ಥವಾಗಿ ಆತನನು ಅರಸುವವರಿಗೆ||

ಶುಭಸಂದೇಶ: ಲೂಕ 10:1-9


ಆ ಕಾಲದಲ್ಲಿ ಯೇಸು ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು. ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, " ಬೆಳೆಯೇನೋ ಹೇರಳವಾಗಿದೆ, ಕೊಯ್ಲುಗಾರರೋ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ. ನೀವು ಯಾವ ಮನೆಗೆ ಹೋದರೂ, ' ಮನೆಗೆ ಶಾಂತಿ, ' ಎಂದು ಆಶೀರ್ವಾದ ಮಾಡಿ, ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು. ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು. ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ. ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ' ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ, ' ಎಂದು ತಿಳಿಸಿರಿ.

17.10.2021 - "ನರಪುತ್ರನು ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೋಡುವುದಕ್ಕೆ ಬಂದಿದ್ದಾನೆ."

ಮೊದಲನೆಯ ವಾಚನ: ಯಶಾಯ 53:10-11

ಸರ್ವೇಶ್ವರನ ಚಿತ್ತದಂತೆ ಜರ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನ್ನೇ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು, ಪಡೆಯುವನು ಚಿರಜೀವವನು ತಾನೇ ನೆರವೇರಿಸುವನು ಸರ್ವೇಶ್ವರನ ಸಂಕಲ್ಪವನು. ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹು ಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.

ಕೀರ್ತನೆ 33:4-5, 18-19, 20, 22
ಶ್ಲೋಕ: ನಮ್ಮ ಮೇಲಿರಲಿ ಪ್ರಭೂ, ನಿನ್ನಚಲ ಪ್ರೀತಿ.

ಸತ್ಯವಾದುದು ಆತನ ಪವಿತ್ರ ವಾಕ್ಯ|
ಸತ್ಯವಾದುದು ಆತನ ಪುನೀತ ಕಾರ್ಯ||
ಸತ್ಯಸಂಧನು, ನ್ಯಾಯಪ್ರಿಯನು ಆತನು|
ಅಚಲ ಪ್ರೀತಿಯಿಂದ ಜಗವನು ತುಂಬಿಹನು||

ಪ್ರಭುವಾದರೋ ಕಟಿಕ್ಷಿಸುವನು ತನಗಂಜಿ ನಡೆದವರನು|
ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು||
ತಪ್ಪಿಸವನವನು ಪ್ರಾಣವನು ಮರಣದಿಂದ|
ಉಳಿಸುವನು ಜೀವವನು ಕ್ಷಾಮಡಾಮರದಿಂದ||

ಕಾದಿದೆ ಎನ್ನ ಮನ ಪ್ರಭುವಿಗಾಗಿ|
ಆತನಿಹನು ಎನಗೆ ಗುರಾಣಿಯಾಗಿ||
ನಮ್ಮ ಮೇಲಿರಲಿ ಪ್ರಭೂ, ನಿನ್ನಚಲ ಪ್ರೀತಿ|
ಕಾದಿಹೆವು ಇದೋ ನಿನ್ನ ನಂಬಿ ಭರವಸದಿ||

ಎರಡನೆಯ ವಾಚನ: ಹಿಬ್ರಿರಿಯರಿಗೆ 4:14-16

ಸಹೋದರರೇ, ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ. ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ -- ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ. ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.

