ಮೊದಲನೆಯ ವಾಚನ: ಯೆಶಾಯ 2:1-5
ಜುದೇಯ ಮತ್ತು ಜೆರುಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನು ಕಂಡ ದರ್ಶನದಲ್ಲಿ ಕೇಳಿಬಂದ ದೈವೋಕ್ತಿ: ಸರ್ವೇಶ್ವರನ ಶ್ರೀ ನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಬೆಟ್ಟಗುಡ್ಡಗಳಿಗಿಂತ ಎತ್ತರವಾಗಿ ಬೆಳೆದುಬರುವುದು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದುಬರುವುವು. ದೇಶವಿದೇಶಗಳವರು ಬಂದು ಹೇಳುವರು ಹೀಗೆ : " ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ, ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ಆತನ ಮಾರ್ಗಗಳನು, ನಾವು ಹಿಡಿದು ನಡೆವಂತೆ ಆತನ ಪಥವನು. ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ; ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ. ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು, ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು. ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ, ಬರ್ಚಿಗಳನು ಕುಡುಗೋಲುಗಳನ್ನಾಗಿ, ಕತ್ತಿಯನೆತ್ತರು ಜನಾಂಗ ಜನಾಂಗದೆದುರಿಗೆ; ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ. ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ."
ಕೀರ್ತನೆ 122:1-2, 3-4, 6-9
ಶ್ಲೋಕ: ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ | ಆಯಿತೆನಗೆ ಆನಂದ, ಜನರೆನ್ನ ಕರೆದಾಗ ||
ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ|
ಆಯಿತೆನಗೆ ಆನಂದ, ಜನರೆನ್ನ ಕರೆದಾಗ||
ನಮ್ಮ ಕಾಲುಗಳು ಓ ಜೆರುಸಲೇಮೇ|
ತಲುಪಿವೆ ನಿನ್ನ ಪುರದ್ವಾರಗಳನೇ||
ನೋಡು, ಜೆರುಸಲೇಮ್ ಪಟ್ಟನವಿದು|
ಗಟ್ಟಿಯಾಗಿಯೇ ಕಟ್ಟಲ್ಪಟ್ಟಿಹುದು||
ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ|
ಮಾಡುವರಿಲ್ಲಿಯೇ ಪ್ರಭುವಿನ ನಾಮಕೀರ್ತನೆ|
ಪಾಲಿಪರಿಂತು ಇಸ್ರಯೇಲರಿಗೆ ವಿಧಿಸಿದ ಆಜ್ಞೆ||
"ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ|
ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ||
ಶುಭವಿರಲಿ ನಿನ್ನೀ -- ಪೌಳಿಗೋಡೆಗಳೊಳಗೆ|
ಸಂರಕ್ಷಣೆ ಇರಲಿ ನಿನ್ನ ಅರಮನೆಯೊಳಗೆ"||
ನನ್ನ ಬಂಧುಬಳಗದವರ ನಿಮಿತ್ತ|
ನಿನಗೆ ಶುಭವಿರಲಿ " ಎಂಬುದು ನನ್ನ ಮಾತು||
ನಮ್ಮ ಸ್ವಾಮಿದೇವರ ಮಂದಿರದ ನಿಮಿತ್ತ|
ಹರಸುವೆ ನಿನ್ನ ಸುಕ್ಷೇಮವನು ಹಾರೈಸುತ||
ಶುಭಸಂದೇಶ ವಾಚನ: ಮತ್ತಾಯ 8:5-11
ಆ ಕಾಲದಲ್ಲಿ ಯೇಸು ಕಫೆರ್ನವುಮ್ ಊರಿಗೆ ಬಂದಾಗ ಶತಾಧಿಪತಿಯೊಬ್ಬನು ಅವರನ್ನು ಎದುರುಗೊಂಡನು. " ಪ್ರಭೂ, ನನ್ನ ಸೇವಕ ಮನೆಯಲ್ಲಿ ಪಾರ್ಶ್ವವಾಯು ರೋಗದಿಂದ ಹಾಸಿಗೆ ಹಿಡಿದಿದ್ದಾನೆ, " ಎಂದು ವಿನಂತಿಸಿದನು. ಯೇಸು, " ನಾನೇ ಬಂದು ಅವನನ್ನು ಗುಣಪಡಿಸುತ್ತೇನೆ, " ಎಂದರು. ಅದಕ್ಕೆ ಶತಾಧಿಪತಿ, " ಪ್ರಭುವೇ, ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು. ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು. ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು, 'ಬಾ' ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ, 'ಹೋಗು' ಎಂದರೆ ಹೋಗುತ್ತಾನೆ. ಸೇವಕನಿಗೆ, 'ಇಂಥದ್ದನ್ನು ಮಾಡು' ಎಂದರೆ ಮಾಡುತ್ತಾನೆ, " ಎಂದನು. ಈ ಮಾತನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು : " ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಪೂರ್ವ ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.
No comments:
Post a Comment