ಶುಭಸಂದೇಶ: ಮಾರ್ಕ 10:35-45

ಆ ಕಾಲದಲ್ಲಿ ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಯೇಸುವಿನ ಬಳಿಗೆ ಬಂದು, " ಗುರುವೇ, ನಮ್ಮದೊಂದು ಬಿನ್ನಹವಿದೆ, ಅದನ್ನು ನಡೆಸಿಕೊಡಬೇಕು, " ಎಂದು ವಿಜ್ಞಾಪಿಸಿಕೊಂಡರು." ನನ್ನಿಂದ ನಿಮಗೇನಾಗಬೇಕು? " ಎಂದು ಯೇಸು ಕೇಳಿದರು. " ತಮ್ಮ ಮಹಿಮಾಸ್ಥಾನದಲ್ಲಿ ನಮ್ಮಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ಎಡಗಡೆಯಲ್ಲೂ ಆಸೀನರಾಗುವಂತೆ ಅನುಗ್ರಹಿಸಬೇಕು, " ಎಂದು ತಮ್ಮ ಬಯಕೆಯನ್ನು ತೋಡಿಕೊಂಡರು. ಅದಕ್ಕೆ ಯೇಸು, " ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕೂಡಿಯಲು ನಿಮ್ಮಿಂದಾದೀತೆ? ನಾನು ಪಡೆಯಲಿರುವ ಸ್ನಾನವನ್ನು ಪಡೆಯಲು ನಿಮ್ಮಿಂದಾದೀತೆ? ನಾನು ಪಡೆಯಲಿರುವ ಸ್ನಾನವನ್ನು ಪಡೆಯಲು ನಿಮ್ಮಿಂದಾದೀತೆ? ಎಂದು ಪ್ರಶ್ನಿಸಿದರು. " ಹೌದು ಆಗುತ್ತದೆ, " ಎಂದು ಅವರು ಮರು ನುಡಿದರು. ಆಗ ಯೇಸು, " ನಾನು ಕುಡಿಯುವ ಪಾತ್ರೆಯಿಂದ ನೀವೂ ಕುಡಿಯುವಿರಿ, ನಾನು ಪಡೆಯಲಿರುವ ಸ್ನಾನವನ್ನು ನೀವೂ ಪಡೆಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ಸಿದ್ಧ ಮಾಡಲಾಗಿದೆಯೋ ಅವರಿಗೇ ಸಿಗುವುದು, " ಎಂದು ನುಡಿದರು. ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಯಕೋಬ ಯೊವಾನ್ನರ ಮೇಲೆ ಸಿಟ್ಟುಗೊಂಡರು. ಆಗ ಯೇಸು ಶಿಷ್ಯರೆಲ್ಲರನ್ನು ತಮ್ಮ ಬಳಿಗೆ ಕರೆದು, " ಪ್ರಜಾಧಿಪತಿಗಳು ಎನಿಸಿಕೊಳ್ಳುವವರು ಪ್ರಜೆಗಳ ಮೇಲೆ ದರ್ಪದಿಂದ ದೊರೇತನ ಮಾಡುತ್ತಾರೆ, ಇದು ನಿಮಗೆ ಗೊತ್ತು. ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮ್ಮ ಸೇವಕನಾಗಿರಲಿ, ಪ್ರಥಮನಾಗಿರಲು ಆಶಿಸುವವನು ಎಲ್ಲರ ದಾಸನಾಗಿರಲಿ. ನರಪುತ್ರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೋಡುವುದಕ್ಕೂ ಬಂದಿದ್ದಾನೆ, " ಎಂದು ಬೋಧಿಸಿದರು.

16.10.21

ಮೊದಲನೆಯ ವಾಚನ: ರೋಮನರಿಗೆ 4:13, 16-18

ಸಹೋದರರೇ, ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೆ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ. ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ, ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸವಿಟ್ಟವರೆಲ್ಲರಿಗೂ ಖಚಿತವಾಗಿ ದೂರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ. "ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ, " ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು. ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆ ಇಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ, " ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತ ಆಗುವುದು, " ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು.

ಕೀರ್ತನೆ 105:5, 7, 8-9, 42-43
ಶ್ಲೋಕ : ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು.

ಆತನ ದಾಸ ಅಬ್ರಹಾಮನ ಸಂತತಿಯವರೇ|
ಆತನಾರಿಸಿಕೊಂಡ ಯಾಕೋಬನ ವಂಶದವರೇ||
ಪ್ರಭು ನಮ್ಮ ದೇವನೆಂಬುದು ಶುತ್ರ|
ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ||

ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು|
ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು||
ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು|
ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು||

ಸ್ಮರಿಸಿಕೊಂಡನು ಪ್ರಭು ತನ್ನ ವಾಗ್ದಾನವನು|
ತನ್ನ ದಾಸ ಅಬ್ರಹಾಮನಿಗೆ ಕೊಟ್ಟ ಮಾತನು||
ಹೊರತಂದನು ತನ್ನ ಪ್ರಜೆಯನು ಉಲ್ಲಾಸದಿಂದ|
ತಾನಾರಿಸಿಕೊಂಡವರನು ಹರ್ಷೋದ್ಗಾರದಿಂದ||

ಶುಭಸಂದೇಶ: ಲೂಕ 12:8-12

ಆ ಕಾಲದಲ್ಲಿ ಯೇಸು ತಮ್ಮ ಶಿಷ್ಯರಿಗೆ ಹೀಗೆಂದರು: "ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು. ಆದರೆ ಯಾವನು ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಲಾಗುವುದೆಂಬುದು ನಿಶ್ಚಯ. ಯಾವನಾದರೂ ನರಪುತ್ರನ ವಿರುದ್ಧ ಮಾತನಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು. ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಹುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು."

15.10.21 - " ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ."

ಮೊದಲನೆಯ ವಾಚನ: ರೋಮನರಿಗೆ 4:1-8

ಸಹೋದರರೇ, ವಂಶಾನುಕ್ರಮವಾಗಿ ನಮ್ಮ ಮೂಲಪಿತನಾದ ಅಬ್ರಹಾಮನ ಅನುಭವವನ್ನು ಕುರಿತು ಏನು ಹೇಳೋಣ? ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರೆ ಆಗ ಹೊಗಳಿಕೊಳ್ಳುವುದಕ್ಕೆ ಆತನಿಗೆ ಆಸ್ಪದವಿರುತ್ತಿತ್ತು, ಆದರೆ ಅದು ದೇವರ ಸಾನ್ನಿಧ್ಯದಲ್ಲಿ ಅಲ್ಲ. ಏಕೆಂದರೆ, ಪವಿತ್ರ ಗ್ರಂಥದಲ್ಲಿ ಹೀಗೆ ಹೇಳಿದೆ: " ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು, ಆತನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ದೇವರು ಪರಿಗಣಿಸಿದರು." ದುಡಿಯುವವನಿಗೆ ದೊರಕುವ ಕೂಲಿ ಉಚಿತ ದಾನವಲ್ಲ, ಅದು ಕಷ್ಟಾರ್ಜಿತ ಸಂಪಾದನೆ. ಆದರೆ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರೂ ಅಧರ್ಮಿಗಳನ್ನು ಸದ್ಧರ್ಮಿಗಳನ್ನಾಗಿಸುವ ದೇವರಲ್ಲಿ ವಿಶ್ವಾಸವಿಡುತ್ತಾರೋ ಅಂಥವರ ವಿಶ್ವಾಸವನ್ನು ದೇವರು ಅಂಗೀಕರಿಸಿ, ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಅಂತೆಯೇ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು ದೇವರೊಡನೆ ಸತ್ಸಂಬಂಧದಲ್ಲಿ ಇರುತ್ತಾರೋ ಅಂಥವರು ಭಾಗ್ಯವಂತರು ! ಇದನ್ನು ಕುರಿತು ದಾವೀದನು ಹೀಗೆನ್ನುತ್ತಾನೆ: " ಯಾರ ಅಪರಾಧಗಳು ಪರಿಹರಿಸಲಾಗಿವೆಯೋ, ಯಾರ ಪಾಪಗಳು ಕ್ಷಮಿಸಲಾಗಿವೆಯೋ ಅವರು ಭಾಗ್ಯವಂತರು ! ಯಾರ ಪಾಪವನ್ನು ಸರ್ವೇಶ್ವರ ಲೆಕ್ಕಿಸುವುದಿಲ್ಲವೋ ಆತನು ಭಾಗ್ಯವಂತನು!"

ಕೀರ್ತನೆ 32:1-2, 5, 11
ಶ್ಲೋಕ: ನೀನೇ ನನಗೆ ಮರೆಯು, ಆಪತ್ತಿನಲಾಸರೆಯು.

ಯಾರ ಪಾಪ ಪರಿಹಾರವಾಗಿದೆಯೋ|
ಯಾರ ದ್ರೋಹ ವಿಮೋಚನೆಯಾಗಿದೆಯೋ ಅವರೇ ಧನ್ಯರು||
ಯಾರಪರಾಧವನು ಪ್ರಭು ಎಣಿಸಿಲ್ಲವೋ|
ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು||

ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು|
ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು||
ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ ಎಂದೆನು|
ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು||

ಸಜ್ಜನರೇ, ಸಂತೋಷಿಸಿರಿ, ಉಲ್ಲಾಸಿಸಿರಿ ಪ್ರಭುವಿನಲಿ|
ಯಥಾರ್ಥಚಿತರೇ, ಜಯಕಾರಮಾಡಿ ಆತನ ವಿಷಯದಲಿ||

ಶುಭಸಂದೇಶ: ಲೂಕ 12:1-7


ಆ ಕಾಲದಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, " ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ. ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟಬಯಲಾಗುವುದು, ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು. ನೀವು ಕತ್ತಲಲ್ಲಿ ಹೇಳಿದ್ದೆಲ್ಲವನ್ನು ಬೆಳಕಿನಲ್ಲಿ ಕೇಳಲಾಗುವುದು, ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು. ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ : ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ : ಸತ್ತ ಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿ ಹೇಳುತ್ತೇನೆ. ಎರಡು ಕಾಸಿಗೆ ಐದು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ. ಅಷ್ಟು ಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ, ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು, " ಎಂದರು.

14.10.21 - "ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ"

 ಮೊದಲನೇ ವಾಚನ: ರೋಮನರಿಗೆ 3:21-30

ಸಹೋದರರೇ, ಈಗಲಾದರೋ ಧರ್ಮಶಾಸ್ತ್ರದ ನೆರವಿಲ್ಲದೆಯೇ ದೇವರಿಂದ ದೊರಕುವ ಸತ್ಸಂಬಂಧವು ಪ್ರಕಟವಾಗಿದೆ. ಇದಕ್ಕೆ ಧರ್ಮಶಾಸ್ತ್ರವೂ ಪ್ರವಾದನಾಗ್ರಂಥವೂ ಸಾಕ್ಷಿಯಾಗಿವೆ. ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ. ಮಾನವರೆಲ್ಲರೂ ಪಾಪಿಗಳೇ, ಎಲ್ಲರೂ ದೇವದತ್ತ ಮಹಿಮೆಯನ್ನು ಕಳೆದುಕೊಂಡವರೇ. ಆದರೆ ದೇವರು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಪಾಪವಿಮೋಚನೆಯನ್ನು ದಯಪಾಲಿಸಿ, ತಮ್ಮ ಉಚಿತಾರ್ಥ ಅನುಗ್ರಹದಿಂದ ಅವರನ್ನು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು. ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯೂ ತಾವು ಸತ್ಯಸ್ವರೂಪರು ಮತ್ತು ನ್ಯಾಯವಂತರು ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಈ ರೀತಿ ಮಾಡಿದರು. ಹೀಗಿರುವಲ್ಲಿ ಮಾನವನು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವಿದೆಯೇ? ಇಲ್ಲವೇ ಇಲ್ಲ. ಹಾಗಾದರೆ ಸತ್ಸಂಬಂಧಕ್ಕೆ ಆಧಾರವೇನು? ಸತ್ಕಾರ್ಯಗಳ  ಸಾಧನೆಯೇ? ಇಲ್ಲ. ವಿಶ್ವಾಸವೇ? ಹೌದು. ಮಾನವರಿಗೆ ದೇವರೊಡನೆ ಸತ್ಸಂಬಂಧ ದೊರಕುವುದು ಧರ್ಮಶಾಸ್ತ್ರಗಳ ನೇಮನಿಯಮಗಳನ್ನು ಪಾಲಿಸುವುದರಿಂದ ಅಲ್ಲ, ವಿಶ್ವಾಸದಿಂದಲೇ ಎಂಬುದು ನಮ್ಮ ಸಿದ್ಧಾಂತ. ದೇವರು ಕೇವಲ ಯೆಹೂದ್ಯರಿಗೆ ಮಾತ್ರ ದೇವರೋ ಅಥವಾ ಇತರರಿಗೂ ದೇವರೋ? ಹೌದು, ಇತರರಿಗೂ ದೇವರೆ. ಯೆಹೂದ್ಯರನ್ನು ಅವರ ವಿಶ್ವಾಸದ ಆಧಾರದ ಮೇಲೂ ಇತರರನ್ನು ಅವರ ವಿಶ್ವಾಸದ ಮೂಲಕವೂ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವ ದೇವರು ಒಬ್ಬರೇ.

ಕೀರ್ತನೆ: 130: 1-2, 3-4, 5-6
ಶ್ಲೋಕ: ಪ್ರಭುವಿನಲ್ಲಿದೆ ಕರುಣೆ, ಪೂರ್ಣ ವಿಮೋಚನೆ

ಶುಭಸಂದೇಶ: ಲೂಕ 11:47-54

ಯೇಸು ಧರ್ಮಶಾಸ್ತ್ರಜ್ಞರನ್ನುದ್ದೇಶಿಸಿ ಹೀಗೆಂದರು. "ಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ನಿಮ್ಮ ಪಿತೃಗಳು ಕೊಂದು ಹಾಕಿದ ಪ್ರವಾದಿಗಳಿಗೆ ನೀವು ಅಂದದ ಗೋರಿಗಳನ್ನು ನಿರ್ಮಿಸುತ್ತೀರಿ. ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಅನುಮೋದಿಸುತ್ತೀರಿ ಎಂಬುದಕ್ಕೆ ಇದೇ ಸಾಕ್ಷಿ. ಏಕೆಂದರೆ, ಪ್ರವಾದಿಗಳನ್ನು ಕೊಂದವರು ಅವರಾದರೆ, ಗೋರಿ ನಿರ್ಮಿಸುತ್ತಿರುವವರು ನೀವು. ಈ ಕಾರಣದಿಂದಲೇ ದೇವರ ಜ್ಞಾನವು ಹೇಳುವುದೇನೆಂದರೆ - ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು: ಕೆಲವರನ್ನು ಚಿತ್ರಹಿಂಸೆ ಪಡಿಸುವರು. ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲ್ಗೊಂಡು, ಬಲಿಪೀಠಕ್ಕೂ ದೇವಾಲಯಕ್ಕೂ ನಡುವೆ ಹತನಾದ ಜಕರೀಯನ ರಕ್ತದವರೆಗೂ ಈ ಪೀಳಿಗೆಯವರು ಲೆಕ್ಕಕೊಡಬೇಕಾಗುವುದು. ಹೌದು, ಈ ಪೀಳಿಗೆಯವರೇ ಲೆಕ್ಕಕೊಡ ಬೇಕಾಗುವುದೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಧರ್ಮಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ,  ಎಂದರು. ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಅವರನ್ನು ಉಗ್ರವಾಗಿ ಪ್ರತಿಭಟಿಸಲಾರಂಭಿಸಿದರು. ಹಲವಾರು ವಿಷಯಗಳನ್ನು ಕುರಿತು ಮಾತಾಡುವಂತೆ ಕೆಣಕಿ, ಅವರ ಮಾತಿನಲ್ಲಿ ಏನಾದರು ತಪ್ಪು ಕಂಡು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.

13.10.21

 ಮೊದಲನೇ ವಾಚನ: ರೋಮನರಿಗೆ 2:1-11

ಇತರರು ದೋಷಿಗಳೆಂದು ತೀರ್ಪುನೀಡುವ ಮಾನವನೇ, ನೀನು ಯಾರೇ ಆಗಿರು, ನೀನು ಮಾತ್ರ ನಿರ್ದೋಷಿಯೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇತರರಿಗೆ ತೀರ್ಪು ನೀಡುವ ನೀನು ಅವರು ಮಾಡುವ ತಪ್ಪುಗಳನ್ನು ನೀನೂ ಮಾಡಿದೆಯಾದರೆ, ನಿನ್ನನ್ನು ನೀನೇ ದೋಷಿಯೆಂದು ತೀರ್ಪು ಮಾಡಿಕೊಂಡ ಹಾಗಾಯಿತು. ಇಂಥ ಅಪರಾಧಗಳನ್ನು ಮಾಡುವವರ ಬಗ್ಗೆ ದೇವರು ನೀಡುವ ತೀರ್ಪು ನ್ಯಾಯಬದ್ಧವಾದುದು ಎಂಬುದನ್ನು ನಾವು ಬಲ್ಲೆವು. ಹೀಗಿರುವಾಗ, ಇತರರಿಗೆ ಯಾವ ಅಪರಾಧಕ್ಕಾಗಿ ತೀರ್ಪುನೀಡಿದೆಯೋ ಅಂಥ ಅಪರಾಧವನ್ನೇ ನೀನೂ ಮಾಡುತ್ತಿರುವೆಯಲ್ಲಾ! ದೇವರು ಕೊಡುವ ನ್ಯಾಯತೀರ್ಪಿನಿಂದ ನೀನು ಮಾತ್ರ ತಪ್ಪಿಸಿಕೊಳ್ಳುವಿಯೆಂದು ನೆನೆಸುತ್ತೀಯೋ? ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ? ಆದರೆ ನಿನ್ನ ಕಠಿಣ ಹೃದಯ, ಮೊಂಡುಸ್ವಭಾವ, ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ. ಪ್ರತಿಯೊಬ್ಬನಿಗೂ ದೇವರು ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುತ್ತಾರೆ.  ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ. ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತದೆ. ಯೆಹೂದ್ಯರನ್ನು ಮೊದಲ್ಗೊಂಡು, ಇತರರಿಗೂ ಪಾಪಕೃತ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಕಷ್ಟಸಂಕಟಗಳು ಕಾದಿರುತ್ತದೆ. ಅಂತೆಯೇ, ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ಸತ್ಕಾರ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಮಹಿಮೆ, ಗೌರವ, ಶಾಂತಿ ಲಭಿಸುತ್ತವೆ. ದೇವರು ಪಕ್ಷಪಾತಿ ಅಲ್ಲ.

ಕೀರ್ತನೆ: 62:2-3, 6-7, 9
ಶ್ಲೋಕ: ಸರ್ವರಿಗೂ ನೀಡುವೆ ಕೃತ್ಯಕ್ಕೆ ತಕ್ಕ ಫಲ

ಶುಭಸಂದೇಶ: ಲೂಕ 11:42-46


ಯೇಸುಸ್ವಾಮಿ ಫರಿಸಾಯರನ್ನುದ್ದೇಶಿಸಿ ಹೀಗೆಂದರು: "ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ,  ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತು. ಫರಿಸಾಯರೇ, ನಿಮಗೆ ಧಿಕ್ಕಾರ! ಪ್ರಾರ್ಥನಾಮಂದಿರಗಳಲ್ಲಿ ಪ್ರಧಾನ ಆಸನಗಳನ್ನೂ ಪೇಟೆ ಬೀದಿಗಳಲ್ಲಿ ವಂದನೋಪಚಾರಗಳನ್ನೂ ಅಪೇಕ್ಷಿಸುತ್ತೀರಿ. ಅಯ್ಯೋ, ನಿಮಗೆ ಧಿಕ್ಕಾರ! ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ. ಸಮಾಧಿಗಳೆಂದು ತಿಳಿಯದೆಯೆ ಜನರು ಅವುಗಳ ಮೇಲೆ ನಡೆದಾಡುತ್ತಾರೆ," ಎಂದರು. ಇದನ್ನು ಕೇಳಿದ ಒಬ್ಬ ಧರ್ಮಶಾಸ್ತ್ರಜ್ಞನು, "ಬೋಧಕರೇ, ನೀವು ಹಿಗೆ ಮಾತನಾಡುವುದರಿಂದ ನಮ್ಮನ್ನೂ ಖಂಡಿಸಿದಂತಾಯಿತು," ಎಂದನು. ಅದಕ್ಕೆ ಯೇಸು, "ಶಾಸ್ತ್ರಜ್ಞರೇ, ನಿಮಗೂ ಧಿಕ್ಕಾರ! ಹೊರಲಾಗದ ಹೊರೆಗಳನ್ನು ನೀವು ಜನರ ಮೇಲೆ ಹೇರುತ್ತೀರಿ; ನೀವಾದರೋ ನಿಮ್ಮ ಕಿರುಬೆರಳಿಂದ ಕೂಡ ಅವುಗಳನ್ನು ಮುಟ್ಟುವುದಿಲ್ಲ," ಎಂದರು.

11.10.21 - "ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ"

 ಮೊದಲನೇ ವಾಚನ: ರೋಮನರಿಗೆ  1:1-7


ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರಾದ ರೋಮ್ ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತ ಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ; ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ. ದೇವರು ತಮ್ಮ ಶುಭಸಂದೇಶವನ್ನು ನೀಡುವುದಾಗಿ ಪ್ರವಾದಿಗಳ ಮುಖಾಂತರ ಮುಂಚಿತವಾಗಿಯೇ ಪವಿತ್ರಗ್ರಂಥದಲ್ಲಿ ವಾಗ್ದಾನಮಾಡಿದರು. ಈ ಸಂದೇಶ ದೇವರ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರನ್ನು ಕುರಿತಾದುದು. ಮನುಷ್ಯತ್ವದ ಮಟ್ಟಿಗೆ ಯೇಸು ದಾವೀದನ ವಂಶಜರು; ದೈವಿಕ ಪರಿಶುದ್ಧತೆಯ ಮಟ್ಟಿಗೆ ಇವರು ದೇವರ ಶಕ್ತಿಯನ್ನು ವ್ಯಕ್ತಪಡಿಸುವ ದೇವರ ಪುತ್ರ. ಸತ್ತು ಪುನರುತ್ಥಾನ ಹೊಂದಿ ಇದನ್ನು ಖಚಿತಪಡಿಸಿದವರು. ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು. ಯೇಸುಕ್ರಿಸ್ತರಿಗೆ ಸ್ವಂತದವರಾಗಲು ಕರೆಹೊಂದಿದ ನೀವು ಕೂಡ ಸರ್ವ ಜನಾಂಗಗಳಲ್ಲಿ ಸೇರಿದ್ದೀರಿ.

ಕೀರ್ತನೆ: 98:1,2-3, 3-4,
ಶ್ಲೋಕ: ಪ್ರಕಟಿಸಿಹನು ಪ್ರಭು ತನ್ನ ಮುಕ್ತಿವಿಧಾನವನು

ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು|
ಎಸಗಿಹನಾತನು ಪವಾಡ ಕಾರ್ಯಗಳನು|
ಗಳಿಸಿತಾತನ ಕೈ ಪೂತಭುಜ ಗೆಲುವನು||

ಪ್ರಕಟಿಸಿಹನು ಪ್ರಭು ತನ್ನ ಮುಕ್ತಿ ವಿಧಾನವನು|
ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕ ಶಕ್ತಿಯನು||
ಸ್ಮರಿಸಿಕೊಂಡನು ಪ್ರಭು ತನ್ನ ಪ್ರೀತಿಯನು|
ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು||

ಕಂಡು ಬಂದಿತು ಜಗದ ಎಲ್ಲೆ ಎಲ್ಲೆಗೆ|
ನಮ್ಮ ದೇವ ಸಾಧಿಸಿದ ಜಯಗಳಿಕೆ||
ಭೂನಿವಾಸಿಗಳೇ, ಮಾಡಿರಿ ಸುಮಧುರ ಭಜನೆ|

ಶುಭಸಂದೇಶ: ಲೂಕ 11:29-32


ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು: "ಈ ಪೀಳಿಗೆ ಕೆಟ್ಟ ಪೀಳಿಗೆ, ಇದು ಅದ್ಬುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಹೇಗೆಂದರೆ, ನಿನೆವೆ ನಗರದ ಜನರಿಗೆ ಪ್ರವಾದಿ ಯೋನನು ಸಂಕೇತವಾದಂತೆ ನರಪುತ್ರನು ಈ ಸಂತತಿಗೆ ಸಂಕೇತವಾಗಿರುವನು ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು  ತೋರಿಸುವಳು.  ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ,  ಸೊಲೊಮೋನನಿಗಿಂತಲೂ  ಮೇಲಾದವನು ಇಗೋ, ಇಲ್ಲಿದ್ದಾನೆ. ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.

12.10.21

 ಮೊದಲನೇ ವಾಚನ: ರೋಮನರಿಗೆ  1:16-25

ಶುಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ  ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ. ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. "ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ" ಎಂದು ಪವಿತ್ರ ಗ್ರಂಥದಲ್ಲಿ ಲಿಖಿತವಾಗಿದೆ. ಮಾನವರ ಎಲ್ಲಾ ಪಾಪಕ್ರಮಗಳ ಮೇಲೆ ದೇವರ ಕೋಪಾಗ್ನಿ ಸ್ವರ್ಗದಿಂದ ಎರಗುವುದೆಂದು ಪ್ರಕಟವಾಗುತ್ತಿದೆ. ಏಕೆಂದರೆ, ಅವರ ಅಕ್ರಮ ನಡತೆ ಸತ್ಯವನ್ನು ಅಡಗಿಸುತ್ತಿದೆ. ದೇವರ ವಿಷಯವಾಗಿ ಮಾನವರು ಏನನ್ನು ಅರಿತುಕೊಳ್ಳಲು ಸಾಧ್ಯವೋ ಅದು ಅವರಿಗೆ ಚೆನ್ನಾಗಿ ತಿಳಿದಿದೆ. ದೇವರೇ ಅದನ್ನು ಅವರಿಗೆ ಸ್ಪಷ್ಟಪಡಿಸಿದ್ದಾರೆ. ದೇವರು ಲೋಕವನ್ನು ಸೃಷ್ಟಿಸಿದಂದಿನಿಂದ ಅವರ ಅಗೋಚರ ಗುಣಲಕ್ಷಣಗಳು, ಅವರ ಅನಂತ ಶಕ್ತಿ ಮತ್ತು ದೈವಸ್ವಭಾವ ಮನುಷ್ಯರಿಗೆ ಸೃಷ್ಟಿಗಳ ಮೂಲಕವೇ ವೇದ್ಯವಾಗುತ್ತಿವೆ. ಆದುದರಿಂದ ಮಾನವರು ತಮ್ಮ ಅಜ್ಞಾನಕ್ಕೆ ಯಾವ ನೆಪವನ್ನು ಒಡ್ಡಲೂ ಸಾಧ್ಯವಿಲ್ಲ. ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ;   ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯವಾಯಿತು. ತಾವೇ ಜ್ಞಾನಿಗಳೆಂದು ಕೊಚ್ಚಿಕೊಳ್ಳುತ್ತ ಅವರು ನಿಜವಾಗಿಯೂ ಮೂರ್ಖರಾದರು. ಅಮರ ದೇವರನ್ನು ಆರಾಧಿಸುವುದನ್ನು ಬಿಟ್ಟು ಅಳಿದುಹೋಗುವಂಥ ನರಮಾನವರ ಪ್ರಾಣಿಪಕ್ಷಿಗಳ, ಸರ್ಪಾದಿಗಳ ವಿಗ್ರಹಗಳನ್ನು ಮಾಡಿ ಆರಾಧಿಸತೊಡಗಿದರು. ಆದುದರಿಂದ, ಮಾನವರು ಮನಸ್ಸಿನ ಆಶಾಪಾಶಾಗಳಿಗೆ ಬಲಿಯಾಗಿ ತಮ್ಮ ದೇಹಗಳಿಂದ, ತಮ್ಮತಮ್ಮಲ್ಲೇ ಅಶ್ಲೀಲ ಕೃತ್ಯಗಳೆಸಗಲೆಂದು ದೇವರು ಅವರನ್ನು ಅಶುದ್ಧ ನಡತೆಗೆ ಬಿಟ್ಟುಬಿಟ್ಟರು. ಅವರು ದೇವರ ಸತ್ಯವನ್ನು ಬಿಟ್ಟು ಆಸತ್ಯವಾದುದನ್ನು ಅಂಗೀಕರಿಸಿದರು; ಸೃಷ್ಟಿಕರ್ತನನ್ನು ಆರಾಧಿಸದೆ, ಸೃಷ್ಟಿಯಾದ ವಸ್ತುಗಳನ್ಯೇ ಆರಾಧಿಸಿ, ಸೇವೆ ಸಲ್ಲಿಸಿದರು. ಸರ್ವಕಾಲಕ್ಕೂ ಸೃಷ್ಟಿಕರ್ತರೊಬ್ಬರಿಗೇ ಸ್ತುತಿಸ್ತೋತ್ರ ಸಲ್ಲತಕ್ಕದ್ದು, ಆಮೆನ್.

ಕೀರ್ತನೆ: 19:2-3, 4-5
ಶ್ಲೋಕ: ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು

ಶುಭಸಂದೇಶ: ಲೂಕ 11:37-41

ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಗಿಸಿದಾಗ, ಫರಿಸಾಯನೊಬ್ಬನು ಅವರನ್ನು ಊಟಕ್ಕೆ ಆಮಂತ್ರಿಸಿದನು. ಯೇಸು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು. ಊಟಕ್ಕೆ ಮುಂಚೆ ಅವರು ಕೈ ತೊಳೆಯದೆ ಹೋದುದನ್ನು ಕಂಡು ಫರಿಸಾಯನು ಚಕಿತನಾದನು. ಆಗ ಯೇಸು, "ಫರಿಸಾಯರಾದ ನೀವು ಲೋಟ ಹಾಗೂ ಊಟದ ತಟ್ಟೆಗಳ ಹೊರಭಾಗವನ್ನು ಶುಚಿ ಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಲೋಭದಿಂದಲೂ ಕೆಡುಕಿನಿಂದಲೂ ತುಂಬಿದೆ. ಮೂರ್ಖರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನು ಮಾಡಲಿಲ್ಲವೇ? ನಿಮ್ಮ ತಟ್ಟೆ ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವೂ ನಿಮಗೆ ಶುದ್ಧಿಯಾಗಿರುವುದು.